ಕಾವುದಾನತಜನವ ಗದುಗಿನ ವೀರನಾರಯಣ

ಕಾವುದಾನತಜನವ ಗದುಗಿನ ವೀರನಾರಯಣ
ಚಿತ್ರ ಕೃಪೆ: ಅಚ್ಚುತರಾವ್

Thursday, August 26, 2010

ಆದಿಪರ್ವ: ೦೩. ಮೂರನೆಯ ಸಂಧಿ

ಸೂ: ಚಂಡಮುನಿ ಮಂತ್ರಾಹ್ವಯದಿ ಬರೆ
ಚಂಡಕರ ತತ್ತೇಜನಾಹವ
ಚಂಡ ವಿಕ್ರಮನವನಿಯಲಿ ಜನಿಸಿದನು ಕಲಿಕರ್ಣ

ಅರಸ ಕೇಳೈ ಕೆಲವು ಕಾಲಾಂ
ತರಕೆ ನಿಮ್ಮ ವಿಚಿತ್ರವೀರ್ಯನು
ನೆರೆದನಮರಸ್ತ್ರೀಯರಲಿ ಬಳಿಕೀ ನದೀಸುತನ
ಕರೆದು ನುಡಿದಳು ಮಗನೆ ರಾಜ್ಯವ
ಧರಿಸು ನೀನಿನ್ನುತ್ತರದ ಹಿಮ
ಕರಕುಲವ ಬೆಳಗೆಂದು ಯೋಜನಗಂಧಿ ಬೆಸಸಿದಳು ೧

ತಾಯೆ ನಿಮ್ಮೋಪಾದಿ ರಾಜ್ಯ
ಸ್ತ್ರೀಯಳೆಂದಾ ನುಡಿಯೊಳಗೆ ಗಾಂ
ಗೇಯ ಮುಳುಗನು ಭೀಷ್ಮವಚನಕೆ ಬೇರೆ ಮೊಳೆಯುಂಟೆ
ಕಾಯಕಲ್ಪ ಸುಖಕ್ಕೆ ಘನ ನಿ
ಶ್ರೇಯಸವ ಕೆಡಿಸುವೆನೆ ಯೆಲವದ
ಕಾಯಿಗೋಸುಗ ಕಲ್ಪವೃಕ್ಷವ ಕಡಿವನಲ್ಲೆಂದ ೨

ಮರುಗಿ ಯೋಜನಗಂಧಿ ಚಿಂತೆಯ
ಸೆರೆಗೆ ಸಿಲುಕಿದಳೊಂದು ರಾತ್ರಿಯೊ
ಳರಿದು ನೆನೆದಳು ಪೂರ್ವಸೂಚಿತ ಪುತ್ರಭಾಷಿತವ
ಮುರಿದ ಭರತಾನ್ವಯದ ಬೆಸುಗೆಯ
ತೆರನು ತೋರಿತೆ ಪುಣ್ಯವೆನುತೆ
ಚ್ಚರಿತು ನುಡಿದಳು ಮಗನೆ ವೇದವ್ಯಾಸ ಬಹುದೆಂದು ೩

ಕೆಂಜೆಡೆಯ ಕೃಷ್ಣಾಜಿನದ ಮೊನೆ
ಮುಂಜೆರಗಿನುಡಿಗೆಯ ಬಲಾಹಕ
ಪುಂಜಕಾಂತಿಯ ಪಿಂಗತರಮುಖ ಕೇಶದುನ್ನತಿಯ
ಕಂಜನಾಭನ ಮೂರ್ತಿ ಶೋಭಾ
ರಂಜಿತನು ಜನದುರಿತ ದಶಮದ
ಭಂಜಕನು ತಾಯ್ಗೆರಗಿ ನುಡಿದನು ವ್ಯಾಸಮುನಿರಾಯ ೪

ನೆನೆದಿರೇನೌತಾಯೆ ಕೃತ್ಯವ
ನೆನಗೆ ಬೆಸಸೆನೆ ಮಗನೆ ಭಾರತ
ವಿನುತಕುಲ ಜಲರಾಶಿಯೆಡೆವರಿತುದು ವಿಚಿತ್ರನಲಿ
ತನುಜ ನೀನೇ ಬಲ್ಲೆಯೆನೆ ಕೇಳ್
ಜನನಿ ನಿಮ್ಮಡಿಯಾಜ್ಞೆಯಲಿ ಸಂ
ಜನಿಪುವೆನು ವೈಚಿತ್ರವೀರ್ಯ ಕ್ಷೇತ್ರದಲಿ ಸುತರ ೫

