ಕಾವುದಾನತಜನವ ಗದುಗಿನ ವೀರನಾರಯಣ

ಕಾವುದಾನತಜನವ ಗದುಗಿನ ವೀರನಾರಯಣ
ಚಿತ್ರ ಕೃಪೆ: ಅಚ್ಚುತರಾವ್

Tuesday, February 23, 2010

ದ್ರೋಣಪರ್ವ: ೦೩. ಮೂರನೆಯ ಸಂಧಿ

ಸೂ. ಹನುಮನನುಜನ ಬಾಹುಬಲ ರಿಪು
ವನಧಿಯನು ತುಳುಕಿದನು ಭಗದ
ತ್ತನನು ಮರ್ದಿಸಿ ಮುರಿದನರ್ಜುನ ಸುಪ್ರತೀಕವನು

ಗುರುಗಳಾಡಿದ ಭಾಷೆ ಪರಬಲ
ದರಸ ಕಟ್ಟುವದದು ನಿಲಲಿ ನ
ಮ್ಮರಸ ಸಿಲುಕಿದ ಭೀಮ ಗಜ ಕಟ್ಟಿದುದು ಬೀದಿಗಳ
ತಿರುಗಲಾಪರೆ ಸಮಯವಿದು ಸಂ
ಗರ ಸಮರ್ಥರು ಬರಲಿ ಯೆಂಬ
ಬ್ಬರದೊಳಗೆ ಭಗದತ್ತ ಮೇಳೈಸಿದನು ನಿಜಗಜವ ೧

ಬಲವೊರಜೆ ಎಡವೊರಜೆ ಬೆನ್ನಿನ
ಮಿಳಿಯ ಜಾಳಿಗೆವೊರಜೆ ತಳ ಸಂ
ಕಲೆಯ ತೊಡರಂಕಣಿಯ ಕೊಂಡೆಯ ಪಕ್ಕ ಗಂಟೆಗಳ
ತುಳುಕಿನುಗ್ಗಡಣೆಗಳ ಹಿಣಿಲಿನ
ಬಲುವೊರಜೆಗಳ ಬಾರ ಸಂಕಲೆ
ಗಳನು ಬಿಗಿದರು ಜೋಡಿಸಿದರುಬ್ಬರದ ಮದಗಜವ ೨

ಬಿಗಿದು ಗಳವತ್ತಿಗೆಯನೆದೆವ
ತ್ತಿಗೆಯ ಘನಮುಂಡಿಗೆಯ ಲೌಡಿಯ
ಬಿಗಿದು ಗುಳ ರೆಂಚೆಗಳ ಭಾರಿಯ ಕೈಯ ಪಟ್ಟೆಯವ
ಅಗಿವ ಬಡಿಗೆಯನಂಕುಶದ ಕ
ಟ್ಟಿಗೆಯ ಧಾರೆಯ ಕಮಳದಳ ಕೊಡ
ತಿಗಳ ಕೈಹಾರೆಗಳನಳವಡಿಸಿದರು ವಹಿಲದಲಿ ೩

ಮುಗಿಲ ಹೊದರಿನೊಳೆಳೆಯ ರವಿ ರ
ಶ್ಮಿಗಳು ಪಸರಿಸುವಂತೆ ಸುತ್ತಲು
ಬಿಗಿದ ಗುಳದಲಿ ಹೊಳೆಯೆ ಹೊಂಗೆಲಸದ ಸುರೇಖೆಗಳು
ಗಗನ ಗಂಗಾ ನದಿಯ ಕಾಲುವೆ
ತೆಗೆದರೆನೆ ಠೆಕ್ಕೆಯದ ಪಲ್ಲವ
ವಗಿಯೆ ಮೆರೆದುದು ಬಿಗಿದ ಮೊಗರಂಬದ ವಿಳಾಸದಲಿ ೪

ಗಗನ ತಳವನು ಬಿಗಿದ ಬಲು ರೆಂ
ಚೆಗಳ ತುಂಬಿದ ಹೊದೆಯ ಕಣೆಗಳ
ಬಿಗಿದ ನಾಳಿಯ ಬಿಲ್ಲುಗಳ ತೆತ್ತಿಸಿದ ಸೂನಿಗೆಯ
ಉಗಿವ ಸರಿನೇಣುಗಳ ಕೈ ಗುಂ
ಡುಗಳ ಕವಣೆಯ ಲೌಡಿ ಕರವಾ
ಳುಗಳ ಜೋಡಿಸಿ ಜೋದರಡರಿದರಂದು ಬೊಬ್ಬಿರಿದು ೫

ಸುತ್ತ ಮೆರೆದವು ಮೇಲೆ ಪಲ್ಲವ
ಸತ್ತಿಗೆಯ ಸಾಲುಗಳು ಬಿರುದಿನ
ಕತ್ತರಿಯ ಹೀಲಿಗಳ ಝಲ್ಲರಿ ಮುಸುಕಿದವು ಗಜವ
ಒತ್ತಿ ಕಿವಿಗಳನೊದೆದು ಶಿರದಲಿ
ತೆತ್ತಿಸಿದರಂಕುಶವನಾ ಭಗ
ದತ್ತ ದಂತಿಯನೇರಿದನು ಜಯರವದ ರಭಸದಲಿ ೬

ಕಾಲುಗಾಹಿನ ಕುದುರೆಗಳ ಕಾ
ಲಾಳ ಕೈವಾರಿಗಳ ಸಬಳದ
ಸೂಲಿಗೆಯ ತೇರುಗಳ ಹರಹಿನ ಹೊಂತಕಾರಿಗಳ
ಆಳ ಬಲು ಬೊಬ್ಬೆಯಲಿ ಘನ ನಿ
ಸ್ಸಾಳತತಿ ಮೊಳಗಿದವು ಡೌಡೆಯ
ತೂಳುವರೆಗಳು ಗಜರಿದವು ತಂಬಟದ ಲಗ್ಗೆಯಲಿ ೭

ಸುರಪ ಕಡಿಯಲು ಕೆರಳಿ ಕುಲಗಿರಿ
ಯುರಿಯನುಗುಳುವುದೆನಲು ದಾಡೆಗ
ಳರುಣಮಯ ರಶ್ಮಿಗಳ ಪಸರದಲೆಸೆದುದಿಭಪತಿಯ
ಧರಣಿಯಳತೆಯ ಹರಿಯ ನೆಗಹಿನ
ಚರಣದಗ್ರದೊಳಿಳಿವ ಘನ ನಿ
ರ್ಝರದವೊಲು ಮದಧಾರೆ ಮೆರೆದುದು ಕರಿಕಪೋಲದಲಿ ೮

ಜಗದ ನಿಡುನಿದ್ರೆಯಲಿ ಮೋಹರ
ದೆಗೆದ ಮುಗಿಲೋ ಮೇಣಖಿಳ ಕುಲ
ದಿಗಿಭವೆಂಟೊಂದಾಯ್ತೊ ಕೈ ಕಾಲ್ ಮೂಡಿತೋ ನಭಕೆ
ಅಗಿದು ಮೆಟ್ಟಿದಡವನಿ ಪಡುವಲು
ನೆಗೆದುದಡಿರಿದು ಮುಂದೆ ಮೆಟ್ಟಲು
ಚಿಗಿದುದಿಳೆ ಮೂಡಲು ಮಹಾ ಗಜವೈದಿತಾಹವವ ೯

ಪವನಬಲ ಪರಿದಳಿತ ಕದಳೀ
ನಿವಹದಲಿ ನಭ ಧಾತುಗೆಟ್ಟುದು
ರವಿಗೆ ಕಾಪಥವಾಯ್ತು ಹೊಗಳುವೆನೇನನುದುಭುತವ
ಭುವನ ಕೋಶದೊಳಾದ ವಿಪಿನೋ
ದ್ಭವವೊ ಭಾರಿಯ ದಂತಿ ಮಹದಾ
ಹವದೊಳಿಳಿದುದು ಕೃಷ್ಣನೊಲಿದರಿಗಾವುದರಿದೆಂದ ೧೦

ಹಿಡಿವ ಬಿಡುವೊಬ್ಬುಳಿಗೆ ತಹ ಬಲ
ನೆಡಕೆ ಹಾಯ್ಕುವ ಸುತ್ತಲೊತ್ತುವ
ತಡೆವ ನಡಸುವ ಸೆಳೆವ ತಿರುಹುವ ಹದಿರ ಜೋಕೆಯಲಿ
ಗಡಣಿಸಿದನವನಿಭಪತಿಯನವ
ಗಡಿಸಿ ನೂಕಿದೊಡಮಮ ದಿಕ್ಕರಿ
ನಡುಗೆ ಚೌಕದ ಕಳನ ತುಳಿದುದು ಸುಪ್ರತೀಕಗಜ ೧೧

ಇದು ಗಜಾಸುರನೋ ಮಹಾ ದೇ
ವಿದುವೆ ಮಹಿಷಾಸುರನೊ ಮಾಯಾ
ರದನಿಯೋ ದಿಟವಿದನು ಗೆಲುವರೆ ಭೀಮ ಫಲುಗುಣರು
ತ್ರಿದಶ ರಿಪುಗಳ ಗಂಡನಿದು ಕಾ
ದಿದೆವು ನಾವಿಂದೆನುತ ಸುಭಟರು
ಕದಡಿ ಸರಿದುದು ಸೂರೆಗೊಂಡುದು ಬಲ ಪಲಾಯನವ ೧೨

ಮೊಗವ ಜವನಿಕೆದೆಗೆದು ನೆತ್ತಿಯ
ಬಗಿದು ಕೂರಂಕುಶದಲಾನೆಯ
ಬೆಗಡುಗೊಳಿಸಲು ಬೀದಿವರಿದುದು ಸುಭಟರೆದೆಯೊಡೆಯೆ
ಹಗೆಯ ಬಲದಲಿ ಹರಿದು ಸುಭಟರ
ಚಿಗುಳಿದುಳಿದುದು ತಲೆಗಳನು ಮುಗಿ
ಲಗಲದಲಿ ಹರಹಿದುದು ದಿಕ್ಕರಿ ಹೊಕ್ಕು ಮೋಹರವ ೧೩

ನೆಳಲು ಸುಳಿಯಲು ದಂತಿಯೆಂದ
ಪ್ಪಳಿಸೆ ವಾಸುಕಿ ನೊಂದನಂಬುಧಿ
ತುಳುಕಿದವು ಸತ್ವಾತಿಶಯವೆಂತುಟು ಮಹಾದೇವ
ತುಳಿದುದರಿ ಸುಭಟರನು ಸಾವಿರ
ತಲೆಯ ಸೆಳೆದುದು ಸೊಂಡಿಲಲಿ ವೆ
ಗ್ಗಳೆಯ ಮದಕರಿ ಕೇಣಿಗೊಂಡುದು ವೈರಿಮೋಹರವ ೧೪

ಸೀಳಿ ಹರಹಿತು ಕರಿಗಳನು ನೇ
ಪಾಳಗುದುರೆಯ ಥಟ್ಟುಗಳ ಹಿಂ
ಗಾಲಲಣೆದುರು ರಥವನೈದಾರೇಳನೊಂದಾಗಿ
ತೋಳೊಳಗೆ ನೆಗ್ಗೊತ್ತಿ ಮಿಗೆ ಕಾ
ಲಾಳ ತೊತ್ತಳದುಳಿದು ಕಾಲನ
ಗೂಳೆಯಕ್ಕುಪಕಾರಿಯಾದುದು ಸುಪ್ರತೀಕಗಜ ೧೫

ದ್ವಿಗುಣ ತ್ರಿಗುಣದಲಣೆದು ಜೋಡಿಸಿ
ಚಿಗಿದು ಹಾಯ್ಕುವ ಮೆಟ್ಟಿ ಸೀಳುವ
ತೆಗೆದು ಕಟ್ಟುವ ತಿರುಹಿ ನೂಕುವ ಹೆಡೆತಲೆಯೊಳಡಸಿ
ಉಗುರೊಳೌಕುವ ನಿಗ್ಗವದೊಳಿ
ಬ್ಬಗಿಯ ಮಾಡುವ ಕಾಲುಗೊಲೆಯಲಿ
ವಿಗಡ ಕರಿ ತುಳಿದಾಡಿತಿದಿರಿರಾದ ಪಟುಭಟರ ೧೬

ಅರೆದುದೋ ಪರಬಲವ ಕಾಲನ
ಹೊರೆದುದೋ ಮಾರಣದ ಮಂತ್ರವ
ಬರೆದುದೋ ಬವರಕ್ಕೆ ಬಲುಗೈಗಳನು ಕೈ ನೆಗಹಿ
ಕರೆದುದೋ ಬಲವೆಲ್ಲ ನೀರಲಿ
ನೆರೆದುದೋ ಮಾರ್ಬಲದ ವೀರರು
ಹರೆದುದೋ ಹವಣಿಲ್ಲ ದಂತಿಯ ಸಮರಸೌರಂಭ ೧೭

ಮುರಿದು ಮಂದರಗಿರಿ ಪಯೋಧಿಯ
ತೆರೆಗಳನು ತುಳಿವಂತೆ ರಿಪು ಮೋ
ಹರವನರೆದುದು ನುಗ್ಗುನುಸಿಯಾಯ್ತಖಿಳ ತಳತಂತ್ರ
ತೆರಳಿದರು ರಾವುತರು ರಥಿಕರು
ಹೊರಳಿಯೊಡೆದುದು ಗಜದ ಗಾವಳಿ
ಜರಿದುದಳಿದುದನಾರು ಬಲ್ಲರು ಭೂಪ ಕೇಳೆಂದ ೧೮

ಮುರಿದು ಕೊಟ್ಟುದು ದಂತಿ ಗುರುವಿ
ನ್ನುರುಬಿ ರಾಯನ ಹಿಡಿಯದಿರನಿದ
ತರುಬಲಾಪರೆ ಬರಲಿ ಸಾತ್ಯಕಿ ನಕುಲ ಪವನಜರು
ಇರಿತಕಿವರಂಜಿದರೆ ಪಾರ್ಥಂ
ಗರುಹಿ ಬೇಗದೊಳೆನುತ ನಾಯಕ
ರೊರಲುತಿರಲನುವಾದುದಿತ್ತಲು ದೊರೆಗಳೊಗ್ಗಿನಲಿ ೧೯

ಅಳ್ಳೆದೆಯ ಮನ್ನೆಯರನೊಗ್ಗಿನ
ಡೊಳ್ಳುಗರ ಕಟವಾಯ ಕೊಯ್ ತಲೆ
ಗಳ್ಳರಿವದಿರು ತರಿಚುಗೆಡೆವರ ಹೋಗ ಹೇಳೆನುತ
ಬಿಲ್ಲಗೊಲೆಗೇರಿಸುತ ಚೌಪಟ
ಮಲ್ಲ ಹೊಕ್ಕನು ಭೀಮ ಭಟರ
ಲ್ಲಲ್ಲಿ ಕವಿದುದು ದ್ರುಪದ ನಕುಲ ಯುಧಿಷ್ಠಿರಾದಿಗಳು ೨೦

ಕರಿ ಬಲುಹು ಕಲಿ ಭೀಮಸೇನನು
ದುರುಳನಿನ್ನೇನಹನೆನುತ ಮೋ
ಹರಿಸಿ ಕವಿದುದು ಮತ್ಸ್ಯ ಸೃಂಜಯ ಪಂಚ ಕೈಕೆಯರು
ತಿರುವಿಗಂಬನು ತೊಡಚಿ ಸಾತ್ಯಕಿ
ನರನ ಮಗ ಹೈಡಿಂಬ ಯವನೇ
ಶ್ವರರು ಧೃಷ್ಟದ್ಯುಮ್ನ ಮೊದಲಾಗೈದಿದರು ಗಜವ ೨೧

