ಕಾವುದಾನತಜನವ ಗದುಗಿನ ವೀರನಾರಯಣ

ಕಾವುದಾನತಜನವ ಗದುಗಿನ ವೀರನಾರಯಣ
ಚಿತ್ರ ಕೃಪೆ: ಅಚ್ಚುತರಾವ್

Monday, May 3, 2010

ಕರ್ಣಪರ್ವ: ೦೧. ಒಂದನೆಯ ಸಂಧಿ

ಸೂ : ರಾಯ ಕಟಕಾಚಾರ್ಯನಾ ತರು
ವಾಯ ಸೇನಾಪಟ್ಟವನು ರಾ
ಧೇಯನಲಿ ರಚಿಸಿದನು ಮುದದಲಿ ಕೌರವರ ರಾಯ

ಕೇಳು ಜನಮೇಜಯ ಧರಿತ್ರೀ
ಪಾಲ ತೆಗೆದವು ಬಲವೆರಡು ನಿಜ
ಪಾಳಯಕೆ ಪರಿತೋಷ ಖೇದಸ್ತಿಮಿತವಿಕ್ರಮರು
ಕೋಲಗುರುವಿನ ಮರಣವಾರ್ತಾ
ಕಾಲಸರ್ಪನ ತಂದು ಸಂಜಯ
ಹೇಳಿಗೆಯನೀಡಾಡಿದನು ಧೃತರಾಷ್ಟ್ರನಿದಿರಿನಲಿ ೧

ಬೆದರಿತಾಯಾಸ್ಥಾನ ಧಿಗಿಲೆಂ
ದುದು ಧರಾಧೀಶ್ವರನ ತಂದೆಯ
ಹೃದಯದಲಿ ಹುರುಳೇನು ಬಳಿಕುಳಿದವರ ಮೋರೆಗಳ
ಕದಡಿತಂತಃಕರಣವರಸನ
ಕದಪು ಕೈಯಲಿ ಕೀಲಿಸಿತು ಹೇ
ಳಿದನು ಸಂಜಯ ಮತ್ತೆ ಮೇಲಣ ರಣದ ವಾರ್ತೆಯನು ೨

ಗುಡಿಯ ಕಟ್ಟಿಸು ಜೀಯ ಬರತುದು
ಕಡಲು ಮುರಿದುದು ಮೇರು ತಿರುಗಿತು
ಪೊಡವಿ ಬಿದ್ದುದು ಭಾನುಮಂಡಲವಹಹ ವಿತಳದಲಿ
ಮಡಿದುದೈ ನಿನ್ನಾನೆ ನಿನ್ನು
ಗ್ಗಡದ ಭಟ ಬೀಳ್ಕೊಂಡನೈ ಕಡಿ
ವಡೆದನೈ ಕಲಿ ಕರ್ಣನೊಸಗೆಯ ಮಾಡಹೇಳೆಂದ ೩

ಮೊದಲಲಿದ್ದುದು ಜೀವಕಳೆ ಹೃದ
ಯದಲಿ ಹೃದಯವನೊಡೆದು ಮಿಗೆ ಕಂ
ಠದಲಿ ಕವಿದುದು ಮಂಚದಲಿ ಮೈಮರೆದು ಮಲಗಿದನು
ಕೆದರಿತಲ್ಲಿಯದಲ್ಲಿ ರಾಯನ
ಹದನನರಿದೊಳಗೊಳಗೆ ರಾಣಿಯ
ರೊದರಲಂತಃಪುರದಲುಕ್ಕಿತು ಶೋಕರಸ ಜಲಧಿ ೪

ಬಾಯ ಬಸುರಿನ ನೊಸಲ ಹೊಯ್ಲಿನ
ರಾಯನರಸಿಯರರಸನಿದಿರಲಿ
ಹಾಯಿದರು ಭಿತ್ತಿಗಳನೊದರಿದರೊಡನೆ ದೆಸೆಯೊದರೆ
ರಾಯನಾವೆಡೆ ಜೀಯ ಕಲಿ ರಾ
ಧೇಯನಾವೆಡೆ ನೂರು ಮಕ್ಕಳು
ಬೀಯವಾದರೆ ಮಾವ ಎಂದರು ಸೊಸೆಯರಡಗೆಡೆದು ೫

ರವಕುಳವ ನಾನೇನ ಹೇಳುವೆ
ನವನಿಪತಿಯಾ ಕರ್ಣ ಮೊದಲಾ
ದವರ ರಾಣೀವಾಸ ಬಹಳಾಕ್ರಂದನಧ್ವನಿಯ
ಕವಿದುದೊಳಸೂರೆಗರು ಕೋಟೆಯ
ತವಕಿಗರು ಗುಜುಗುಜಿಸೆ ಬಿಗಿದವು
ಭವನ ಭವನ ಕವಾಟ ತತಿ ಗಾಳಾಯ್ತು ಗಜನಗರ ೬

ನೆರೆದುದಲ್ಲಿಯದಲ್ಲಿ ಸೂರೆಗೆ
ಹರಿದುದಲ್ಲಿಯದಲ್ಲಿ ಮನ ಮ
ತ್ಸರದ ಜಗಳಕೆ ಸೂಳುಬಂಟರು ಹೊಯ್ದರೊಳಗೊಳಗೆ
ಅರಮನೆಯಲಾ ಬೊಬ್ಬೆ ಹಸ್ತಿನ
ಪುರದಲೀ ಬೊಬ್ಬಾಟವಿನ್ನುಳಿ
ದರಸುಗಳ ಪಾಡಾವುದೆಂದನು ಮುನಿ ನೃಪಾಲಂಗೆ ೭

ಸೂರೆ ಹೋದುದು ನಗರಿ ಖಳರಿಗೆ
ಮಾರಿದರು ಪಟ್ಟಣವನಕಟಾ
ಕಾರುಮದ್ದಿಗೆ ಹೋಹುದೇ (ಪಾ: ಹೋಹುದೆ) ಕೈಮಸಕವವನಿಪನ
ನೂರುಮಕ್ಕಳನಿಕ್ಕಿ ಸಾಧಿಸ
ಲಾರನೇ ಜಯಸಿರಿಯನೆಂದುರೆ
ಮೀರಿ ನುಡಿದುದು ಮಂತ್ರಿಗಳು ಧೃತರಾಷ್ಟ್ರನಿದಿರಿನಲಿ ೮

ಎರಡು ಗಲ್ಲದ ನಯನವಾರಿಯ
ಹರಿಕುಣಿಯ ನಿಲಿಸಿದನು ಸಂಜಯ
ನರಸನನು ಕುಳ್ಳಿರಿಸಿ ಬೆನ್ನಿಗೆ ಚಾಚಿದನು ಮಲಗ
ಅರಸ ಹದುಳಿಸು ನಿನ್ನ ಸೊಸೆಯರ
ಕರೆದು ಸಂತೈಸಕಟ ಹಸ್ತಿನ
ಪುರದ ಗಾವಳಿಗಜಬಜಕೆ ಡಂಗುರವ ಹೊಯ್ಸೆಂದ ೯

ಬೀದಿ ಬೀದಿಗಳೊಳಗೆ ಡಂಗುರ
ನಾದವೆಸೆದವು ಕೇರಿ ಕೇರಿಗೆ
ಕೈದುಕಾರರು ನೆರೆದು ನಿಂದರು ಸೂರೆಗರ ಕೆಡಹಿ
ಸುಯ್ಪನಡಿಗಡಿಗೊಲೆದೊಲೆದು ಪರಿ
ಖೇದಶೋಕಜ್ವಲನ ಜನಿತ
ಸ್ವೇದ ಸಲಿಲ ಸ್ತಿಮಿತಕಾಯನು ರಾಯನಿಂತೆಂದ ೧೦

ಹೇಳು ಸಂಜಯ ನಮ್ಮ ಭಾಗ್ಯದ
ಶಾಳಿವನ ಫಲವಾಯ್ತಲಾ ಕೈ
ಮೇಳವಿಸಿದನೆ ಕರ್ಣನಮರಸ್ತ್ರೀ ಕದಂಬದಲಿ
ಹೇಳು ಹೇಳೆನ್ನಾಣೆ ಮಾತಿನ
ಜಾಳಿಗೆಯ ಮರೆ ಬೇಡ ಕುರುಪತಿ
ಕಾಳೆಗದೊಳಸ್ತಮಿಸಿದನೆ ನುಡಿಯಂಜಬೇಡೆಂದ ೧೧

ಸಾವೆನಾನೆಂದಂಜದಿರು ಕ
ರ್ಣಾವಸಾನವ ಕೇಳಿ ತನ್ನಯ
ಜೀವವಿದಲಾ ದೇಹದಲಿ ಬೇರಿನ್ನು ಕೆಲಬರಲಿ
ಸಾವೆನೇ ತಾನಕಟ ಕೌರವ
ಜೀವಿಸಲಿ ಮೇಣಳಿಯಲೆಮಗಿ
ನ್ನಾವ ತೊಡಕಿಲ್ಲಿನ್ನು ವಜ್ರಶರೀರ ತಾನೆಂದ ೧೨

ಘಾಯವಡೆದನು ಭೀಷ್ಮ ಬಳಿಕಿನೊ
ಳಾಯುಧದ ಗುರು ತೊಡಬೆಗಳಚಿದ
ನೀಯವಸ್ಥೆಗೆ ನಮ್ಮ ತಂದನು ಭಾನುನಂದನನು
ಸಾಯನೇ ಮಗನಿನ್ನು ಸಾಕಾ
ನಾಯ ನುಡಿಯಂತಿರಲಿ ಕರ್ಣಂ
ಗಾಯಿತೇ ಕಡೆ ಶೋಕವನು ವಿಸ್ತರಿಸಿ ಹೇಳೆಂದ ೧೩

ಸರಳ ಕೊರತೆಯೊ ಸಾರಥಿಯ ಮ
ತ್ಸರವೊ ರಥದ ವಿಘಾತಿಯೋ ದು
ರ್ಧರ ಧನುರ್ಭಂಗವೊ ಮಹಾಸ್ತ್ರವ್ಯಥೆಯೊ ರವಿಸತನ
ಹುರುಳುಗೆಡಿಸಿದರೆಂತು ರಿಪು ರಾ
ಯರಿಗೆ ನಾವ್ ಗೋಚರವೆ ದುರಿತೋ
ತ್ಕರುಷವೈಸಲೆ ನಮ್ಮ ಕೆಡಿಸಿತು ಶಿವಶಿವಾ ಎಂದ ೧೪

ಹರುಹುಗೆಟ್ಟುದು ತೇರು ಸಾರಥಿ
ಹುರುಳುಗೆಡಿಸಿಯೆ ನುಡಿದನಂಬಿನ
ಕೊರತೆ ತಾ ಮುನ್ನಾಯ್ತು ದೈವದ್ರೋಹಿಗಳು ನಿಮಗೆ
ಅರಿವಿಜಯವೆಲ್ಲಿಯದು ನೀವ್ ಮನ
ಬರಡರೈ ನಿಮ್ಮನ್ವಯವ ಸಂ
ಹರಿಸಿದಿರಿ ಸಾಕೆಂದು ಸಂಜಯ ತೂಗಿದನು ಶಿರವ ೧೫

ಸುರ ನರೋರಗರರಿಯೆ ನಾವ್ ಬಾ
ಹಿರರು ಭಂಗಿಸಬೇಡ ಸಾಕಂ
ತಿರಲಿ ಕರ್ಣಾಹವದ ಕರ್ಣಾಮೃತವ ಸುರಿ ಸಾಕು
ಅರಿಗಳಭ್ಯುದಯವನು ನಮ್ಮಪ
ಸರಣವನು ಕಿವಿಯಾರೆ ಕೇಳುವ
ಪರಮ ಸುಕೃತಿಗಳಾವು ನೀ ಹೇಳಂಜಬೇಡೆಂದ ೧೬

ಹೇಳಿದನು ಬಳಿಕೆರಡು ಥಟ್ಟಿನೊ
ಳಾಳು ಕುದುರೆಯ ಗಜ ರಥವ ಭೂ
ಪಾಲರಳಿದುಳಿದವರ ಲೆಕ್ಕವನೈದೆ ವಿಸ್ತರಿಸಿ
ಕೇಳು ನಿನ್ನಾತನ ವಿನೋದದ
ಖೂಳ ಬೋಳೆಯತನದಲೊದಗಿದ
ಬಾಳಿಕೆಯ ಬೀಸರವನೆಂದನು ಸಂಜಯನು ನಗುತ ೧೭

ತೊಡರ ತೆಗೆದರು ಕೈಯಡಾಯ್ದವ
ಜಡಿಯಲಮ್ಮರು ಹೊತ್ತ ದುಗುಡದ
ನಿಡು ಮುಸುಕುಗಳ ಬಿಗಿದ ಬೆರಗಿನ ಬಿಟ್ಟ ಕಣ್ಣುಗಳ
ಒಡೆಯನಿದಿರಲಿ ಕುಳ್ಳಿರದೆ ಕೆಲ
ಕಡೆಯ ಕೈದೀವಿಗೆಯ ಮರೆಯಲಿ
ಮಿಡುಕದಿರ್ದುದು ರಾಯನೋಲಗದೊಳಗೆ ಪರಿವಾರ ೧೮

ಸಾಲ ಸಾವಿರ ದೀವಿಗೆಯ ಹರಿ
ದಾಳಿಗಳುಕದೆ ನೃಪರ ಮೋರೆಗ
ಳೋಳಿಗಳ ನೆರೆ ಹೊದ್ದಿ ಕತ್ತಲೆ ನಿಂದುದಲ್ಲಲ್ಲಿ
ಹೇಳನೇನದ ಬಹಳ ದುಗುಡದ
ಪಾಳೆಯವೊ ನಿನ್ನಾತನೋಲಗ
ಶಾಲೆಯೋ ನಾವರಿಯೆವೆಂದನು ಸಂಜಯನು ನೃಪಗೆ ೧೯

ಎಲೆ ಮಿಡುಕದಾಸ್ಥಾನ ವೀಳೆಯ
ದೆಲೆಯ ಮಡಿಸುವ ರಭಸವಿಲ್ಲೊಳ
ಗೊಳಗೆ ಸನ್ನೆಗಳೋರೆಗೊರಳುಗಳೌಡುಗಚ್ಚುಗಳ
ಹಳಸಿದಗ್ಗಳಿಕೆಗಳ ಮೀಸಲು
ಗಳೆದ ಬಿರುದಿನ ಮಾನಭಂಗದ
ಕಳವಳದ ಕನಸುಗಳಲಿದ್ದುದು ರಾಯನಾಸ್ಥಾನ ೨೦

ಕೆತ್ತು ಕೊಂಡಿರಲೇಕೆ ನೀವಿ
ನ್ನುತ್ತರಾಯಿಗಳೆಮ್ಮ ಭಾಗ್ಯದ
ಬಿತ್ತು ಹುರಿದಿರೆ ಬಿರುದ ಭಟರಿದ್ದೇನಮಾಡುವರು
ಮೆತ್ತಿದಂಬಿನ ಮೆಯ್ಯ ಭೀಷ್ಮನು
ಹೊತ್ತ ಕೈದುವ ಬಿಸುಟ ಕಳಶಜ
ನುತ್ತಮಿಕೆಗಳ ಮೆರೆದರೆಂದನು ಕೌರವರ ರಾಯ ೨೧

ಬಿಗಿದ ತಿಮಿರದ ಕೆಚ್ಚು ಸೂರ್ಯನ
ಸೊಗಡು ಹೊಯ್ದರೆ ಮುರಿಯದೇ ಕಾ
ಳೆಗಕೆ ಕರ್ಣನ ಕೈದು ಭಂಡಾರಿಸಿದುದಿನ್ನಬರ
ತೆಗೆಸುವೆವು ನಾಳಿನಲಿ ನಿಮ್ಮಯ
ಮೊಗದ ದುಗುಡದ ದಡ್ಡಿಯನು ಮೈ
ದೆಗೆಯದಿರಿ ಕಲಿಯಾಗಿಯೆಂದನು ನೃಪತಿ ಸುಭಟರಿಗೆ ೨೨

ಜೀಯ ಸಂಶಯವಿಲ್ಲ ಗುರು ಗಾಂ
ಗೇಯರಳುಕಿದರೇನು ಕಲಿ ರಾ
ಧೇಯನೇ ವಜ್ರಾಂಗಿಯಲ್ಲಾ ನಮ್ಮ ಮೋಹರಕೆ
ರಾಯ ನೀ ಪತಿಕರಿಸಿದರೆ ಚ
ಕ್ರಾಯುಧನ ಚಾತುರ್ಯ ಕೊಳ್ಳದು
ಜೀಯ ಕರ್ಣನ ಮುಂದೆಯೆಂದುದು ನಿಖಿಳ ಪರಿವಾರ ೨೩

ಬೇರೆ ತನಗಗ್ಗಳಿಕೆಯೋಲೆಯ
ಕಾರತನವೇ ರಾಯ ಮನವೊಲಿ
ದೇರಿಸಿದರೇರುವುದು ದೊರೆ ಮನಮುರಿಯೆ ಕುಂದುವುದು
ತೋರಿ ನುಡಿದರೆ ಭೀಷ್ಮ ದ್ರೋಣರು
ಜಾರಿಸಿದ ರಣವೆಮಗೆ ಸದರವೆ
ದೂರುವವರಾವಲ್ಲವೆಂದನು ಭಾನುಸುತ ನಗುತ ೨೪

ಸಾಕದಂತಿರಲಿನ್ನು ಥಟ್ಟಿಂ
ಗಾಕೆವಾಳರ ಮಾಡು ಸಾಕಾ
ಸ್ತೋಕಪುಣ್ಯರ ಮಾತದೇತಕೆ ಗುರು ನದೀಸುತರ
ಸಾಕಿ ಸಲಹಿದೆ ಕರ್ಣನನು ಹುರು
ಡೇಕೆ ಗುಣದೊಳಗೀತ ಸೇನಾ
ನೀಕಭಾರದ ಹೊರಿಗೆಗಹನೆಂದನು ಕೃಪಾಚಾರ್ಯ ೨೫

ಎಮ್ಮ ತೋರಿಸಬೇಡ ಸುಖದಲಿ
ನಿಮ್ಮ ಚಿತ್ತಕೆ ಬಹುದ ಮಾಡುವು
ದೆಮ್ಮ ಹೃದಯ ವ್ಯಥೆಯ ನಾವಿನ್ನಾಡಿ ಫಲವೇನು
ಎಮ್ಮ ಪುಣ್ಯದ ಬೆಳೆಗಳೊಣಗಿದ
ಡಮ್ಮಿ ಮಾಡುವುದೇನು ಕರ್ಣನು
ನಮ್ಮ ದಳವಾಯೆಂದನಶ್ವತ್ಥಾಮನರಸಂಗೆ ೨೬

ಆ ಮಹಾರಥ ಭೀಷ್ಮನೇ ಸ್ವೇ
ಚ್ಚಾಮರಣಿಯಾಚಾರ್ಯಚಾಪ
ವ್ಯೋಮಕೇಶನು ಹೊಕ್ಕು ಕಾಣರು ಹಗೆಗೆ ಹರಿವುಗಳ
ಆ ಮಹಾನಾರಾಯಣಾಸ್ತ್ರದ
ಸೀಮೆ ಸೀದುದು ಮಿಕ್ಕ ಭಟರು
ದ್ದಾಮರೇ ಸಾಕಿನ್ನು ಸೇನಾಪತಿಯ ಮಾಡೆಂದ ೨೭

ಕರಸಿದನು ಭೂಸುರರನೌದುಂ
ಬರದ ಮಣಿ ಮಡಿವರ್ಗ ದೂರ್ವಾಂ
ಕುರ ಸಿತಾಕ್ಷತ ಧವಳಸರ್ಷಪ ವರಫಲಾವಳಿಯ
ತರಿಸಿದನು ಹೊಂಗಳಶ ತತಿಯಲಿ
ವರ ನದೀವಾರಿಗಳನಾಡಂ
ಬರದ ಲಗ್ಗೆಯಲೊದರಿದವು ನಿಸ್ಸಾಳಕೋಟಗಳು ೨೮

ವಿರಚಿಸಿತು ಪಟ್ಟಾಭಿಷೇಕೋ
ತ್ಕರುಷ ಮಂತ್ರಾಕ್ಷತೆಯ ಮಳೆಗಳ
ಕರೆದರವನೀಸುರರು ಜಯರವ ಮೇಘಘೋಷದಲಿ
ಗುರುಸುತಾದಿ ಮಹಾಪ್ರಧಾನರು
ದರುಶನವ ನೀಡಿದರು ಕರ್ಣನ
ಬಿರುದಿನುಬ್ಬಟೆಲಹರಿ ಮಸಗಿತು ವಂದಿಜಲಧಿಯಲಿ ೨೯

ಅರಳಿತರಸನ ವದನ ಶಕುನಿಯ
ಹರುಷಮಿಗೆ ದುಶ್ಯಾಸನಂಗು
ಬ್ಬರಿಸೆ ರೋಮಾವಳಿ ವಿಕರ್ಣಾದಿಗಳ ಮನ ನಲಿಯೆ
ಗುರುಜ ಕೃಪ ಕೃತವರ್ಮ ಶಲ್ಯಾ
ದ್ಯರಿಗೆ ಹೂಸಕದೊಲಹು ಮಿಗಿಲಾ
ಯ್ತಿರುಳು ಕರ್ಣಗೆ ಪಟ್ಟವಾಯಿತು ಭೂಪ ಕೇಳೆಂದ ೩೦

(ಸಂಗ್ರಹ : ಸುಬ್ರಹ್ಮಣ್ಯ)