ಎಂದು ಬಳಿಕೇಕಾಂತ ಭವನದೊ
ಳಂದು ಮುನಿಯಿರಲಂಬಿಕೆಯನರ
ವಿಂದಮುಖಿಯಟ್ಟಿದಳು ಸೊಸೆಯನು ಮುನಿಯ ಪೂರೆಗಾಗಿ
ಬಂದು ಮುನಿಪನ ದಿವ್ಯರೂಪವ
ನಿಂದುಮುಖಿ ಕಂಡಕ್ಷಿಗಳ ಭಯ
ದಿಂದ ಮುಚ್ಚಿದಳಾಕೆ ತಿರುಗಿದಳರಸ ಕೇಳೆಂದ ೬

ಬಳಿಕಲಂಬಾಲಿಕೆಯನಲ್ಲಿಗೆ
ಕಳುಹಲಾಕೆಗೆ ಭಯದಿ ಮುಖದಲಿ
ಬಿಳುಪು ಮಸಗಿತು ಮುನಿಯ ರೌದ್ರಾಕಾರದರ್ಶನದಿ
ಲಲನೆ ಮರಳಿದಳೊಬ್ಬ ಸತಿಯನು
ಕಳುಹಲಾ ವಧು ಚಪಲದೃಷ್ಟಿಯೊ
ಳಳುಕದೀಕ್ಷಿಸಲಾಯ್ತು ಗರ್ಭಾದಾನವನಿಬರಿಗೆ ೭

ಬಂದು ಮುನಿಪತಿ ತಾಯ್ಗೆ ಕೈಮುಗಿ
ದೆಂದನಂಬಿಕೆಯಲ್ಲಿ ಜನಿಸುವ
ನಂದನನು ಜಾತ್ಯಂಧನಂಬಾಲಿಕೆಗೆ ಪಾಂಡುಮಯ
ಬಂದ ಬಳಿಕಿನ ಚಪಲೆಗತಿಬಲ
ನೆಂದು ಹೇಳಿದು ತನಗೆ ನೇಮವೆ
ಯೆಂದು ತನ್ನಾಶ್ರಮಕೆ ಸರಿದನು ಬಾದರಾಯಣನು ೮

ತುಂಬಿದುದು ನವಮಾಸ ಜನಿಸಿದ
ನಂಬಿಕೆಯ ಬಸುರಿನಲಿ ಸೂನು ಗ
ತಾಂಬಕನು ಮಗನಾದನಂಬಾಲಿಕೆಕೆಗೆ ಪಾಂಡುಮಯ
ಚುಂಬಿಸಿತು ಪರಿತೋಷ ನವ ಪುಳ
ಕಾಂಬುಗಳು ಜನಜನಿತವದನೇ
ನೆಂಬೆನುತ್ಸವವನು ಕುಮಾರೋದ್ಭವದ ವಿಭವದಲಿ ೯

ಜಾತಕರ್ಮಾದಿಯನು ಪಾರ್ಥಿವ
ಜಾತಿ ವಿಧಿವಿಹಿತದಲಿ ಗಂಗಾ
ಜಾತ ಮಾಡಿಸಿ ತುಷ್ಟಿಪಡಿಸಿದ ನಿಖಿಳ ಯಾಚಕರ
ಈತನೇ ಧೃತರಾಷ್ಟ್ರನೆರಡನೆ
ಯಾತ ಪಾಂಡು ವಿಲಾಸಿನೀ ಸಂ
ಭೂತನೀತನು ವಿದುರನೆಂದಾಯ್ತುವರಿಗಭಿಧಾನ ೧೦

ಬೆಳೆವುತಿರ್ದರು ಹರಿಣಪಕ್ಷದ
ನಳಿನರಿಪುವಿನವೊಲ್ ಕುಮಾರರು
ಕುಲವಿಹಿತ ಚೌಲೋಪನಯನವನಿಬ್ಬರಿಗೆ ರಚಿಸಿ
ಕಲಿತ ವಿದ್ಯರ ಮಾಡಿ ತಾಯು
ಮ್ಮಳಿಸದಂತಿರೆ ಸೋಮವಂಶದ
ಬೆಳವಿಗೆಯನೇ ಮಾಡಿಕೊಂಡಾಡಿದನು ಕಲಿಭೀಷ್ಮ ೧೧