ಗಿರಿಯ ತರಿವರೆ ಶಕ್ರನಲ್ಲದೆ
ನೆರೆದ ದಿವಿಜ ಸಮೂಹ ಮಾಡುವ
ಭರವಸಿಕೆ ತಾನೇನು ಹೊದ್ದಿದರಿವರು ದಿಗ್ಗಜವ
ಸರಳ ಬಲುವಳೆಗಾಲವಹಿತ
ದ್ವಿರದ ಗಿರಿಯಲಿ ಕಾಣಲಾದುದು
ಕೆರಳಿ ಕರಿ ಕೈಕೊಂಡುದರೆಯಟ್ಟಿತು ಮಹಾರಥರ ೨೨

ಚೆಲ್ಲಿತಿದು ದೆಸೆದೆಸೆಗೆ ಚೌಪಟ
ಮಲ್ಲ ಗಿಲ್ಲರ ಪಾಡೆ ನಮ್ಮದು
ಬಲ್ಲಿತಹುದುಸುರಿಲ್ಲದೊಡಲಿನ ಚೆಲುವು ಫಲವೇನು
ಅಲ್ಲಿ ದೈವದ ನೆನೆಹು ಘನ ಜಯ
ವೆಲ್ಲಿಯದು ನಮಗಿನ್ನು ಸಾಕಿ
ನ್ನೆಲ್ಲವೇತಕೆ ಚಿತ್ತವಿಸು ಚೌದಂತನಾಹವವ ೨೩

ಸೆಳೆವಿಡಿದು ತುರುಗಾಹಿ ಪಶು ಸಂ
ಕುಲವ ತೆವರುವವೋಲು ವಾಯಸ
ಕುಲವನೊಂದೇ ಗೂಗೆ ಹೊಯ್ದರೆಯಟ್ಟುವಂದದಲಿ
ಬಲುಕಣಿಗಳಿವದಿರನು ಕರಿ ಮುಂ
ಕೊಳಿಸಿ ಕೆಡಹಿತು ಯವನ ಕೌಸಲ
ಬಲವ ಕೈಕೆಯ ಮಗಧ ಭೂಪರ ಕೊಡಹಿ ಹಾಯಿಕಿತು ೨೪

ಹಿಡಿಹಿಡಿಯಲೋಡಿದನು ದ್ರುಪದನು
ಸಿಡಿದು ಕೆಲಸಾರಿದನು ಪವನಜ
ನೊಡಲುಸುರ ಸಂಬಂಧವಳಿದುದು ಸಿಲುಕಿದನಿಬರಿಗೆ
ಒಡೆಮುರಿದು ಸಾತ್ಯಕಿಯ ರಥವನು
ತುಡುಕಿ ಹಾಯ್ಕಿತು ಭೀಮತನಯನ
ಕೊಡಹಿ ಬಿಸುಟುದು ಕೊಂದುದಗಣಿತ ಕರಿ ತುರಂಗಮವ ೨೫

ಮರಳಿ ಮತ್ತೆ ಮಹಾರಥರು ಸಂ
ವರಿಸಿಕೊಂಡುದು ಸರಳ ಮಳೆಗಳ
ಸುರಿದರಾನೆಯ ಮೇಲೆ ಜೋದರ ಕೋಲ ಮನ್ನಿಸದೆ
ಗಿರಿಯ ಮುತ್ತಿದ ಮಿಂಚುಬುಳುವಿನ
ಹೊರಳಿಯಂತಿರೆ ಹೊನ್ನ ಬರಹದ
ಸರಳು ಮೆರೆದವು ಕರೆದರದುಭುತ ಕಣೆಯ ಸರಿವಳೆಯ ೨೬

ಬಾಲರೆಸುಗೆಯ ಮಿಟ್ಟೆಯಂಬಿಗೆ
ಸೋಲುವುದೆ ಗಿರಿ ವೈರಿ ಸುಭಟರ
ಕೋಲ ಕೊಂಬುದೆ ವೀರ ಕುಂಜರ ಮತ್ತೆ ಮೊಗ ನೆಗಹಿ
ಆಳೊಳಗೆ ಬೆರಸಿತು ಮಹಾ ರಥ
ರೋಳಿ ಮುರಿದುದು ಕುರಿಯ ಹಿಂಡಿನ
ತೋಳನೈ ನಿನ್ನಾನೆ ಸವರಿತು ಮತ್ತೆ ಮಾರ್ಬಲವ ೨೭

ಹಡಗು ಜಲಧಿಯೊಳೋಡಿ ಗಿರಿಗಳ
ನೆಡಹಿ ನುಗ್ಗಾದಂತೆ ಸುಭಟರ
ಗಡಣ ಗಜವನು ತಾಗಿ ತಾಗಿ ವಿಘಾತಿಯಲಿ ನೊಂದು
ಒಡಲ ಮೇಲೆಳ್ಳನಿತು ಮೋಹವ
ಹಿಡಿಯದಿವರೌಕಿದರು ಹಾವಿನ
ಕೊಡನು ದೋಷಿಗೆ ಸುಲಭವೇ ಧೃತರಾಷ್ಟ್ರ ಕೇಳೆಂದ ೨೮

ಮುರಿದು ಮೋದಿತು ಸಮ್ಮುಖದೊಳಿ
ಟ್ಟೊರಸಿತೆಡದಲಿ ಹೊಯ್ದು ಸೀಳಿತು
ಹರಹಿತಪಸವ್ಯದಲಿ ಮೆದೆಗೆಡಹಿತು ಮಹಾರಥರ
ಹೊರೆದ ರಕುತದ ಧಾರೆಗಳ ತುದಿ
ಕರದೊಳೆಳಲುವ ತಲೆಗಳಂಘ್ರಿಯೊ
ಳೊರೆದ ನೆಣನಡಗಿನ ಮಹಾಗಜ ಮೊಗೆದುದರಿಬಲವ ೨೯

ಹಿಂದೆ ಹಿಡಿವರು ಮುರಿದರೆಡದಲಿ
ಸಂದಣಿಸುವರು ತಿರುಗಿದರೆ ಬಲ
ದಿಂದ ಕೈ ಮಾಡುವರು ಕವಿದರೆ ಸಿಡಿವರೆಡಬಲಕೆ
ಮುಂದೆ ಕಟ್ಟುವರಟ್ಟಿದರೆ ಮುರಿ
ವಿಂದ ಜಾರುವರಾ ಮಹಾರಥ
ವೃಂದ ಕಾದಿತು ಮದಕರಿಯ ಬೇಸರದೆ ಬಳಿಸಲಿಸಿ ೩೦

ಕರಿಯ ಕೋಲಾಹಲವನಾ ಜೋ
ದರ ಶರೌಘವ ಸೈರಿಸುತ ಮು
ಕ್ಕುರಿಕಿ ಧರ್ಮಜ ನಕುಲ ಸಾತ್ಯಕಿ ಭೀಮ ನಂದನರು
ಸರಳ ಸಾರವ ಕಟ್ಟಿದರು ಮಿಗೆ
ಕೆರಳಿದನು ಭಗದತ್ತನನಿಬರ
ಹರೆಗಡಿದು ಹೊಗರಂಬ ಸುರಿದನು ಸರಿದರತಿರಥರು ೩೧

ಹತ್ತು ಶರದಲಿ ಧರ್ಮಜನನಿ
ಪ್ಪತ್ತರಿಂದಭಿಮನ್ಯುವನು ತೊಂ
ಬತ್ತು ಶರದಲಿ ನಕುಲ ಸಾತ್ಯಕಿ ದ್ರುಪದ ಕೈಕೆಯರ
ಕೆತ್ತಿದನು ಹದಿನೆಂಟು ಬಾಣದ
ಲಿತ್ತ ಭೀಮನ ನಂದನನನೈ
ವತ್ತು ಶರದಲಿ ಸಕಲ ರಥಿಕರನೆಚ್ಚು ಬೊಬ್ಬಿರಿದ ೩೨

ಬಿನುಗುಗಳ ತೆಗೆ ಭೀಮಸೇನನ
ಮೊನೆಗೆ ಬಿಡು ಬಿಡು ಗಜವನೆಂದು
ಬ್ಬಿನಲಿ ತಿರುಹಿದನಾನೆಯನು ಪವನಜನ ಸಮ್ಮುಖಕೆ
ಧನುವ ಬಿಸುಟನು ಗದೆಯ ತುಡುಕಿದ
ನನುವರದೊಳಡ್ಡೈಸಿ ದಂತಿಯ
ಕನಲಿಸಿದನೊಳಹೊಕ್ಕು ಹೊಯ್ದನು ಸಿಂಹನಾದದಲಿ ೩೩

ಭುಜದ ಸಾಹಸ ಹತ್ತು ಸಾವಿರ
ಗಜದ ಘಾಡಿಕೆ ಸಿಂಹನಾದದ
ವಿಜಯ ವಿಗ್ರಹ ವೀರ ಹಳಚಿದನಮಮ ಮದಕರಿಯ
ತ್ರಿಜಗ ತಲೆಕೆಳಗಾಗೆ ದಿವಿಜ
ವ್ರಜ ಭಯಂಗೊಳೆ ಮಿಕ್ಕು ಸುರಪನ
ಗಜದ ಹೊಯ್ ಕೈಯಾನೆ ಹೆಣಗಿತು ಭೀಮಸೇನನಲಿ ೩೪

ಚಿಗಿದು ಹರಿಸುತ ಹಳಚಿದರೆ ಕುಲ
ದಿಗಿಭವೆದೆಯೊಡೆದವು ನಗಂಗಳ
ಬಿಗುಹು ಸಡಿಲಿತು ಧರಣಿ ನೆಗ್ಗಿತು ಚರಣ ಹತಿಗಳಲಿ
ಜಿಗಿವ ರಕುತದ ಗದೆಯ ಬಿರುವೊ
ಯ್ಲುಗಳೊಳಗೆ ಕಿಡಿ ಮಸಗಿ ಕಬ್ಬೊಗೆ
ನೆಗೆಯೆ ಹೊಯ್ದನು ಭೀಮ ಲಂಘಿಸಿ ಗಜದ ಮಸ್ತಕವ ೩೫

ಹೊಯ್ದು ಹಿಂಗದ ಮುನ್ನ ಭೀಮನ
ಕೈದುಡುಕಿದರೆ ಮುರಿದು ಹಿಂದಕೆ
ಹಾಯ್ದಡೊಡೆಮುರಿಯಿತ್ತು ಕುಸಿದರೆ ಕಾಲೊಳೊಡೆಯವುಚಿ
ಮೈದೆಗೆದರಿಟ್ಟಣಿಸಿ ಪೂತ್ಕೃತಿ
ಗೈದು ಸುಭಟನ ಸಿಂಹನಾದಕೆ
ಮುಯ್ದೆಗೆದು ಕರಿ ಕಾದುತಿರ್ದುದು ಭೀಮಸೇನನಲಿ ೩೬

ನೆಳಲುಗಂಡವ್ವಳಿಸುವುದು ಸುಂ
ಡಿಲನು ತೂಗಾಡುವುದು ಹೋರಿದು
ಬಳಲುವುದು ಮೊಗ ನೆಗಹಿ ಭೀಮನ ದನಿಯನಾಲಿಪುದು
ಅಳಿಯ ಮುತ್ತಿಗೆಗಳನು ಬೀಸದೆ
ನೆಲಕೆ ಕಿವಿಯನು ಜೋಲುಬಿಡುವುದು
ಬಲುಕಣಿಯ ಹಿಡಿಹಿಂಗೆ ಲಾಗಿಸುತಿರ್ದುದಾ ದಂತಿ ೩೭

ಭೀಮನಿನ್ನರೆಘಳಿಗೆಯಲಿ ನಿ
ರ್ನಾಮನೋ ತಡವಿಲ್ಲ ದಂತಿಯ
ತಾಮಸಿಕೆ ಘನ ತೆಗೆಯಿ ತಮ್ಮನನೆನುತ ಕಳವಳಿಸೆ
ಭೂಮಿಪತಿ ಕೈಕೊಂಡನೊಡನೆ ಸ
ನಾಮರೈದಿತು ನಕುಲ ಸಾತ್ಯಕಿ
ಭೀಮಸುತನಭಿಮನ್ಯು ದ್ರುಪದ ಶಿಖಂಡಿ ಕೈಕೆಯರು ೩೮

ಮತ್ತೆ ರಥವರುವತ್ತು ಸಾವಿರ
ಮುತ್ತಿಕೊಂಡುದು ಗಜವನಾ ಭಗ
ದತ್ತ ಬಳಲಿದನವಧಿಯಿಲ್ಲದೆ ಶರವ ನೆರೆ ತುಳುಕಿ
ಮೆತ್ತಿದವು ಶರವಿಭದ ಮೆಯ್ಯಲಿ
ಬೆತ್ತ ಬೆಳೆದದ್ರಿಯವೊಲಿದ್ದುದು
ಮತ್ತಗಜ ನೊಂದರಿಯದನಿಬರ ಬಾಣ ಹತಿಗಳಲಿ ೩೯

ಕರಿ ವಿನೋದದಿ ಕುಡಿದ ಜಲವನು
ಕರಣಿಯಲಿ ತೆಗೆತೆಗೆದು ರಿಪು ಮೋ
ಹರಕೆ ಚೆಲ್ಲಿತು ಕಲ್ಪಮೇಘದ ಬಸುರ ಬಗಿದಂತೆ
ಕರ ತುಷಾರದಲಿವರು ಮೋರೆಯ
ತಿರುಹೆ ನನೆದವು ಬಾಹುರಿಕೆ ಹ
ಕ್ಕರಿಕೆ ಹಲ್ಲಣ ಜೋಡು ಸೀಸಕ ಛತ್ರ ಚಮರಿಗಳು ೪೦

ಸಾಕು ಬಳಲಿದಿರಕಟಕಟ ನಿಮ
ಗೇಕೆ ಸಂಗರವಾನೆಯೊಡನೆ ಪಿ
ನಾಕಿ ಸಮರದೊಳಳುಕುವನು ಕರಿ ನಿಮ್ಮ ಪಾಡೇನು
ಆ ಕಿರೀಟಿಯ ಕರಸಿಕೊಳ್ಳಿ ವಿ
ವೇಕವುಳ್ಳರೆ ತೊಲಗಿಯೆನುತವೆ
ನೂಕಿದನು ಭಗದತ್ತನನಿಬರ ಮೇಲೆ ದಿಗ್ಗಜವ ೪೧

ಮಿಗೆ ತಿಮಿಂಗಿಲನೊಡನೆ ಹುಲು ಮೀ
ನುಗಳು ಮಾಡುವುದೇನು ಹೊರ ಕಾ
ಲುಗಳ ಹೋರಟೆ ಕಾಣಲಾದುದು ಪರರ ಥಟ್ಟಿನಲಿ
ತೆಗೆಯೆ ರಿಪುಬಲ ಕೊಲುತ ಬಂದುದು
ದಿಗಿಭವಿದರೊಡನೈದಿ ದ್ರೋಣಾ
ದಿಗಳು ಹೊಕ್ಕುದು ಧರ್ಮಪುತ್ರನ ಹಿಡಿವ ತವಕದಲಿ ೪೨