Wednesday, April 28, 2010

ವಿರಾಟಪರ್ವ: ೦೭. ಏಳನೆಯ ಸಂಧಿ

ಸೂ: ಕದನ ಚೌಪಟ ಮಲ್ಲ ಪರಬಲ
ಮದನ ಮದಹರ ರುದ್ರನಹಿತರ
ಸದೆದು ಮರಳಿಚಿದನು ವಿರಾಟನ ನಿಖಿಳ ಗೋಕುಲವ

ಭಯವು ಭಾರವಿಸಿತ್ತು ಜನಮೇ
ಜಯ ಮಹೀಪತಿ ಕೇಳು ಕುರು ಸೇ
ನೆಯಲಿ ಭೀಷ್ಮ ದ್ರೋಣರರಿದರು ಪಾರ್ಥನೆಂಬುದನು
ಜಯವು ಜೋಡಿಸಲರಿಯದಿದು ಸಂ
ಶಯದ ಸುಳಿವುತ್ಪಾತ ಶತವಿದು
ಲಯದ ಬೀಜವು ಭೀಷ್ಮ ಚಿತ್ತವಿಸೆಂದನಾ ದ್ರೋಣ ೧

ಸುರಿಸುತಿವೆ ಕಂಬನಿಗಳನು ಗಜ
ತುರಗಚಯವೊರೆಯುಗಿದಡಾಯುಧ
ಮುರಿದು ಬಿದ್ದುದು ಬೀಸುತಿದೆ ಬಿರುಗಾಳಿ ಬಲ ಬೆದರೆ
ಹರಿವುತಿವೆ ತಾರಕಿಗಳಭ್ರದೊ
ಳರುಣಮಯ ಜಲಧಾರೆಯಿದೆ ತರ
ತರದಲಿದೆ ಪಡಿಸೂರ್ಯಮಂಡಲವೆಂದನಾ ದ್ರೋಣ ೨

ಇದೆ ಬಹಳ ಭೂಕಂಪವದುಭುತ
ವಿದೆ ದಿಶಾವಳಿ ಧೂಮಕೇತುಗ
ಳಿದೆ ಪತಾಕಾಭಂಗವಿದೆ ವಿಪರೀತ ಪರಿವೇಷ
ಇದು ಸಮಾಹಿತವಲ್ಲ ರಾಜಾ
ಭ್ಯುದಯಕರವೇ ಭೀಷ್ಮ ನಮ್ಮನು
ಸದೆಯದಿಹನೇ ಸುರಪನಂದನನೆಂದನಾ ದ್ರೋಣ ೩

ಬಿರಿಯಲಬುಜಭವಾಂಡವಿದೆ ಕಪಿ
ವರನ ಕಳಕಳ ದೇವದತ್ತದ
ಧರಧುರದ ದೆಖ್ಖಾಳವಿದೆ ಗಾಂಡಿವದ ಬೊಬ್ಬೆಯಿದೆ
ನರನ ನಿಷ್ಠುರ ಸಿಂಹ ರವವಿದೆ
ತುರಗ ದಳ್ಳುರಿ ಸಾರುತಿದೆ ಸಂ
ಗರಕೆ ಸಾಹಸ ಮಲ್ಲ ಮೊಳಗಿದನೆಂದನಾ ದ್ರೋಣ ೪

ಬಲವ ಬೆದರಿಸಿ ಹಗೆಯ ಭುಜದ
ಗ್ಗಳಿಕೆಯನೆ ಕೊಂಡಾಡಿ ಸಾಮಿಯ
ನಿಳಕೆಗಾಬಿರಿ ನಿಮ್ಮ ಪೈಕಕೆ ಖುಲ್ಲತನ ಸಹಜ
ಫಲುಗುಣನೆಯಾಗಲಿ ಸುರೇಂದ್ರನೆ
ನಿಲಲಿ ಭಾರ್ಗವ ರಾಮನಾಗಲಿ
ಗೆಲಿದು ಕೊಡುವೆನು ನಿಮಿಷಕೆಂದನು ಖಾತಿಯಲಿ ಕರ್ಣ ೫

ನರನು ನರನೆಂದೆನವರತ ತಲೆ
ಬಿರಿಯೆ ಹೊಗಳುವಿರಾನಿರಲು ಸಂ
ಗರಕೆ ತಲೆದೋರಿದೊಡೆ ತರಿವೆನು ಲೋಕಪಾಲಕರ
ನರನ ತೆತ್ತಿಗರಹಿರಿ ತತ್ತರೆ
ಪುರದೊಳಗೆ ಕೌರವನವರು ದು
ಶ್ಚರಿತರೆರಡಿಟ್ಟಿಹಿರಿ ಖೂಳರು ನಿಮ್ಮೊಳೇನೆಂದ ೬

ಹೊಕ್ಕು ತಾ ಬಳಲಿಸಿದೊಡೆ ಹಿಂ
ದಿಕ್ಕಿ ಕೊಂಬವರಾರು ಹಗೆವನ
ಸಿಕ್ಕಿದುರಗವ ಸೆಳೆವನಾವನು ಗರುಡ ತುಂಡದಲಿ
ಎಕ್ಕತುಳದಲಿ ವೈರಿ ಪಾರ್ಥನ
ನೊಕ್ಕಲಿಕ್ಕುವೆನರಸ ನಿನ್ನೀ
ಚುಕ್ಕಿಗಳ ಚಾಪಲವ ಕೇಳದಿರೆಂದನಾ ಕರ್ಣ ೭

ಎನಲು ಭುಗಿಲೆಂದನು ಕೃಪಾಚಾ
ರ್ಯನು ಸುಯೋಧನ ಕೇಳು ರಾಧಾ
ತನಯನಿವ ಬೊಗುಳಿದೊಡೆ ನಿಶ್ಚಯವೆಂದು ನಂಬದಿರು
ಅನುವರದೊಳರ್ಜುನನ ಗೆಲುವೊಡೆ
ಯೆನಗೆ ನಿನಗೀತಂಗೆ ಕೆಲಬರಿ
ಗನಿಮಿಪರಿಗಳವಲ್ಲ ಬಲ್ಲೈ ಪಾರ್ಥನಧಟುಗಳ ೮

ಮಾಡಿದನು ಹರನೊಡನೆ ಖಾಡಾ
ಖಾಡಿಯನು ಸುರಪತಿಯ ತೋಟವ
ಬೇಡಿದೊಡೆ ಬೇಳಿದನು ವಹ್ನಿಗೆ ರಾಜಸೂಯದಲಿ
ರೂಢಿಗುತ್ತರ ಕುರುಗಳರ್ಥವ
ಹೂಡಿಸಿದನರಮನೆಗೆ ದೈತ್ಯರ
ಬೀಡ ಬರಿಗೈದನು ಹಿರಣ್ಯಕಪುರ ನಿವಾಸಿಗಳ ೯

ಬಾಗಿಸಿದ ಬಿಲ್ಲಿನಲಿ ರಾಯರ
ಮೂಗ ಕೊಯ್ದನು ಮದುವೆಯಲಿ ನೀ
ನೀಗಳೊದರುವೆ ಕೌರವೇಂದ್ರನನಂದು ಬಿಡಿಸಿದೆಲ
ಆ ಗರುವ ಸೈಂಧವನ ಮುಡಿಯ ವಿ
ಭಾಗಿಸಿದ ಭಟನಾರು ಪಾರ್ಥನ
ಲಾಗುವೇಗವನಾರು ಬಲ್ಲರು ಕರ್ಣ ಕೇಳೆಂದ ೧೦

ಮರುಳ ಕಣ್ಣಿಗೆ ಕೊಡನ ತೋರದ
ಲಿರದೆ ಸಾಸವೆ ನಿಮ್ಮ ಕಣ್ಣಿಗೆ
ನರನು ದೊಡ್ಡಿತು ಉಳಿದ ವೀರರ ಕಣ್ಗೆ ತುಸು ಮಾತ್ರ
ಮರುಳು ಹಾರುವ ಗದ್ಯಪದ್ಯದ
ಸರಸ ವಿದ್ಯಗಳಲ್ಲದೀ ಸಂ
ಗರದ ಕರ್ಕಶ ವಿದ್ಯೆ ನಿಮಗೇಕೆಂದನಾ ಕರ್ಣ ೧೧

ಹಣೆಗೆ ಮಟ್ಟಿಯ ಬಡಿದು ದರ್ಭೆಯ
ಹಣಿದು ಬೆರಳಲಿ ಸೆಕ್ಕಿ ಧೋತ್ರದ
ದಣಿಬವನು ನಿರಿವಿಡಿದು ಮಹಳದ ಮನೆಯ ಚೌಕದಲಿ
ಮಣೆಗೆ ಮಂಡಿಸಿ ಕುಳ್ಳಿತುಂಬೌ
ತಣದ ವಿದ್ಯವ ಬಲ್ಲಿರಲ್ಲದೆ
ರಣ ವಿಚಾರದ ವಿದ್ಯೆ ನಿಮಗೇಕೆಂದನಾ ಕರ್ಣ ೧೨

ಇಂದು ಪಿತೃದಿನವಿಂದು ಸಂಕ್ರಮ
ಣಿಂದು ಸೂರ್ಯಗ್ರಹಣ ಹರಿದಿನ
ವಿಂದು ಯಜ್ಞಾರಂಭ ದಿನ ವಡ್ಡಂತಿ ಲೇಸೆಂದು
ಬಂದು ನಾನಾ ಮುಖದ ದಾನಕೆ
ತಂದ ವಸ್ತುವ ಬಾಚಿ ಹೊಳ್ಳಿಸಿ
ತಿಂದು ಕೊಬ್ಬಿದ ನಿಮಗೆ ಸುಭಟರ ಮಾತದೇಕೆಂದ ೧೩

ಬಲ್ಲಿರೈ ಕೌರವನ ಧನವನು
ಹೊಳ್ಳಿಸಲು ಮೃಷ್ಟಾನ್ನದಿಂದವೆ
ಡೊಳ್ಳ ಬೆಳಸಿಯೆ ರಾಜಗುರುತನದಿಂದ ಬೆರತಿಹಿರಿ
ಬಿಲ್ಲ ವಿದ್ಯಾ ವಿಷಯ ರಿಪುಭಟ
ಮಲ್ಲರೊಡನೆಯ ಕದನವಿದು ಜಡ
ರೆಲ್ಲರಿಗೆ ಸುಲಭವೆ ಜಪಾನುಷ್ಠಾನವಲ್ಲೆಂದ ೧೪

ಕೇಳಿದಶ್ವತ್ಥಾಮ ಕಿಡಿಗಳ
ನಾಲಿಗೆಗಳಲುಗಳಿದನು ಕೇಳೆಲೆ
ಖೂಳ ಸೂತನ ಮಗನೆ ಸುಭಟಾಂಗದಲಿ ಖರೆಯನಲ
ಕೀಳು ಜಾತಿಗೆ ತಕ್ಕ ನುಡಿಗಳು
ಮೇಳವಿಸಿದವು ಕುಲವ ನಾಲಗೆ
ಹೇಳಿತೆಂಬುದು ತಪ್ಪದಾಯಿತು ಕರ್ಣ ಕೇಳೆಂದ ೧೫

ನಗುವೆ ವಿಪ್ರರನಾವ ರಾಯರ
ಮಗನು ಹೇಳಾ ದಾನ ಧರ್ಮಾ
ದಿಗಳೊಳರ್ಧವನಾರು ಕೊಂಬರು ದ್ವಿಜರು ಹೊರಗಾಗಿ
ಜಗವ ರಕ್ಷಿಸಲಾವು ಕೊಂಬೆವು
ಮಗುಳೆ ಕೊಡುವೆವು ಕ್ಷತ್ರ ವೈಶ್ಯಾ
ದಿಗಳು ಕೊಡುವರು ತತ್ಪ್ರತಿಗಹ ಯೋಗ್ಯವಲ್ಲೆಂದ ೧೬

ಉಳಿದ ವರ್ಣತ್ರಯಕೆ ಬೆಸಕೈ
ವಳತೆಯಲಿ ಶೂದ್ರನು ಕೃತಾರ್ಥನು
ತಿಳಿಯೆ ನೀನಾರಿದರೊಳಗೆ ಕೊಂಬವನೊ ಕೊಡುವವನೊ
ಕುಲವಿಹೀನನ ತಂದು ಕೌರವ
ತಿಲಕ ಪತಿಕರಿಸಿದೊಡೆ ನಾಲಗೆ
ಯುಲಿಯಲಾಯಿತು ಕರ್ಣ ನಿನ್ನವ ಭವವ ನೆನೆಯೆಂದ ೧೭

ಪರರು ಪತಿಕರಿಸಿದೊಡೆ ಲಜ್ಜೆಗೆ
ಶಿರವ ನಸುಬಾಗುವರು ಗರುವರು
ದುರುಳ ನೀ ದುರುದುಂಬಿತನದಲಿ ನಿನ್ನ ಹೊಗಳಿದೊಡೆ
ಗರುವ ಮಾನ್ಯರು ಮೆಚ್ಚುವರೆ ಸಸಿ
ನಿರು ಮಹಾತ್ಮರು ನಿನ್ನೊಡನೆ ಉ
ತ್ತರವ ಕೊಡುವರೆ ಗಳಹತನ ನಮ್ಮೊಡನೆ ಬೇಡೆಂದ ೧೮

ತೆಗೆದು ತಾಳಿಗೆ ಗಡಿತನಕ ನಾ
ಲಗೆಯ ಕೀಳ್ವೆನು ಮುನಿದು ತನ್ನೋ
ಲಗವ ತೆಗೆಸಲಿ ಕೌರವನು ನಿನಗೊಲಿದು ಪತಿಕರಿಸಿ
ಅಗಣಿತದ ಗರುವರನು ನಿಂದಿಸಿ
ನಗುವೆ ನಿನ್ನನು ಕೊಲುವೆನೆಂದಾ
ಳುಗಳ ದೇವನು ಸೆಳೆದನಶ್ವತ್ಥಾಮ ಖಂಡೆಯವ ೧೯

ಆಳು ಮತ್ಸರದಧಿಕ ರೋಷದ
ಮೇಲುನುಡಿಯಂಕುರಿಸೆ ಕುರು ಭೂ
ಪಾಲನಿಬ್ಬರ ತೆಗೆದನುಚಿತೋಕ್ತಿಯಲಿ ಸಂತೈಸಿ
ಕಾಳಗಕೆ ತನ್ನವನೊಡನೆ ನಿ
ಮ್ಮಾಳುತನವನು ತೋರಿಯೊಳಗೊಳ
ಗಾಳು ವಾಸಿಯ ತೋಟಿ ಬೇಡೆಂದರಸ ಮಾಣಿಸಿದ ೨೦

ಬಂದು ಭೀಷ್ಮಂಗೆರಗಿ ಕೈಮುಗಿ
ದೆಂದನೀತನು ಪಾರ್ಥನಾದೊಡೆ
ಹಿಂದಣಂತಿರೆ ನವೆಯಬೇಹುದು ವರುಷ ಹದಿಮೂರ
ಸಂದುದಿಲ್ಲಜ್ಞಾತವಾಸಕೆ
ಮುಂದೆ ದಿನವುಂಟೆನ್ನ ಲೆಕ್ಕ
ಕ್ಕೆಂದು ಕುರುಪತಿ ನುಡಿಯೆ ನಗುತಿಂತೆಂದನಾ ಭೀಷ್ಮ ೨೧

ಮಗನೆ ಕೇಳಿರೈದು ವರುಷಕೆ
ಮಿಗುವವೆರಡೇ ಮಾಸ ಮಾಸಾ
ದಿಗಳನವರನುಭವಿಸಿದರು ಹದಿಮೂರು ವತ್ಸರವ
ಮಿಗುವವಧಿ ಬುಧರರಿಯೆ ನಿನ್ನಿನ
ಹಗಲು ನಿನ್ನದು ಪಾಂಡುತನಯರು
ಹೊಗುವಡಿಂದಿನ ದಿವಸವವರದು ಕಂದ ಕೇಳೆಂದ ೨೨

ಜಲಧಿ ಮೇರೆಯನೊದೆದು ಹಾಯಲಿ
ನೆಲನನಿಳುಹಲಿ ದಿಗಿಭವಿನಮಂ
ಡಲಕೆ ಕಾಳಿಕೆಯಿಡಲಿ ನಡೆದಾಡಲಿ ಕುಲಾದ್ರಿಗಳು
ಅಳುಪಲರಿವನೆ ಸತ್ಯಭಾಷೆಗೆ
ಕಲಿ ಯುಧಿಷ್ಠಿರ ನೃಪತಿಯನ್ವಯ
ತಿಲಕನಲ್ಲಾ ಕಂದ ಕೌರವಯೆಂದನಾ ಭೀಷ್ಮ ೨೩

ಸಾಕದಂತಿರಲಿನ್ನು ಕಾಳಗ
ನೂಕಲರಿಯದು ಪಾರ್ಥ ಕೊಲುವಡೆ
ಬೇಕು ಬೇಡೆಂಬುವರ ಕಾಣೆನು ಹಲವು ಮಾತೇನು
ಆ ಕುಮಾರರ ಕರೆಸಿ ಸಂಧಿಯ
ನಾಕೆವಾಳರ ಮುಂದೆ ಮಾಡಲು
ಲೋಕದಲಿ ನಿನಗಿಲ್ಲ ಸರಿ ಕುರುರಾಯ ಕೇಳೆಂದ ೨೪

ಕಂಡುದಳವಿ ವಿರೋಧಿಗೆಮಗೆಯು
ಕೊಂಡುದೇ ಬಲುಗೈದು ಮನ ಮುಂ
ಕೊಂಡು ಹೊಕ್ಕುದು ಕಳನದಲ್ಲದೆ ಪಾಂಡು ಸುತರೊಡನೆ
ಉಂಡು ಮೇಣುಟ್ಟೊಲಿದು ಬದುಕುವ
ಭಂಡತನವೆನಗಿಲ್ಲ ವೈರವ
ಕೊಂಡೆಸಗಬೇಕೆಂದು ಬಿನ್ನವಿಸಿದನು ಕುರುರಾಯ ೨೫

ಮೇಲೆ ನೆಗಳುವ ಹದನನಿಲ್ಲಿಂ
ಮೇಲೆ ನೀನೇ ಬಲ್ಲೆಯೆನುತ ವಿ
ಶಾಲಮತಿ ಬಿಸುಸುಯ್ದು ಕೌರವ ಕೆಟ್ಟನಕಟೆನುತ
ಕಾಳಗವ ನಾವಾನುವೆವು ಪಶು
ಜಾಲ ಸಹಿತಿಭುಪುರಿಗೆ ನೀ ಕಿರಿ
ದಾಳೊಡನೆ ನಡೆಯೆಂದು ಸೇನೆಯನೆರಡ ಮಾಡಿಸಿದ ೨೬

ಕೌರವೇಂದ್ರನ ಕೂಡೆ ಸೇನಾ
ಭಾರವನು ಪರುಠವಿಸಿ ಕಳುಹಿದ
ನಾರುಭಟೆಯಲಿ ಭೀಷ್ಮ ನಿಂದನು ಥಟ್ಟ ಮೇಳೈಸಿ
ವೀರ ಕರ್ಣ ದ್ರೋಣ ಗೌತಮ
ಭೂರಿಬಲ ಗುರುಸೂನು ಶಕುನಿ ಮ
ಹಾರಥಾದಿಯ ಕೂಡಿಕೊಂಡನು ನರನ ಸಂಗರಕೆ ೨೭

ಇತ್ತಲಖಿಲ ಮಹಾರಥಾದಿಯ
ನೊತ್ತಲಿಕ್ಕಿ ಸುಯೋಧನನು ಪುರ
ದತ್ತ ಗೋಕುಲ ಸಹಿತ ಹಾಯ್ದನು ಪೂತು ಮಝರೆನುತ
ಮುತ್ತಯನು ಮಾಡಿದ ನಿಯೋಗದ
ತತ್ತವಣೆ ಲೇಸಾಯ್ತು ಬೇಗದೊ
ಳುತ್ತರನೆ ಕೊಳ್ಳೆಡದ ವಾಘೆಯನೆಂದನಾ ಪಾರ್ಥ ೨೮

ತುರುಗಳನು ಮರಳಿಚುವದಿದು ನಮ
ಗುರುವ ಕಾರ್ಯವು ಮಿಕ್ಕ ಕೆಲಸದ
ಹೊರಿಗೆಯನು ನಿರ್ಣೈಸಿ ಬಳಿಕಿನಲಿವರ ಸಾಹಸವ
ಅರಿದು ಕೊಂಬೆನು ಕೊಳ್ಳು ವಾಘೆಯ
ನಿರಿತದೆಡೆಯಲಿ ಭೀತಿಗೊಳ್ಳದೆ
ತರಿದು ತಿರುಗುವ ಲಾಗುವೇಗವ ನೋಡು ನೀನೆಂದ ೨೯

ಎನಲು ಚಪ್ಪರಿಸಿದನು ತೇಜಿಗ
ಳನಿಲ ಜವದಲಿ ನಿಗುರಿದವು ಮುಂ
ಮೊನೆಯವರ ಮನ್ನಿಸದೆ ಬೆಂಬತ್ತಿದನು ಕೌರವನ
ಜನಪ ಬಿಡು ಬಿಡು ತುರುಗಳನು ಫಲು
ಗುಣ ಕಣಾ ಬಂದವನು ಕುರುಕುಲ
ವನ ದವಾನಳನರಿಯೆನುತಲುತ್ತರನು ಬೊಬ್ಬಿರಿದ ೩೦

ಎಲೆಲೆ ನರ ಜಾರಿದನು ರಾಯನ
ಬಳಿಯ ಹತ್ತಿದನಡ್ಡ ಹಾಯ್ದತಿ
ಬಲನ ತೆಗೆ ನಮ್ಮತ್ತಲೆನುತಾ ದ್ರೋಣ ಗೌತಮರು
ಹಿಳುಕ ಕೆನ್ನೆಗೆ ಸೇದಿ ಬೊಬ್ಬೆಯ
ಕಳಕಳದಿಯಡಗಟ್ಟಿದರು ನಿ
ಲ್ಲೆಲವೊ ಫಲುಗುಣ ಕಾದಿ ನೀನೊಟ್ಟೈಸಿ ಹೋಗೆನುತ ೩೧

ನಗುತ ಫಲುಗುಣನೆರಡೆರಡು ಕೋ
ಲುಗಳನವರವರಂಘ್ರಿಗೆಚ್ಚನು
ತೆಗೆದು ಹಾಯ್ದನು ಮುಂದೆ ಕೌರವ ರಾಯ ಮೋಹರಕೆ
ಹೊಗರೊಗುವ ಹೊಸ ಕಣೆಯ ದಡ್ಡಿಯ
ಬಿಗಿದನೆಡಬಲನಿದಿರಿನಲಿ ಸೆಗ
ಳಿಗೆಯ ಸಸಿಯಂತಾಯ್ತು ಕೌರವ ಸೇನೆ ನಿಮಿಷದಲಿ ೩೨