ಧಾರುಣೀಪತಿ ಚಿತ್ತವಿಸು ಗಾಂ
ಧಾರದೇಶದ ಸುಬಲರಾಜ ಕು
ಮಾರಿ ಕುಲವಧುವಾದಳಾ ಧೃತರಾಷ್ಟ್ರ ಭೂಪತಿಗೆ
ನಾರಿಯರೊಳುತ್ತಮೆಯಲಾ ಗಾಂ
ಧಾರಿಯೆನಿಸಿ ಪತಿವ್ರತಾ ವಿ
ಸ್ತಾರಗುಣದಲಿ ಮೆರೆದಳಬಲೆ ಸಮಸ್ತಜನ ಹೊಗಳೆ ೧೨

ಇತ್ತ ಕುಂತೀಭೋಜನನೆಂಬ ನೃ
ಪೋತ್ತಮನ ಭವನದಲಿ ಮುರಹರ
ನತ್ತೆ ಬೆಳೆವುತ್ತಿರ್ದಳಾ ವಸುದೇವನೃಪನನುಜೆ
ಹೆತ್ತವರಿಗೋಲೈಸುವರಿಗೆ ಮ
ಹೋತ್ತಮರಿಗುಳಿದಖಿಳ ಲೋಕದ
ಚಿತ್ತಕಹುದೆನೆ ನಡೆವ ಗುಣದಲಿ ಮೆರೆದಳಾ ಕುಂತಿ ೧೩

ಒಂದು ದಿನ ದೂರ್ವಾಸಮುನಿ ನೃಪ
ಮಂದಿರಕೆ ಬರಲಾ ಮಹೀಪತಿ
ಬಂದ ಬರವಿನಲವರ ಮರೆದನು ರಾಜಕಾರ್ಯದಲಿ
ಇಂದು ಕುಂತೀಭೋಜನೊಡೆತನ
ಬೆಂದುಹೋಗಲಿಯೆಂಬ ಶಾಪವ
ನಿಂದುಮುಖಿ ನಿಲಿಸಿದಳು ಹೊರಳಿದಳವರ ಚರಣದಲಿ ೧೪

ತರುಣಿಯೊಡಗೊಂಡೊಯ್ದು ಕನ್ಯಾ
ಪರಮ ಭವನಲಾ ಮುನಿಯನುಪ
ಚರಿಸಿದಳು ವಿವಿಧಾನ್ನ ಪಾನ ರಸಾಯನಂಗಳಲಿ
ಹರ ಮಹಾದೇವೀ ಮಗುವಿನಾ
ದರಣೆಗೀ ವಿನಯೋಪಚಾರಕೆ
ಹಿರಿದು ಮೆಚ್ಚಿದೆನೆಂದು ತಲೆದೂಗಿದನು ದೂರ್ವಾಸ ೧೫

ಮಗಳೆ (ಪಾ: ಮಗಳೇ) ಬಾ ಕೊಳ್ ಐದು ಮಂತ್ರಾ
ಳಿಗುಳನಿವು ಸಿದ್ದಪ್ರಯೋಗವು
ಸೊಗಸು ದಿವಿಜರೊಳಾರ ಮೇಲುಂಟವರ ನೆನೆ ಸಾಕು
ಮಗನು ಜನಿಸುವನೆಂದು ಮುನಿ ಕುಂ
ತಿಗೆ ರಹಸ್ಯದೊಳರುಹಿ ಮುನಿ ಮೌ
ಳಿಗಳ ಮಣಿ ಪರಿತೋಷದಲಿ ಸರಿದನು ನಿಜಾಶ್ರಮಕೆ ೧೬