ತಿದ್ದಿತೋ ಕಲಿ ಪಾರ್ಥನಿದ್ದರೆ
ಹೊದ್ದ ಹೇಳೋ ರಾಯದಳವಡಿ
ಗದ್ದುದೋ ಬಿದ್ದುದು ಭಯಾಂಬುಧಿಯೊಳಗೆ ಭಟನಿಕರ
ಹದ್ದು ಕಾಗೆಯ ಮನೆಗೆ ಬಾಣಸ
ವಿದ್ದುದೋ ಗಜವೆನುತ ಬೊಬ್ಬಿಡು
ತಿದ್ದುದರಿ ಬಲವಿತ್ತ ಹರಿ ಕೇಳಿದನು ಕಳಕಳವ ೪೩

ಮರಳು ಫಲುಗುಣ ಸುಪ್ರತೀಕದ
ಖುರಪುಟವ ನೋಡಿತ್ತಲಗ್ಗದ
ಪರಶುರಾಮನ ಖಾತಿಗಂಬುಧಿ ನೆಲನ ಬಿಡುವಂತೆ
ತೆರಳುತಿದೆ ನಮ್ಮವರು ದಿಕ್ಕರಿ
ಹರಹಿ ಕೊಲುತಿದೆ ಮಾತಿಗಿಲ್ಲವ
ಸರವೆನುತ ಕರಿಯತ್ತ ತಿರುಹಿದನಸುರರಿಪು ರಥವ ೪೪

ಹೆದರದಿರು ನರ ಹೋಗದಿರು ಹೋ
ಗದಿರು ಕೊಡು ಕೊಡು ಕಾಳೆಗವನೆಂ
ದದಟರಟ್ಟಿತು ವೀರ ಸಮಸಪ್ತಕರು ಸೂಠಿಯಲಿ
ಇದಿರಲಿನಸುತ ಶಲ್ಯರಡಗ
ಟ್ಟಿದರು ಖತಿಯಲಿ ಪಾರ್ಥನನಿಬರ
ಸದೆದು ವಹಿಲದಲೈದಿದನು ದಿಕ್ಕರಿಯ ಸಮ್ಮುಖಕೆ ೪೫

ಬಲು ಬಿಸಿಲೊಳುರೆ ನೊಂದ ನೈದಿಲೆ
ಗಳಿಗೆ ಚಂದ್ರಿಕೆ ದೈತ್ಯರುರುಬೆಗೆ
ಸಿಲುಕಿದಮರರಿಗಸುರಹರನ ಕಟಾಕ್ಷವಿಕ್ಷೇಪ
ಬಲಿದ ತಾಪತ್ರಯದ ಭವಗೋ
ಟಲೆಯ ಜೀವಿಗೆ ಸುಪ್ರಬೋಧದ
ಸುಳುವಿನಂತಿರೆ ಪಾರ್ಥ ಮೈದೋರಿದನು ನಿಜಬಲಕೆ ೪೬

ಕೆದರಿತೀ ಬಲ ಬೆರಳ ತುಟಿಗಳೊ
ದರಿತಾ ಬಲ ತಾಪಶಿಖಿಯಲಿ
ಕುದಿದುದೀ ಬಲ ಭೀತಿಕಂಚುಕ ಕಳೆದುದಾ ಬಲಕೆ
ಕದಡಿತೀ ಬಲ ರೋಮಪುಳಕವ
ಹೊದೆದುದಾ ಬಲ ಹಿಂಡೊಡೆದು ನೆರೆ
ಕದುಬಿತೀ ಬಲ ನೆರೆದುದಾ ಬಲ ನರನ ರಥ ಸುಳಿಯೆ ೪೭

ಗಿರಿಯ ವಿಸಟಂಬರಿಯನಮರೇ
ಶ್ವರನು ತಡೆವವೊಲಳ್ಳಿರಿವ ದಿ
ಕ್ಕರಿಯನಡಗಟ್ಟಿದನು ಕಾಯದೊಳೊಟ್ಟಿದನು ಶರವ
ಕೆರಳಿದನು ಭಗದತ್ತನಿವನೇ
ನರನು ಫಡ ನಿಲ್ಲು ನಿಲ್ಲೆನು
ತುರು ಶರೌಘವ ಕರೆದು ಮುಸುಕಿದನರ್ಜುನನ ರಥವ ೪೮

ಪೂತುರೇ ಭಗದತ್ತ ಬಿಲು ವಿ
ದ್ಯಾತಿಶಯ ಕಿರಿದುಂಟಲಾ ಶರ
ಪಾತವಿನಿತಿಲ್ಲದಡೆ ಹೊಳ್ಳಿಸಬಹುದೆ ನೃಪ ಧನವ
ನೂತನ ದ್ವಿಪದಿಂದ ವೈರಿ
ವ್ರಾತವನು ಸೋಲಿಸಿದ ಗರ್ವದ
ರೀತಿಗಿದು ಠಾವಲ್ಲೆನುತ ತೆಗೆದೆಚ್ಚನಾ ಪಾರ್ಥ ೪೯

ನರನ ಶರಜಾಲವನು ಖಂಡಿಸಿ
ಸುರಿದನಂಬನು ಕೃಷ್ಣರಾಯನ
ಸಿರಿಯೊಡಲ ಸೋಂಕಿದವು ನೂಕಿದವಂಬು ಗರಿ ಸಹಿತ
ನರನ ಕುದುರೆಯ ಮೇಲೆ ಸಿಂಧದ
ಹರಿಯ ತನುವಿನ ಮೇಲೆ ತಳಿತವು
ಶರನಿಕರ ಬಿಡದೆಚ್ಚನಾ ಭಗದತ್ತನರ್ಜುನನ ೫೦

ಸೆಳೆದು ಬಾಣತ್ರಯದಲೆಚ್ಚನು
ಫಲುಗುಣನ ಮಕುಟವನು ಮುರಿದುದು
ಕೆಲಕೆ ಸಡಿಲುವ ಮಣಿಗಳಲಿ ವರಮೌಳಿಯೋಸರಿಸೆ
ಬಲಿದು ಸಸಿನವ ಮಾಡಿ ಖಾತಿಯ
ತಳೆದು ಕೂರಂಬಿನಲಿ ಹೂಳಿದ
ನಳವಿನಲಿ ರಿಪುಗಜವನಾ ಭಗದತ್ತನವಯವವ ೫೧

ಇಳುಹಿದನು ಬಲುಗುಳವ ಖಂಡಿಸಿ
ಕಳಚಿದನು ಮೊಗರಂಬವನು ಹೊ
ಮ್ಮಿಳಿಯ ಕುಣಿಕೆಯ ಮುರಿದು ತರಿದನು ಸುತ್ತ ರೆಂಚೆಗಳ
ಹಳವಿಗೆಯನಾ ಛತ್ರಚಮರಾ
ವಳಿಯ ಸೀಳಿದು ಬಿಸುಟನಾ ಗಜ
ತಿಲಕ ಮುಂಡಾಸನದಲಿರ್ದುದು ಭೂಪ ಕೇಳೆಂದ ೫೨

ಮತ್ತೆ ಖಾತಿಯೊಳಂಕುಶದಿನೊಡೆ
ಯೊತ್ತಿ ಬಿಟ್ಟನು ಗಜವನರ್ಜುನ
ನತ್ತಲಿಭ ತೂಳಿದಡೆ ತಿರುಹಿದನಸುರರಿಪು ರಥವ
ಇತ್ತ ಬಲದಲಿ ಬಲಕೆ ಮೊಗವಿಡ
ಲತ್ತಲೆಡದಲಿ ಮರಳಲಲ್ಲಿಂ
ದತ್ತ ತಿರುಗಿಸಿ ಬಳಲಿಸಿದನಸುರಾರಿ ದಿಗ್ಗಜವ ೫೩

ಸಾರಥಿಯ ಕೊಂದಲ್ಲದರ್ಜುನ
ತೀರುವವನಲ್ಲೆನುತ ದಳ್ಳುರಿ
ಧಾರೆಯಂಬೈದರಲಿ ದೇವನನೆಸಲು ಮಧ್ಯದಲಿ
ಹಾರಿಸಿದನಾ ಪಾರ್ಥನಿವನೆಡೆ
ಗೋರಿದನಲಾಯೆನುತ ಕೆಡೆಯೆನು
ತಾರಿ ಸುರಿದನು ನೂರು ಬಾಣವನರ್ಜುನನ ಮೇಲೆ ೫೪

ಅನಿತು ಶರವನು ಕಡಿದು ಭಗದ
ತ್ತನ ಧನುವನಿಕ್ಕಡಿಗಡಿಯೆ ಕಂ
ಗನೆ ಕನಲಿ ಗವಸಣಿಗೆಯಿಂದುಗಿದನು ನಿಜಾಯುಧವ
ದಿನಪ ಕೋಟಿಯ ರಶ್ಮಿಯನು ತುದಿ
ಮೊನೆಯೊಳುಗುಳುವ ಬಾಯಿ ಧಾರೆಯ
ತನಿಯುರಿಯ ತೆಕ್ಕೆಯಲಿ ಥಳಥಳಿಸುವ ಮಹಾಂಕುಶವ ೫೫

ತೈಲ ಲೇಪದ ನಯದ ಹೊಗರಿನ
ಜಾಳಿಗೆಯ ಗಹಗಹಿಕೆಗಳ ಹೂ
ಮಾಲೆಗಳ ಸಿಂಪಿಸಿದ ಗಂಧದ ಬಂಧದಕ್ಷತೆಯ
ಕೀಲಣೆಯ ಮಣಿವೆಳಗುಗುಳ ಹರಿ
ದಾಳಿಯಲಿ ಕಾಳೋರಗನ ಕುಡಿ
ನಾಲಿಗೆಯವೋಲೆಸೆದುದಂಕುಶ ಭಟನ ಮುಷ್ಟಿಯಲಿ ೫೬

ಕುಡಿ ಕಿರೀಟಿಯ ರಕುತವನು ಹಗೆ
ಕೆಡಲಿ ಕೌರವ ರಾಯನಾಳಲಿ
ಪೊಡವಿಯನು(ದು?) ಪರಿತೋಷವಾಗಲಿ ನೃಪನ ಮಿತ್ರರಿಗೆ
ತಡೆದು ಹಲಕಾಲದಲುಪಾಸಂ
ಬಡಿಸಿದೆನ್ನದು ದೋಷ ಖಾತಿಯ
ಹಿಡಿಯದಿರು ನೀನೆನುತ ತಿರುಹಿಟ್ಟನು ಮಹಾಂಕುಶವ ೫೭

ತೀರಿತಿನ್ನೇನಕಟ ಪಾಂಡವ
ವೀರರುಬ್ಬಟೆ ಹಾರಿತೇ ತ್ರಿಪು
ರಾರಿಯುರಿಗಣ್ಣಿಂದ ಸೋಲದ ಕೈದುಗೊಂಡನಲ
ಧಾರುಣಿಯನಿನ್ನುಣಲಿ ಧರ್ಮ ಕು
ಮಾರನಕಟಿನ್ನಾರು ಕಾವವ
ರಾರೆನುತ ತಲ್ಲಣಿಸುತಿರ್ದುದು ಪಾಂಡುಸುತ ಸೇನೆ ೫೮

ಹಾ ಯುಧಿಷ್ಠಿರ ರಾಯ ಶಿವ ಶಿವ
ವಾಯುಸುತ ಹಾ ಪಾರ್ಥ ಹಾ ಮಾ
ದ್ರೇಯರಿರ ಹಾಯೆನುತ ಹರೆದುದು ಸೇನೆ ದೆಸೆದೆಸೆಗೆ
ಬಾಯ ಬಿಟ್ಟುದು ದಿವಿಜಬಲ ನಿ
ರ್ದಾಯದಲಿ ನೆಲನಾಯಿತಲ ಕುರು
ರಾಯಗೆನುತಿರ್ದುದು ಜಗತ್ರಯವೊಂದು ನಿಮಿಷದಲಿ ೫೯

ಇದರ ಪಾಡೇನೇಸಪಾಯವ
ನೊದೆದು ಕಳೆಯರು ಕೃಷ್ಣಭಕ್ತರು
ಸದರವೇ ಉರಿಗೆಂಡವೊರಲೆಯ ಬಾಯ್ಗೆ ಭಾವಿಸಲು
ಹೊದರುಗಿಡಿಗಳ ಹೊಗೆಯ ಹೇರಾ
ಳದಲಿ ಬಹ ದಿವ್ಯಾಯುಧಕೆ ಚಾ
ಚಿದನು ವಕ್ಷಸ್ಥಳವನಸುರಾರಾತಿಯಡಹಾಯ್ದು ೬೦

ಮೆರೆದುದುರದಲಿ ಕೌಸ್ತುಭದ ಮಣಿ
ಮರಿಯನಿಳುಹಿದ ವೋಲು ಬೆಳಗಿನ
ತುರುಗಲಲಿ ತೂಗಾಡುತಿದ್ದುದು ಕೈದು ತೊಡವಾಗಿ
ಮುರಿದುದಗ್ಗದ ಭೀತಿ ಹರುಷದ
ಸೆರೆಗೆ ಬಿಡುಗಡೆಯಾಯ್ತು ಬಲು ಬೊ
ಬ್ಬಿರಿವುತಿರ್ದುದು ವೈರಿಕಟಕದೊಳರಸ ಕೇಳೆಂದ ೬೧

ಕೌತುಕವನಿದ ಕಂಡು ಫಲುಗುಣ
ಕಾತರಿಸಿ ನುಡಿದನು ಮುರಾಂತಕ
ಸೂತತನಕಲಸಿದನೆ ಕಾದಲಿ ಕೌರವನ ಕೂಡೆ
ಸೂತತನವೇ ಸಾಕು ತನಗೆನು
ತಾ ತತುಕ್ಷಣ ಧನುವ ಬಿಸುಟು ವಿ
ಧೂತ ರಿಪುಬಲ ಪಾರ್ಥನಿದ್ದನು ಹೊತ್ತ ದುಗುಡದಲಿ ೬೨

ತಿರುಗಿ ಕಂಡನು ಕೃಷ್ಣನೀತನ
ಪರಿಯನರಿದನು ಮನದಲಿವನು
ತ್ತರವ ಕೇಳುವೆವೆಂದು ಪಾರ್ಥನ ನುಡಿಸಿದನು ನಗುತ
ಉರವಣಿಸುತಿದೆ ಮತ್ತೆ ಕರಿ ನಿಜ
ಕರದೊಳಾಯುಧವಿಲ್ಲ ಘನ ಸಂ
ಗರಕೆ ಬೇಸರು ತೋರಿತೇ ತನ್ನಾಣೆ ಹೇಳೆಂದ ೬೩

ಕಾದುವಾತನು ನೀನು ವೈರಿಯ
ಕೈದುವನು ನೀ ಗೆಲಿದೆಯಿನ್ನುರೆ
ಕಾದುವವರಾವಲ್ಲ ಸಾರಥಿತನವೆ ಸಾಕೆಮಗೆ
ಕೈದುವಿದೆಕೊ ಕೃಷ್ಣ ನೀನೇ
ಕಾದು ವಾಘೆಯ ತಾಯೆನಲು ಮರು
ಳಾದನೈ ನರನೆನುತ ಮುರಾರಿಯಿಂತೆಂದ
(ಈ ಸಾಲು ಷಟ್ಪದಿಯ ಅಳತೆಗೆ ಕೂಡದು.
"ಳಾದನೈ ತಾ ನರನೆನುತ ಮುರ ವೈರಿಯಿಂತೆಂದ" ಇರಬೇಕು - ಸಂ) ೬೪