ಬಿರಿದವಾನೆಗಳರ್ಜುನನ ಬಿಲು
ದಿರುವಿನಬ್ಬರಕತಿರಥರ ಬಾ
ಯ್ದೊರಳೆ ಹಾಯ್ದವು ವೀರ ಹನುಮನ ಗಾಡ ಗರ್ಜನೆಗೆ
ಶಿರವೊಡೆದು ಸಿಡಿಯಿತು ಕಿರೀಟಿಯ
ಪರಮ ಶಂಖಧ್ವನಿಗೆ ಕುರುಬಲ
ಹೊರಳಿಯೊಡೆದುದು ಹಾರಿ ಬಿದ್ದುದು ಹೆದರಿ ಹಮ್ಮೈಸಿ ೩೩

ಎಲೆಲೆ ನರನೋ ಸುಭಟ ಜೀವನ
ದಳವುಳಿಗನೋ ದಿಟ್ಟ ರಾಯರ
ದಳದ ದಾವಾನಲನೊ ಪಾರ್ಥನೊ ಕಾಲಭೈರವನೊ
ಗೆಲುವರಾವೆಡೆ ಕರ್ಣ ಕೃಪ ಸೌ
ಬಲ ಜಯದ್ರಥರೆಂಬವರ ಹೆಡ
ತಲೆಗೆ ನಾಲಗೆ ಹೋಯಿತೆಂದುದು ಕೂಡೆ ಕುರುಸೇನೆ ೩೪

ಮರಳಿ ಹೊಡೆ ಹಿಂಡಾಕಳನು ಗೋ
ವರನು ಬಿಡು ಹೆಡಗೈಯ ಕೊಯ್ ನ
ಮ್ಮರಸ ನಯದಪ್ಪಿದನು ತುರು ಸೆರೆವಿಡಿವರೇ ನೃಪರು
ಕೊರಳ ಕಡಿತಕೆ ಹೊತ್ತ ಹಗೆವನ
ಸರಳಿಗಸುಗಳ ತೆರೆದಿರೆಂದ
ಬ್ಬರಿಸಿ ಕುರುಬಲ ಬಾಯಬಿಟ್ಟದು ರಾಯರಿದಿರಿನಲಿ ೩೫

ಬೊಬ್ಬಿರಿದು ನರನೆಸಲು ಕಣೆಗಳು
ಹಬ್ಬಿದವು ಹುರಿಗೊಂಡು ಹೂಣಿಗ
ರೊಬ್ಬುಳಿಯ ಹರೆಗಡಿದು ಕರಿಗಳ ಹೊದರ ಮೆದೆಗೆಡಹಿ
ತೆಬ್ಬನೊದೆದುರೆ ಬಳಿಕ ಗರಿ ಮೊರೆ
ದಬ್ಬರಿಸಿ ಕಬ್ಬಕ್ಕಿ ಗಗನವ
ಹಬ್ಬಿದಂತಿರೆ ಮಸಗಿದವು ಫಲುಗುಣನ ಶರಜಾಲ ೩೬

ತುಡುಕಿ ಖಂಡವ ಕಚ್ಚಿ ಹಾರುವ
ಗಿಡಗನಂತಿರೆ ಭಟರ ಗಂಟಲ
ಕಡಿದು ಹಾಯ್ದಂಬುಗಳು ಬಳಿಯಲಿ ಕೊಂದ ತಲೆಗಳಲಿ
ಅಡಸಿದವು ನಿರಿನಿಟಿಲುಗರೆದೆಲು
ವೊಡೆಯೆ ಥಟ್ಟುಗಿದಾನೆಗಳ ನಡೆ
ಗೆಡಹಿದವು ಗರಿ ಸಹಿತ ಹಾಯ್ದವು ಹಯದ ಹೊಟ್ಟೆಯಲಿ ೩೭

ಕರುಳ ಬಾಯಲಿ ಕಾರಿ ಕಾಲಾ
ಳೊರಳಿ ಕೆಡೆದುದು ಬೋಳೆಯಂಬುಗ
ಳರಿಯೆ ಸಮ ಸೀಳಾಗಿ ಬಿದ್ದುವು ಗಜದ ಹೋಳುಗಳು
ಕೊರಳು ಹರಿದೊರೆವೆದ್ದ ರಕುತದ
ಹೊರಳಿಗಳ ಹೊನಲಿನಲಿ ಮುಳುಗಿತು
ತುರುಗ ರಥದಳರಾಜಿ ಹೊಸ ಕುಮ್ಮರಿಯ ಹೋಲಿಸಿತು ೩೮

ಹರಿಗೆ ಖಂಡಿಸಿ ಜೋಡು ಸೀಸಕ
ಜರಿದು ಬಲುದೋಳುಡಿದು ಗೋಣರೆ
ಹರಿದು ನಿಟ್ಟೆಲು ಮುರಿದು ತೊಡೆಯರೆಗಡಿದು ತಲೆಯೊಡೆದು
ನರ ಹರಿದು ಕರುಳೊಕ್ಕು ನೆಣನು
ಬ್ಬರಿಸಿ ಕಾಳಿಜ ಹಾಯ್ದು ನೆತ್ತರು
ಸುರಿದು ಹರಿದೊಗಲಿನಲಿ ಹೊರಳಿತು ವೈರಿ ಪಾಯದಳ ೩೯

ಮುಂದೆ ಕವಿವಂಬುಗಳು ಸುಭಟರ
ಕೊಂದು ಬಿದ್ದವು ಮತ್ತೆ ಬಳಿಯಲಿ
ಬಂದವಕೆ ಗುರಿಯಿಲ್ಲ ಹೇಳುವೆನೇನನದ್ಭುತವ
ಒಂದು ಗುರಿಗೆರಡಂಬ ತೊಡಬೇ
ಡೆಂದು ಪಾರ್ಥನ ಬೇಡಿಕೊಂಡವು
ಸಂದ ಮಂತ್ರಾಸ್ತ್ರಂಗಳೆಲೆ ಜನಮೇಜಯ ಕ್ಷಿತಿಪ ೪೦

ಹಿಕ್ಕಿದವು ಹಯಬಲದ ಸುಭಟರ
ನೊಕ್ಕಿ ತೂರಿದವಾನೆಗಳ ಸಾ
ಲಿಕ್ಕಿ ನಟ್ಟವು ಬಹಳ ರಕ್ತದ ಕೆಸರ ಕೈಗಳಲಿ
ಮುಕ್ಕಿದವು ಮಲೆತವರ ಮಾಂಸವ
ನಿಕ್ಕಿದವು ದ್ವಿಜಗಣಕೆ ಛತ್ರವ
ನಿಕ್ಕಿದವು ದಿಗುವಳೆಯದಲಿ ರಣಧೀರನಂಬುಗಳು ೪೧

ಒಗ್ಗೊಡೆಯದೌಕಿದ ಮಹೀಶರು
ಮುಗ್ಗಿದರು ಮುನ್ನಾಳ ಮೇಳದ
ವೊಗ್ಗಿನಲಿ ಮುಂಕೊಂಡು ಬಿರುದರು ಬಿಸುಟರೊಡಲುಗಳ
ನುಗ್ಗುನುಸಿಯಾಯ್ತಿರಥರು ಗಜ
ಮೊಗ್ಗರದ ಮೊನೆ ಮುರಿದು ಕಾಲನ
ಸಗ್ಗಳೆಯ ಸೆಳೆದಂತೆ ಸುರಿದವು ರಕ್ತ ಧಾರೆಗಳು ೪೨

ಕಾಲದಲಿ ಪರಿಪಕ್ವವಾದ ವಿ
ಶಾಲಿತ ಸ್ಥಾವರದ ಜಂಗಮ
ಜಾಲವನು ಕಾಲಾಗ್ನಿ ಕವಿಕವಿದಟ್ಟಿ ಸುಡುವಂತೆ
ಮೇಲು ಮೇಲೊಡಗವಿವ ಬಾಣ
ಜ್ವಾಲೆಯಲಿ ಕುರುಸೈನ್ಯ ಕಾನನ
ಮಾಲೆಯನು ಕಲಿಪಾರ್ಥ ಪಾವಕನುರುಹಿದನು ಮುಳಿದು ೪೩

ಯಾವ ಬಿಲ್ಲಾಳಾವ ಲಾಘವ
ದಾವ ಗಾಡಿಕೆ ಯಾವ ಚಳಕವ
ದಾವ ಶರ ಸಂಧಾನವಾವ ವಿಹಾರವಾವ ಪರಿ
ರಾವಣನೊಳಿಂದ್ರಾರಿ ರಾಘವ
ದೇವ ಲಕ್ಷ್ಮಣರಲ್ಲಿ ಕಾಣೆನಿ
ದಾವ ಧನು ಶರವಿದ್ಯೆ ಮಝ ಭಾಪೆಂದನಾ ಹನುಮ ೪೪

ಕಾಣಬಾರದು ಬಿಡುವ ಹೂಡುವ
ಕೇಣವನು ಪರಮಾಣು ಪುಂಜವ
ಕಾಣವೇ ಕಣ್ಣುಗಳು ನಮ್ಮವು ಮರ್ತ್ಯರಾಲಿಗಳೆ
ಜಾಣಪಣವಿದು ಶಿವ ಸುದರ್ಶನ
ಪಾಣಿಗಳಿಗಹುದಮರಪತಿ ಪದ
ದಾಣೆ ಹುಸಿಯಲ್ಲೆನುತ ಬೆರಗಾಯ್ತು ಸುರ ಕಟಕ ೪೫

ಏರುವಡೆದರು ಕೆಲರು ಕೆಲರಸು
ಸೂರೆಯೋದದು ಮತ್ತೆ ಕೆಲರೆದೆ
ಡೋರುಗಳ ಪೂರಾಯ ಗಾಯದಲುಸುರ ತೆಗೆಬಗೆಯ
ಕಾರಿದರು ರಕ್ತವನು ಸಗ್ಗಕೆ
ಗೂರು ಮಾರಾಡಿದರು ತಲೆಗಳ
ಹೇರಿದರು ಹರಣವನುವೊಟ್ಟಿಗೆ ಕಾಲನರಮನೆಗೆ ೪೬

ಚೆಲ್ಲಿ ಹೋಯಿತು ಕೆಲಕೆ ಕೆಲಬರು
ಬಿಲ್ಲ ಬಿರುಕೋಲುಗಳ ಬಿಸುಟರು
ಗಲ್ಲೆಗೆಡೆದರು ಕೆಲರು ಪಾರ್ಥನ ಕೋಲ ತೋಹಿನಲಿ
ಮೆಲ್ಲ ಮೆಲ್ಲನೆ ಸರಿವ ಕೌರವ
ಮಲ್ಲನನು ಕಂಡಟ್ಟಿದನು ತುರು
ಗಳ್ಳ ಹೋಗದಿರೆನುತ ಮೂದಲಿಸಿದನು ಕಲಿಪಾರ್ಥ ೪೭

ಕಾಯಲಾಪರೆ ಕರೆಯಿರಾ ಕ
ರ್ಣಾಯತಾಸ್ತ್ರರನಕಟ ಕೌರವ
ರಾಯ ಸಿಲುಕಿದನೆಲ್ಲಿ ಭೀಷ್ಮ ದ್ರೋಣ ಕೃಪರೆನುತ
ಬಾಯ ಬಿಡೆ ಕುರುಸೇನೆ ಗುರು ಗಾಂ
ಗೇಯ ಶಕುನಿ ವಿಕರ್ಣ ಕೃಪ ರಾ
ಧೇಯ ಸೈಂಧವ ಚಿತ್ರಸೇನಾದಿಗಳು ಜೋಡಿಸಿತು ೪೮

ಇತ್ತ ತುರುಗಳ ಬಿಸುಟು ರಾಯನ
ತೆತ್ತಿಗರು ತಲ್ಲಣಿಸಿ ಹಾಯ್ದರು
ಹೊತ್ತಿದವು ಮುಸುಡುಗಳು ಸಂಗರ ವಿಜಯಗರ್ವಿತರ
ಸುತ್ತ ಗೋವರ ಸನ್ನೆಯಲಿ ಪುರ
ದತ್ತ ಮುಂದಾದವು ಪಶುವ್ರಜ
ವುತ್ತರನು ಮುಳುಗಿದನು ಪರಿತೋಷ ಪ್ರವಾಹದಲಿ ೪೯

ಬಿಗಿದ ಕೆಚ್ಚಲ ತೊರೆದೊಗುವ ಹಾ
ಲುಗಳ ಮಿಗೆ ಸೂಳೆದ್ದ ಬಾಲವ
ಮೊಗ ನೆಗಹಿ ದೆಸೆದೆಸೆಯ ನೋಡುತ ಬೆಚ್ಚಿ ಬಿರುವರಿವ
ಅಗಿದು ಸರಳಿಸಿ ನಿಲುವ ಹೊಸಬರ
ಸೊಗಡಿಗವ್ವಳಿಸುತ್ತ ಗೋವರು
ತೆಗೆದ ಪಥದಲಿ ತೆಕ್ಕೆವರಿದವು ಹಿಂಡು ಹಿಂಡಿನಲಿ ೫೦

ಕೆಲವು ಕಡೆಗಂದಿಗಳು ಬಾಲದ
ಬಳಿಗೆ ಮೂಗಿಟ್ಟಡಿಗಡಿಗೆ ಮನ
ನಲಿದು ಮೋರೆಯನೆತ್ತಿ ಸುಕ್ಕಿಸಿ ಮತ್ತೆ ಹರಿ ಹರಿದು
ಮಲೆತು ಕಾಲಲಿ ನೆಲನ ಕೆರೆದ
ವ್ವಳಿಸಿ ಮತ್ತೊಂದಿದಿರುವರೆ ಬಲು
ಸಲಗನೀಡಿರಿದಾಡುತಿರ್ದದು ಹಿಂಡು ಹಿಂಡಿನಲಿ ೫೧

ತಿರುಗಿ ಕೆಂದೂಳಿಡುತ ತುರುಗಳು
ಪುರಕೆ ಹಾಯ್ದವು ನಲವು ಮಿಗಲು
ತ್ತರ ಕಿರೀಟಿಗಳಾಂತುಕೊಂಡರು ಮತ್ತೆ ಕಾಳಗವ
ಅರಸು ಮೋಹರ ಮುರಿದು ಹರಿಬವ
ಮರಳಿಚುವ ಮಿಡುಕುಳ್ಳ ವೀರರ
ಧುರಕೆ ಬರಹೇಳೆನುತ ಬಾಣವ ತೂಗಿದನು ಪಾರ್ಥ ೫೨

(ಸಂಗ್ರಹ: ಸುನಾಥ ಮತ್ತು ಜ್ಯೋತಿ ಮಹದೇವ್)

ದ್ರೋಣಪರ್ವ: ೦೪. ನಾಲ್ಕನೆಯ ಸಂಧಿ

ಸೂ: ರಾಯ ಕಟಕಾಚಾರ್ಯನಾ ಚಾ
ಪಾಯುಧಾಗ್ರಣಿ ಮೋಹಿದನು ಪ
ದ್ಮಾಯುತ ವ್ಯೂಹವನು ಸೈನ್ಯದ ಜಾಣನಾ ದ್ರೋಣ

ನೀನು ನೆರಹಿದ ಸುಕೃತ ಫಲವದ
ನೇನ ಹೇಳುವೆನಿತ್ತಲುಗ್ಗಡ
ದಾನೆ ಬಿದ್ದುದು ಕಾದಿ ನಸು ಸೊಪ್ಪಾದುದರಿಸೇನೆ
ಧ್ಯಾನವಿತ್ತಲು ರಾಗವತ್ತಲು
ಮೋನವಿತ್ತಲು ರಭಸವತ್ತಲು(ಪಾ: ವಿತ್ತಲು)
ಹಾನಿಯಿತ್ತಲು ವೃದ್ಧಿಯತ್ತಲು ಭೂಪ ಕೇಳೆಂದ ೧

ಎತ್ತಲೊಲೆವುದು ಧರ್ಮಬಲ ತಾ
ನತ್ತಲೊಲೆವುದು ದೈವ ದೈವವ
ದೆತ್ತಲೊಲೆದಿಹುದತ್ತ ವಿಜಯಶ್ರೀಯ ಕುಡಿನೋಟ
ಹೆತ್ತ ನಿನ್ನೊಡಲಿಂಗೆ ತಂಪಿನ
ತೆತ್ತಿಗನೊ ಮೇಣ್ ಬಹಳ ತಾಪದ
ಮುತ್ತಯನೊ ಕುರುರಾಯನೆಲೆ ಧೃತರಾಷ್ಟ್ರ ಕೇಳೆಂದ ೨

ಸಾಕು ಸಂಜಯ ನುಡಿಯ ಖಡ್ಗದ
ಲೇಕೆ ಗಂಟಲ ಕೊಯ್ವೆ ತಾನವಿ
ವೇಕದಲುಪಾರ್ಜಿಸಿದ ದುಷ್ಕೃತ ಫಲವೆ ತನಗಾಯ್ತು
ಸಾಕದಂತಿರಲಿನ್ನದೇಹರಿ
ಶೋಕಿಸುವೆನಿಲ್ಲಿಂದ ಮೇಲು
ದ್ರೇಕಿ ಕೌರವನೇನ ನೆಗಳಿದ ಹದನ ಹೇಳೆಂದ ೩

ಚಿತ್ತವಿಸು ಧೃತರಾಷ್ಟ್ರ ಕೌರವ
ನಿತ್ತನಿರುಳೋಲಗವ ಮಂಜಿನ
ಮುತ್ತಿಗೆಯ ನಭದಂತೆ ಹೊಗೆದುದು ರಾಯನಾಸ್ಥಾನ
ನೆತ್ತಿ ಮುಸುಕಿನ ಕೈಯ ಗಲ್ಲದ
ಕುತ್ತದಲೆ ನೆಟ್ಟಾಲಿಗಳ ಚಲ
ಚಿತ್ತರಿದ್ದುದು ಸಕಲ ನಾಯಕವಾಡಿ ದುಗುಡದಲಿ ೪

ದುಗುಡವೇಕೈ ನಿಮಗೆ ಕರ್ಣಾ
ದಿಗಳು ನೀವಕ್ಕುಡರೆ ಬಲುಗಾ
ಳೆಗದೊಳಗೆ ಕೈಮಾಡಿ ನೊಂದಿರಿ ಕೊಂದಿರರಿಭಟರ
ಹಗೆಯ ಕಟ್ಟಲು ಕೊಟ್ಟ ಭಾಷೆಯ
ಬಿಗುಹು ಬೀತುದು ಗುರುಗಳಲಿ ನಂ
ಬುಗೆ ನಿರರ್ಥಕವಾಯ್ತೆನುತ ಕುರುರಾಯ ಬಿಸುಸುಯ್ದ ೫

ದ್ರೋಣ ಮನಗೊಂಡಿರಿವಡಂಬುಜ
ಪಾಣಿಯಿದಿರೇ ನಮ್ಮ ಭಾಗ್ಯದ
ಬಾಣಸಿಗ ವಿಧಿ ವಿಷವ ಬೆರೆಸಿದಡಾರು ಕಾವವರು
ಹೂಣಿ ಹೊಕ್ಕನು ಹಿಡಿದು ವೈರಿ
ಕ್ಷೋಣಿಪನ ತರುಬಿದನು ನಾವ
ಕ್ಷೀಣದುರಿತರು ಹಲುಬಿ ಮಾಡುವುದಾವುದುಂಟೆಂದ ೬

ಬಲದೊಳಗೆ ಹೆಸರುಳ್ಳವರು ಮು
ಮ್ಮುಳಿತವಾಯಿತ್ತಾನೆ ಕುದುರೆಗ
ಳಳಿದುದಕೆ ಕಡೆಯಿಲ್ಲ ಪವನಜ ಪಾರ್ಥರುಬ್ಬಟೆಯ
ನಿಲಿಸುವಾಪತ್ತಿಗರು ನಮಗಿ
ಲ್ಲಳಲಿ ಮಾಡುವುದೇನೆನುತ ನೃಪ
ತಿಲಕ ಬೇಸರ ನುಡಿಯೆ ಬಳಿಕಿಂತೆಂದನಾ ದ್ರೋಣ ೭

ಪರಮ ಗರುಡೋದ್ಗಾರ ಮಣಿಯನು
ಗರಳ ಸುಡುವುದೆ ಕೃಷ್ಣರಾಯನ
ಕರುಣ ಕವಚವನೊಡೆಯಲಾಪವೆ ಎಮ್ಮ ಕೈದುಗಳು
ಅರಸ ಮರುಳೈ ಧರ್ಮಪುತ್ರನ
ಬೆರಸಿ ತುಡುಕಲು ತಡೆದನರಿಯಾ
ಮುರಹರನ ಮೈದುನನು ಬಳಿಕೆಮ್ಮಳವೆ ಹೇಳೆಂದ ೮

ನಾಳೆ ಫಲುಘುಣ ತಪ್ಪಿದರೆ ಭೂ
ಪಾಲಕನ ಕಟ್ಟುವೆನು ರಣದಲಿ
ಶೂಲಿಯಡ್ಡೈಸಿದರೆ ಹಿಡಿವೆನು ಚಿಂತೆ ಬೇಡಿದಕೆ
ಕೇಳು ಪದ್ಮವೂಹದಲಿ ಹೊ
ಕ್ಕಾಳು ಮರಳಿದಡಸ್ತ್ರ ವಿದ್ಯಾ
ಭಾಳಲೋಚನನೆಂಬ ಬಿರುದನು ಬಿಟ್ಟೆ ನಾನೆಂದ ೯