ಮಗುವುತನದಲಿ ಬೊಂಬೆಯಾಟಕೆ
ಮಗುವನೇ ತಹೆನೆಂದು ಬಂದಳು
ಗಗನನದಿಯಲಿ ಮಿಂದಳುಟ್ಟಳು ಲೋಹಿತಾಂಬರವ
ವಿಗಡಮುನಿಪನ ಮಂತ್ರವನು ನಾ
ಲಗೆಗೆ ತಂದಳು ರಾಗರಸದಲಿ
ಗಗನಮಣಿಯನು ನೋಡಿ ಕಣ್ಮುಚ್ಚಿದಳು ಯೋಗದಲಿ ೧೭

ಅರಸ ಕೇಳ್ ಮುನಿಯಿತ್ತ ಮಂತ್ರಾ
ಕ್ಷರದ ಕರಹಕೆ ತಳುವಿದರೆ ದಿನ
ಕರನ ತೇಜವ ಕೊಂಬನೇ ದೂರ್ವಾಸ ವಿಗಡನಲ
ಧರೆಗೆ ಬಂದನು ಸೂರ್ಯನಾತನ
ಕಿರಣ ಲಹರಿಯ ಹೊಯ್ಲಿನಲಿ ಸರ
ಸಿರುಹಮುಖಿ ಬೆಚ್ಚಿದಳು ಬಿಜಯಂಗೈಯಿ ನೀವೆನುತ ೧೮

ಎನ್ನಬಾರದಲೇ ಋಷಿಪ್ರತಿ
ಪನ್ನ ಮಂತ್ರವಮೋಘವದರಿಂ
ದೆನ್ನ ತೂಕದ ಮಗನಹನು ನೀನಂಜಬೇಡೆನುತ
ಕನ್ನಿಕೆಯ ಮುಟ್ಟಿದನು ಮುನ್ನಿನ
ಕನ್ನೆತನ ಕೆಡದಿರಲಿಯೆನುತವೆ
ತನ್ನ ರಥವಿದ್ದೆಡೆಗೆ ರವಿ ತಿರುಗಿದನು ವಹಿಲದಲಿ ೧೯

ಅರಸ ಕೇಳ್ ಆಶ್ಚರ್ಯವನು ತಾ
ವರೆಯ ಮಿತ್ರನ ಕರಗಿ ಕರುವಿನೊ
ಳೆರೆದರೆಂದೆನೆ ಥಳಥಳಿಸಿ ತೊಳಗುವ ತನುಚ್ಛವಿಯ
ಕುರುಳುದಲೆ ನಿಟ್ಟೆಸಳುಗಂಗಳ
ಚರಣ ಕರಪಲ್ಲವದ ಕೆಂಪಿನ
ವರಕುಮಾರನ ಕಂಡು ಬೆರಗಿನೊಳಿರ್ದಳಾ ಕುಂತಿ ೨೦

ಅಳುವ ಶಿಶುವನು ತೆಗೆದು ತೆಕ್ಕೆಯ
ಪುಳಕ ಜಲದಲಿ ನಾದಿ ಹರುಷದ
ಬಳಿಯ ಲಜ್ಜೆಯ ಭಯದ ಹೋರಟೆಗಳುಕಿ ಹಳುವಾಗಿ
ಕುಲದ ಸಿರಿ ತಪ್ಪುವುದಲಾ ಸಾ
ಕಿಳುಹ ಬೇಕೆಂದೆನುತ ಗಂಗಾ
ಜಲದೊಳಗೆ ಹಾಯ್ಕಿದಳು ಜನದಪವಾದ ಭೀತಿಯಲಿ ೨೧

ತಾಯೆ ಬಲ್ಲಂದದಲಿ ಕಂದನ
ಕಾಯಿ ಮೇಣ್ ಕೊಲ್ಲೆನುತ ಕಮಲ ದ
ಳಾಯತಾಕ್ಷಿ ಕುಮಾರಕನ ಹಾಯ್ಕಿದಳು ಮಡುವಿನಲಿ
ರಾಯ ಕೇಳೈ ಸಕಲ ಲೋಕದ
ತಾಯಲಾ ಜಾಹ್ನವಿ ತರಂಗದಿ
ನೋಯಲೀಯದೆ ಮುಳುಗಲೀಯದೆ ಚಾಚಿದಳು ತಡಿಗೆ ೨೨