ಆಡಬಾರದು ತೋರಿ ನುಡಿದರೆ
ಖೋಡಿ ನಿನಗಹುದೆಲೆ ಮರುಳೆ ನೀ
ನೋಡಲೆವೆ ಸೀವವು ಕಣಾ ನಿನ್ನಳವಿನಾಯುಧವೆ
ಹೂಡಲಾಪುದು ಜಗವನಂತಕ
ಗೂಡಲಾಪುದು ಮುನಿದರಿದ ಕೈ
ಮಾಡುವರೆ ನಿಲಬಾರದಜ ರುದ್ರಾಮರೇಂದ್ರರಿಗೆ ೬೫

ವಿಲಸದುಪನಿಷದುರು ರಹಸ್ಯವ
ತಿಳುಹಿದೆನು ನಿನಗೊಮ್ಮೆ ಮತ್ತೆಯು
ತಿಳಿದುದಿಲ್ಲಾ ಕ್ಷತ್ರತಾಮಸ ಬಿಡದು ಬುದ್ಧಿಯಲಿ
ಸುಲಭವಂತರ್ನಿಷ್ಠರಿಗೆ ನಿ
ಷ್ಕಳ ನಿರೂಪನನಂತ ನಿಜ ನಿ
ರ್ಮಳವೆನಿಪ ಪರಮಾತ್ಮ ಚಿನುಮಯ ರೂಪ ತಾನೆಂದ ೬೬

ಸಂಗಿಯಲ್ಲದ ವಿಮಳ ಪರಮಾ
ತ್ಮಂಗೆ ಲೀಲೆಯೊಳಾಯ್ತು ಮಾಯಾ
ಸಂಗವದರಿಂದಾಯ್ತು ನಾಲಕು ಮೂರ್ತಿಗಳು ತನಗೆ
ಅಂಗಿಯಂಗ ವಿಭಾಗವಿಲ್ಲದ
ಭಂಗ ಸನ್ಮಾತ್ರಂಗೆ ಭಾವಿಸ
ಲಂಗ ಕಲ್ಪನೆ ಮಿಥ್ಯವಲ್ಲಾ ಪಾರ್ಥ ಹೇಳೆಂದ ೬೭

ಇಂದು ಕಮಳಭವ ಪ್ರಜೇಶ್ವರ
ರೊಂದು ಮೂರುತಿ ವಿಷ್ಣು ಮನುಗಳು
ಸಂದ ಪಾರ್ಥಿವ ಲೋಕಪಾಲಕರೊಂದು ಮೂರ್ತಿಯದು
ಇಂದು ಶೇಖರನಗ್ನಿ ಯಮನರ
ವಿಂದಸಖ ಕಾಲಾಗ್ನಿ ಮೂರ್ತಿಯ
ರೊಂದು ಮೂರುತಿ ವಿಶ್ವದೊಳು ನಿಷ್ಯೂತ ಚೈತನ್ಯ ೬೮

ಇದುವೆ ಮತ ಕೆಲಬರಿಗೆ ಕೆಲಬರಿ
ಗಿದು ಮತವು ವಿವಿಧಾವತಾರದ
ಲುದಿಸುತೊಂದಿಹುದೊಂದು ಮೂರ್ತಿ ತಪೋ ವಿನೋದದಲಿ
ಉದಧಿಯೊಳು ವರ ಯೋಗ ನಿದ್ರಾ
ಸ್ಪದದಲೊಂದಿಹುದೊಂದಖಿಳ ವಿ
ಶ್ವದ ಸುಕೃತ ದುಷ್ಕೃತವನೀಕ್ಷಿಸುತಿಹುದು ಕೇಳೆಂದ ೬೯

ಕೆಲರು ಧರ್ಮಾರ್ಥಾದಿ ನಾಲುಕು
ಲಲಿತ ಮೂರ್ತಿಗಳೆಂಬರಿದರೊಳು
ಕೆಲರು ಜಾಗರಣಾದ್ಯವಸ್ಥೆಗಳೆಂಬ ಮೂರ್ತಿಗಳು
ತಿಳಿಯಲೋತಪ್ರೋತದಲಿ ನಿ
ಷ್ಕಳವೆ ಸಕಳವೆಯಾಗಿ ವಿಶ್ವದೊ
ಳೊಳಗು ಹೊರಗಾನಲ್ಲದಿಲ್ಲೆಲೆ ಪಾರ್ಥ ಕೇಳೆಂದ ೭೦

ಉದಧಿಶಯನನ ಮೂರ್ತಿ ಕಲ್ಪಾಂ
ತದಲಿ ಕರಗಿದ ಧರೆಯನುದ್ದರಿ
ಸಿದೆನು ಯಜ್ಞವರಾಹ ರೂಪಿನಲಂದು ಕರುಣದಲಿ
ಪದವ ಭಜಿಸಿಯೆ ಭೂಮಿ ತಾ ಬೇ
ಡಿದಳು ಪುತ್ರನನಾಕೆಯಲಿ ಜನಿ
ಸಿದನು ನರಕಾಸುರನವಧ್ಯನು ಸಕಲ ದಿವಿಜರಿಗೆ ೭೧

ಇದು ವರಾಹನ ದಾಡೆಯಿದನಾ
ತ್ರಿದಿಶವೈರಿಗೆ ಕೊಟ್ಟೆನವನಿಂ
ದಿದುವೆ ಭಗದತ್ತಂಗೆ ಬಂದು(ದು?) ವೈಷ್ಣವಾಸ್ತ್ರವಿದು
ಇದು ಹರಬ್ರಹ್ಮಾದಿಗಳ ಗೆಲು
ವುದು ಕಣಾ ನಿಮಿಷದಲಿ ತನಗ
ಲ್ಲದೆ ಮಹಾಂಕುಶವುಳಿದ ಭಟರಿಗೆ ಮಣಿವುದಲ್ಲೆಂದ ೭೨

ತೀರಿತಾತನ ಶಕ್ತಿ ಚಾಪದ
ನಾರಿ ಬೆಸಲಾಗಲಿ ಮಹಾಸ್ತ್ರವ
ನಾರುಭಟೆಯಲಿ ಗಜವ ಮುರಿ ಕೆಡೆಯೆಸು ಮಹೀಸುತನ
ಹೋರದಿರು ಹೊಗು ಬವರಕೆನಲಸು
ರಾರಿಯಂಘ್ರಿಯೊಳೆರಗಿ ಕರುಣಾ
ವಾರಿಧಿಯೊಳಭಯವನು ಪಡೆದನು ತುಡುಕಿದನು ಧನುವ ೭೩

ಎಲವೆಲವೊ ಭಗದತ್ತ ಕಲಿತನ
ದಳವ ತೋರಿನ್ನೆನಗೆನುತ ಹೊಳೆ
ಹೊಳೆವ ಕೂರಂಬಿನಲಿ ಕೋದನು ಗಜದ ಮಸ್ತಕವ
ನಿಲುಕಿ ನೆತ್ತಿಯನೊಡೆದು ನಿಡು ಪ
ಚ್ಚಳಕೆ ಹಾಯ್ದವು ಬಾಣ ದಿಕ್ಕರಿ
ನೆಲಕೆ ದಾಡೆಯನೂರಿ ಕೆಡೆದುದು ಸುಪ್ರತೀಕಗಜ ೭೪

ಸುತ್ತಿದುರಗನ ಮಂದರಾಚಲ
ಕಿತ್ತು ಬೀಳ್ವಂದದಲಿ ಬರಿಕೈ
ಸುತ್ತಿ ಮಗ್ಗುಲನೂರಿ ಕೆಡೆದುದು ಸುಪ್ರತೀಕಗಜ
ಇತ್ತಲರ್ಜುನ ದೇವನುಗಿದನು
ಬತ್ತಳಿಕೆಯಲಿ ದಿವ್ಯ ಶರವನು
ತೆತ್ತಿಸಿದನವನುರವನಿಬ್ಬಗಿಯಾದುದರಿ ದೇಹ ೭೫

ಗಿರಿಯ ಶಿರದಲಿ ಹೂತ ಕಕ್ಕೆಯ
ಮರ ಮುರಿದು ಬೀಳ್ವಂತೆ ವಿಮಳಾ
ಭರಣ ಕಾಂತಿಯ ಕಡಲ ಕೋಮಲಕಾಯ ಭಗದತ್ತ
ಉರುಳಿದನು ಗಜದಿಂದ ಕುರುಬಲ
ಸರಿಯೆ ಸುರಕುಲ ಕುಸುಮ ವೃಷ್ಟಿಯ
ಸುರಿಯೆ ರಿಪುಸೇನೆಯಲಿ ಹರುಷದ ಹೊನಲು ಬಿರಿವರಿಯೆ ೭೬

ಹರಿದುದಗ್ಗದ ಸುಪ್ರತೀಕ
ದ್ವಿರದ ಭಗದತ್ತಾಂಕನವನಿಯೊ
ಳುರುಳಿದನು ದಳ ಮುರಿದುದಿನ್ನೇನೆನುತ ಬಲ ಬೆದರೆ
ನರನ ತಡೆದರು ಸುಬಲ ಸುತರಿ
ಬ್ಬರು ನೃಪಾಲ ಕುಮಾರರೈನೂ
ರುರುಬಿದರು ಗಾಂಧಾರ ರಾಜರು ಶಕುನಿಯೊಡಗೂಡಿ ೭೭

ಕೊಂದನಿಬ್ಬರ ಸೌಬಲರ ನೃಪ
ನಂದನರ ಗಾಂಧಾರರೊಂದೆರ
ಡೆಂದು ಸಲುಗೆಗೆ ಸಲಿಸಿ ಬಂದೈನೂರ ಬರಿಕೈದು
ಬಂದ ದ್ರೋಣನ ಹಳಚಿ ಭಂಗಕೆ
ತಂದನಹಿತ ವೃಜವನಿತ್ತಲು
ಸಂದಣಿಸಿದರು ಕೌರವರು ಪವಮಾನಸುತನೊಡನೆ ೭೮

ಗುರುತನುಜ ರವಿಸೂನು ಮಾದ್ರೇ
ಶ್ವರ ಜಯದ್ರಥ ಕೌರವಾದಿಗ
ಳರಿ ಗದಾಘಾತದಲಿ ಕೈ ಮೈ ದಣಿದು ಮನದಣಿದು
ತೆರಳಿದರು ಬಳಿಕಪರ ಜಲಧಿಯೊ
ಳುರಿವ ವಡಬನ ದೀಪ್ತಶಿಖರದೊ
ಳೆರಗುವಂತೆ ಪತಂಗ ಮಂಡಲವಿಳಿದುದಂಬರವ ೭೯

ತಿರುಗಿದರು ಕೌರವರು ದ್ರೋಣನ
ಬೆರಳ ಸನ್ನೆಗೆ ಸನ್ನೆಗಾಳೆಗ
ಳುರವಣಿಸಿತೆನೆ ತಂಬಟದ ನಿಸ್ಸಾಳ ರಭಸದಲಿ
ಮುರಿದರಿವರಳ್ಳಿರಿವ ಬೊಬ್ಬೆಯ
ಧರಧುರದ ಕಹಳೆಗಳ ಭೇರಿಯ
ಭರಿತ ರವದಲಿ ವೀರನಾರಾಯಣನ ಕರುಣದಲಿ ೮೦

(ಸಂಗ್ರಹ : ಸತ್ಯ,ಶೈಲ,ಮೋಹನ ಮತ್ತು ಪ್ರಿಯ - ಹಾಸನ)

ವಿರಾಟಪರ್ವ: ೦೫ ಐದನೆಯ ಸಂಧಿ

ಸೂ: ವೈರಿಭಟ ಸಂವರ್ತನೂತನ
ಭೈರವನು ಕಲಿಪಾರ್ಥ ಸಮರೋ
ದ್ಧಾರ ಸಾರಥಿಯಾದನಂದು ವಿರಾಟನಂದನಗೆ

ಕೇಳು ಜನಮೇಜಯ ಸುಯೋಧನ
ನಾಳು ಮುತ್ತಿತು ತುರುಗಳನು ಮೇ
ಲಾಳು ಕವಿದುದು ಭೀಷ್ಮ ಕರ್ಣ ದ್ರೋಣ ಮೊದಲಾಗಿ
ಕೋಲ ಸೂಟಿಯ ಸರಿವಳೆಗೆ ಗೋ
ಪಾಲ ಪಡೆ ಮುಗ್ಗಿದುದು ಗೋವರ
ಸಾಲ ಹೊಯ್ದರು ಕರ್ಣ ದುಶ್ಶಾಸನ ಜಯದ್ರಥರು ೧

ರಾಯ ಚೂಣಿಯ ಚಾತುರಂಗದ
ನಾಯಕರು ಮೇಳವಿಸಿ ಸಮರೋ
ಪಾಯದಲಿ ಹಿಂದಿಕ್ಕಿ ಕವಿದರು ಕೋಡಕೈಯವರು
ಸಾಯಲಲಸದ ಗೋವರನು ಕೈ
ಗಾಯದೆಸುತವ ಸೆರೆಯ ಕೊಂಡರು
ಮಾಯವಾಯಿತು ಹರಿಬಕಾರರ ಸೇನೆ ರಣದೊಳಗೆ ೨

ಮೇಲುದಳಕಿದಿರಾಗಿ ಬರೆ ಹರಿ
ಗಾಳಗದೊಳೊಡೆಮುರಿದು ಗೋವರು
ಧೂಳಿಗೋಟೆಯಗೊಂಡರಮರರ ರಾಜಧಾನಿಗಳ
ಸಾಲರಿದು ಕೆಟ್ಟೋಡಿದರು ಗೋ
ಪಾಲನೊಬ್ಬನ ಹಿಡಿದು ಮೂಗಿನ
ಮೇಲೆ ಸುಣ್ಣವ ಬರೆದು ಬಿಟ್ಟರು ಹಗೆಯ ಪಟ್ಟಣಕೆ ೩

ಗರುವ ಗೋವರು ಹುಯ್ಯಲಿಗೆ ಹರಿ
ಹರಿದು ಕೆಡೆದರು ರಾಯ ಮೋಹರ
ತೆರಳಿ ತುರುಗಳ ಹಿಡಿದು ಹಿಂದಿಕ್ಕಿದರು ಕಾಳಗಕೆ
ಬಿರುದರನು ಬರಹೇಳು ಹೋಗೆನೆ
ಕರದ ಬಿಲ್ಲನು ಬಿಸುಟು ಬದುಕಿದ
ಶಿರವ ತಡವುತ ಗೋವನೊಬ್ಬನು ಪುರಕೆ ಹರಿತಂದ ೪

ಗಣನೆಯಿಲ್ಲದು ಮತ್ತೆ ಮೇಲಂ
ಕಣದ ಭಾರಣಿ ನೂಕಿತೆಲವೋ
ರಣದ ವಾರ್ತೆಯದೇನೆನುತ ಜನವೆಲ್ಲ ಗಜಬಜಿಸೆ
ರಣವು ಕಿರಿದಲ್ಲೆನುತ ಢಗೆ ಸಂ
ದಣಿಸಲವನೈತಂದು ಮೇಳದ
ಗಣಿಕೆಯರ ಮಧ್ಯದಲಿ ಮೆರೆದಿರೆ ಕಂಡನುತ್ತರನ ೫

ಬೆಗಡು ಮುಸುಕಿದ ಮುಖದ ಭೀತಿಯ
ಢಗೆಯ ಹೊಯ್ಲಿನ ಹೃದಯ ತುದಿ ನಾ
ಲಗೆಯ ತೊದಳಿನ ನುಡಿಯ ಬೆರಗಿನ ಬರತ ತಾಳಿಗೆಯ
ಅಗಿವ ಹುಯ್ಯಲುಗಾರ ಬಹಳೋ
ಲಗಕೆ ಬಂದನು ನೃಪ ವಿರಾಟನ
ಮಗನ ಕಾಲಿಂಗೆರಗಿದನು ದೂರಿದನು ಕಳಕಳವ ೬