ಒಳ್ಳಿತಿದು ಕಡುಭಾಷೆ ನಾಳಿನ
ಗೆಲ್ಲವೇ ಗೆಲವರ್ಜುನನು ಹೊ
ಕ್ಕಲ್ಲಿ ಹೊಗುವೆವು ತರುಬಿ ಕಾದುವೆವೆಮ್ಮೆ ಕಳನೊಳಗೆ
ಅಲ್ಲಿ ನೀನೊಲಿದಂತೆ ಮಾಡಿ
ನ್ನೆಲ್ಲವೇತಕೆಯೆನುತ ಸಾಹಸ
ಮಲ್ಲೆರೆದ್ದರು ವೀರ ಸಮಸಪ್ತಕರು ಗರ್ಜಿಸುತ ೧೦

ಪೂತು ಪಾಯಿಕು ತತ್ತ ಹೊತ್ತಿನೊ
ಳಾತುಕೊಂಬವರಾರು ಪಾರ್ಥಿವ
ಜಾತಿಯಲಿ ರಣದಿಟ್ಟರುಂಟೇ ನಿಮ್ಮ ಹೋಲಿಸಲು
ಸೋತುದರಿಬಲ ಹೋಗೆನುತ ಮು
ಯ್ಯಾಂತು ಮನ್ನಿಸಿ ಹೊನ್ನ ಬಟ್ಟಲೊ
ಳಾತಗಳಿಗೊಲಿದಿತ್ತನೈ ಕರ್ಪುರದ ವೀಳೆಯವ ೧೧

ಹರೆದುದೋಲಗವಿತ್ತ ಭುವನದೊ
ಳಿರುಳಡವಿಗಡಿತಕ್ಕೆ ಹರಿದವು
ಕಿರಣ ತೆತ್ತಿದವಭ್ರದಲಿ ತಾರಕೆಯ ತೇರುಗಳು
ಹರಿವ ಮಂಜಿನ ನದಿಯ ಹೂಳ್ದವು
ಸರಸವಾಯಿತು ಗಗನತಳ ತಾ
ವರೆಯ ಸಖ ನಿಜರಥವ ನೂಕಿದನುದಯ ಪರ್ವತಕೆ ೧೨

ಕೆದರಿದವು ನಿಸ್ಸಾಳ ಬರ ಸಿಡಿ
ಲದುಭುತ ಧ್ವನಿಯಲಿ ನಿರಂತರ
ವೊದರಿ ಬಯ್ದವು ಕಹಳೆ ಬಿರುದಾವಳಿಯಲತಿರಥರ
ಕದುಬಿದವು ತಂಬಟದ ದನಿ ದಿಗು
ಸದನವನು ಬಲು ಬೊಬ್ಬೆಯಲಿ ನೆಲ
ನದಿರೆ ನಡೆದುದು ಸೇನೆ ಕಲಶೋದ್ಭವನ ನೇಮದಲಿ ೧೩

ಉಲಿದು ಸಮಸಪ್ತಕರು ತಮ್ಮಯ
ಕಳನ ಗೆಲಿದರು ಚಾತುರಂಗದ
ದಳದ ತೆರಳಿಕೆ ತೆಕ್ಕೆಮಿಗೆ ಕುರುಸೇನೆ ನಡೆತಂದು
ಕಳನ ವೆಂಠಣಿಸಿದವು ರಾಯನ
ಕೆಲಬಲದ ಸುಯಿಧಾನದಲಿ ರಿಪು
ವಳಯ ಧೂಳೀಪಟನು ಹೊಕ್ಕನು ರಣವನಾ ದ್ರೋಣ ೧೪

ನೆರೆದ ನಿಜ ಸೇನಾಧಿಪರ ಸಂ
ವರಣೆಗಳ ನೋಡಿದನು ನೀಡಿದ
ನರಿಬಿರುದ ಮಂಡಳಿಕರಿಗೆ ಕಾಳೆಗದ ವೀಳೆಯವ
ಹರಿಗೆ ಹಲಗೆ ಕೃಪಾಣು ತೋಮರ
ಪರುಶು ಕಕ್ಕಡೆ ಕೊಂತ ಮುದ್ಗರ
ಸುರಗಿಯತಿಬಳ ಪಾಯ್ದಳವ ನಿರಿಸಿದನು ವಳಯದಲಿ ೧೫

ಎಸೆಳೆಸಳು ಮಿಗೆ ಸರಸದಲಿ ಜೋ
ಡಿಸಿದನವನೀಪಾಲರನು ತ
ದ್ಬಿಸಜ ಕರ್ಣಿಕೆಯೊಡ್ಡಿನಲಿ ಬಲಿದನು ಸುಯೋಧನನ
ಪಸರಿಸಿತು ಕೌರವ ಕುಮಾರ
ಪ್ರಸರ ಕೇಸರವಾಯ್ತು ಮೃತ್ಯುವಿ
ನೊಸಗೆಗೆತ್ತಿದ ಗುಡಿಗಳೆನೆ ತಳಿತವು ಪತಾಕೆಗಳು ೧೬

ನಿಲಿಸಿದನು ರಾವುತರನಾ ಹೊರ
ವಳಯದಲಿ ರಾವುತರು ಮುರಿದರೆ
ನಿಲುವುದೊಗ್ಗಿನ ದಂತಿಘಟೆ ಗಜಸೇನೆಗಡಹಾಗಿ
ತೊಳಗಿದವು ತೇರುಗಳು ತೇರಿನ
ದಳಕೆ ತಾನೊತ್ತಾಗಿ ರಣದ
ಗ್ಗಳೆಯರಿದ್ದುದು ರಾಯನೊಡೆಹುಟ್ಟಿದರು ಸಂದಣಿಸಿ ೧೭

ಅರನೆಲೆಯ ಸುಯಿಧಾನ ಬಾಹ್ಲಿಕ
ತರಣಿಸುತ ಗುರುಸೂನು ಕೃತವ
ರ್ಮರಿಗೆ ಕೃಪ ದುಶ್ಶಾಸನಾದ್ಯರಿಗಿದಿರಿನಾರೈಕೆ
ಎರಡು ಕೆಲದಲಿ ಶಲ್ಯ ಶಕುನಿಗ
ಳಿರವು ಸೇನೆಯ ಸುತ್ತುವಳಯವ
ಭರವ ಕೈಕೊಂಡಡ್ಡ ಮೆರೆದನು ಗರಡಿಯಾಚಾರ್ಯ (ಪಾ: ಗರುಡಿಯಾಚಾರ್ಯ) ೧೮

ಹಿಳುಕ ತಿರುಹುತ ಸಮ್ಮುಖದ ಬಲ
ದಳವಿಯಲಿ ಗಿರಿಯಂತೆ ಸೈಂಧವ
ಬಿಲುದುಡಕೆ ಮೋಹರಿಸಿದನು ಭೂರಿಶ್ರವಾದಿಗಳು
ದಳದ ಕೆಲಬಲದೊಳಗೆ ನೃಪ ಸಂ
ಕುಲವ ನಿಲಿಸಿದನಮಮ ಕಾಲನ
ಬಳಗಕೌತಣವೆನಲು ಪದ್ಮವ್ಯೂಹ ರಂಜಿಸಿತು ೧೯

ಏನ ಹೇಳುವೆನದನು ನೃಪ ತವ
ಸೂನುವಿನ ಮೋಹರದೊಳಳ್ಳಿರಿ
ವಾನೆಗಳನುಪ್ಪರಿಸಿ ಗಗನವ ಮೊಗೆವ ಕುದುರೆಗಳ
ಆ ನೃಪರ ವಾಜಿಗಳ ಗಿರಿ
ಸಾನು ಸಡಿಲಲು ಜಡಿವ ಭೇರಿ
ಧ್ವಾನವನು ಪಯದಳದ ಸುಭಟರ ಸಿಂಹಗರ್ಜನೆಯ ೨೦

ಮೇಳವದಲೆನ್ನಾನೆಗಳ ಬರ
ಹೇಳು ಸುಭರೊಳಗ್ಗಳರ ಬರ
ಹೇಳು ಬಿಂಕಕೆ ಮೆರೆವ ಭೀಮಾರ್ಜುನರ ಬರಹೇಳು
ಲೋಲುಪತೆಯವನಿಯಲಿಹರೆ ಬರ
ಹೇಳು ಯಮನಂದನನನಿಂದಿನ
ಕಾಳೆಗಕ್ಕೆಂದಿತ್ತ ಭಟ್ಟರನಟ್ಟಿದನು ದ್ರೋಣ ೨೧

ತುರಗ ಹಲ್ಲಣಿಸಿದವು ಸಮರ
ದ್ವಿರದ ಸಜ್ಜಂಬಡೆದವೊಗ್ಗಿನ
ತುರಗದಲಿ ಹೂಡಿದವು ರಥ ಕಾಲಾಳು ಮುಂಕೊಳಿಸಿ
ಅರಸನನುಜರು ಸಹಿತ ಕೃಷ್ಣನ
ಬೆರಳ ಸನ್ನೆಯೊಳೈದೆ ಬಿಡೆ ಮೋ
ಹರಿಸಿ ನಿಂದುದು ಮುರಿದ ಮಕರವ್ಯೂಹ ರಚನೆಯಲಿ ೨೨

ಬಂದು ಸಮಸಪ್ತಕರ ದೂತರು
ನಿಂದರರ್ಜುನನಿದಿರಲೇಳೈ
ನಂದಗೋಪನ ಮಗನ ಬಿಡು ನೆರವಿಂಗೆ ಕರೆ ಹರನ
ಇಂದು ರಣದಲಿ ಬದುಕಿದರೆ ನೀ
ನೆಂದಿಗೆಯು ಬದುಕಿದನೆ ನಿಂದಿರು
ನಿಂದಿರೆಂದವಗಡಿಸಿ ಹಿಡಿದರು ಫಲುಗುಣನ ಸೆರಗ ೨೩

ಖರೆಯರಹಿರುಂಟುಂಟು ನೆರೆವನೆ
ಕರಸಿಕೊಂಡೇ ಬಹೆನೆನುತ ರಿಪು
ಚರರ ಕಳುಹಲು ದ್ರೋಣನಟ್ಟಿದ ದೂತರೈತಂದು
ಕರೆದರರ್ಜುನನನು ವೃಕೋದರ
ಧರಣಿಪತಿ ಮಾದ್ರೇಯ ಹೈಡಿಂ
ಬರಿಗೆ ನೂಕದು ಪಾರ್ಥ ಪದ್ಮವ್ಯೂಹವಿಂದಿನಲಿ ೨೪

ಶಿವನ ಬೇಡಿದ ಶರವ ತೆಗೆ ಗಾಂ
ಡಿವವ ಬಿಗಿ ನಿನ್ನಿಷ್ಟದೈವವ
ತವಕದಲಿ ನೀ ಬೇಡಿಕೊಂಬುದು ಪರಮಸದ್ಗತಿಯ
ಅವರಿವರ ಹವಣಲ್ಲ ಗುರು ಮುನಿ
ದವಗಡಿಸಿದರೆ ನಿಲುವನಾವನು
ಬವರಕೇಳೇಳೆಂದು ಜರಿದರು ದೂತರರ್ಜುನನ ೨೫

ಚರರ ಕಳುಹಿದನಸುರವೈರಿಗೆ
ಕರವ ಮುಗಿದನು ಪಾರ್ಥನೀ ಸಂ
ಗರದೊಳಗೆ ನಿಮ್ಮಡಿಯ ಚಿತ್ತದೊಳಾವ ಥಟ್ಟಿನಲಿ
ಬೆರಸುವೆವು ನಾವಿಂದಿನೀ ಮೋ
ಹರದ ಮುರಿವಸದಳ ನಿಧಾನಿಸ
ಲರಿದೆನಲು ಮನದೊಳಗೆ ನಿಶ್ಚೈಸಿದನು ಮುರವೈರಿ ೨೬

ಅಳಿಯನೀ ಮೋಹರದೊಳಲ್ಲದೆ
ಫಲುಗುಣನ ಮಗನಿವನು ಬಲುಗೈ
ಯುಳುಹ ಬಾರದು ಕಾಯಿದರೆ ಕಲಿಯುಗಕೆ ಗತಿಯಿಲ್ಲ
ಫಲುಗುಣನ ನಾವಿತ್ತಲೊಯ್ದರೆ
ಬಳಿಕ ನಿರ್ಣಯವೆಂದು ಮನದಲೆ
ತಿಳಿದು ಪಾರ್ಥಂಗೆಂಡವಸುರಾರಾತಿ ನಸುನಗುತ ೨೭

ಗುಣಕೆ ಹುರುಡೇ ನಿನ್ನ ಮಗನೀ
ರಣವ ಬಗೆವನೆ ಸೂರ್ಯನಾರೋ
ಗಣಕೆ ಸೊಡರೇ ಸಾಕಿದೇತಕೆ ಬಯಲ ಭಂಡತನ
ಕೆಣಕು ನಡೆ ಸಮಸಪ್ತಕರನೀ
ಬಣಗುಗಳ ಕೊಂಬನೆ ಕುಮಾರಕ
ನಣಕವಲ್ಲೆಂದಸುರರಿಪು ತಿರುಹಿದನು ನಿಜರಥವ ೨೮

ಹರಿ ಸಹಿತ ಕಲಿ ಪಾರ್ಥನತ್ತಲು
ತಿರುಗಿದನು ಬಳಿಕಿತ್ತಲೀ ಮೋ
ಹರ ಮಹಾಂಭೋನಿದಿಗೆ ಮೊಗಸಿತು ಸರ್ವತೋಮುಖರು
ಮೊರೆವ ಪಟಹ ಮೃದಂಗ ಘನ ಜ
ರ್ಜರಿತವಹ ನಿಸ್ಸಾಳ ಚಯದ
ಬ್ಬರಣೆ ಗಬ್ಬರಿಸಿದುದು ಕಮಲಭವಾಂಡ ಖರ್ಪರವ ೨೯

ಉರವಣಿಸಿದರು ನಕುಲ ಸಾತ್ಯಕಿ
ವರ ವಿರಾಟ ದ್ರುಪದ ಕೈಕಯ
ಬಿರುದ ಧೃಷ್ಟದ್ಯುಮ್ನ ಕುಂತೀಭೋಜ ಮೊದಲಾಗಿ
ಧರಣಿಪರು ಥಟ್ಟೈಸಿ ರಿಪು ಮೋ
ಹರಕೆ ಕವಿದುದು ಕಾದಿ ದುರ್ಗವ
ಮುರಿಯಲರಿಯದೆ ಮುರಿವುತಿದ್ದುದು ಬಸಿವ ರಕ್ತದಲಿ ೩೦

ಸುಳಿದು ಹರಿ ಮೇಖಲೆಯ ಮೋಹರ
ದೊಳಗೆ ಮುಗ್ಗಿದಿರೈ ಮಹಾ ಮಂ
ಡಳಿಕರಿರ ಫಡ ಹೋಗಿರೈ ನೀವೆನುತ ಖಾತಿಯಲಿ
ಬಿಲುದುಡುಕಿ ಪವಮಾನ ನಂದನ
ನಳವಿಗೊಟ್ಟನು ಹೂಣೆ ಹೊಕ್ಕರಿ
ಬಲವನಿರಿದನು ಘಾಯವಡೆದನು ಘೋರ ಸಮರದಲಿ ೩೧

ಕಾದಲೆನ್ನಳವಲ್ಲ ಬಲ ದು
ರ್ಭೇದವಿದು ಶಿವಶಿವಯೆನುತ್ತ ವೃ
ಕೋದರನು ಮರಳಿದನು ದುಗುಡಕೆ ತೆತ್ತು ನಿಜಮುಖವ
ಕೈದೆಗೆಯೆ ರಿಪುಬಲದ ಸುಭಟರು
ಕಾದಿದನು ಕಲಿ ಭೀಮ ಗೆಲಿದನು
ಪೋದನೆಂದರು ಕೂಡೆ ಕೈಗಳ ಹೊಯ್ದು ತಮತಮಗೆ ೩೨

ಆ ಮಹಾ ಮೋಹರವನೊಡೆಯಲು
ಸೋಮನುಕುಲಜರು ಭೀತರಾದರು
ಹಾ ಮಹಾದೇವೆನುತ ಧರ್ಮಜ ನೋಡಿ ತಲೆದೂಗಿ
ರಾಮನರಿವನು ಕೃಷ್ಣನರಿವನು
ಸೀಮೆಯಲಿ ಕಲಿ ಪಾರ್ಥನರಿವನು
ಭೂಮಿಪತಿಗಳೊಳುಳಿದ ಸುಭಟರಿಗರಿವುದಿಲ್ಲೆಂದ ೩೩

ಹೊಗಲು ಬಲ್ಲನು ಹೊಕ್ಕವೊಲು ಹೆರ
ದೆಗೆಯಲರಿಯನು ವೀರ ಪಾರ್ಥನ
ಮಗನು ಮತ್ತಯ್ದನೆಯ ಸುಭಟರ ಕಾಣೆ ನಾನೆನುತ
ಆಗಿವ ಚಿಂತೆಯೊಳರಸ ಕದನದ
ದುಗುಡ ಭಾರದಲಿರಲು ಮುಂಗೈ
ನಿಗಳವನು ತಿರುಹುತ್ತ ನಸು ನಗುತೆದ್ದನಭಿಮನ್ಯು ೩೪

ಜನಪನಂಘ್ರಿಗೆ ಮಣಿದು ಕೈಮುಗಿ
ದೆನಗೆ ಬೆಸಸೈ ಬೊಪ್ಪ ತಾ ಬ
ಲ್ಲೆನು ಮಹಾಹವದೊಳಗೆ ಪದ್ಮವ್ಯೂಹ ಭೇದನವ
ಅನುವರವ ಗೆಲುವೆನು ಕೃತಾಂತನ
ಮನೆಗೆ ಕಳುವೆನಹಿತರನು ನೀ
ನಿನಿತು ಚಿಂತಿಸಲೇಕೆ ಕಾಳೆಗಕೆನ್ನ ಕಳುಹೆಂದ ೩೫

ಹಸುಳೆಯದಟಿನ ನುಡಿಯ ಕೇಳಿದು
ನಸು ನಗುತ ಧರ್ಮಜನು ಘನ ಪೌ
ರುಷವು ನಿನಗಂಟೆಂದು ಕಂದನ ತೆಗೆದು ಬಿಗಿಯಪ್ಪಿ
ಶಿಶುವು ನೀನೆಲೆ ಮಗನೆ ಕಾದುವ
ರಸಮ ಬಲರು ಕಣಾ ಮಹಾ ರಥ
ರೆಸುಗೆಯನು ನೀನೆಂತು ಸೈರಿಸಲಾಪೆ ಹೇಳೆಂದ ೩೬

ಸುಳಿಯಬಹುದಂಬುಧಿಯ ನಡುವಣ
ಸುಳಿಯೊಳಗೆ ಸಂವರ್ತಕನ ಕೊರ
ಳೊಳಗೆ ಕುಣಿಯಲುಬಹುದು ಮೃತ್ಯುವಿನಣಲ ಹೊಳಲೊಳಗೆ
ಹೊಳಕಬಹುದಹಿಪನ ಫಣಾ ಮಂ
ಡಳದೊಳಾಡಲುಬಹುದು ಕಾಣೆನು
ಗೆಲುವ ಹದನನು ಮಗನೆ ಪದ್ಮವ್ಯೂಹದೊಡ್ಡಣೆಯ ೩೭

ಬಿಡು ಮರೀಚಿಯ ತೊರೆಗೆ ಹರುಗೋ
ಲಿಡುವರುಂಟೇ ಲೆಪ್ಪದುರಗನ
ಹಿಡಿವಡೇತಕೆ ಗರುಡಮಂತ್ರವು ಚಪಲನೆನ್ನದಿರು
ಕೊಡನ ಮಗನ ಕುಮಂತ್ರದೊಡ್ದಿನ
ಕಡಿತಕಾನಂಜುವೆನೆ ವೆಗ್ಗಳ
ನುಡಿಯಲಮ್ಮೆನು ತನ್ನನೀಗಳೆ ಬಿಟ್ಟು ನೋಡೆಂದ ೩೮

ಅವರೊಳಗಲಕೆ ನಿಂದ ರಿಪುಗಳ
ಜವನ ಬೋನವ ಮಾಡದಿದ್ದರೆ
ಅವನಿಯನು ಗೆಲದೇ ಮಹಾರಥರೆನಿಪ ನಾಯಕರ
ಅವನಿಯೊಳಗೊರಗಿಸದೆ ಮಾರಾಂ
ತವರ ನುಂಗದೆ ಮಾಣ್ಣೆನಾದರೆ
ದಿವಿಜಪತಿತನಯಂಗೆ ತಾ ಜನಿಸಿದವನಲ್ಲೆಂದ ೩೯

ಕಂದ ವೈರಿ ವ್ಯೂಹವಸದಳ
ವೆಂದೆನಿಪುದದರೊಳಗೆ ಕೃಪ ಗುರು
ನಂದನರು ರಾಧೇಯ ಭೂರಿಶ್ರವ ಜಯದ್ರಥರು
ಇಂದುಧರನಡಹಾಯ್ದರೊಮ್ಮಿಗೆ
ಹಿಂದು ಮುಂದೆನಿಸುವರು ನೀ ಗೆಲು
ವಂದವೆಂತೈ ಸಮರವಿದು ಸಾಮಾನ್ಯವಲ್ಲೆಂದ ೪೦

ಗಾಳಿ ಬೆಮರುವುದುಂಟೆ ವಹ್ನಿ
ಜ್ವಾಲೆ ಹಿಮಕಂಜುವುದೆ ಮಂಜಿನ
ಮೇಲುಗಾಳೆಗವುಂಟೆ ಬಲುಬೇಸಗೆಯ ಬಿಸಿಲೊಳಗೆ
ಬಾಲನಿವನೆನ್ನದಿರು ದುಗುಡವ
ತಾಳಲಾಗದು ಬೊಪ್ಪ ನಿಮ್ಮಡಿ
ಯಾಲಿಗಳಿಗೌತಣವನಿಕ್ಕುವೆನೊರಸಿ ರಿಪುಬಲವ ೪೧

ಅಹುದು ಮಗನೆ ಸಮಗ್ರಬಲ ನೀ
ನಹೆ ನಿಧಾನಿಸಲಿಂದು ಪವನಜ
ನಹವ ಮುರಿದರು ಕಾಯ್ದು ಬಿಟ್ಟರು ನಕುಲ ಸಾತ್ಯಕಿಯ
ಸಹಸ ದ್ರುಪದ ವಿರಾಟರುಗಳು
ಮ್ಮಹವ ಸೆಳೆದರು ವಿಜಯ ಗರ್ವದ
ಲಿಹ ಬಲವ ನೀನೊಬ್ಬನೇ ಸಾಧಿಸುವುದರಿದೆಂದ ೪೨