ಕೆದರಿ ಕಾಲಲಿ ಮಳಲ ರಾಶಿಯ
ನೊದೆದು ಕೈಗಳ ಕೊಡಹಿ ಭೋಯೆಂ
ದೊದೆದುತಿರ್ದನು ಶಿಶುಗಳರಸನು ರವಿನೀಕ್ಷಿಸುತ
ಇದನು ಕಂಡನು ಸೂತನೊಬ್ಬನು
ಮುದದ ಮದದಲಿ ತನ್ನ ಮರೆದು
ಬ್ಬಿದನಿದೆತ್ತಣ ನಿಧಿಯೊ ಶಿವಶಿವಯೆಂದು ನಡೆತಂದ ೨೩

ತರಣಿಬಿಂಬದ ಮರಿಯೊ ಕೌಸ್ತುಭ
ವರಮಣಿಯ ಖಂಡದ ಕಣಿಯೊ ಮ
ರ್ತ್ಯರಿಗೆ ಮಗನಿವನಲ್ಲ ಮಾಯಾ ಬಾಲಕನೊ ಮೇಣು
ಇರಿಸಿ ಹೋದವಳಾವಳೋ ಶಿಶು
ವರನ ತಾಯ್ ನಿರ್ಮೋಹೆಯೈ ಹರ
ಹರ ಮಹಾದೇವನುತ ತೆಗೆದಪ್ಪಿದನು ಬಾಲಕನ ೨೪

ತೃಣವಲಾ ತ್ರೈಲೋಕ್ಯ ರಾಜ್ಯವ
ಗಣಿಸುವೆನೆ ತಾನಿನ್ನು ತನ್ನಲಿ
ಋಣವಿಶೇಷವಿದೇನೊ (ಪಾ: ಋಣವಿಶೇಷವಿದೇನೋ) ಮೇಣ್ ಈ ಬಾಲಕಂಗೆನುತ
ಕ್ಷಣದೊಳೊದಗುವ ಬಾಷ್ಪ ಲುಳಿತೇ
ಕ್ಷಣನು ಬಂದನು ಮನೆಗೆ ಪರುಷದ
ಕಣಿಯ ತಂದೆನು ರಮಣಿ ಕೊಳ್ಳೆಂದಿತ್ತನರ್ಭಕನ ೨೫

ಆದರಿಸಿದನು ರಾಧೆಯಲಿ ಮಗ
ನಾದನೆಂದುತ್ಸವವ ಮಾಡಿ ಮ
ಹೀ ದಿವಿಜರನು ದಾನ ಮಾನಂಗಳಲಿ ಸತ್ಕರಿಸಿ
ಆ ದಿನಂ ಮೊದಲಾಗಿ ಉಧ್ಬವ
ವಾದುದವನೈಶ್ವರ್ಯ ಉನ್ನತ
ವಾದನಾ ರವಿನಂದನನು ರಾಧೇಯ ನಾಮದಲಿ ೨೬

ಹೊಳೆ ಹೊಳೆದು ಹೊಡೆಮರಳಿ ನಡು ಹೊ
ಸ್ತಿಲಲಿ ಮಂಡಿಸಿ ಬೀದಿ ಬೀದಿಗ
ಳೊಳಗೆ ಸುಳಿವರ ಸನ್ನೆಯಲಿ ಕರೆಕರೆದು ನಸುನಗುತ
ಲಲಿತರತ್ನದ ಬಾಲದೊಡಿಗೆಯ
ಕಳಚಿ ಹಾಯ್ಕುವ ಹೆಸರು ಜಗದಲಿ
ಬೆಳೆವುತಿರ್ದುದು ಹಬ್ಬಿದುದು ಜನಜನದ ಕರ್ಣದಲಿ ೨೭

ಅರಸ ಕೇಳೈ ಕರ್ಣ ಪಾರಂ
ಪರೆಯೊಳೀತನ ಹೆಸರು ಜಗದಲಿ
ಹರಿದುದಲ್ಲಿಂ ಬಳಿಕಲೀತನ ನಾಮಕರಣದಲಿ
ಸುರನರೋರಗ ನಿಕರವೇ ವಿ
ಸ್ತರಿಸಿದುದು ಕರ್ಣಾಭಿಧಾನವ
ಗುರುಪರಾಕ್ರಮಿ ಬೆಳೆವುತಿರ್ದನು ಸೂತಭವನದಲಿ ೨೮

(ಸಂಗ್ರಹ: ಶ್ರೀಕಾಂತ್ ವೆಂಕಟೇಶ್)