ಏಳು ಮನ್ನೆಯ ಗಂಡನಾಗು ನೃ
ಪಾಲ ಕೌರವ ರಾಯ ತುರುಗಳ
ಕೋಳ ಹಿಡಿದನು ಸೇನೆ ಬಂದುದು ಧರಣಿಯಗಲದಲಿ
ದಾಳಿ ಬರುತಿದೆ ಕರೆಸಿಕೋ ನಿ
ನ್ನಾಳು ಕುದುರೆಯ ರಾಣಿವಾಸದ
ಗೂಳೆಯವ ತೆಗೆಸೆಂದು ನುಡಿದನು ಬಿನ್ನಹದ ಬಿರುಬ ೭

ಏನೆಲವೊ ತುದಿ ಮೂಗಿನಲಿ ಬಿಳು
ಪೇನು ಢಗೆ ಹೊಯ್ದೇಕೆ ಬಂದೆಯಿ
ದೇನು ನಿನ್ನಿನ ರಣವನಯ್ಯನು ಗೆಲಿದುದೇನಾಯ್ತು
ಏನು ಭಯ ಬೇಡಿನ್ನು ಕಲಹನಿ
ಧಾನ ವಾರ್ತೆಯದೇನೆನಲು ಕುರು
ಸೇನೆ ಬಂದುದು ತುರುವ ಹಿಡಿದರು ಬಡಗ ದಿಕ್ಕಿನಲಿ ೮

ರಾಯ ತಾನೈತಂದನಾತನ
ನಾಯಕರು ಗುರುಸುತನು ಗುರು ಗಾಂ
ಗೇಯ ಶಕುನಿ ವಿಕರ್ಣ ಕರ್ಣ ಜಯದ್ರಥಾದಿಗಳು
ಜೀಯ ಬಿನ್ನಹ ದಳದ ತೆರಳಿಕೆ
ತಾಯಿಮಳಲಂಬುಧಿಗೆ ಮೋಹರ
ದಾಯತವ ನಾನೆತ್ತು ಬಲ್ಲೆನು ಹೊಕ್ಕು ಹೊಗಳುವರೆ ೯

ಎತ್ತ ದುವ್ವಾಳಿಸುವಡಾಲಿಗ
ಳತ್ತಲಾನೆಯ ಥಟ್ಟು ಕಾಲಾ
ಳೊತ್ತರದ ರಥವಾಜಿ (ಪಾ: ರಣವಾಜಿ) ರೂಢಿಯ ರಾಯ ರಾವುತರು
ಸುತ್ತ ಬಳಸಿಹುದೆತ್ತ ಮನ ಹರಿ
ವತ್ತ ಮೋಹರವಲ್ಲದನ್ಯವ
ಮತ್ತೆ ಕಾಣೆನು ಜೀಯ ಹದನಿದು ವೈರಿ ವಾಹಿನಿಯ ೧೦

ಒಡ್ಡಿದರೊ ಪಡಿನೆಲನನವನಿಯ
ದಡ್ಡಿಯೋ ಮೇಣೆನಲು ಝಲ್ಲರಿ
ಯೊಡ್ಡು ತಳಿತುದು ಚಮರ ಸೀಗುರಿಗಳ ಪತಾಕೆಯಲಿ
ಅಡ್ಡ ಹಾಯ್ದಿನ ಕಿರಣ ಪವನನ
ಖಡ್ಡತನ ನಗೆಯಾಯ್ತು ಕೌರವ
ನೊಡ್ಡನಭಿವರ್ಣಿಸುವಡರಿಯೆನು ಜೀಯ ಕೇಳೆಂದ ೧೧

ಒಳಗೆ ನೀ ಕಾದುವೊಡೆ ದುರ್ಗವ
ಬಲಿಸು ಬವರಕೆ ಹಿಂದುಗಳೆಯದೆ
ನಿಲುವ ಮನ ನಿನಗೀಗಲುಂಟೇ ನಡೆಯಬೇಕೆನಲು
ಕೆಲಬಲನ ನೋಡಿದನು ಮೀಸೆಯ
ನಲುಗಿದನು ತನ್ನಿದಿರ ಮೇಳದ
ಲಲನೆಯರ ಮೊಗ ನೋಡತುತ್ತರ ಬಿರುದ ಕೆದರಿದನು ೧೨

ನೂಕು ಕುನ್ನಿಯನಾಹವದ ಭೀ
ತಾಕುಳನು ತಾನೀಗ ಹೆಂಡಿರ
ಸಾಕಿ ಬದುಕುವ ಲೌಲ್ಯತೆಯಲೊಟ್ಟೈಸಿ ಬಂದೆನೆಗೆ
ಕಾಕ ಬಳಸುವನಿವನು ತಾನು
ದ್ರೇಕಿಸಿಯೆ ಸಮರದಲಿ ನಿಲಲು ಪಿ
ನಾಕಧರನಿಗೆ ನೂಕದೆಂದನು ಸತಿಯರಿದಿರಿನಲಿ ೧೩

ಎನಿತು ಬಲ ಘನವಾದೊಡೇನದು
ನಿನಗೆ ಗಹನವೆ ಜೀಯ ಜಗದಲಿ
ದಿನಪನಿದಿರಲಿ ದಿಟ್ಟತನವೇ ತಮದ ಗಾವಳಿಗೆ
ಬಿನುಗು ರಾಯರ ಬಿಂಕ ಗೋವರ
ಮೊನೆಗೆ ಮೆರೆದೊಡೆ ಸಾಕು ನಿಂದಿರು
ಜನಪ ತೋರಿಸು ಕೈಗುಣವ ಕೌರವನ ಥಟ್ಟಿನಲಿ ೧೪

ಎಂದಡುಬ್ಬರಿಸಿದನು ತಾ ಕಲಿ
ಯೆಂದು ಬಗೆದನು ಮೀಸೆಯನು ಬೆರ
ಳಿಂದ ತಿರುಹುತ ಮುಗುಳುನಗೆ ಹರುಷದಲಿ ಮೈಮರೆದ
ಸಂದಣಿಸಿ ರೋಮಾಂಚ ಕೆಲಬಲ
ದಿಂದುಮುಖಿಯರ ನೋಡಿದನು ನಲ
ವಿಂದ ನುಡಿದನು ತನ್ನ ಪೌರುಷತನದ ಪರಿಣತೆಯ ೧೫

ಅಹುದಹುದು ತಪ್ಪೇನು ಜೂಜಿನ
ಕುಹಕದಲಿ ಪಾಂಡವರ ಸೋಲಿಸಿ
ಮಹಿಯ ಕೊಂಡಂತೆನ್ನ ಕೆಣಕಿದನೇ ಸುಯೋಧನನು
ಸಹಸದಿಂದವೆ ತುರುವ ಮರಳಿಚಿ
ತಹೆನು ಬಳಿಕಾ ಕೌರವನ ನಿ
ರ್ವಹಿಸಲೀವೆನೆ ಸೂರೆಗೊಂಬೆನು ಹಸ್ತಿನಾಪುರವ ೧೬

ಹಿಡಿದು ರಾಜ್ಯವ ಕೊಂಡು ಹೆಂಗುಸ
ಬಡಿದು ಪಾಂಡವ ರಾಯರನು ಹೊರ
ವಡಿಸಿ ಕೊಬ್ಬಿದ ಭುಜಬಲವನೆನ್ನೊಡನೆ ತೋರಿದನೆ
ಬಡ ಯುಧಿಷ್ಠಿರನೆಂದು ಬಗೆದನೆ
ಕಡುಗಿದೊಡೆ ಕೌರವನ ಕೀರ್ತಿಯ
ತೊಡೆವೆನರಿಯನಲಾಯೆನುತ ಸುಕುಮಾರ ಖತಿಗೊಂಡ ೧೭

ತನಗೆ ಬಡ ಪಾಂಡವರ ತೆವರಿದ
ಮನದ ಗರ್ವದ ಕೊಬ್ಬು ಕಾಲನ
ಮನೆಯನಾಳ್ವಿಪುದಲ್ಲದಿದ್ದೊಡೆ ತನ್ನ ವೈರವನು
ನೆನೆದು ದುರ್ಯೋಧನನು ತಾ ಮೇ
ದಿನಿಯನಾಳ್ವನೆ ಹಾ ಮಹಾ ದೇ
ವೆನತಲುತ್ತರ ಬಿರುದ ನುಡಿದನು ಹೆಂಗಳಿದಿರಿನಲಿ ೧೮

ಜವನ ಮೀಸೆಯ ಮುರಿದನೋ ಭೈ
ರವನ ದಾಡೆಯನಲುಗಿದನೊ ಮೃ
ತ್ಯುವಿನ ಮೇಲುದ ಸೆಳೆದನೋ ಕೇಸರಿಯ ಕೆಣಕಿದನೊ
ಬವರವನು ತೊಡಗಿದನಲಾ ಕೌ
ರವನಕಟ ಮರುಳಾದನೆಂದಾ
ಯುವತಿಯರ ಮೊಗ ನೋಡುತುತ್ತರ ಬಿರುದ ಕೆದರಿದನು ೧೯

ಆರೊಡನೆ ಕಾದುವೆನು ಕೆಲಬರು
ಹಾರುವರು ಕೆಲರಂತಕನ ನೆರೆ
ಯೂರವರು ಕೆಲರಧಮ ಕುಲದಲಿ ಸಂದು ಬಂದವರು
ವೀರರೆಂಬವರಿವರು ಮೇಲಿ
ನ್ನಾರ ಹೆಸರುಂಟವರೊಳೆಂದು ಕು
ಮಾರ ನೆಣಗೊಬ್ಬಿನಲಿ ನುಡಿದನು ಹೆಂಗಳಿದುರಿನಲಿ ೨೦

ಪೊಡವಿಪತಿಗಳು ಬಂದು ತುರುಗಳ
ಹಿಡಿವರೇ ಲೋಕದಲಿ ಅಧಮರ
ಬಡಮನದ ಮನ್ನೆಯರ ಮೈಸಿರಿ ಕೌರವನೊಳಾಯ್ತು
ಕಡೆಗೆ ದುರಿಯತವುಳಿವುದಲ್ಲದೆ
ಬಿಡುವೆನೇ ಗೋಧನವನೆನ್ನೊಳು
ತೊಡಕಿ ಬದಕುವನಾವನೆಂದನು ಖಂಡೆಯವ ಜಡಿದು ೨೧

ಖಳನ ಮುರಿವೆನು ಹಸ್ತಿನಾಪುರ
ದೊಳಗೆ ಠಾಣಾಂತರವನಿಕ್ಕುವೆ
ತೊಲಗಿಸುವೆ ಕೌರವನ ಸೇನೆಯ ಧೂಳಿಪಟ ಮಾಡಿ
ಗೆಲವ ತಹೆನೆಂದುತ್ತರನು ಕೋ
ಮಲೆಯರಿದಿರಲಿ ಬಾಯ್ಗೆ ಬಂದುದ
ಗಳಹುತಿದ್ದನು ಬೇಕು ಬೇಡೆಂಬವರ ನಾ ಕಾಣೆ ೨೨

ಅರಿಯನೇ ಗಾಂಗೇಯನನು ತಾ
ನರಿಯದವನೇ ದ್ರೋಣ ಕುಲದಲಿ
ಕೊರತೆಯೆನಿಸುವ ಕರ್ಣನೆಂಬವನೆನಗೆ ಸಮಬಲನೆ
ಬರಿಯ ಬಯಲಾಡಂಬರದಿ ಬರಿ
ತುರುವ ಹಿಡಿದೊಡೆ ತನ್ನ ಹೆಂಡಿರ
ಸೆರೆಯ ತಾರದೆ ಮಾಣೆನೆಂದನು ನಾರಿಯರ ಮುಂದೆ ೨೩

ನುಡಿದು ಫಲವೇನಿನ್ನು ಸಾರಥಿ
ಮಡಿದ ನಿನ್ನಿನ ಬವರದಲಿ ತಾ
ನುಡುಹನಾದೆನು ಶಿವ ಶಿವಾಯಿಂದೆನ್ನ ಕೈ ಮನಕೆ
ಗಡಣಿಸುವ ಸಾರಥಿಯನೊಬ್ಬನ
ಪಡೆದನಾದೊಡೆ ಕೌರವೇಂದ್ರನ
ಪಡೆಗೆ ಹಬ್ಬವ ಮಾಡುವೆನು ತೋರುವೆನು ಕೈಗುಣವ ೨೪

ಸಾರಥಿಯ ಶಿವ ಕೊಟ್ಟನಾದೊಡೆ
ಮಾರಿಗುಬ್ಬಸವಾಗದಂತಕ
ನೂರು ತುಂಬದೆ ದೊಳ್ಳು ನೂಕದೆ ರಣಪಿಶಾಚರಿಗೆ
ದೋರೆಗರುಳಲಿ ದಾನವಿಯರೊಡ
ಲೇರು ಹತ್ತದೆ ಹಬ್ಬವಾಗದೆ
ಭೂರಿ ಬೇತಾಳರಿಗೆ ಹೋಹುದೆ ಬರಿದೆ ರಣವೆಂದ ೨೫

ಕೇಳಿದನು ಕಲಿಪಾರ್ಥನೀತನ
ಬಾಲ ಭಾಷೆಗಳೆಲ್ಲವನು ಪಾಂ
ಚಾಲೆಗೆಕ್ಕಟಿ ನುಡಿದ ನಾವಿನ್ನಿಹುದು ಮತವಲ್ಲ
ಕಾಲ ಸವೆದುದು ನಮ್ಮ ರಾಜ್ಯದ
ಮೇಲೆ ನಿಲುಕಲು ಬೇಕು ಕೌರವ
ರಾಳು ನಮಗೋಸುಗವೆ ಬಂದುದು ಕಾಂತೆ ಕೇಳೆಂದ ೨೬

ನರನ ಸಾರಥಿಯೆಂದು ನೀನು
ತ್ತರೆಗೆ ಸೂಚಿಸಿ ತನ್ನನೀಗಳೆ
ಕರೆಸೆನಲು ಕೈಕೊಂಡು ದುರುಪದಿ ಬಂದಳೊಲವಿನಲಿ
ತರುಣಿ ಕೇಳರ್ಜುನನ ಸಾರಥಿ
ವರ ಬೃಹನ್ನಳೆ ಖಾಂಡವಾಗ್ನಿಯ
ಹೊರೆದನಿವ ತಾನೆಂದು ಸತಿಯುತ್ತರೆಗೆ ಹೇಳಿದಳು ೨೭

ಕೇಳಿ ಹರುಷಿತೆಯಾದಳುತ್ತರೆ
ಯೋಲಗಕೆ ಬಂದಣ್ಣನಂಘ್ರಿಗೆ
ಲೋಲಲೋಚನೆಯೆರಗಿ ಕೈಮುಗಿದೆಂದಳೀ ಹದನ
ಕೇಳಿದೆನು ಸಾರಥಿಯ ನೆಲೆಯನು
ಕಾಳಗಕೆ ನಡೆಯಣ್ಣ ದೇವ ನೃ
ಪಾಲಕರ ಜಯಿಸೆಂದಡುತ್ತರ ನಗುತ ಬೆಸಗೊಂಡ ೨೮

ತಂಗಿ ಹೇಳೌ ತಾಯೆ ನಿನಗೀ
ಸಂಗತಿಯನಾರೆಂದರಾವವ
ನಂಗವಣೆಯುಳ್ಳವನೆ ಸಾರಥಿತನದ ಕೈಮೆಯಲಿ
ಮಂಗಳವಲೇ ಬಳಿಕ ರಣದೊಳ
ಭಂಗನಹೆ ನಿನ್ನಾಣೆ ತನ್ನಯ
ತುಂಗ ವಿಕ್ರಮತನವನುಳುಹಿದೆ ಹೇಳು ಹೇಳೆಂದ ೨೯