ಧರಣಿಪತಿ ಕೇಳುಳಿದ ಪುಷ್ಪದ
ಪರಿಮಳವು ಪಥಿಸಿದರೆ ಸಂಪಗೆ
ಯರಳ ಪರಿಮಲ ಪಥ್ಯವೇ ತುಂಬಿಗಳ ತಿಂತಿಣಿಗೆ
ಅರಿಭಟರು ಭೀಮಾದಿಗಳ ಗೆಲಿ
ದಿರಲಿ ಹೊಲ್ಲಹವೇನು ಘನ ಸಂ
ಗರದೊಳಗೆ ನನ್ನೊಡನೆ ತುಡುಕಿದಡರಿಯಬಹುದೆಂದ ೪೩

ಕೈದುಕಾರರ ಬಿಗುಹು ಘನ ನೀ
ಹೊಯ್ದು ಮೊದಲಲಿ ಬಿಡಿಸು ಬಳಿಕಾ
ವೈದಿ ನಿನ್ನನು ಕೂಡಿಕೊಂಬೆವು ಹೊಕ್ಕು ಬಳಿಸಲಿಸಿ
ಎಯ್ದೆ ಹಗೆಯಲಿ ಹೂಣಿ ಹೊಗದಿರು
ಮೈದೆಗೆದು ಕಾದುವುದು ಜಯಸಿರಿ
ಯೈದೆತನ ನಿನ್ನಿಂದ ಮೆರೆವುದು ಕಂದ ಕೇಳೆಂದ ೪೪

ಕೆತ್ತುಕೊಂಡಿರೆ ಬಿಡಿಸುವೆನು ರಥ
ವೆತ್ತಲುರುಬಿದರತ್ತ ಕಣನೊಳು
ಮತ್ತಗಜ ಮುರಿದಂತೆ ಕದಡುವೆನಹಿತ ಮೋಹರವ
ಹೊತ್ತಿ ಹೊಗೆವ ಪರಾಕ್ರಮಾಗ್ನಿಯ
ತುತ್ತು ಪದ್ಮವ್ಯೂಹ ದೇವರು
ಚಿತ್ತಯಿಸುವುದು ಹೊತ್ತುಗಳೆಯದೆ ಎನ್ನ ಕಳುಹೆಂದ ೪೫

ಶರನಿಧಿಯ ವಡಬಾನಳನ ದ
ಳ್ಳುರಿಯ ವರ್ಮವ ತಿವಿವ ತುಂಬಿಗೆ
ಮರಳುತಲೆಯುಂಟಾದಡದು ಭವಭವದ ಪುಣ್ಯಫಲ
ಅರಿಬಲವ ನೀ ಖಂಡಿಗಳೆ ಮೋ
ಹರ ಸಹಿತ ನಾ ಬಹೆನು ನಡೆಯೆಂ
ದರಸನಭಿಮನ್ಯುವಿಗೆ ನೇಮವ ಕೊಟ್ಟನಾಹವಕೆ ೪೬

ಶಿವಶಿವಾ ಶಿಶುವಿವನು ರಿಪುಗಳು
ಜವನ ಜೂಜೆನಿಸುವ ಮಹಾರಥ
ನಿಹವಕೊಬ್ಬನೆ ಗಡ ಸಮಾಹಿತವಲ್ಲ ಸಮರಂಗ
ಅವನಿಪತಿ ನಿರ್ದಯನಲಾ ಕಂ
ಡೆವು ಕುಮಾರನನಿಕ್ಕೆ ಬಹ ರಾ
ಜ್ಯವನು ಸುಡು ಸುಡುಲೇತಕೆಂದುದು ನಿಖಿಳ ಪರಿವಾರ ೪೭

ಲಲಿತ ಚಂದ್ರಿಕೆಗೇಕೆ ದಾವಾ
ನಳನ ಖಾಡಾಖಾಡಿ ಸುರಲತೆ
ಯೆಳೆಯ ಕುಡಿ ಮುರಿದೊತ್ತಲಾಪುದೆ ವಜ್ರಧಾರೆಗಳ
ನಳಿನ ನಾಳವು ಗಜದ ಕೈಯೊಡ
ನಲವಿಗೊಡಲಂತರವೆ ಪಾಪಿಗ
ಳೆಳಮಗನ ನೂಕಿದರು ಕಾಳೆಗಕೆಂದುದಮರಗಣ ೪೮

ಬಿಗಿದ ಗಂಡುಡಿಗೆಯಲಿ ಹೊನ್ನಾ
ಯುಗದ ಹೊಳೆವ ಕಠಾರಿಯನು ಮೊನೆ
ಮಗುಚಿ ಸಾಧು ಜವಾಜಿ ಕತ್ತುರಿ ಗಂಧಲೇಪದಲಿ
ಮಗಮಗಿಪ ಹೊಂದೊಡರ ಹಾರಾ
ದಿಗಳಲೊಪ್ಪಂಬಡೆದು ನಸುನಗೆ
ಮೊಗದ ಸೊಂಪಿನಲಾಹವಕ್ಕನುವಾದನಭಿಮನ್ಯು ೪೯

ಉಲಿವ ಘಂಟೆಯ ಕುಣಿವ ತುರಗಾ
ವಳಿಯ ಗಗನದೊಳಗಿವ ಬಿರುದಿನ
ಪಳಹರದ ತೆತ್ತೆಸಿದ ಕನಕದ ಚೌಕ ಸತ್ತಿಗೆಯ
ಘುಳುಘುಳಿಪ ಚೀತ್ಕಾರ ಕೋಳಾ
ಹಳದ ಸೂತನ ರೇಖೆಯಲಿ ಭಟ
ಕುಲಲಲಾಮನ ತೇರು ಬಂದುದು ತೀವಿದಸ್ತ್ರದಲಿ ೫೦

ತುರಗ ತತಿಗಭಿನಮಿಸಿ ರಥವನು
ತಿರುಗಿ ಬಲವಂದೆರಗಿ ಚಾಪಕೆ
ಕರವ ನೊಸಲಲಿ ಚಾಚಿ ಭಾರಿಯ ಭುಜವನೊದರಿಸುತ
ಅರಸಗಭಿವಂದಿಸುತ ಭೀಮನ
ಹರಕೆಗಳ ಕೈಕೊಳುತ ನಕುಳಾ
ದ್ಯರಿಗೆ ಪೊಡವಟ್ಟಡರಿದನು ನವರತುನಮಯ ರಥವ ೫೧

ಸೂಳವಿಸಿದವು ಲಗ್ಗೆಯಲಿ ನಿ
ಸ್ಸಾಳತತಿ ಸಿಡಿಲೆರಗಿತೆನಲು
ಬ್ಬಾಳು ಮಿಗೆ ಕೈನೆಗಹಿ ರಿಪು ಭೂ
ಪಾಲಕರ ಬೈಬೈದು ಗಜರಿದ
ವಾಳುತನದಾಳಾಪ ಬೀರಿತು ಬೆರಗನಹಿತರಿಗೆ ೫೨

ಒಡನೆ ಕಳುಹುತ ಬಂದನಾ ನೆಲ
ದೊಡೆಯನನುಜರು ಸಹಿತ ನಯನದಿ
ಬಿಡುವನಿಯ ಸಾಲಿನಲಿ ನನೆದರು ನನೆದರು ಬಂದು ಕಿರಿದೆಡೆಯ
ನಡೆ ವಿಜಯನಾಗೆಂದು ತನುವನು
ತಡವಿದರು ಕಡುಮೋಹವೆಡೆಯಲಿ
ಘುಡುಘುಡಿಸೆ ಶಿಶು ಬೀಳುಕೊಂಡನು ಪಿತೃಚತುಷ್ಟಯವ ೫೩

ಎಲೆ ಕುಮಾರಕ ಹರ ಕುಮಾರಂ
ಗಳವಿಯಲಿ ನಿಲಲರಿದು ಕೊರಳಿನ
ಬಲುಹನರಿಯದೆ ಗಿರಿಯ ಹೊರಲಂಘೈಸುವರೆ ಭಟರು
ಬಲುಗುಡಿಯನೀ ಕರ್ಣನೀ ಕೃಪ
ನಲಘು ಭುಜಬಲ ದ್ರೋಣನೀ ವೆ
ಗ್ಗಳೆಯ ಜಯದ್ರಥನೆಂದು ಸಾರಥಿ ತೂಗಿದನು ಶಿರವ ೫೪

ಮರುಳು ಸಾರಥಿ ನಮ್ಮ ನಾವ್ ಪತಿ
ಕರಿಸಿಕೊಳಲಾಗದು ಕಣಾ ನೀ
ನರಿಯೆ ನಮ್ಮಂತರವ ನಾವಿನ್ನಾಡಿ ಫಲವೇನು
ಗುರುತನುಜನೇ ಕೃಪನೆ ದ್ರೋಣನೆ
ತರಣಿತನಯನೆ ಸೈಂಧವನೆ ಹುಲು
ನರರು ಗಣ್ಯವೆ ಕೇಳು ಭಾಷೆಯನೆಂದನಭಿಮನ್ಯು ೫೫

ಬವರವಾದರೆ ಹರನ ವದನಕೆ
ಬೆವರ ತಹೆನವಗಡಿಸಿದರೆ ವಾ
ಸವನ ಸದೆವೆನು ಹೊಕ್ಕಡಹುದೆನಿಸುವೆನು ಭಾರ್ಗವನ
ಜವನ ಜಗವೆಡಿಸುವೆನು ಸಾಕಿ
ನ್ನಿವರವರಲೇನರ್ಜುನನು ಮಾ
ಧವನು ಮುನಿದಡೆ ಗೆಲುವೆನಂಜದೆ ರಥವ ಹರಿಸೆಂದ ೫೬

ಬಾಲನೆನ್ನದಿರೆನುತ ರಿಪುಭಟ
ಭಾಳಲೋಚನನೆನಿಸುವರ್ಜುನ
ಬಾಳುಗೆನುತುದ್ದಂಡ ಕೋದಂಡವನು ಜೇವೊಡೆಯೆ
ಮೇಲು ಜಗವಲ್ಲಾಡಿದವು ಕೊರ
ಳೋಳಿ ಕೆದರಿತು ಕುಸಿದನಹಿ ಪಾ
ತಾಳ ಗೂಳೆಯ ತೆಗೆಯಲಳ್ಳಿರಿಯಿತ್ತು ಬಿಲು ರಭಸ ೫೭

ಸುರನದಿಗೆ ಶಿವನಾಯ್ತು ಮಕರಾ
ಕರಕೆ ಕಳಶಜನಾಯ್ತು ತರಣಿಗೆ
ಅರಿ ವಿಧುಂತುದನಾಯ್ತು ರಥಪದತಳಿತ ಧೂಳಿಯಲಿ
ಅರರೆ ಸತ್ವ ರಜಸ್ತಮಂಗಳೊ
ಳೆರಡು ಗುಣವಡಗಿತು ರಜೋ ಗುಣ
ದುರುಳಿಯಾದುದು ಲೋಕವೆನೆ ಘಾಡಿಸಿತು ಪದಧೂಳಿ ೫೮

ಆರ ರಥವಿದು ಸೈನ್ಯ ಪಾರಾ
ವಾರಕಿದನಂಘೈಸುವನು ತ್ರಿಪು
ರಾರಿಯೋ ಮೇಣಾ ತ್ರಿವಿಕ್ರಮನೋ ಸುರೇಶ್ವರನೊ
ವೀರನಹನೋ ಪೂತು ರಣದ ದೊ
ಠಾರನಿವನಾರೆನುತ ತರುಬಿಯೆ
ತೋರಹತ್ತರು ತಾಗಿದರು ಸೌಬಲ ಜಯದ್ರಥರು ೫೯

ಫಡ ಜಯದ್ರಥ ಹೋಗು ಹೋಗಳ
ವಡಿಕೆಯಲ್ಲಿದು ಸಾರು ಸೌಬಲ
ಮಿಡುಕಿದಡೆ ಮರುಳಹಿರಿ ಲೇಸಲ್ಲೆಮ್ಮೊಳತಿಮಥನ
ತುಡುಕಿದರೆ ಕೈ ಬೇವುದೀ ಬಲು
ಗಡಿಯತನ ಬಯಲಹುದೆನುತ ತಡೆ
ಗಡಿದು ಬಿಸುಟನು ಭಟರ ಹಯ ರಥ ಧನುವ ಸಾರಥಿಯ ೬೦

ರಥ ಮುರಿದು ಮನನೊಂದು ಸುಮಹಾ
ರಥರು ಹಿಮ್ಮೆಟ್ಟಿದರು ಬಳಿಕತಿ
ರಥಭಯಂಕರನೊಡೆದು ಹೊಕ್ಕನು ವೈರಿಮೋಹರವ
ಮಥನದಲಿ ಮುರಿಯೊಡೆದ ಶೈಲ
ವ್ಯಥಿತ ಸಾಗರದಂತೆ ಬಿರಿದವು
ರಥನಿಕರ ಕಾಲಾಳು ಕುದುರೆಗಳೊಂದು ನಿಮಿಷದಲಿ ೬೧

(ಸಂಗ್ರಹ: ಸತ್ಯ,ಶೈಲ,ಮೋಹನ ಮತ್ತು ಪ್ರಿಯ - ಹಾಸನ)

Friday, February 26, 2010

ವಿರಾಟಪರ್ವ: ೦೬ ಆರನೆಯ ಸಂಧಿ

ಸೂ: ಚಂಡ ರಿಪುಬಲ ವಿಲಯ ಹರನು
ದ್ದಂಡ ಬಲ ಶಸ್ತ್ರಾಸ್ತ್ರವನು ಕೈ
ಕೊಂಡು ಸುರಪನ ಸೂನು ನಡೆದನು ವೈರಿ ಮೋಹರವ

ಎಲೆ ಪರೀಕ್ಷಿತ ತನಯ ಕೇಳ್ ನೃಪ
ತಿಲಕನತಿ ವೇಗದಲಿ ರಥವನು
ಕೊಳುಗುಳಕೆ ತರೆ ಕಂಡನುತ್ತರ ಮುಂದೆ ದೂರದಲಿ
ತಳಿತ ಕುಂತದ ಬಾಯಿ ಧಾರೆಯ
ಹೊಳವುಗಳ ಹೊದರೆದ್ದ ಸಿಂಧದ
ಸೆಳೆಯ ಸೀಗುರಿಗಳ ಸುರಂಭದ ಸಕಲ ಮೋಹರವ ೧

ಕರಿಘಟಾವಳಿಯೊಡ್ಡುಗಲ್ಲಿನ
ತುರಗ ನಿಕರದ ತೆರೆಯ ತೇರಿನ
ಹೊರಳಿಗಳ ಸುಳಿಯಾತಪತ್ರದ ಬಹಳ ಬುದ್ಬುದದ
ನರನಿಕಾಯದ ಜಲಚರೌಘದ
ತರದ ವಾದ್ಯಧ್ವನಿಯ ರವದು
ಬ್ಬರದೊಳಿದ್ದುದು ಬಹಳ ಜಲನಿಧಿಯಂತೆ ಕುರುಸೇನೆ ೨

ಜಡಿವ ಖಡ್ಗದ ಕಿಡಿಯ ಸೇನೆಯ
ಕಡುಹುಗಳ ಕೇಸುರಿಯ ಬಲದು
ಗ್ಗಡದ ರಭಸದ ರೌದ್ರರವ ಛಟಛಟಿತ ನಿಸ್ವನದ
ಇಡಿದ ಧೂಳಿಯ ಧೂಮ ರಾಶಿಯ
ಪಡೆ ವಿರಾಟನ ಮಗನ ಕಂಗಳಿ
ಗೊಡನೊಡನೆ ದಾವಾಗ್ನಿಯಂತಿರೆ ತೋರಿತಿದಿರಿನಲಿ ೩

ಪ್ರಳಯ ಮೇಘದ ಮಾತೃಕೆಯೊ ಕರಿ
ಕುಲವೊ ಸಿಡಿಲಿನ ಗರುಡಿಯೊ ಕಳ
ಕಳವೊ ಕಲ್ಪಾನಲನ ಧೂಮಾವಳಿಯೊ ಕೈದುಗಳೊ
ನೆಲನ ದಡ್ಡಿಯ ಬೆಟ್ಟದಡವಿಯೊ
ತಳಿತ ಟೆಕ್ಕೆಯವೋ ಜಗಂಗಳ
ನಳಿವ ಜಲಧಿಯೊ ಸೇನೆಯೋ ನಾವರಿಯೆವಿದನೆಂದ ೪

ಕಾಲಕೂಟದ ತೊರೆಯೊ ಮಾರಿಯ
ಗೂಳೆಯವೊ ಮೃತ್ಯುವಿನ ಗಂಟಲ
ತಾಳಿಗೆಯೊ ಭೈರವನ ಥಟ್ಟೋ ಜವನ ಜಂಗುಳಿಯೊ
ಕಾಲರುದ್ರನ ನೊಸಲ ವಹ್ನಿ
ಜ್ವಾಲೆಯೋ ಕೌರವನ ಸೇನಾ
ಜಾಲವೋ ಶಿವಯೆನುತ ಹೆದರಿದನಂದು ಸುಕುಮಾರ ೫

ಕಡೆಗೆ ಹಾಯವು ಕಂಗಳೀ ಬಲ
ಗಡಲ ಮನವೀಸಾಡಲಾರದು
ವೊಡಲುವಿಡಿದಿರಲೇನ ಕಾಣಲು ಬಾರದದ್ಭುತವ
ಪೊಡವಿಯೀದುದೊ ಮೋಹರವನಿದ
ರೊಡನೆ ಕಾದುವನಾವನಾತನೆ
ಮೃಡನು ಶಿವ ಶಿವ ಕಾದಿ ಗೆಲಿದೆವು ಬಲಕೆ ನಮೊಯೆಂದ ೬

ಹಸಿದ ಮಾರಿಯ ಮಂದೆಯಲಿ ಕುರಿ
ನುಸುಳಿದಂತಾದೆನು ಬೃಹನ್ನಳೆ
ಯೆಸಗದಿರು ತೇಜಿಗಳ ತಡೆ ಚಿಮ್ಮಟಿಗೆಯನು ಬಿಸುಡು
ಮಿಸುಕಬಾರದು ಪ್ರಳಯ ಕಾಲನ
ಮುಸುಕನುಗಿವವನಾರು ಕೌರವ
ನಸಮ ಬಲನೈ ರಥವ ಮರಳಿಚು ಜಾಳಿಸುವೆನೆಂದ ೭

ಎಲೆ ಕುಮಾರಕ ಮೊದಲ ಚುಂಬನ
ದೊಳಗೆ ಹಲು ಬಿದ್ದಂತೆ ಕಾಳಗ
ದೊಳಗೆ ಬೆರೆಯದ ಮುನ್ನ ಹಿಡಿದೈ ಸಮರ ಭೀತಿಯನು
ಅಳುಕಲಾಗದು ನಿಮ್ಮ ತಂದೆಯ
ಕುಲಕೆ ಕುಂದನು ತಾರದಿರು ಮನ
ಗೆಲವಿನಲಿ ಕಾದೆನುತ ರಥವನು ಬೇಗ ಹರಿಸಿದನು ೮

ಸಾರಿ ಬರ ಬರಲವನ ತನು ಮಿಗೆ
ಬಾರಿಸಿತು ಮೈ ಮುರಿದು ರೋಮ ವಿ
ಕಾರ ಘನ ಕಾಹೇರಿತವಯವ ನಡುಗಿ ಡೆಂಡಣಿಸಿ
ಭೂರಿ ಭಯ ತಾಪದಲಿ ತಾಳಿಗೆ
ನೀರುದೆಗೆದುದು ತುಟಿಯೊಣಗಿ ಸುಕು
ಮಾರ ಕಣ್ಣೆವೆ ಸೀಯೆ ಕರದಲಿ ಮುಚ್ಚಿದನು ಮುಖವ ೯

ಏಕೆ ಸಾರಥಿ ರಥವ ಮುಂದಕೆ
ನೂಕಿ ಗಂಟಲ ಕೊಯ್ವೆ ಸುಡು ಸುಡು
ಕಾಕಲಾ ಕಣ್ಣೊಡೆದವೇ ಕಾಣಾ ಮಹಾಬಲವ
ನಾಕನಿಳಯರಿಗರಿದು ನಿನಗೆ ವಿ
ವೇಕವೆಳ್ಳನಿತಿಲ್ಲ ತೆಗೆ ತೆಗೆ
ಸಾಕು ವಾಘೆಯ ಮರಳಿ ಹಿಡಿ ತೇಜಿಗಳ ತಿರುಹೆಂದ ೧೦

ನುಡಿಯ ಕೇಳದೆ ಮುಂದೆ ಹತ್ತೆಂ
ಟಡಿಯನರ್ಜುನ ರಥವ ಹರಿಸಲು
ಹಿಡಿದ ಬಿಲ್ಲಂಬುಗಳು ಬಿದ್ದವು ಕೈಯನರೆ ತೆಗೆದು
ಹಿಡಿ ಹಯವನಿರಿಗಾರ ಸಾರಥಿ
ನುಡಿವವರು ನಾವ್ ಹಗೆಗಳೇ ನಿ
ನ್ನೊಡೆಯರಲ್ಲಾ ಸ್ವಾಮಿ ದುರುಹಿಕೆ ಲೇಸು ಲೇಸೆಂದ ೧೧

ಎಂದೊಡರ್ಜುನ ನಗುತ ರಥವನು
ಮುಂದೆ ನಾಲ್ಕೆಂಟಡಿಯ ನೂಕಲು
ಕೊಂದನೀ ಸಾರಥಿಯೆನುತ ಸಂವರಿಸಿ ಮುಂಜೆರಗ
ಬಂದು ಮೆಲ್ಲನೆ ರಥದ ಹಿಂದಕೆ
ನಿಂದು ಧುಮ್ಮಿಕ್ಕಿದನು ಬದುಕಿದೆ
ನೆಂದು ನಿಟ್ಟೋಟದಲಿ ಹಾಯ್ದನು ಬಿಟ್ಟ ಮಂಡೆಯಲಿ ೧೨