ಎಂದಳೀ ಸೈರೇಂಧ್ರಿ ಸುರಪನ
ನಂದನವ ಸುಡುವಂದು ಪಾರ್ಥನ
ಮುಂದೆ ಸಾರಥಿಯಾದ ಗಡ ನಾವರಿಯೆವೀ ಹದನ
ಹಿಂದುಗಳೆಯದೆ ಕರೆಸು ನಮ್ಮ ಬೃ
ಹನ್ನಳೆಯನೆನೆ ನಗುತ ಲೇಸಾ
ಯ್ತೆಂದು ಪರಮೋತ್ಸಾಹದಲಿ ಸೈರೇಂಧ್ರಿಗಿಂತೆಂದ ೩೦

ಸಾರಥಿಯ ಕೊಟ್ಟೆನ್ನನುಳುಹಿದೆ
ವಾರಿಜಾನನೆ ಲೇಸು ಮಾಡಿದೆ
ಕೌರವನ ತನಿಗರುಳ ಬಗೆವೆನು ತಡವ ಮಾಡಿಸದೆ
ನಾರಿ ನೀನೇ ಹೋಗಿ ಪಾರ್ಥನ
ಸಾರಥಿಯ ತಾಯೆನಲು ನಮ್ಮನು
ವೀರ ಬಗೆಯನು ನಿಮ್ಮ ತಂಗಿಯ ಕಳುಹಿ ಕರೆಸುವದು ೩೧

ತಾಯೆ ನೀನೇ ಹೋಗಿ ಸೂತನ
ತಾಯೆನಲು ಕೈಕೊಂಡು ಕಮಲದ
ಳಾಯತಾಕ್ಷಿ ಮನೋಭವನ ಮರಿಯಾನೆಯಂದದಲಿ
ರಾಯಕುವರಿ ನವಾಯಿ ಗತಿ ಗರು
ವಾಯಿಯಲಿ ಬರೆ ವಿಟರ ಕರಣದ
ಲಾಯ ತೊಡಕಿತು ತೆಗೆದಳಂಗನೆ ಜನರ ಕಣ್ಮನವ ೩೨

ಐದು ಶರವೇಕೊಂದು ಬಾಣವಿ
ದೈದದೇಯಿನ್ನಮಮ ಕಾಮನ
ಕೈದುಗಾರತನಕ್ಕೆ ಕೋಡದೆ ಕೊಂಕದಿಹರಾರು
ಒಯ್ದುಕೊಳ್ಳನೆ ಮುನಿಮನವನಡ
ಹಾಯ್ದು ಹಿಡಿಯನೆ ಹಿರಿಯರನು ವಿಧಿ
ಕೊಯ್ದನಕಟಾ ಕೊರಳನೆಂದುದು ನಗುತ ವಿಟನಿಕರ ೩೩

ಅರಳುಗಂಗಳ ಬೆಳಗು ಹೊಯ್ದ
ಬ್ಬರಿಸೆ ಚಿತ್ತದ ತಿಮಿರ ಹೆಚ್ಚಿತು
ಕುರುಳ ಕಾಳಿಕೆಯಿಂದ ಮುಖ ಬಿಳುಪೇರಿ ವಿಟಜನದ
ಸರಸತರ ಲಾವಣ್ಯ ರಸದಿಂ
ದುರಿ ಮಸಗೆ ಜನ ಹೃದಯದಲಿ ಮೈ
ಪರಿಮಳದ ಪಸರದಲಿ ಪದ್ಮಿನಿ ಬಂದಳೊಲವಿನಲಿ ೩೪

ನಡೆ ನಡೆಯ ಬಂಧಿಸಿತು ನೋಟವ
ನುಡುಗಿಸಿತು ಕುಡಿನೋಟ ಸಖಿಯರ
ನುಡಿ ಸಮೇಳದ ಮಾತು ಮನುಜರ ಮಾತ ಮಾಣಿಸಿತು
ಕೆಡಿಸಿತಧರದ ರಾಗ ರಾಗವ
ಬಡತನವ ಹೆಚ್ಚಿಸಿತು ನಡುವಿನ
ಬಡತನವು ವಿಟಜನಕೆನಲು ನಡೆತಂದಳಿಂದುಮುಖಿ ೩೫

ಕುರುಳ ತಿದ್ದುತ ಮೊಲೆಗೆ ಮೇಲುದ
ಸರಿವುತೇಕಾವಳಿಯ ಮೆಲ್ಲನೆ
ತಿರುಪಿ ಹಾಯ್ಕುತ ಬಿಡುಮುಡಿಯನೆಡಗೈಯೊಳೊಂದಿಸುತ
ವರ ನಿಖಾರಿಯ ನಿರಿಯ ರಭಸದ
ಚರಣದಂದುಗೆ ದನಿಯ ಗಮನದ
ಭರದಿ ಕಿರುಬೆಮರಿಡುತ ನಡೆತರುತಿರ್ದಳಿಂದುಮುಖಿ ೩೬

ಬರವ ಕಂಡನು ಪಾರ್ಥನೇನು
ತ್ತರೆ ಕುಮಾರಿ ಕಠೋರ ಗತಿಯಲಿ
ಬರವು ಭಾರಿಯ ಕಾರಿಯವ ಸೂಚಿಸುವುದೆನೆ ನಗುತ
ಬರವು ಬೇರಿಲ್ಲೆನ್ನ ಮಾತನು
ಹುರುಳುಗೆಡಿಸದೆ ಸಲಿಸುವೊಡೆ ನಿಮ
ಗರುಹಿದಪೆನೆನೆ ಮೀರಬಲ್ಲೆನೆ ಮಗಳೆ ಹೇಳೆಂದ ೩೭

ಪುರಕೆ ಹಾಯ್ದರು ಹಸ್ತಿನಾಪುರ
ದರಸುಗಳು ಹೊಲನೊಳಗೆ ಶತ ಸಾ
ವಿರದ ತುರುಗಳ ಹಿಡಿದರಳಿದುದು ಗೋಪ ಪಡೆ ಕಾದಿ
ಮರಳಿಚುವೊಡೆಮ್ಮಣ್ಣ ದೇವನ
ಧುರಕೆ ಸಾರಥಿಯಿಲ್ಲ ನೀವಾ
ನರನ ಸಾರಥಿಯೆಂದು ಕೇಳಿದೆವೆಂದಳಿಂದುಮುಖಿ ೩೮

ಇನ್ನು ನೀವೇ ಬಲ್ಲಿರೆನೆ ನಡೆ
ನಿನ್ನ ಮಾತನು ಮೀರಬಲ್ಲೆನೆ
ಮುನ್ನ ಸಾರಥಿಯಹೆನು ನೋಡುವೆನೆನುತ ವಹಿಲದಲಿ
ಬೆನ್ನಲಬಲೆಯನೈದಲಾ ಸಂ
ಪನ್ನ ಬಲನೋಲಗಕೆ ಬರೆ ಹರು
ಷೋನ್ನತಿಯಲುತ್ತರ ಕುಮಾರನು ಕರೆದು ಮನ್ನಿಸಿದ ೩೯

ಎಲೆ ಬೃಹನ್ನಳೆ ತೆತ್ತುದೆನಗ
ಗ್ಗಳೆಯರೊಳು ವಿಗ್ರಹವು ಸಾರಥಿ
ಯಳಿದನೆನ್ನವ ನೀನು ಸಾರಥಿಯಾಗಿ ಸಮರದಲಿ
ಉಳುಹ ಬೇಹುದು ನೀ ಸಮರ್ಥನು
ಫಲುಗುಣನ ಸಾರಥಿಯಲೈ ನೀ
ನೊಲಿದು ಮೆಚ್ಚಲು ಕಾದಿ ತೋರುವೆನಹಿತ ಸೇನೆಯಲಿ ೪೦

ಭರತ ವಿದ್ಯಾ ವಿಷಯದಲಿ ಪರಿ
ಚರಿಯತನ ನಮಗಲ್ಲದೀ ಸಂ
ಗರದ ಸಾರಥಿತನವ ಮರೆದೆವು ಹಲವು ಕಾಲದಲಿ
ಅರಿಭಟರು ಭೀಷ್ಮಾದಿಗಳು ನಿಲ
ಲರಿದು ಸಾರಥಿತನದ ಕೈ ಮನ
ಬರಡರಿಗೆ ದೊರಕೊಂಬುದೇ ರಣ ಸೂರೆಯಲ್ಲೆಂದ ೪೧

ಆನಿರಲು ಭೀಷ್ಮಾದಿಗಳು ನಿನ
ಗೇನು ಮಾಡಲು ಬಲ್ಲರಳುಕದೆ
ನೀನು ನಿಲು ಸಾಕೊಂದು ನಿಮಿಷಕೆ ಗೆಲುವೆನವರುಗಳ
ತಾನದಾರೆಂದರಿಯಲಾ ಗುರು
ಸೂನು ಕರ್ಣ ದ್ರೋಣರೆಂಬವ
ರಾನರಿಯದವರಲ್ಲ ಸಾರಥಿಯಾಗು ಸಾಕೆಂದ ೪೨

ವೀರನಹೆ ಬಳಿಕೇನು ರಾಜ ಕು
ಮಾರನಿರಿವೊಡೆ ಹರೆಯವಲ್ಲಾ
ಸಾರಥಿತ್ವವ ಮಾಡಿ ನೋಡುವೆ ರಥವ ತರಿಸೆನಲು
ವಾರುವದ ಮಂದಿರದಲಾಯಿದು
ಚಾರು ತುರಗಾವಳಿಯ ಬಿಗಿದನು
ತೇರ ಸಂವರಿಸಿದನು ರಥವೇರಿದನು ಕಲಿಪಾರ್ಥ ೪೩

ಮಂಗಳಾರತಿಯೆತ್ತಿದರು ನಿಖಿ
ಳಾಂಗನೆಯರುತ್ತರಗೆ ನಿಜ ಸ
ರ್ವಾಂಗ ಶೃಂಗಾರದಲಿ ಹೊಳೆವುತ ಬಂದು ರಥವೇರಿ
ಹೊಂಗೆಲಸಮಯ ಕವಚವನು ಪಾ
ರ್ಥಂಗೆ ಕೊಟ್ಟನು ಜೋಡು ಸೀಸಕ
ದಂಗಿಗಳನಳವಡಿಸಿ ರಾಜಕುಮಾರನನುವಾದ ೪೪

ನರನು ತಲೆ ಕೆಳಗಾಗಿ ಕವಚವ
ಸರಿವುತಿರೆ ಘೊಳ್ಳೆಂದು ಕೈ ಹೊ
ಯ್ದರಸಿಯರು ನಗೆ ನಾಚಿದಂತಿರೆ ಪಾರ್ಥ ತಲೆವಾಗಿ
ತಿರುಗಿ ಮೇಲ್ಮುಖವಾಗಿ ತೊಡಲು
ತ್ತರೆ ಬಳಿಕ ನಸುನಗಲು ಸಾರಥಿ
ಯರಿಯ ತಪ್ಪೇನೆನುತಲುತ್ತರ ತಾನೆ ತೊಡಿಸಿದನು ೪೫

ಕವಚವನು ತೊಡಲರಿಯದವನಾ
ಹವಕೆ ಸಾರಥಿತನವ ಮಾಡುವ
ಹವಣು ತಾನೆಂತೆನುತಲಿದ್ದರು ನಿಖಿಳ ನಾರಿಯರು
ಬವರವನು ನಮ್ಮಣ್ಣ ಗೆಲಿದಪ
ನವರ ಮಣಿ ಪರಿಧಾನವಾಭರ
ಣವನು ಸಾರಥಿ ಕೊಂಡು ಬಾಯೆಂದಳು ಸರೋಜಮುಖಿ ೪೬

ನಸುನಗುತ ಕೈಕೊಂಡನರ್ಜುನ
ನೆಸಗಿದನು ರಥವನು ಸಮೀರನ
ಮಿಸುಕಲೀಯದೆ ಮುಂದೆ ಮಿಕ್ಕವು ವಿಗಡ ವಾಜಿಗಳು
ಹೊಸ ಪರಿಯ ಸಾರಥಿಯಲಾ ನಮ
ಗಸದಳವು ಸಂಗಾತ ಬರಲೆಂ
ದುಸುರದುಳಿದುದು ಹಿಂದೆ ಪುರದಲಿ ಚಾತುರಂಗ ಬಲ ೪೭

ಗತಿಗೆ ಕುಣಿದವು ನಾಸಿಕದ ಹುಂ
ಕೃತಿಯ ಪವನನ ಹಳಿವ ಲುಳಿಯಲಿ
ಗತಿಯ ಸಂಚಿತ ಪಂಚಧಾರಾ ಪ್ರೌಢ ವಾಜಿಗಳು
ವಿತತ ರಥ ಪದದಳಿತ ವಸುಧೋ
ತ್ಪತಿತ ಧೂಳೀಪಟಲ ಪರಿ ಚುಂ
ಬಿತ ದಿಶಾಮುಖನೈದಿದನು ಕುರುರಾಯ ಮೋಹರವ ೪೮

(ಸಂಗ್ರಹ: ಸುನಾಥ ಮತ್ತು ಜ್ಯೋತಿ ಮಹದೇವ್)

ಅರಣ್ಯಪರ್ವ: ೦೪. ನಾಲ್ಕನೆಯ ಸಂಧಿ

ಸೂ. ಭಜಿಸಿದನು ನರನಿಂದ್ರಕೀಲದೊ
ಳಜ ಸುರಾರ್ಚಿತ ಚರಣ ಕಮಲನ
ತ್ರಿಜಗದಧಿಪತಿಯನು ಮಹಾನಟರಾಯ ಧೂರ್ಜಟಿಯ

ಕೇಳು ಜನಮೇಜಯ ಧರಿತ್ರೀ
ಪಾಲ ಪಾಂಡು ಕುಮಾರರಟವಿಯ
ಪಾಳಿಯಲಿ ಪರುಠವಿಸಿದರು ಪದಯುಗ ಪರಿಭ್ರಮವ
ಲೋಲಲೋಚನೆ ಸಹಿತ ತತ್ಕುಲ
ಶೈಲದಲಿ ತದ್ವಿಪಿನದಲಿ ತ
ತ್ಕೂಲಪತಿಗಳ ತೀರದಲಿ ತೊಳಲಿದರು ಬೇಸರದೆ ೧

ಫಳ ಮೃಗಾವಳಿ ಸವೆದುದಿನ್ನೀ
ಹಳುವು ಸಾಕಿನ್ನೊಂದರಣ್ಯ
ಸ್ಥಳವ ನೋಡಲಿ ಕಟಕ ನಡೆಯಲಿ ವಿಪ್ರಸಂಕುಲದ
ಸುಲಭವೀ ವನವೆಂದು ತಮ್ಮೊಳು
ತಿಳಿದು ಪಾರ್ಥ ಯುಧಿಷ್ಠಿರರು ಮುನಿ
ಕುಲ ಸಹಿತ ನಲವಿಂದ ಹೊಕ್ಕರು ದ್ವೈತಕಾನನವ ೨

ಅರಸ ಕಳುಹಿದ ದೂತನಾ ಗಜ
ಪುರವ ಹೊಕ್ಕು ತದೀಯ ವಾರ್ತಾ
ಭರದ ವಿವರವನರಿದು ಬಂದನು ಕಂಡನವನಿಪನ
ಕುರುನೃಪಾಲನ ಮದವನಾತನ
ಸಿರಿಯನಾತನ ಬಲುಹನಾತನ
ಪರಿಯನರುಹಿದನಬುಜಮುಖಿ ಪವನಜರು ಕಳವಳಿಸೆ ೩