ನೋಡಿದನು ಕಲಿಪಾರ್ಥನೀ ಕೇ
ಡಾಡಿ ಕೆದರಿದ ಕೇಶದಲಿ ಕೆ
ಟ್ಟೋಡುತಿರಲೆಲೆ ಪಾಪಿ ಹಾಯ್ದನು ಹಿಡಿಯಬೇಕೆನುತ
ಕೂಡೆ ಸೂಟಿಯೊಳಟ್ಟಲಿಳೆಯ
ಲ್ಲಾಡಲಹಿಪತಿ ಹೆದರಲಿತ್ತಲು
ನೋಡಿ ಕೌರವಸೇನೆ ಕೆಡೆದುದು ನಗೆಯ ಕಡಲೊಳಗೆ ೧೩

ಎಲೆಲೆ ಕಾದಲು ಬಂದ ವೀರನ
ಬಲುಹ ನೋಡಾ ಶಿವ ಶಿವಾ ಬೆಂ
ಬಳಿಯಲಟ್ಟುವ ವೀರನಾವನೊ ಸುಭಟನಹನವನು
ತಿಳಿಯಲರಿದಿವನಾವನೋ ವೆ
ಗ್ಗಳೆಯನಹನಾಕಾರದಲಿ ನೆರೆ
ಫಲುಗುಣನ ಹೋಲುವನೆನುತ ಗಜಬಜಿಸಿತರಿ ಸೇನೆ ೧೪

ಈತ ಸಾರಥಿಯಳವಿನಲಿ ಮಿಗು
ವಾತನುತ್ತರನರ್ಜುನಂಗೀ
ಸೂತತನವೆತ್ತಲು ನಪುಂಸಕ ವೇಷ ವೀಕ್ಷಿಸಲು
ಈತನರ್ಜುನನಾಗಲಾ ಪುರು
ಹೂತನಾಗಲಿ ರಾಮನಾಗಲಿ
ಆತಡಿರಿವೆನು ಬರಲಿಯೆಂದನು ಖಾತಿಯಲಿ ಕರ್ಣ ೧೫

ಇತ್ತಲರ್ಜುನನುತ್ತರನ ಬೆಂ
ಬತ್ತಿ ಬಂದನು ಹೋದೆಯಾದರೆ
ಕಿತ್ತು ಬಿಸುಡುವೆ ನಿನ್ನ ತಲೆಯನು ನಿಲ್ಲು ನಿಲ್ಲೆನುತ
ಮೃತ್ಯುವೋ ಸಾರಥಿಯೊ ಪಾಪಿಯ
ನೆತ್ತಣಿಂದವೆ ಮಾಡಿ ಕೊಂಡೆನೆ
ನುತ್ತ ಮರಳಿದು ನೋಡಿ ನಿಲ್ಲದೆ ಮತ್ತೆ ಸೈವರಿದ ೧೬

ಇಟ್ಟಣಿಸಿ ನರ ನೂರು ಹಜ್ಜೆಯೊ
ಳಟ್ಟಿ ಹಿಡಿದನಿದೇನ ಮಾಡಿದೆ
ಹುಟ್ಟಿದೆಯೊ ಹಾದರಕೆ ಕ್ಷತ್ರಿಯ ಬೀಜವೋ ನೀನು
ದಿಟ್ಟತನ ಮಿಗೆ ಹೆಂಗಳಿದಿರಲಿ
ಹೊಟ್ಟುಗುಟ್ಟಿದೆ ಹಗೆಗಳಿದಿರಲಿ
ಬಿಟ್ಟುಕೊಂಡೆ ದುರಾತ್ಮ ಮುರಿದೆ ವಿರಾಟನನ್ವಯವ ೧೭

ಹಲುಗಿರಿದು ಬಾಯೊಳಗೆ ಬೆರಳಿ
ಟ್ಟಳುಕಿ ತಲೆವಾಗಿದನು ಸಾರಥಿ
ಕಳುಹಿ ಕಳೆಯೈ ನಿನ್ನ ಬಸುರಲಿ ಮರಳಿ ಬಂದವನು
ಕೊಳುಗುಳದೊಳೀಯೊಡ್ಡ ಮುರಿವ
ಗ್ಗಳೆಯರುಂಟೇ ಲೋಗರಿಂದವೆ
ಕೊಲಿಸದಿರು ನೀ ಕುತ್ತಿ ಕೆಡಹು ಕಠಾರಿಯಿದೆಯೆಂದ ೧೮

ಮನದಲೊಡಲೊಡೆವಂತೆ ನಗುತ
ರ್ಜುನನು ಗಜರಿದನೆಲವೊ ಸಭೆಯಲಿ
ವನಜಮುಖಿಯರ ಮುಂದೆ ಸೊರಹಿದೆ ಬಾಯ್ಗೆ ಬಂದಂತೆ
ಅನುವರದೊಳೇನಾಯ್ತು ರಿಪು ವಾ
ಹಿನಿಯನಿರಿಯದೆ ನಾಡ ನರಿಯವೊ
ಲೆನೆಗೆ ನೀ ಹಲುಗಿರಿಯೆ ಬಿಡುವೆನೆ ಕಾದು ನಡೆಯೆಂದ ೧೯

ಹೇವ ಬೇಡಾ ವೀರರೀ ಪರಿ
ಜೀವಗಳ್ಳರ ಪಥವ ಹಿಡಿವರೆ
ಸಾವಿಗಂಜಿದೆವೇ ನಪುಂಸಕರೆಮ್ಮ ನೋಡೆನಲು
ನೀವು ವೀರರು ನೆರೆ ನಪುಂಸಕ
ರಾವು ಸಾವವರಲ್ಲ ಲೋಕದ
ಜೀವಗಳ್ಳರಿಗಾವು ಗುರುಗಳು ಬಿಟ್ಟು ಕಳುಹೆಂದ ೨೦

ಹರುಕನೇ ನೀನೆಲವೊ ರಾಯರೊ
ಳುರುವ ನೃಪ ನಿಮ್ಮಯ್ಯ ನೀನಿಂ
ದಿರಿದು ಮೆರೆವವಸರವಲಾ ಜವ್ವನದ ಧುರಭರವು
ಸರಿಗಳೆಯದಪಕೀರ್ತಿ ರವಿ ಶಶಿ
ಮುರಿದು ಬೀಳ್ವನ್ನಬರವೆಲೆ ನರ
ಗುರಿಯೆ ನಡೆ ಕಾಳಗಕೆನುತ ಹಿಡಿದೆಳೆದನುತ್ತರನ ೨೧

ಕೊಳುಗುಳದೊಳೋಡಿದೊಡೆ ಹಜ್ಜೆಗೆ
ಫಲ ಮಹಾಪಾತಕವು ಮುಂದಣಿ
ಗೊಲಿದು ಹಜ್ಜೆಯನಿಡಲು ಹಜ್ಜೆಯೊಳಶ್ವಮೇಧ ಫಲ
ಅಳಿದನಾದೊಡೆ ದೇವಲೋಕದ
ಲಲನೆಯರು ತೊತ್ತಿರು ಸುರೇಂದ್ರನು
ನೆಲವನುಗ್ಗಡಿಸುವನು ವೀರ ಸ್ವರ್ಗವಹುದೆಂದ ೨೨

ಧುರದಲೋಡಿದ ಪಾತಕವ ಭೂ
ಸುರರು ಕಳೆದಪರಶ್ವಮೇಧವ
ಧರಣಿಯಲಿ ಪ್ರತ್ಯಕ್ಷವಾಗಿಯೆ ಮಾಡಬಹುದೆಮಗೆ
ಸುರರ ಸತಿಯರನೊಲ್ಲೆವೆಮಗೆ
ಮ್ಮರಮನೆಯ ನಾರಿಯರೆ ಸಾಕೆ
ಮ್ಮರಸುತನವೆಮಗಿಂದ್ರಪದವಿಯು ಬಿಟ್ಟು ಕಳುಹೆಂದ ೨೩

ಆಳೊಳೊಡ್ಡುಳ್ಳವನು ಭಾರಿಯ
ತೋಳುಗಳ ಹೊತ್ತವನು ಮನೆಯಲಿ
ಸೂಳೆಯರ ಮುಂದೊದರಿ ಭಾಷ್ಕಳಗೆಡೆದು ಬಂದೀಗ
ಕೋಲನಿಕ್ಕದೆ ಗಾಯವಡೆಯದೆ
ಕಾಲು ವೇಗವ ತೋರಿದೊಡೆ ನಿ
ನ್ನೋಲಗದೊಳೆಂತಕಟ ನಾಚದೆ ಕುಳ್ಳಿತಿಹೆಯೆಂದ ೨೪

ಕೆತ್ತುಕೊಂಡಾ ನಾಚಿಕೆಗೆ ನೆರೆ
ಕುತ್ತಿಕೊಳಬೇಕೆಂಬ ಗಾದೆಯ
ನಿತ್ತ ಹೊದ್ದಿಸಬೇಡ ನಾವಂಜುವೆವು ಕಾಳಗಕೆ
ತೆತ್ತಿಗನು ನೀನಹಿತನಂತಿರೆ
ಮಿತ್ತುವಹರೇ ನಿನಗೆ ಬೇಡಿದ
ನಿತ್ತು ಸಲಹುವೆನೆನ್ನ ಕೊಲ್ಲದೆ ಬಿಟ್ಟು ಕಳುಹೆಂದ ೨೫

ವಳಿತವನು ವಾರುವನು ಮುಕ್ತಾ
ವಳಿಯಲಂಕಾರವನು ರಥವನು
ಲಲನೆಯರ ನಾನೀಸಿ ಕೊಡುವೆನು ರಾಜಭವನದಲಿ
ಎಲೆ ಬೃಹನ್ನಳೆ ನಮ್ಮ ಬೊಪ್ಪನು
ಸಲಹಿದಕೆ ಕೈಯೊಡನೆ ತೋರಿದೆ
ಕಲುಮನವಲಾ ನಿನ್ನದೆಂದಡೆ ಪಾರ್ಥನಿಂತೆಂದ ೨೬

ಪೊಡವಿಪತಿಗಳ ಬಸುರ ಬಂದೀ
ಯೊಡಲ ಕಕ್ಕುಲಿತೆಯನು ಕಾಳಗ
ದೆಡೆಗೆ ಮಾಡಿದರಿಲ್ಲ ಭೂತ ಭವಿಷ್ಯಮಾನದಲಿ
ನುಡಿಯಬಹುದೇ ಬಂಜೆವಾತನು
ಸುಡು ಸುಡೆಲವೋ ರಾಜಬಾಹಿರ
ನಡೆ ವರೂಥದ ಹೊರೆಗೆ ಕಾದಲು ಬೇಡ ಬಾಯೆಂದ ೨೭

ಕಾದುವೆನು ಮಾರೊಡ್ಡಿನಲಿ ನೀ
ನೈದಿಸೆನ್ನಯ ರಥವ ಮನದಲಿ
ಭೇದತನವನು ಬಿಟ್ಟು ಸಾರಥಿಯಾಗು ಸಾಕೆನಲು
ಆದಿಯಲಿ ನೀನಾವ ರಾಯರ
ಕಾದಿ ಗೆಲಿದೈ ಹುಲು ಬೃಹನ್ನಳೆ
ಯಾದ ನಿನಗೀ ಕದನ ನಾಟಕ ವಿದ್ಯವಲ್ಲೆಂದ ೨೮

ಎನ್ನವಂದಿಗ ರಾಜಪುತ್ರರಿ
ಗಿನ್ನು ಮೊಗಸಲು ಬಾರದಿದೆ ನೀ
ನೆನ್ನ ಸಾರಥಿ ಮಾಡಿಕೊಂಡೀ ಬಲವ ಜಯಿಸುವೆಯ
ಅನ್ಯರನು ಮನಗಾಂಬರಲ್ಲದೆ
ತನ್ನ ತಾ ಮನಗಾಂಬರೇಯೀ
ಗನ್ನಗತಕವ ನಾವು ಬಲ್ಲೆವು ಬಿಟ್ಟು ಕಳುಹೆಂದ ೨೯

ಎಲವೊ ಸಾರಥಿಯಾಗು ನಡೆ ನೀ
ಗಳಹಿದೊಡೆ ಕಟವಾಯ ಕೊಯ್ವೆನು
ಕೊಲುವೆನೀ ಪ್ರತಿಭಟ ನಿಕಾಯವ ನಿನ್ನ ಸಾಕ್ಷಿಯಲಿ
ಬಳಿಕ ನೀ ನಗು ನಡೆಯೆನುತ ರಿಪು
ಬಲ ಭಯಂಕರನುತ್ತರನ ಹೆಡ
ತಲೆಯ ಹದರಿನೊಳೌಂಕಿ ತಂದನು ರಥವನೇರಿಸಿದ ೩೦

ಖೇಡತನ ಬೇಡೆಲವೊ ರಣದೊಳ
ಗೋಡಿಸುವೆನಹಿತರನು ಹರಣವ
ಹೂಡಿಸುವೆನಂತಕನ ನಗರಿಗೆ ಥಟ್ಟನಡೆಹೊಯ್ದು
ಕೋಡದಿರು ಕೊಂಕದಿರು ಧೈರ್ಯವ
ಮಾಡಿ ಸಾರಥಿಯಾಗೆನುತ ಕಲಿ
ಮಾಡಿ ಕೊಂಡೊಯ್ದನು ಸಮೀಪದ ಶಮಿಯ ಹೊರೆಗಾಗಿ ೩೧

ಮರನನೇರಿದರೊಳಗೆ ಪಾಂಡವ
ರಿರಿಸಿ ಹೋದರು ಕೈದುಗಳ ಮಿಗೆ
ಹರಣ ಭರಣ ಕ್ಷಮೆಗಳಲಿ ನೀನೆನಗೆ ನೀಡೆನಲು
ಅರಸು ಮಕ್ಕಳು ಮುಟ್ಟಲನುಚಿತ
ಮರದ ಮೇಲಣ ಹೆಣನಿದೇನೈ
ವರ ಬೃಹನ್ನಳೆ ಮತ್ತೆ ಕೆಲಸವ ಹೇಳು ತನಗೆಂದ ೩೨

ಹೊರಗೆ ತೊಗಲಲಿ ಬಿಗಿದು ಕೆಲ ಬಲ
ನರಿಯದಂದದಿ ಪಾಂಡು ನಂದನ
ರುರುವ ಕೈದುವ ಕಟ್ಟಿದರು ಹೆಣನಲ್ಲ ತೆಗೆಯೆನಲು
ಸೆರಗನಳವಡಿಸಿಕ್ಕಿ ಭೀತಿಯ
ತೊರೆದು ತುದಿಗೇರಿದನು ನೇಣ್ಗಳ
ಹರಿದು ಕೈದುವ ಬಿಟ್ಟು ಕಂಡಂಜಿದನು ಭಯ ಹೊಡೆದು ೩೩

ಕಾಲ ಭುಜಗನ ನಾಲಿಗೆಯೊ ಶರ
ಜಾಲವೋ ಕಲ್ಪಾಂತ ವಹ್ನಿ
ಜ್ವಾಲೆಯೋ ಕೈದುಗಳೊ ಕಾಲಾಂತಕನ ದಾಡೆಗಳೊ
ತೋಳು ಧರಿಸುವವೆಂತು ನೋಡಿದ
ಡಾಲಿಯುರೆ ಬೆಂದವು ಬೃಹನ್ನಳೆ
ಕಾಳು ಮಾಡಿದೆ ಕೊಂದೆಯೆನುತೋರಂತೆ ಹಲುಬಿದನು ೩೪

ಹೊಗರ ಹೊರಳಿಯ ಹೊಳೆವ ಬಾಯ್ಧಾ
ರೆಗಳ ತಳಪದ ಕಾಂತಿ ಹೊನ್ನಾ
ಯುಗದ ಬಹಳ ಪ್ರಭೆ ಶರೌಘಾನಲನ ಗಹಗಹಿಸಿ
ಝಗಝಗಿಸೆ ಕಣ್ಮುಚ್ಚಿ ಕೈಗಳ
ಮುಗಿದು ಸಾರಥಿಗೆಂದನೆನ್ನನು
ತೆಗೆದುಕೊಳ್ಳೈ ತಂದೆ ಸಿಲುಕಿದೆನಸ್ತ್ರ ಸೀಮೆಯಲಿ ೩೫

ತುಡುಕಬಹುದೇ ದೋಷಿ ಹಾವಿನ
ಕೊಡನ ನಿನಗಿವು ಕೈದುಗಳೆ ಬರ
ಸಿಡಿಲ ದಾವಣಿಯಾಗುತಿವೆ ಕೈಯಿಕ್ಕಲಂಜುವೆನು
ಬಿಡಿಸು ಸಾರಥಿಯೆನ್ನನೆನೆ ಫಡ
ನಡುಗದಿರು ಫಲುಗುಣನ ನೆನೆ ಕೈ
ದುಡುಕು ಕೈವಶವಹವು ತೆಗೆ ಸಾಕೆಂದನಾ ಪಾರ್ಥ ೩೬

ಉಲಿದು ಸತ್ವದೊಳೌಕಿ ಕಾಯವ
ಬಲಿದು ತೆಕ್ಕೆಯೊಳೊತ್ತಿ ಬೆವರಿದು
ಬಳಲಿ ನೀಡಿದನರ್ಜುನನ ಕರತಳಕೆ ಗಾಂಡಿವವ
ಬಲುಹಿನಿಂದವಡೊತ್ತಿ ತೆಗೆ ತೆಗೆ
ದುಳಿದ ಬಿಲುಗಳ ನೀಡಿ ಮರನನು
ಮಲಗಿ ಢಗೆಯಿಂದಳ್ಳೆವೊಯ್ದು ಕುಮಾರನಿಂತೆಂದ ೩೭

ಗಿರಿಯನೆತ್ತಲು ಬಹುದು ಬಿಲುಗಳ
ಕೆರಳಿಚುವಡಾರೆನು ಬೃಹನ್ನಳೆ
ಧರಿಸಲಾಪೈ ನೀ ಸಮರ್ಥನು ನಿನಗೆ ಶರಣೆನುತ
ಸರಳ ಹೊದೆಗಳ ದೇವದತ್ತವ
ಪರಶು ತೋಮರ ಕುಂತವಸಿ ಮು
ದ್ಗರ ಗದಾ ದಂಡಾದಿ ಶಸ್ತ್ರವ ತೆಗೆದು ನೀಡಿದನು ೩೮

ಹೇಳು ಸಾರಥಿ ಬಿಲ್ಲಿದಾವನ
ತೋಳಿಗಳವಡುವುದು ಮಹಾ ಶರ
ಜಾಲ ಬೆಸೆಗೈದಪವಿದಾರಿಗೆ ಮಿಕ್ಕ ಬಿಲ್ಲುಗಳು
ಕಾಳಗದೊಳಿವನಾರು ತೆಗೆವರು
ಮೇಲುಗೈದುಗಳಾರಿಗಿವು ಕೈ
ಮೇಳವಿಸುವವು ಮನದ ಸಂಶಯ ಹಿಂಗೆ ಹೇಳೆಂದ ೩೯

ಇದು ಕಣಾ ಗಾಂಡೀವವೆಂದೆಂ
ಬುದು ಮಹಾಧನು ಪಾರ್ಥನದು ಬಳಿ
ಕಿದು ಯುಧಿಷ್ಠಿರ ಚಾಪವೀ ಧನು ಭೀಮಸೇನನದು
ಇದು ನಕುಲ ಕೋದಂಡ ಬಿಲು ತಾ
ನಿದುವೆ ಸಹದೇವನದು ಭಾರಿಯ
ಗದೆಯಿದನಿಲಜನದು ಕಿರೀಟಿಯ ಬಾಣವಿವುಯೆಂದ ೪೦

ಅವರವರ ಬತ್ತಳಿಕೆ ಚಾಪವ
ನವರ ಶರವನು ಕಂಬು ಖಡುಗವ
ಕವಚ ಸೀಸಕ ಜೋಡುಗಳ ಬಿರುದುಗಳ ಟೆಕ್ಕೆಯವ
ವಿವಿಧ ಶಸ್ತ್ರಾಸ್ತ್ರವನು ಫಲುಗುಣ
ವಿವರಿಸಲು ಬೆರಗಾಗಿ ಸಾರಥಿ
ಯಿವನು ತಾನಾರೆಂದು ಮತ್ಸ್ಯನ ಸೂನು ಬೆಸಗೊಂಡ ೪೧

ಆರು ನೀನರ್ಜುನನೊ ನಕುಲನೊ
ಮಾರುತನ ಸುತನೋ ಯುಧಿಷ್ಠಿರ
ವೀರನೋ ಸಹದೇವನೋ ಮೇಣವರ ಬಾಂಧವನೊ
ಧೀರ ಹೇಳೈ ಬೇಡಿಕೊಂಬೆನು
ಕಾರಣವ ವಿಸ್ತರಿಸು ಪಾಂಡು ಕು
ಮಾರರಾಯುಧ ತತಿಯ ನೀನೆಂತರಿವೆ ಹೇಳೆಂದ ೪೨

ಆದೊಡಾನರ್ಜುನನು ಬಾಣಸಿ
ಯಾದ ವಲಲನು ಭೀಮ ವರ ಯತಿ
ಯಾದ ಕಂಕನು ಧರ್ಮಪುತ್ರನು ನಿಮ್ಮ ಗೋಕುಲವ
ಕಾದವನು ಸಹದೇವ ರಾವುತ
ನಾದವನು ನಕುಲನು ವಿಳಾಸಿನಿ
ಯಾದವಳು ಸೈರಂಧ್ರಿ ರಾಣೀವಾಸವೆಮಗೆಂದ ೪೩

ಅಹುದು ಬಳಿಕೇನುಳಿದವರಿಗೀ
ಮಹಿಮೆ ತಾನೆಲ್ಲಿಯದು ಕಾಣಲು
ಬಹುದಲಾ ಜೀವಿಸಿದರತಿಶಯವನು ಮಹಾದೇವ
ಗಹನ ಮಾಡದೆ ನುಡಿದ ತಪ್ಪಿನ
ಬಹಳತೆಯ ಭಾವಿಸದೆ ತನ್ನನು
ಕುಹಕಿಯೆನ್ನದೆ ಕಾಯಬೇಕೆಂದೆರಗಿದನು ಪದಕೆ ೪೪

ಮೌಳಿಯನು ನೆಗಹಿದನು ನಿನ್ನಯ
ಮೇಲೆ ತಪ್ಪಿಲ್ಲೆನುತ ಫಲುಗುಣ
ಬೋಳವಿಸೆ ನಿಂದಿರ್ದು ಕೈಮುಗಿದುತ್ತರನು ನಗುತ
ಬಾಲಕನ ಬಿನ್ನಪವನೊಂದನು
ಕೇಳಬೇಹುದು ನಿಮ್ಮ ದಶನಾ
ಮಾಳಿಯನು ಪೇಳ್ದಲ್ಪಮತಿಯನು ತಿಳುಹಬೇಕೆಂದ ೪೫

ಎನಲು ನಸುನಗುತರ್ಜುನನು ಫಲು
ಗುಣ ಧನಂಜಯ ಜಿಷ್ಣು ಸಿತ ವಾ
ಹನ ವಿಜಯ ಬೀಭತ್ಸು ಪಾರ್ಥ ಕಿರೀಟಿ ಮೊದಲಾದ
ವಿನುತ ಕೃಷ್ಣನು ಸವ್ಯಸಾಚಿಗ
ಳೆನಿಪ ಪೆಸರನು ತಿಳುಹಿ ಪುನರಪಿ
ತನಗೆ ಬಂದಂದವನು ವಿಸ್ತರವಾಗಿ ವಿರಚಿಸಿದ ೪೬

ನಂಬಿದೆನು ಲೇಸಾಗಿ ನಿಶ್ಚಯ
ವಿಂಬುಗೊಂಡುದು ಪಾರ್ಥ ನಿನಗೀ
ಡೊಂಬಿದೇಕೈ ಹುಲು ಬೃಹನ್ನಳೆತನದ ಬಹು ರೂಪು
ಅಂಬುಜಾಕ್ಷನ ಸಾಹಸ ಪ್ರತಿ
ಬಿಂಬವಲ್ಲಾ ನೀನು ನಿನ್ನ ವಿ
ಡಂಬಿಸಿದ ರೂಹಿಂಗೆ ಕಾರಣವೇನು ಹೇಳೆಂದ ೪೭

ಇದು ಕಣಾ ಧರ್ಮಜನ ಸತ್ಯಾ
ಭ್ಯುದಯಕೋಸುಗ ಊರ್ವಶಿಯ ಶಾ
ಪದಲಿ ಬಂದುದು ಹೊತ್ತು ನೂಕಿದೆನೊಂದು ವತ್ಸರವ
ಇದಕೆ ನಿಜ್ಜೋಡಾಯ್ತು ನಿರ್ವಿ
ಘ್ನದಲಿ ನೂಕಿದೆವವಧಿಯನು ತ
ನ್ನದಟುತನವನು ಭೀತಿಗೊಳ್ಳದೆ ನೋಡು ನೀನೆಂದ ೪೮

ಬಳೆಯ ನೆಗ್ಗೊತ್ತಿದನು ಕೌರವ
ಬಲದ ಗಂಟಲ ಬಳೆಯ ಮುರಿವವೊ
ಲಲಘು ಸಾಹಸಿ ಘಳಿಯನುಟ್ಟನು ಮಲ್ಲಗಂಟಿನಲಿ
ತಲೆ ನವಿರ ಹಿಣಿಲಿರಿದು ತಿಲಕವ
ಗೆಲಿದು ಕಿಗ್ಗಟ್ಟಿನ ಕಠಾರಿಯ
ಹೊಳೆವ ಗೊಂಡೆಯ ಮೆರೆಯೆ ಗಂಡಂದವನು ಕೈಕೊಂಡ ೪೯

ತೇರ ತೆಗೆದನು ತನ್ನ ಮುನ್ನಿನ
ವಾರುವಂಗಳ ಹೂಡಿದನು ಕಪಿ
ವೀರ ನೆನೆಯಲು ಬಂದು ಮಂಡಿಸಿದನು ಧ್ವಜಾಗ್ರದಲಿ
ಚಾರು ಸೀಸಕ ಜೋಡು ಕುಲಿಶದ
ಸಾರ ಕವಚವ ಬಿಗಿದು ಬೊಬ್ಬೆಯ
ಭಾರವಣಿ ಮಿಗೆ ಧನುವ ಕೊಂಡನು ತಿರುವನೇರಿಸಿದ ೫೦

ರಾಯ ಧರ್ಮಜ ಬಾಳುಗೆನುತ ನಿ
ಜಾಯುಧದ ಗುರುವಿಂಗೆರಗಿ ಸುರ
ರಾಯ ನಂದನನೊಲವಿನಲಿ ಗಾಂಡಿವವ ಜೇವಡಿಸಿ
ರಾಯ ಕುವರನ ಸೂತತನದ ವಿ
ಡಾಯಿಯರಿಯಲು ಬಹುದೆನುತ ಸಮ
ರಾಯತಾಸ್ತ್ರನು ಪಾರ್ಥ ಮೈದೋರಿದನು ಪರಬಲಕೆ ೫೧

ಸಡಿಲ ಬಿಡೆ ವಾಘೆಯನು ಚಿಮ್ಮಿದ
ವೊಡನೊಡನೆ ವೇಗಾಯ್ಲ ತೇಜಿಗ
ಳೊಡೆದುದಿಳೆಯನೆ ಗಜರು ಮಿಗೆ ಗರ್ಜಿಸಿದವಳ್ಳಿರಿದು
ಕುಡಿ ನೊರೆಯ ಕಟವಾಯ ಲೋಳೆಯೊ
ಳೊಡಲ ಸಂಚದ ನುಡಿಯ ಘುಡು ಘುಡು
ಘುಡಿಪ ನಾಸಾಪುಟದ ಹುಂಕೃತಿ ಮಸಗೆ ಮುಂಚಿದವು ೫೨

ಆರು ಕೌರವನಲ್ಲಿ ಭೀಷ್ಮನ
ದಾರು ಕೃಪನಾವವನು ದ್ರೋಣನ
ದಾರು ಬಲದೊಳಗಾವನಶ್ವತ್ಥಾಮನೆಂಬವನು
ವೀರ ತಿಳುಹೆನಗಿಲ್ಲಿ ಕರ್ಣನ
ದಾರು ನಾ ಕಂಡರಿಯೆನೆನಲಾ
ವೈರಿದಲ್ಲಣ ಪಾರ್ಥ ನಗುತುತ್ತರನೊಳಿಂತೆಂದ ೫೩

ಉದಯದರುಣನ ಕರುವ ಹಿಡಿದಂ
ದದಲಿ ವರ್ಣಚ್ಛವಿಯಲೊಪ್ಪುವ
ಕುದುರೆಗಳ ತಳತಳಸಿ ಬೆಳಗುವ ಕೊಡನ ಹಳವಿಗೆಯ
ಗದಗದಿಪ ಮಣಿಮಯದ ತೇರಿನ
ಕದನ ಕೋಳಾಹಳನು ಗರುಡಿಯ
ಸದನ ಸರ್ವಜ್ಞನನು ನೋಡೈ ದ್ರೋಣನವನೆಂದ ೫೪

ನವರತುನ ಕೇವಣದ ರಥವತಿ
ಜವದ ತೇಜಿಯ ತೆಕ್ಕೆಗಳ ರೌ
ರವದ ರೌದ್ರಾಯುಧದ ಗಡಣದ ಹರಿಯ ಹಳವಿಗೆಯ
ಬವರ ಭೈರವನಾತನತಿಬಲ
ಶಿವನ ನೊಸಲಂದದಲಿ ಮೆರೆವವ
ನಿವನು ಜಿತಸಂಗ್ರಾಮನಶ್ವತ್ಥಾಮ ನೋಡೆಂದ ೫೫

ಖುರದಲವನಿಯ ಹೊಯ್ದು ಲಹರಿಯ
ಲುರಿ ಮಸಗಲುಬ್ಬೆದ್ದ ತೇಜಿಯ
ಮೆರೆವ ಮುಕ್ತಾವಳಿಯ ತೇರಿನ ನವ ವಿಳಾಸದಲಿ
ಸರಳ ತಿರುಹುತ ನಿಂದು ಧನುವನು
ನಿರುತವನು ನೆರೆ ನೋಡಿ ತಾ ಝೇಂ
ಕರಿಸುವವನತಿಬಲ ಕೃಪಾಚಾರಿಯನು ನೋಡೆಂದ ೫೬

ಲಲಿತ ರತ್ನಪ್ರಭೆಯ ತೇರಿನ
ಲುಲಿವ ಬಹುವಿಧ ವಾದ್ಯ ರಭಸದ
ಕಳಕಳದ ಕಡು ದರ್ಪದಿಂದಳ್ಳಿರಿವ ತೇಜಿಗಳ
ಲಳಿಯ ಲಹರಿಯ ಲಗ್ಗೆಗಳ ಮೋ
ಹಳಿಸಿ ಬಿಲು ಝೇಂಕಾರ ರವದಿಂ
ದುಲಿವವನು ಕಲಿಕರ್ಣನತುಳ ಪರಾಕ್ರಮಾನಲನು ೫೭

ಅತ್ತಲೈದನೆ ಬಹಳ ಬಲದೊ
ತ್ತೊತ್ತೆಯಲಿ ನಮ್ಮುಭಯ ರಾಯರ
ಮುತ್ತಯನು ತಾನೆನಿಸಿ ಹೂಡಿದ ಬಿಳಿಯ ತೇಜಿಗಳ
ತೆತ್ತಿಸಿದ ಹೊಂದಾಳ ಸಿಂಧದ
ಸತ್ತಿಗೆಯ ಸಾಲಿನಲಿ ರಿಪುಕುಲ
ಮೃತ್ಯುವಾತನು ವೀರ ಗಂಗಾಸುತನು ನೋಡೆಂದ ೫೮

ಅಗಿವ ಹಾವಿನ ಹಳವಿಗೆಯ ಮಿಗೆ
ನೆಗಹಿ ಮುಸುಕಿದ ಝಲ್ಲರಿಯ ಜೋ
ಡಿಗಳ ತುಡುಕುವ ತಂಬಟಂಗಳ ಮೊರೆವ ಚಂಬಕದ
ನೆಗಹಿ ನಿಗುರುವ ಟೆಕ್ಕೆಯದ ಮದ
ವೊಗುವ ಕರಿಗಳ ಮಧ್ಯದಲಿ ತಾ
ನಗಡು ದುರಿಯೋಧನನು ಜೂಜಿನ ಜಾಣನವನೆಂದ ೫೯

ಅವನ ಬಲವಂಕದಲಿ ನಿಂದವ
ನವನು ಭೂರಿಶ್ರವನು ಮತ್ತಾ
ಭುವನಪತಿಯೆಡವಂಕದಲಿ ನಿಂದವ ಜಯದ್ರಥನು
ತವತವಗೆ ಬಲುಗೈಗಳೆನಿಸುವ
ಶಿವನ ನೊಸಲಂದದಲಿ ಮೆರೆವವ
ರವನಿಪಾಲಕನನುಜರನು ನೋಡೆಂದನಾ ಪಾರ್ಥ ೬೦

ಹೊಗಳಲನುಪಮ ಸೈನ್ಯವಿಂತೀ
ದ್ವಿಗುಣವಂಧಾಸುರನ ಸೇನೆಗೆ
ತ್ರಿಗುಣವಿದು ರಾವಣನ ಮೋಹರಕೆನುತ ಫಲುಗುಣನು
ಹಗೆಯ ಭುಜದಗ್ಗಳಿಕೆಯನು ನಾ
ಲಗೆ ದಣಿಯೆ ಕೈವಾರಿಸುತ ಮಿಗೆ
ನಿಗುಚಿದನು ಫಲುಗುಣನು ಗಾಂಡಿವವ ಝೇವಡೆದು ೬೧

ಖುರಪುಟದಲಾಕಾಶ ಭಿತ್ತಿಯ
ಬರೆವವೋಲ್ ಸೂರಿಯನ ತುರಗವ
ಕರೆವವೋಲ್ ಕೈಗಟ್ಟಿ ದುವ್ವಾಳಿಸುವಡಾಹವಕೆ
ಅರೆರೆ ಪೂತುರೆ ಹಯವೆನುತೆ ಚ
ಪ್ಪರಿಸಲೊಡೆ ನಿಗುರಿದವು ಕೆಂದೂ
ಳಿರದೆ ನಭಕುಪ್ಪರಿಸಿ ರವಿ ಮಂಡಲವನಂಡಲೆಯೆ ೬೨

ತುರಗ ಗರ್ಜನೆ ರಥದ ಚೀತ್ಕೃತಿ
ವರ ಧನುಷ್ಟಂಕಾರ ಕಪಿಯ
ಬ್ಬರಣೆ ಪಾರ್ಥನ ಬೊಬ್ಬೆ ನಿಷ್ಠುರ ದೇವದತ್ತ ರವ
ಅರರೆ ಹೊದರೆದ್ದವು ಗಿರಿವ್ರಜ
ಬಿರಿಯೆ ಜಲನಿಧಿ ಜರಿಯೆ ತಾರಕಿ
ಸುರಿಯೆ ಸುರಕುಲ ಪರಿಯೆ ಭೀತಿಯ ಲಹಿತ ಬಲ ಹರಿಯೆ ೬೩

ಶಿರವ ಸಿಡಿಲೆರಗಿದವೊಲುತ್ತರ
ತಿರುಗಿ ಬಿದ್ದನು ಮೂರ್ಛೆಯಲಿ ಹೊಡೆ
ಮರಳಿದವು ಕಣ್ಣಾಲಿ ಕಾರಿದವರುಣ ವಾರಿಗಳ
ಹೊರಳುತಿರಲೆಲೆ ಪಾಪಿ ಸೈರಿಸ
ಲರಿಯ ನಿನ್ನೇನೆನುತ ಫಲುಗುಣ
ಸೆರಗಿನಲಿ ಬೀಸಿದನು ಕುಳ್ಳಿರಿಸಿದನು ರಥದೊಳಗೆ ೬೪

ಏನು ಮತ್ಸ್ಯಕುಮಾರ ಭವಣೆಯಿ
ದೇನು ನಿನಗೆಂದೆನಲು ಜಗದವ
ಸಾನದಂದದಿ ಸಿಡಿಲು ಸುಳಿದುದು ಬಿರಿದುದೆನ್ನೊಡಲು
ಆನಲಾಪೆನೆ ನಿನ್ನ ಬಹಳ
ಧ್ವಾನವನು ಸಾಕೆನ್ನ ಕಳುಹು ಮ
ಹಾ ನಿಧಾನವ ಮಾಣು ಮಾಣೆನೆ ಪಾರ್ಥನಿಂತೆಂದ ೬೫

ಖೇಡನಾಗದಿರದುಭುತ ಧ್ವನಿ
ಮಾಡೆನಂಜದಿರಂಜದಿರು ಧೃತಿ
ಮಾಡಿಕೊಂಡೀ ರಥವ ಜೋಡಿಸೆನುತ್ತ ಸಂತೈಸಿ
ಮೂಡಿಗೆಯ ಅಂಬುಗಿದು ತಿರುವಿಗೆ
ಹೂಡಿದನು ಫಲುಗುಣನ ಕದನವ
ನೋಡಲಮರಶ್ರೇಣಿ ಮೇಳೈಸಿತ್ತು ಗಗನದಲಿ ೬೬

(ಸಂಗ್ರಹ: ಸುನಾಥ ಮತ್ತು ಜ್ಯೋತಿ ಮಹದೇವ್)

Tuesday, February 23, 2010

ದ್ರೋಣಪರ್ವ: ೦೩. ಮೂರನೆಯ ಸಂಧಿ

ಸೂ. ಹನುಮನನುಜನ ಬಾಹುಬಲ ರಿಪು
ವನಧಿಯನು ತುಳುಕಿದನು ಭಗದ
ತ್ತನನು ಮರ್ದಿಸಿ ಮುರಿದನರ್ಜುನ ಸುಪ್ರತೀಕವನು

ಗುರುಗಳಾಡಿದ ಭಾಷೆ ಪರಬಲ
ದರಸ ಕಟ್ಟುವದದು ನಿಲಲಿ ನ
ಮ್ಮರಸ ಸಿಲುಕಿದ ಭೀಮ ಗಜ ಕಟ್ಟಿದುದು ಬೀದಿಗಳ
ತಿರುಗಲಾಪರೆ ಸಮಯವಿದು ಸಂ
ಗರ ಸಮರ್ಥರು ಬರಲಿ ಯೆಂಬ
ಬ್ಬರದೊಳಗೆ ಭಗದತ್ತ ಮೇಳೈಸಿದನು ನಿಜಗಜವ ೧

ಬಲವೊರಜೆ ಎಡವೊರಜೆ ಬೆನ್ನಿನ
ಮಿಳಿಯ ಜಾಳಿಗೆವೊರಜೆ ತಳ ಸಂ
ಕಲೆಯ ತೊಡರಂಕಣಿಯ ಕೊಂಡೆಯ ಪಕ್ಕ ಗಂಟೆಗಳ
ತುಳುಕಿನುಗ್ಗಡಣೆಗಳ ಹಿಣಿಲಿನ
ಬಲುವೊರಜೆಗಳ ಬಾರ ಸಂಕಲೆ
ಗಳನು ಬಿಗಿದರು ಜೋಡಿಸಿದರುಬ್ಬರದ ಮದಗಜವ ೨

ಬಿಗಿದು ಗಳವತ್ತಿಗೆಯನೆದೆವ
ತ್ತಿಗೆಯ ಘನಮುಂಡಿಗೆಯ ಲೌಡಿಯ
ಬಿಗಿದು ಗುಳ ರೆಂಚೆಗಳ ಭಾರಿಯ ಕೈಯ ಪಟ್ಟೆಯವ
ಅಗಿವ ಬಡಿಗೆಯನಂಕುಶದ ಕ
ಟ್ಟಿಗೆಯ ಧಾರೆಯ ಕಮಳದಳ ಕೊಡ
ತಿಗಳ ಕೈಹಾರೆಗಳನಳವಡಿಸಿದರು ವಹಿಲದಲಿ ೩

ಮುಗಿಲ ಹೊದರಿನೊಳೆಳೆಯ ರವಿ ರ
ಶ್ಮಿಗಳು ಪಸರಿಸುವಂತೆ ಸುತ್ತಲು
ಬಿಗಿದ ಗುಳದಲಿ ಹೊಳೆಯೆ ಹೊಂಗೆಲಸದ ಸುರೇಖೆಗಳು
ಗಗನ ಗಂಗಾ ನದಿಯ ಕಾಲುವೆ
ತೆಗೆದರೆನೆ ಠೆಕ್ಕೆಯದ ಪಲ್ಲವ
ವಗಿಯೆ ಮೆರೆದುದು ಬಿಗಿದ ಮೊಗರಂಬದ ವಿಳಾಸದಲಿ ೪

ಗಗನ ತಳವನು ಬಿಗಿದ ಬಲು ರೆಂ
ಚೆಗಳ ತುಂಬಿದ ಹೊದೆಯ ಕಣೆಗಳ
ಬಿಗಿದ ನಾಳಿಯ ಬಿಲ್ಲುಗಳ ತೆತ್ತಿಸಿದ ಸೂನಿಗೆಯ
ಉಗಿವ ಸರಿನೇಣುಗಳ ಕೈ ಗುಂ
ಡುಗಳ ಕವಣೆಯ ಲೌಡಿ ಕರವಾ
ಳುಗಳ ಜೋಡಿಸಿ ಜೋದರಡರಿದರಂದು ಬೊಬ್ಬಿರಿದು ೫

ಸುತ್ತ ಮೆರೆದವು ಮೇಲೆ ಪಲ್ಲವ
ಸತ್ತಿಗೆಯ ಸಾಲುಗಳು ಬಿರುದಿನ
ಕತ್ತರಿಯ ಹೀಲಿಗಳ ಝಲ್ಲರಿ ಮುಸುಕಿದವು ಗಜವ
ಒತ್ತಿ ಕಿವಿಗಳನೊದೆದು ಶಿರದಲಿ
ತೆತ್ತಿಸಿದರಂಕುಶವನಾ ಭಗ
ದತ್ತ ದಂತಿಯನೇರಿದನು ಜಯರವದ ರಭಸದಲಿ ೬

ಕಾಲುಗಾಹಿನ ಕುದುರೆಗಳ ಕಾ
ಲಾಳ ಕೈವಾರಿಗಳ ಸಬಳದ
ಸೂಲಿಗೆಯ ತೇರುಗಳ ಹರಹಿನ ಹೊಂತಕಾರಿಗಳ
ಆಳ ಬಲು ಬೊಬ್ಬೆಯಲಿ ಘನ ನಿ
ಸ್ಸಾಳತತಿ ಮೊಳಗಿದವು ಡೌಡೆಯ
ತೂಳುವರೆಗಳು ಗಜರಿದವು ತಂಬಟದ ಲಗ್ಗೆಯಲಿ ೭

ಸುರಪ ಕಡಿಯಲು ಕೆರಳಿ ಕುಲಗಿರಿ
ಯುರಿಯನುಗುಳುವುದೆನಲು ದಾಡೆಗ
ಳರುಣಮಯ ರಶ್ಮಿಗಳ ಪಸರದಲೆಸೆದುದಿಭಪತಿಯ
ಧರಣಿಯಳತೆಯ ಹರಿಯ ನೆಗಹಿನ
ಚರಣದಗ್ರದೊಳಿಳಿವ ಘನ ನಿ
ರ್ಝರದವೊಲು ಮದಧಾರೆ ಮೆರೆದುದು ಕರಿಕಪೋಲದಲಿ ೮