ಮೂದಲಿಸಿದಳು ದ್ರುಪದ ತನುಜೆ ವೃ
ಕೋದರನನರ್ಜುನನವನಿಪ
ನಾದಿಯಾದೈವರನು ಕೌರವನೃಪನ ಪತಿಕರಿಸಿ
ಆದೊಡಿದೆ ಕುರುರಾಜ ವಂಶ
ಚ್ಛೇದ ಧೀರ ಕುಠಾರವೆನುತ ವೃ
ಕೋದರನು ತೂಗಿದನು ಗದೆಯನು ಗಾಢಕೋಪದಲಿ ೪

ಏಕಿದೇಕೆ ವೃಥಾ ನಿಶಾಟ
ವ್ಯಾಕರಣ ಪಾಂಡಿತ್ಯವಕಟ ವಿ
ವೇಕ ರಹಿತನೆ ನೀ ವೃಕೋದರ ದ್ರುಪದ ಸುತೆಯಂತೆ
ಸಾಕು ಸಾಕೈ ತಮ್ಮ ಸತ್ಯವೆ
ಸಾಕು ನಮಗೆ ಮದೀಯ ಪುಣ್ಯ
ಶ್ಲೋಕತೆಯನುಳುಹೆಂದು ಗಲ್ಲವ ಹಿಡಿದನನಿಲಜನ ೫

ಅರಸಿ ನಿನ್ನಯ ಶೋಕವಹ್ನಿಯೊ
ಳುರಿವುದರಿನೃಪಜಲಧಿ ಕೇಳಂ
ಬುರುಹಲೋಚನೆ ನಿನ್ನ ಲೋಚನವಾರಿ ಪೂರದಲಿ
ಕುರುನೃಪಾಲನ ಸತಿಯ ಶೋಕ
ಸ್ಫುರದನಲನುಜ್ವಲಿಸುವುದು ರಿಪು
ವಿರಚಿತದ ವಿಪರೀತಕಿದು ವಿಪರೀತವಹುದೆಂದ ೬

ಆ ಸಮಯದಲಿ ಬಂದನಗ್ಗದ
ಭೂಸುರ ಶ್ರೀಕಂಠನೋ ಪ
ದ್ಮಾಸನನ ಪಲ್ಲಟವೊ ಕಮಲಾಂಬಕನ ಚುಂಬಕವೊ
ಭಾಸುರ ಕ್ರತುಶತದ ರೂಪ ವಿ
ಳಾಸವೊ ಶ್ರುತಿಕೋಟಿ ಕನ್ಯಾ
ವಾಸಭವನವೊ ದೇವ ವೇದವ್ಯಾಸ ಮುನಿರಾಯ ೭

ಹಾ ಮಹಾ ದೇವಾಯಿದಾರು ಮ
ಹಾ ಮುನೀಶ್ವರರೆನುತ ಮುನಿಪ
ಸ್ತೋಮವೆದ್ದುದು ಧರ್ಮನಂದನನವರಿಗಿದಿರಾಗಿ
ಪ್ರೇಮ ಪುಳಕದ ನಯನ ಸಲಿಲದ
ರೋಮಹರ್ಷದ ಸತ್ಯಭಾವದ
ಭೂಮಿಪತಿ ಮೈಯಿಕ್ಕಿದನು ಮುನಿವರನ ಚರಣದಲಿ ೮

ವಿವಿಧ ಮುನಿಗಳ ಗೋತ್ರನಾಮ
ಪ್ರವರ ಸಹಿತಭಿವಾದ ಕರ್ಮೋ
ತ್ಸವವ ಕೈಕೊಳುತನಿಬರನು ಮನ್ನಿಸಿದನುಚಿತದಲಿ
ಯುವತಿ ಪದಕೆರಗಿದೊಡೆ "ಭೂಯಾತ್
ತವ ಮನೋರಥ" ವೆನುತ ನಸುನಗು
ತವನಿಪಾಲನ ಪರ್ಣಶಾಲೆಗೆ ಮುನಿಪನೈತಂದ ೯

ಇದೆ ಪವಿತ್ರ ಪಲಾಶ ಪತ್ರದ
ಲುದಕವರ್ಘ್ಯಾಚಮನ ಪಾದ್ಯ
ಕ್ಕಿದೆ ವಿಮಳ ದರ್ಭೋಪರಚಿತಾಸನ ವಿಳಾಸದಲಿ
ಇದನು ಕಾಂಚನ ಪಾತ್ರಜಲವೆಂ
ದಿದು ವರಾಸನವೆಂದು ಕೈಕೊಂ
ಬುದು ಯಥಾ ಸಂಭವದಲೆಂದನು ಧರ್ಮನಂದನನು ೧೦

ಈ ಪವಿತ್ರೋದಕವಲೇ ದೋ
ಷಾಪಹರ ದರ್ಭಾಸನದಲಿಂ
ದೀ ಪೃಥಿವಿ ಸರ್ವಾಧಿಪತ್ಯವು ಸೇರುವುದು ನಿನಗೆ
ಭೂಪಕೇಳೈ ಜೇನುನೊಣದ ಮ
ಧೂಪಚಯವವಕಿಲ್ಲಲೇ ಸ
ರ್ವಾಪಹಾರವು ಪರರಿಗಾ ಕೌರವನ ಸಿರಿಯೆಂದ ೧೧

ಒಡಲು ಬೀಳಲಿ ಮೇಣು ತಮ್ಮದಿ
ರಡವಿಯಲಿ ಹಾಯಿಕ್ಕಿ ಹೋಗಲಿ
ಮಡದಿ ಮುನಿಯಲಿ ಬಸಿದು ಬೀಳಲಿ ಧರಣಿ ಕುರುಪತಿಗೆ
ಎಡೆಯಲುಳಿವಿವರಾಗು ಹೋಗಿನ
ಗೊಡವೆಯೆನಗಿಲ್ಲೆನ್ನ ಸತ್ಯದ
ನುಡಿಗೆ ಹಾದರವಿಲ್ಲದಂತಿರೆ ಕರುಣಿಸುವುದೆಂದ ೧೨

ಬಾಧೆಯುಂಟೇ ನಿನ್ನ ಸತ್ಯಕೆ
ಸಾಧಿಸುವುದವಧಿಯನು ನಿನ್ನ ವಿ
ರೋಧಿಗಳಿಗೆ ನಿವಾಸವಹುದು ಕೃತಾಂತಲೋಕದಲಿ
ಆಧಿಪತ್ಯ ಭ್ರಮಿತರಲಿ ರಾ
ಜ್ಯಾದಿಯಲಿ ಕಡೆಗೊಂಡಿರಖಿಲ ನಿ
ರೋಧವನು ಕಡನನು ಸವೃದ್ಧಿಕವಾಗಿ ಕೊಡಿಯೆಂದ ೧೩

ಆವುದರಿದಿವರಿಗೆ ಭವತ್ಕರು
ಣಾವಲೋಕನವುಂಟು ಪುನರಪಿ
ದೇವಕೀ ನಂದನನಲೊದಗುವ ಮೇಲು ನೋಟದಲಿ
ಈ ವಿಪತ್ತೇಸರದು ಪಾಂಡವ
ಜೀವಿಗಳು ನೀವಿಬ್ಬರಿರಲೆಂ
ದಾ ವಿಭಾಂಡಕ ಶೌನಕಾದಿಗಳೆಂದರಾ ಮುನಿಗೆ ೧೪

ಕರೆಸಿ ದ್ರುಪದಾತ್ಮಜೆಯ ಕಂಬನಿ
ಯೊರತೆಯಾರಲು ನುಡಿದನಾಕೆಯ
ಕರಣದಲಿ ಕಿವಿಗೊಂಡ ಕಳಕಳವನು ವಿಭಾಡಿಸಿದ
ಧರಣಿಪತಿಗೇಕಾಂತ ಭವನದೊ
ಳೊರೆದನೀಶ್ವರ ವಿಷಯ ಮಂತ್ರಾ
ಕ್ಷರವನಂಗೋಪಾಂಗ ಮುದ್ರಾಶಕ್ತಿಗಳು ಸಹಿತ ೧೫

ಇದು ಮಹೀಶರ ಶೋಕಹರವಿಂ
ತಿದು ವಿರೋಧಿಬಲ ಪ್ರಭಂಜನ
ವಿದು ಸಕಲ ಪುರುಷಾರ್ಥ ಸಾಧನವಖಿಳ ದುರಿತಹರ
ಇದು ಮಹಾಧಿವ್ಯಾಧಿಹರವಿಂ
ತಿದನು ನೀ ಕೊಳ್ಳರ್ಜುನಂಗೊರೆ
ವುದು ರಹಸ್ಯದೊಳೆಂದು ಮುನಿ ಕರುಣಿಸಿದನರಸಂಗೆ ೧೬

ಪಾರ್ಥ(ಪಾ: ಪ್ರಾರ್ಥ)ನೈದುವುದಿಂದ್ರ ಕೀಲದೊ
ಳರ್ಥಿಸಲಿ ಶಂಕರನನಖಿಳ
ಸ್ವಾರ್ಥ ಸಿದ್ಧಿಗೆ ಬೀಜವಿದು ಬೇರೊಂದು ಬಯಸದಿರು
ವ್ಯರ್ಥರವದಿರು ನಿನ್ನ ಹಗೆಯ ಕ
ದರ್ಥನದೊಳಿನ್ನೇನು ಜಗಕೆ ಸ
ಮರ್ಥನೊಬ್ಬನೆ ಶಂಭು ಕೃಪೆ ಮಾಡುವನು ನಿನಗೆಂದ ೧೭

ಇಂದುಮುಖಿಯನು ಭೀಮನನು ಯಮ
ನಂದನನರ್ಜುನನ ಯಮಳರ
ನಂದು ಕೊಂಡಾಡಿದನು ಮೈದಡವಿದನು ಮೋಹದಲಿ
ಬಂದು ಸಂದಣಿಸಿದ ಮುನಿ ದ್ವಿಜ
ವೃಂದವನು ಮನ್ನಿಸಿ ನಿಜಾಶ್ರಮ
ಮಂದಿರಕೆ ಮುದದಿಂದ ಬಿಜಯಂಗೈದನಾ ಮುನಿಪ ೧೮

ಅರಸ ಕೇಳೈ ಮುನಿಪನತ್ತಲು
ಸರಿದನಿತ್ತಲು ಪಾರ್ಥನನು ನೃಪ
ಕರೆದು ವೇದವ್ಯಾಸನಿತ್ತುಪದೇಶ ವಿಸ್ತರವ
ಅರುಹಿದನು ಕೈಲಾಸ ಸೀಮಾ
ವರುಷದಲ್ಲಿಹುದಿಂದ್ರ ಕೀಲದ
ಗಿರಿ ಮಹೇಶ ಕ್ಷೇತ್ರವಲ್ಲಿಗೆ ಹೋಗು ನೀನೆಂದ ೧೯

ಅಲ್ಲಿ ಭಜಿಸುವದಮಳ ಗಿರಿಜಾ
ವಲ್ಲಭನನಾಮ್ನಾಯ ಜಿಹ್ವೆಗೆ
ದುರ್ಲಭನನಧಿ ದೈವವನು ಬ್ರಹ್ಮೇಂದ್ರ ಭಾಸ್ಕರರ
ಬಲ್ಲೆನೆಂಬರ ಬಹಳ ಗರ್ವವ
ಘಲ್ಲಿಸುವ ಗಡ ತನ್ನ ಭಕ್ತರು
ಬಲ್ಲಿದರು ತನಗೆಂಬ ಬೋಳೆಯರರಸನಿಹನೆಂದ ೨೦

ಏಳು ನೀ ಪ್ರತ್ಯೂಷದಲಿ ಶಶಿ
ಮೌಳಿ ಮೈದೋರಲಿ ತದೀಯ ಶ
ರಾಳಿಗಳು ಸಿದ್ಧಿಸಲಿ ಸೇರಲಿ ಶಿವನ ಕೃಪೆ ನಿನಗೆ
ಸೋಲದಿರು ಸುರಸತಿಯರಿಗೆ ಸ
ಮ್ಮೇಳವಾಗದಿರವರೊಡನೆ ಕೈ
ಮೇಳವಿಸುವುದು ಕಾಮವೈರಿಯ ಚರಣಕಮಲದಲಿ ೨೧

ಮುಗ್ಗದಿರು ಮಾಯೆಯಲಿ ಮದದಲಿ
ನೆಗ್ಗದಿರು ರೋಷದ ವಿಡಂಬದ
ಲಗ್ಗಳೆಯತನದಿಂದಹಂಕೃತಿ ಭರದಿ ಮೆರೆಯದಿರು
ಅಗ್ಗಿಸದಿರಾತ್ಮನನು ಲೋಭದೊ
ಳೊಗ್ಗದಿರು ಲಘುವಾಗದಿರು ಮಿಗೆ
ಹಿಗ್ಗದಿರು ಹೊಗಳಿಕೆಗೆ ಮನದಲಿ ಪಾರ್ಥ ಕೇಳೆಂದ ೨೨

ಆಡದಿರಸತ್ಯವನು ಕಪಟವ
ಮಾಡದಿರು ನಾಸ್ತಿಕರೊಡನೆ ಮಾ
ತಾಡದಿರು ಕೆಳೆಗೊಳ್ಳದಿರು ವಿಶ್ವಾಸಘಾತಕರ
ಖೋಡಿಗಳೆಯದಿರಾರುವನು ಮೈ
ಗೂಡದಿರು ಪರವಧುವಿನಲಿ ರಣ
ಖೇಡನಾಗದಿರೆಂದು ನುಡಿದನು ನೃಪತಿಯರ್ಜುನಗೆ ೨೩

ಕ್ರೂರರಿಗೆ ಶಠರಿಗೆ ವೃಥಾಹಂ
ಕಾರಿಗಳಿಗತಿ ಕುಟಿಲರಿಗೆಯುಪ
ಕಾರಿಯಪಘಾತರಿಗೆ ಭೂತದ್ರೋಹಿ ಜೀವರಿಗೆ
ಜಾರರಿಗೆ ಜಡರಿಗೆ ನಿಕೃಷ್ಟಾ
ಚಾರರಿಗೆ ಪಿಸುಣರಿಗೆ ಧರ್ಮವಿ
ದೂರರಿಗೆ ಕಲಿಪಾರ್ಥ ಕೇಳ್ ಪರಲೋಕವಿಲ್ಲೆಂದ ೨೪

ಭ್ರಾತೃ ಮಿತ್ರ ವಿರೋಧಿಕಗೆ ಪಿತೃ
ಮಾತೃಘಾತಿಗೆ (ಪಾ: ಮಾತೃವಿಘಾತಿಗೆ) ಖಳನಿಗುತ್ತಮ
ಜಾತಿನಾಶಕನಿಂಗೆ (ಪಾ: ಜಾತಿನಾಶಕಂಗೆ) ವರ್ಣಾಶ್ರಮ ವಿದೂಷಕಗೆ
ಜಾತಿಸಂಕರಕಾರಗಾ ಕ್ರೋ
ಧಾತಿರೇಕಗೆ ಗಾಢ ಗರ್ವಿಗೆ
ಭೂತವೈರಿಗೆ ಪಾರ್ಥ ಕೇಳ್ ಪರಲೋಕವಿಲ್ಲೆಂದ ೨೫

ಸ್ವಾಮಿಕಾರ್ಯ ವಿಘಾತಕಂಗತಿ
ಕಾಮುಕಗೆ ಮಿಥ್ಯಾಪವಾದಿಗೆ
ಭೂಮಿದೇವ ದ್ವೇಷಿಗತ್ಯಾಶಿಗೆ ಬಕವ್ರತಿಗೆ
ಗ್ರಾಮಣಿಗೆ ಪಾಷಂಡಗಾತ್ಮ ವಿ
ರಾಮಕಾರಿಗೆ ಕೂಟಸಾಕ್ಷಿಗೆ
ನಾಮಧಾರಿಗೆ ಪಾರ್ಥ ಕೇಳ್ ಪರಲೋಕವಿಲ್ಲೆಂದ ೨೬

ಅದರಿನಾವಂಗುಪಹತಿಯ ಮಾ
ಡದಿರು ಸಚರಾಚರದ ಚೈತ
ನ್ಯದಲಿ ನಿನ್ನನೆ ಬೆರಸಿ ಕಾಬುದು ನಿನ್ನ ತನುವೆಂದು
ಬೆದರದಿರು ಬಲುತಪಕೆ ಶೂಲಿಯ
ಪದಯುಗವ ಮರೆಯದಿರು ಹರಿಯನು
ಹೃದಯದಲಿ ಪಲ್ಲಟಿಸದಿರು ಸುಖಿಯಾಗು ಹೋಗೆಂದ ೨೭

ಕರುಣಿಸಲಿ ಕಾಮಾರಿ ಕೃಪೆಯಿಂ
ವರ ಮಹಾಸ್ತ್ರವನಿಂದ್ರ ಯಮ ಭಾ
ಸ್ಕರ ಹುತಾಶನ ನಿರುತಿ ವರುಣ ಕುಬೇರ ಮಾರುತರು
ಸುರರು ವಸುಗಳು ಸಿದ್ಧ ವಿದ್ಯಾ
ಧರ ಮಹೋರಗ ಯಕ್ಷ ಮನು ಕಿಂ
ಪುರುಷರೀಯಲಿ ನಿನಗೆ ವಿಮಳ ಸ್ವಸ್ತಿವಾಚನವ ೨೮

ಎನೆ ಹಸಾದವೆನುತ್ತೆ ಯಮ ನಂ
ದನಗೆ ಭೀಮಂಗೆರಗಿದನು ಮುನಿ
ಜನಕೆ ಮೈಯಿಕ್ಕಿದನು ಮುಳುಗಿದನಕ್ಷತೌಘದಲಿ
ವನಜಮುಖಿ ಮುನಿ ವಧುಗಳಾಶೀ
ರ್ವಿನುತ ದಧಿ ದೂರ್ವಾಕ್ಷತೆಯನು
ಬ್ಬಿನಲಿ ಕೈಕೊಳುತನಿಬರನು ಮನ್ನಿಸಿದನುಚಿತದಲಿ ೨೯

ನೆನೆಯದಿರು ತನುಸುಖವ ಮನದಲಿ
ನೆನೆ ವಿರೋಧಿಯ ಸಿರಿಯನೆನ್ನಯ
ಘನತರದ ಪರಿಭವವ ನೆನೆ ನಿಮ್ಮಗ್ರಜರ ನುಡಿಯ
ಮುನಿವರನ ಮಂತ್ರೋಪದೇಶವ
ನೆನೆವುದಭವನ ಚರಣ ಕಮಲವ
ನೆನುತ ದುರುಪದಿಯೆರಗಿದಳು ಪಾರ್ಥನ ಪದಾಬ್ಜದಲಿ ೩೦

ಹರನ ಚರಣವ ಭಜಿಸುವೆನು ದು
ರ್ಧರ ತಪೋನಿಷ್ಠೆಯಲಿ ಕೇಳೆಲೆ
ತರುಣಿ ಪಾಶುಪತಾಸ್ತ್ರವಾದಿಯ ದಿವ್ಯಮಾರ್ಗಣವ
ಪುರಹರನ ಕೃಪೆಯಿಂದ ಪಡೆದಾ
ನರಿಗಳನು ಸಂಹರಿಸಿ ನಿನ್ನಯ
ಪರಿಭವಾಗ್ನಿಯ ನಂದಿಸುವೆ ನಿಲ್ಲೆಂದನಾ ಪಾರ್ಥ ೩೧

ಬಿಗಿದ ಬತ್ತಳಿಕೆಯನು ಹೊನ್ನಾ
ಯುಗದ ಖಡುಗ ಕಠಾರಿ ಚಾಪವ
ತಗೆದನಳವಡೆಗಟ್ಟಿ ಬದ್ದುಗೆದಾರ ಗೊಂಡೆಯವ
ದುಗುಡ ಹರುಷದ ಮುಗಿಲ ತಲೆಯೊ
ತ್ತುಗಳಿಗಿಟ್ಟೆಡೆಯಾಗಿ ಗುಣ ಮೌ
ಳಿಗಳ ಮಣಿ ಕಲಿಪಾರ್ಥ ಬೀಳ್ಕೊಂಡನು ನಿಜಾಗ್ರಜನ ೩೨

ಹರಡೆ ವಾಮದೊಳುಲಿಯೆ ಮಧುರ
ಸ್ವರದಲಪಸವ್ಯದಲಿ ಹಸುಬನ
ಸರ ಸಮಾಹಿತಮಾಗೆ ಸೂರ್ಯೋದಯದ ಸಮಯದಲಿ
ಹರಿಣ ಭಾರದ್ವಾಜನುಡಿಕೆಯ
ಸರಟ ನಕುಲನ ತಿದ್ದುಗಳ ಕು
ಕ್ಕುರನ ತಾಳಿನ ಶಕುನವನು ಕೈಕೊಳುತ ನಡೆತಂದ ೩೩

ನೀಲಕಂಠನ ಮನದ ಬಯಕೆಗೆ
ನೀಲಕಂಠನೆ ಬಲಕೆ ಬಂದುದು
ಮೇಲುಪೋಗಿನ ಸಿದ್ಧಿ ದೈತ್ಯಾಂತಕನ ಬುದ್ಧಿಯಲಿ
ಕಾಲಗತಿಯಲಿ ಮೇಲೆ ಪರರಿಗೆ
ಕಾಲಗತಿಯನು ಕಾಬೆನೈಸಲೆ
ಶೂಲಧರನೇ ಬಲ್ಲನೆನುತೈತಂದನಾ ಪಾರ್ಥ ೩೪

ಅರಸ ಕೇಳೈ ಬರುತ ಭಾರತ
ವರುಷವನು ದಾಂಟಿದನು ತಂಪಿನ
ಗಿರಿಯ ತಪ್ಪಲನಿಳಿದಿನಾ ಹರಿವರುಷ ಸೀಮೆಯಲಿ
ಬೆರಸಿದನು ಬಳಿಕುತ್ತರೋತ್ತರ
ಸರಣಿಯಲಿ ಸೈನಡೆದು ಹೊಕ್ಕನು
ಸುರರ ಸೇವ್ಯವನಿಂದ್ರಕೀಲ ಮಹಾ ವನಾಂತರವ ೩೫

ಗಿಳಿಯ ಮೃದು ಮಾತುಗಳ ಮರಿಗೋ
ಗಿಲೆಯ ಮಧುರ ಧ್ವನಿಯ ಹಂಸೆಯ
ಕಳರವದ ಮರಿ ನವಿಲ ಕೇಕಾ ರವದ ನಯಸರದ
ಮೆಲುದನಿಯ ಪಾರಿವದ ತುಂಬಿಯ
ಲಲಿತ ಗೀತದ ವನ ವನದ ಸಿರಿ ಬಗೆ
ಗೊಳಿಸಿತೈ ಪೂರ್ವಾಭಿಭಾಷಣದಲಿ ಧನಂಜಯನ ೩೬

ಸೊಂಪೆಸೆವ ಕೋಗಿಲೆಯ ಸರ ದೆಸೆ
ತಂಪೆಸೆವ ತಂಬೆಲರ ಹುವ್ವಿನ
ಜೊಂಪವನು ಜೊಂಪಿಸುವ ಮರಿದುಂಬಿಗಳ ಮೇಳವದ
ಪೆಂಪೊಗುವ ತಾವರೆಗೊಳಂಗಳ
ತಂಪಿನೊದವಿನ ವನದ ಸೊಗಸಿನ
ಸೊಂಪು ಸೆಳೆದುದು ಮನವನೀತನನರಸ ಕೇಳೆಂದ ೩೭

ಚಾರುತರ ಪರಿಪಕ್ವ ನವ ಖ
ರ್ಜೂರ ರಸಧಾರಾ ಪ್ರವಾಹ ಮ
ನೋರಮೇಕ್ಷು ವಿಭೇದ ವಿದ್ರುಮರಸದ ದಾಳಿಂಬ
ಭೂರಿ ಜಂಬ ಮಧೂಕ ಪನಸ
ಸ್ಫಾರ ರಸಪೂರಾನುಕಲಿತ ವಿ
ಹಾರ ಸುರಮಹಿಳಾಭಿರಂಜಿಸುವಖಿಳ ವನಭೂಮಿ ೩೮

ವಿಲಸದಭ್ರದಲಿಹ ಮಹಾ ತರು
ಕುಲದಿನಮರನದೀಸ್ತನಂಧಯ
ಫಲರಸದ ಸವಿಗಳಲಿ ದಿಕ್ಕೂಲಂಕಷೋನ್ನತಿಯ
ಸುಳಿವ ಪರಿಮಳ ಪವನನಿಂ ಕಂ
ಗೊಳಿಸಿತರ್ಜುನ ಕಾಮ್ಯ ಸಿದ್ಧಿ
ಸ್ಥಳದೊಳಂತರ್ಮಿಥುನ ಕಾನನವರಸ ಕೇಳೆಂದ ೩೯

ಇಲ್ಲಿ ನಿಲ್ಲರ್ಜುನ ತಪೋವನ
ಕಿಲ್ಲಿ ನೆಲೆ ಶ್ರುತಿಯುವತಿ ಸೂಸುವ
ಚೆಲ್ಲೆಗಂಗಳ ಮೊನೆಗೆ ಮೀಸಲುಗುಡದ ಮೈಸಿರಿಯ
ದುರ್ಲಲಿತದಷ್ಟಾಂಗ ಯೋಗದ
ಕೊಲ್ಲಣಿಗೆಯಲಿ ಕೂಡದಪ್ರತಿ
ಮಲ್ಲ ಶಿವನ ಕ್ಷೇತ್ರವಿದೆಯೆಂದುದು ನಭೋನಿನದ ೪೦

ಧರಣಿಪನ ಬೀಳ್ಕೊಂಡು ಮಾರ್ಗಾಂ
ತರದೊಳಾರಡಿಗೈದು ಹೊಕ್ಕನು
ಹರನ ಕರುಣಾ ಸಿದ್ಧಿ ಸಾಧನವೆನಿಪ ಗಿರಿವನವ
ಮರುದಿವಸದುದಯದಲಿ ಮಿಂದನು
ಸರಸಿಯಲಿ ಸಂದ್ಯಾಭಿಮುಖದಲಿ
ತರಣಿಗರ್ಘ್ಯವನಿತ್ತು ದೇವವ್ರಜಕೆ ಕೈಮುಗಿದ ೪೧

ವಿನುತ ಶಾಂಭವ ಮಂತ್ರಜಪ ಸಂ
ಜನಿತ ನಿರ್ಮಲ ಭಾವಶುದ್ಧಿಯ
ಮನದೊಳರ್ಜುನನೆತ್ತಿ ನಿಂದನು ದೀರ್ಘ ಬಾಹುಗಳ
ನೆನಹು ನೆಮ್ಮಿತು ಶಿವನನಿತರದ
ನನೆಕೊನೆಯ ತೆರಳಿಕೆಯ ತೊಡಚೆಯ
ಮನದ ಸಂಚಲವೀಚುವೋದುದು ಕಲಿ ಧನಂಜಯನ ೪೨

ಮುಗುಳುಗಂಗಳ ಮೇಲು ಗುಡಿದೋ
ಳುಗಳ ಮಿಡುಕುವ ತುಟಿಯ ತುದಿಗಾ
ಲುಗಳ ಹೊರಿಗೆಯ ತಪದ ನಿರಿಗೆಯ ನಿಷ್ಪ್ರಕಂಪನದ
ಬಿಗಿದ ಬಿಲ್ಲಿನ ಬೆನ್ನ ಬತ್ತಳಿ
ಕೆಗಳ ಕಿಗ್ಗಟ್ಟಿನ ಕಠಾರಿಯ
ಹೆಗಲಡಾಯುಧ ಹೊಸತಪಸಿ ತೊಡಗಿದನು ಬಲುತಪವ ೪೩

ಅರಸ ಕೇಳೈ ವಿಪ್ರವೇಷವ
ಧರಿಸಿ ಧರೆಗಿಳಿದನು ಸುರೇಶ್ವರ
ತರಹರಿಸದೀ ಮಾತನೆಂದನು ನಿಜಕುಮಾರಂಗೆ
ಮರಿಚ ಮೌಕ್ತಿಕ ಲೋಹ ಹೇಮಾ
ಭರಣ ಚರ್ಮ ದುಕೂಲ ಮಿಳಿ ಹಾ
ದರಿಯ ಹೂವಿನ ದಂಡೆಗೇಕನಿವಾಸವೇಕೆಂದ ೪೪

ಆವ ಸೇರಿಕೆ ಜಪಕೆ ಚಾಪ ಶ
ರಾವಳಿಗೆ ಶಮೆ ದಮೆಗೆ ಖಡ್ಗಕಿ
ದಾವ ಸಮ್ಮೇಳನ ವಿಭೂತಿಗೆ ಕವಚ ಸೀಸಕಕೆ
ಆವುದಿದರಭಿಧಾನ ತಪವೋ
ಡಾವರಿಗ ವಿದ್ಯಾ ಸಮಾಧಿಯೊ
ನೀವಿದೆಂತಹ ಋಷಿಗೆಳೆಂಬುದನರಿಯೆ ನಾನೆಂದ ೪೫

ಕಂದೆರೆದು ನೋಡಿದನು ನೀವೇ
ನೆಂದರೆಯು ಹೃದಯಾಬ್ಜ ಪೀಠದ
ಲಿಂದುಮೌಳಿಯನಿರಿಸಿ ಮೆಚ್ಚಿಸುವೆನು ಸಮಾಧಿಯಲಿ
ಇಂದಿನೀ ಬಹಿರಂಗ ಚಿಹ್ನೆಯ
ಕುಂದು ಹೆಚ್ಚಿಸಲೇನು ಫಲವೆನ
ಲಂದು ತಲೆದೂಗಿದನು ಸುರಪತಿ ತೋರಿದನು ನಿಜವ ೪೬

ಮಗನೆ ನಿನ್ನಯ ಮನದ ನಿಷ್ಠೆಗೆ
ಸೊಗಸಿದೆನು ಪಿರಿದಾಗಿ ಹರನಿ
ಲ್ಲಿಗೆ ಬರಲಿ ಕರುಣಿಸಲಿ ನಿನ್ನ ಮನೋಭಿವಾಂಛಿತವ
ಹಗೆಗೆ ಹರಿವಹುದೆಂದು ಸುರ ಮೌ
ಳಿಗಳ ಮಣಿ ಸರಿದನು ವಿಮಾನದ
ಲಗಧರನ ಮೈದುನನ ಮಹಿಮೆಯನಿನ್ನು ಕೇಳೆಂದ ೪೭

(ಸಂಗ್ರಹ: ಹೊಳೆನರಸಿಪುರ ಮಂಜುನಾಥ)