ಜಗದ ನಿಡುನಿದ್ರೆಯಲಿ ಮೋಹರ
ದೆಗೆದ ಮುಗಿಲೋ ಮೇಣಖಿಳ ಕುಲ
ದಿಗಿಭವೆಂಟೊಂದಾಯ್ತೊ ಕೈ ಕಾಲ್ ಮೂಡಿತೋ ನಭಕೆ
ಅಗಿದು ಮೆಟ್ಟಿದಡವನಿ ಪಡುವಲು
ನೆಗೆದುದಡಿರಿದು ಮುಂದೆ ಮೆಟ್ಟಲು
ಚಿಗಿದುದಿಳೆ ಮೂಡಲು ಮಹಾ ಗಜವೈದಿತಾಹವವ ೯

ಪವನಬಲ ಪರಿದಳಿತ ಕದಳೀ
ನಿವಹದಲಿ ನಭ ಧಾತುಗೆಟ್ಟುದು
ರವಿಗೆ ಕಾಪಥವಾಯ್ತು ಹೊಗಳುವೆನೇನನುದುಭುತವ
ಭುವನ ಕೋಶದೊಳಾದ ವಿಪಿನೋ
ದ್ಭವವೊ ಭಾರಿಯ ದಂತಿ ಮಹದಾ
ಹವದೊಳಿಳಿದುದು ಕೃಷ್ಣನೊಲಿದರಿಗಾವುದರಿದೆಂದ ೧೦

ಹಿಡಿವ ಬಿಡುವೊಬ್ಬುಳಿಗೆ ತಹ ಬಲ
ನೆಡಕೆ ಹಾಯ್ಕುವ ಸುತ್ತಲೊತ್ತುವ
ತಡೆವ ನಡಸುವ ಸೆಳೆವ ತಿರುಹುವ ಹದಿರ ಜೋಕೆಯಲಿ
ಗಡಣಿಸಿದನವನಿಭಪತಿಯನವ
ಗಡಿಸಿ ನೂಕಿದೊಡಮಮ ದಿಕ್ಕರಿ
ನಡುಗೆ ಚೌಕದ ಕಳನ ತುಳಿದುದು ಸುಪ್ರತೀಕಗಜ ೧೧

ಇದು ಗಜಾಸುರನೋ ಮಹಾ ದೇ
ವಿದುವೆ ಮಹಿಷಾಸುರನೊ ಮಾಯಾ
ರದನಿಯೋ ದಿಟವಿದನು ಗೆಲುವರೆ ಭೀಮ ಫಲುಗುಣರು
ತ್ರಿದಶ ರಿಪುಗಳ ಗಂಡನಿದು ಕಾ
ದಿದೆವು ನಾವಿಂದೆನುತ ಸುಭಟರು
ಕದಡಿ ಸರಿದುದು ಸೂರೆಗೊಂಡುದು ಬಲ ಪಲಾಯನವ ೧೨

ಮೊಗವ ಜವನಿಕೆದೆಗೆದು ನೆತ್ತಿಯ
ಬಗಿದು ಕೂರಂಕುಶದಲಾನೆಯ
ಬೆಗಡುಗೊಳಿಸಲು ಬೀದಿವರಿದುದು ಸುಭಟರೆದೆಯೊಡೆಯೆ
ಹಗೆಯ ಬಲದಲಿ ಹರಿದು ಸುಭಟರ
ಚಿಗುಳಿದುಳಿದುದು ತಲೆಗಳನು ಮುಗಿ
ಲಗಲದಲಿ ಹರಹಿದುದು ದಿಕ್ಕರಿ ಹೊಕ್ಕು ಮೋಹರವ ೧೩

ನೆಳಲು ಸುಳಿಯಲು ದಂತಿಯೆಂದ
ಪ್ಪಳಿಸೆ ವಾಸುಕಿ ನೊಂದನಂಬುಧಿ
ತುಳುಕಿದವು ಸತ್ವಾತಿಶಯವೆಂತುಟು ಮಹಾದೇವ
ತುಳಿದುದರಿ ಸುಭಟರನು ಸಾವಿರ
ತಲೆಯ ಸೆಳೆದುದು ಸೊಂಡಿಲಲಿ ವೆ
ಗ್ಗಳೆಯ ಮದಕರಿ ಕೇಣಿಗೊಂಡುದು ವೈರಿಮೋಹರವ ೧೪

ಸೀಳಿ ಹರಹಿತು ಕರಿಗಳನು ನೇ
ಪಾಳಗುದುರೆಯ ಥಟ್ಟುಗಳ ಹಿಂ
ಗಾಲಲಣೆದುರು ರಥವನೈದಾರೇಳನೊಂದಾಗಿ
ತೋಳೊಳಗೆ ನೆಗ್ಗೊತ್ತಿ ಮಿಗೆ ಕಾ
ಲಾಳ ತೊತ್ತಳದುಳಿದು ಕಾಲನ
ಗೂಳೆಯಕ್ಕುಪಕಾರಿಯಾದುದು ಸುಪ್ರತೀಕಗಜ ೧೫

ದ್ವಿಗುಣ ತ್ರಿಗುಣದಲಣೆದು ಜೋಡಿಸಿ
ಚಿಗಿದು ಹಾಯ್ಕುವ ಮೆಟ್ಟಿ ಸೀಳುವ
ತೆಗೆದು ಕಟ್ಟುವ ತಿರುಹಿ ನೂಕುವ ಹೆಡೆತಲೆಯೊಳಡಸಿ
ಉಗುರೊಳೌಕುವ ನಿಗ್ಗವದೊಳಿ
ಬ್ಬಗಿಯ ಮಾಡುವ ಕಾಲುಗೊಲೆಯಲಿ
ವಿಗಡ ಕರಿ ತುಳಿದಾಡಿತಿದಿರಿರಾದ ಪಟುಭಟರ ೧೬

ಅರೆದುದೋ ಪರಬಲವ ಕಾಲನ
ಹೊರೆದುದೋ ಮಾರಣದ ಮಂತ್ರವ
ಬರೆದುದೋ ಬವರಕ್ಕೆ ಬಲುಗೈಗಳನು ಕೈ ನೆಗಹಿ
ಕರೆದುದೋ ಬಲವೆಲ್ಲ ನೀರಲಿ
ನೆರೆದುದೋ ಮಾರ್ಬಲದ ವೀರರು
ಹರೆದುದೋ ಹವಣಿಲ್ಲ ದಂತಿಯ ಸಮರಸೌರಂಭ ೧೭

ಮುರಿದು ಮಂದರಗಿರಿ ಪಯೋಧಿಯ
ತೆರೆಗಳನು ತುಳಿವಂತೆ ರಿಪು ಮೋ
ಹರವನರೆದುದು ನುಗ್ಗುನುಸಿಯಾಯ್ತಖಿಳ ತಳತಂತ್ರ
ತೆರಳಿದರು ರಾವುತರು ರಥಿಕರು
ಹೊರಳಿಯೊಡೆದುದು ಗಜದ ಗಾವಳಿ
ಜರಿದುದಳಿದುದನಾರು ಬಲ್ಲರು ಭೂಪ ಕೇಳೆಂದ ೧೮

ಮುರಿದು ಕೊಟ್ಟುದು ದಂತಿ ಗುರುವಿ
ನ್ನುರುಬಿ ರಾಯನ ಹಿಡಿಯದಿರನಿದ
ತರುಬಲಾಪರೆ ಬರಲಿ ಸಾತ್ಯಕಿ ನಕುಲ ಪವನಜರು
ಇರಿತಕಿವರಂಜಿದರೆ ಪಾರ್ಥಂ
ಗರುಹಿ ಬೇಗದೊಳೆನುತ ನಾಯಕ
ರೊರಲುತಿರಲನುವಾದುದಿತ್ತಲು ದೊರೆಗಳೊಗ್ಗಿನಲಿ ೧೯

ಅಳ್ಳೆದೆಯ ಮನ್ನೆಯರನೊಗ್ಗಿನ
ಡೊಳ್ಳುಗರ ಕಟವಾಯ ಕೊಯ್ ತಲೆ
ಗಳ್ಳರಿವದಿರು ತರಿಚುಗೆಡೆವರ ಹೋಗ ಹೇಳೆನುತ
ಬಿಲ್ಲಗೊಲೆಗೇರಿಸುತ ಚೌಪಟ
ಮಲ್ಲ ಹೊಕ್ಕನು ಭೀಮ ಭಟರ
ಲ್ಲಲ್ಲಿ ಕವಿದುದು ದ್ರುಪದ ನಕುಲ ಯುಧಿಷ್ಠಿರಾದಿಗಳು ೨೦

ಕರಿ ಬಲುಹು ಕಲಿ ಭೀಮಸೇನನು
ದುರುಳನಿನ್ನೇನಹನೆನುತ ಮೋ
ಹರಿಸಿ ಕವಿದುದು ಮತ್ಸ್ಯ ಸೃಂಜಯ ಪಂಚ ಕೈಕೆಯರು
ತಿರುವಿಗಂಬನು ತೊಡಚಿ ಸಾತ್ಯಕಿ
ನರನ ಮಗ ಹೈಡಿಂಬ ಯವನೇ
ಶ್ವರರು ಧೃಷ್ಟದ್ಯುಮ್ನ ಮೊದಲಾಗೈದಿದರು ಗಜವ ೨೧

ಗಿರಿಯ ತರಿವರೆ ಶಕ್ರನಲ್ಲದೆ
ನೆರೆದ ದಿವಿಜ ಸಮೂಹ ಮಾಡುವ
ಭರವಸಿಕೆ ತಾನೇನು ಹೊದ್ದಿದರಿವರು ದಿಗ್ಗಜವ
ಸರಳ ಬಲುವಳೆಗಾಲವಹಿತ
ದ್ವಿರದ ಗಿರಿಯಲಿ ಕಾಣಲಾದುದು
ಕೆರಳಿ ಕರಿ ಕೈಕೊಂಡುದರೆಯಟ್ಟಿತು ಮಹಾರಥರ ೨೨

ಚೆಲ್ಲಿತಿದು ದೆಸೆದೆಸೆಗೆ ಚೌಪಟ
ಮಲ್ಲ ಗಿಲ್ಲರ ಪಾಡೆ ನಮ್ಮದು
ಬಲ್ಲಿತಹುದುಸುರಿಲ್ಲದೊಡಲಿನ ಚೆಲುವು ಫಲವೇನು
ಅಲ್ಲಿ ದೈವದ ನೆನೆಹು ಘನ ಜಯ
ವೆಲ್ಲಿಯದು ನಮಗಿನ್ನು ಸಾಕಿ
ನ್ನೆಲ್ಲವೇತಕೆ ಚಿತ್ತವಿಸು ಚೌದಂತನಾಹವವ ೨೩

ಸೆಳೆವಿಡಿದು ತುರುಗಾಹಿ ಪಶು ಸಂ
ಕುಲವ ತೆವರುವವೋಲು ವಾಯಸ
ಕುಲವನೊಂದೇ ಗೂಗೆ ಹೊಯ್ದರೆಯಟ್ಟುವಂದದಲಿ
ಬಲುಕಣಿಗಳಿವದಿರನು ಕರಿ ಮುಂ
ಕೊಳಿಸಿ ಕೆಡಹಿತು ಯವನ ಕೌಸಲ
ಬಲವ ಕೈಕೆಯ ಮಗಧ ಭೂಪರ ಕೊಡಹಿ ಹಾಯಿಕಿತು ೨೪

ಹಿಡಿಹಿಡಿಯಲೋಡಿದನು ದ್ರುಪದನು
ಸಿಡಿದು ಕೆಲಸಾರಿದನು ಪವನಜ
ನೊಡಲುಸುರ ಸಂಬಂಧವಳಿದುದು ಸಿಲುಕಿದನಿಬರಿಗೆ
ಒಡೆಮುರಿದು ಸಾತ್ಯಕಿಯ ರಥವನು
ತುಡುಕಿ ಹಾಯ್ಕಿತು ಭೀಮತನಯನ
ಕೊಡಹಿ ಬಿಸುಟುದು ಕೊಂದುದಗಣಿತ ಕರಿ ತುರಂಗಮವ ೨೫

ಮರಳಿ ಮತ್ತೆ ಮಹಾರಥರು ಸಂ
ವರಿಸಿಕೊಂಡುದು ಸರಳ ಮಳೆಗಳ
ಸುರಿದರಾನೆಯ ಮೇಲೆ ಜೋದರ ಕೋಲ ಮನ್ನಿಸದೆ
ಗಿರಿಯ ಮುತ್ತಿದ ಮಿಂಚುಬುಳುವಿನ
ಹೊರಳಿಯಂತಿರೆ ಹೊನ್ನ ಬರಹದ
ಸರಳು ಮೆರೆದವು ಕರೆದರದುಭುತ ಕಣೆಯ ಸರಿವಳೆಯ ೨೬

ಬಾಲರೆಸುಗೆಯ ಮಿಟ್ಟೆಯಂಬಿಗೆ
ಸೋಲುವುದೆ ಗಿರಿ ವೈರಿ ಸುಭಟರ
ಕೋಲ ಕೊಂಬುದೆ ವೀರ ಕುಂಜರ ಮತ್ತೆ ಮೊಗ ನೆಗಹಿ
ಆಳೊಳಗೆ ಬೆರಸಿತು ಮಹಾ ರಥ
ರೋಳಿ ಮುರಿದುದು ಕುರಿಯ ಹಿಂಡಿನ
ತೋಳನೈ ನಿನ್ನಾನೆ ಸವರಿತು ಮತ್ತೆ ಮಾರ್ಬಲವ ೨೭

ಹಡಗು ಜಲಧಿಯೊಳೋಡಿ ಗಿರಿಗಳ
ನೆಡಹಿ ನುಗ್ಗಾದಂತೆ ಸುಭಟರ
ಗಡಣ ಗಜವನು ತಾಗಿ ತಾಗಿ ವಿಘಾತಿಯಲಿ ನೊಂದು
ಒಡಲ ಮೇಲೆಳ್ಳನಿತು ಮೋಹವ
ಹಿಡಿಯದಿವರೌಕಿದರು ಹಾವಿನ
ಕೊಡನು ದೋಷಿಗೆ ಸುಲಭವೇ ಧೃತರಾಷ್ಟ್ರ ಕೇಳೆಂದ ೨೮

ಮುರಿದು ಮೋದಿತು ಸಮ್ಮುಖದೊಳಿ
ಟ್ಟೊರಸಿತೆಡದಲಿ ಹೊಯ್ದು ಸೀಳಿತು
ಹರಹಿತಪಸವ್ಯದಲಿ ಮೆದೆಗೆಡಹಿತು ಮಹಾರಥರ
ಹೊರೆದ ರಕುತದ ಧಾರೆಗಳ ತುದಿ
ಕರದೊಳೆಳಲುವ ತಲೆಗಳಂಘ್ರಿಯೊ
ಳೊರೆದ ನೆಣನಡಗಿನ ಮಹಾಗಜ ಮೊಗೆದುದರಿಬಲವ ೨೯

ಹಿಂದೆ ಹಿಡಿವರು ಮುರಿದರೆಡದಲಿ
ಸಂದಣಿಸುವರು ತಿರುಗಿದರೆ ಬಲ
ದಿಂದ ಕೈ ಮಾಡುವರು ಕವಿದರೆ ಸಿಡಿವರೆಡಬಲಕೆ
ಮುಂದೆ ಕಟ್ಟುವರಟ್ಟಿದರೆ ಮುರಿ
ವಿಂದ ಜಾರುವರಾ ಮಹಾರಥ
ವೃಂದ ಕಾದಿತು ಮದಕರಿಯ ಬೇಸರದೆ ಬಳಿಸಲಿಸಿ ೩೦

ಕರಿಯ ಕೋಲಾಹಲವನಾ ಜೋ
ದರ ಶರೌಘವ ಸೈರಿಸುತ ಮು
ಕ್ಕುರಿಕಿ ಧರ್ಮಜ ನಕುಲ ಸಾತ್ಯಕಿ ಭೀಮ ನಂದನರು
ಸರಳ ಸಾರವ ಕಟ್ಟಿದರು ಮಿಗೆ
ಕೆರಳಿದನು ಭಗದತ್ತನನಿಬರ
ಹರೆಗಡಿದು ಹೊಗರಂಬ ಸುರಿದನು ಸರಿದರತಿರಥರು ೩೧

ಹತ್ತು ಶರದಲಿ ಧರ್ಮಜನನಿ
ಪ್ಪತ್ತರಿಂದಭಿಮನ್ಯುವನು ತೊಂ
ಬತ್ತು ಶರದಲಿ ನಕುಲ ಸಾತ್ಯಕಿ ದ್ರುಪದ ಕೈಕೆಯರ
ಕೆತ್ತಿದನು ಹದಿನೆಂಟು ಬಾಣದ
ಲಿತ್ತ ಭೀಮನ ನಂದನನನೈ
ವತ್ತು ಶರದಲಿ ಸಕಲ ರಥಿಕರನೆಚ್ಚು ಬೊಬ್ಬಿರಿದ ೩೨

ಬಿನುಗುಗಳ ತೆಗೆ ಭೀಮಸೇನನ
ಮೊನೆಗೆ ಬಿಡು ಬಿಡು ಗಜವನೆಂದು
ಬ್ಬಿನಲಿ ತಿರುಹಿದನಾನೆಯನು ಪವನಜನ ಸಮ್ಮುಖಕೆ
ಧನುವ ಬಿಸುಟನು ಗದೆಯ ತುಡುಕಿದ
ನನುವರದೊಳಡ್ಡೈಸಿ ದಂತಿಯ
ಕನಲಿಸಿದನೊಳಹೊಕ್ಕು ಹೊಯ್ದನು ಸಿಂಹನಾದದಲಿ ೩೩

ಭುಜದ ಸಾಹಸ ಹತ್ತು ಸಾವಿರ
ಗಜದ ಘಾಡಿಕೆ ಸಿಂಹನಾದದ
ವಿಜಯ ವಿಗ್ರಹ ವೀರ ಹಳಚಿದನಮಮ ಮದಕರಿಯ
ತ್ರಿಜಗ ತಲೆಕೆಳಗಾಗೆ ದಿವಿಜ
ವ್ರಜ ಭಯಂಗೊಳೆ ಮಿಕ್ಕು ಸುರಪನ
ಗಜದ ಹೊಯ್ ಕೈಯಾನೆ ಹೆಣಗಿತು ಭೀಮಸೇನನಲಿ ೩೪

ಚಿಗಿದು ಹರಿಸುತ ಹಳಚಿದರೆ ಕುಲ
ದಿಗಿಭವೆದೆಯೊಡೆದವು ನಗಂಗಳ
ಬಿಗುಹು ಸಡಿಲಿತು ಧರಣಿ ನೆಗ್ಗಿತು ಚರಣ ಹತಿಗಳಲಿ
ಜಿಗಿವ ರಕುತದ ಗದೆಯ ಬಿರುವೊ
ಯ್ಲುಗಳೊಳಗೆ ಕಿಡಿ ಮಸಗಿ ಕಬ್ಬೊಗೆ
ನೆಗೆಯೆ ಹೊಯ್ದನು ಭೀಮ ಲಂಘಿಸಿ ಗಜದ ಮಸ್ತಕವ ೩೫

ಹೊಯ್ದು ಹಿಂಗದ ಮುನ್ನ ಭೀಮನ
ಕೈದುಡುಕಿದರೆ ಮುರಿದು ಹಿಂದಕೆ
ಹಾಯ್ದಡೊಡೆಮುರಿಯಿತ್ತು ಕುಸಿದರೆ ಕಾಲೊಳೊಡೆಯವುಚಿ
ಮೈದೆಗೆದರಿಟ್ಟಣಿಸಿ ಪೂತ್ಕೃತಿ
ಗೈದು ಸುಭಟನ ಸಿಂಹನಾದಕೆ
ಮುಯ್ದೆಗೆದು ಕರಿ ಕಾದುತಿರ್ದುದು ಭೀಮಸೇನನಲಿ ೩೬

ನೆಳಲುಗಂಡವ್ವಳಿಸುವುದು ಸುಂ
ಡಿಲನು ತೂಗಾಡುವುದು ಹೋರಿದು
ಬಳಲುವುದು ಮೊಗ ನೆಗಹಿ ಭೀಮನ ದನಿಯನಾಲಿಪುದು
ಅಳಿಯ ಮುತ್ತಿಗೆಗಳನು ಬೀಸದೆ
ನೆಲಕೆ ಕಿವಿಯನು ಜೋಲುಬಿಡುವುದು
ಬಲುಕಣಿಯ ಹಿಡಿಹಿಂಗೆ ಲಾಗಿಸುತಿರ್ದುದಾ ದಂತಿ ೩೭

ಭೀಮನಿನ್ನರೆಘಳಿಗೆಯಲಿ ನಿ
ರ್ನಾಮನೋ ತಡವಿಲ್ಲ ದಂತಿಯ
ತಾಮಸಿಕೆ ಘನ ತೆಗೆಯಿ ತಮ್ಮನನೆನುತ ಕಳವಳಿಸೆ
ಭೂಮಿಪತಿ ಕೈಕೊಂಡನೊಡನೆ ಸ
ನಾಮರೈದಿತು ನಕುಲ ಸಾತ್ಯಕಿ
ಭೀಮಸುತನಭಿಮನ್ಯು ದ್ರುಪದ ಶಿಖಂಡಿ ಕೈಕೆಯರು ೩೮

ಮತ್ತೆ ರಥವರುವತ್ತು ಸಾವಿರ
ಮುತ್ತಿಕೊಂಡುದು ಗಜವನಾ ಭಗ
ದತ್ತ ಬಳಲಿದನವಧಿಯಿಲ್ಲದೆ ಶರವ ನೆರೆ ತುಳುಕಿ
ಮೆತ್ತಿದವು ಶರವಿಭದ ಮೆಯ್ಯಲಿ
ಬೆತ್ತ ಬೆಳೆದದ್ರಿಯವೊಲಿದ್ದುದು
ಮತ್ತಗಜ ನೊಂದರಿಯದನಿಬರ ಬಾಣ ಹತಿಗಳಲಿ ೩೯

ಕರಿ ವಿನೋದದಿ ಕುಡಿದ ಜಲವನು
ಕರಣಿಯಲಿ ತೆಗೆತೆಗೆದು ರಿಪು ಮೋ
ಹರಕೆ ಚೆಲ್ಲಿತು ಕಲ್ಪಮೇಘದ ಬಸುರ ಬಗಿದಂತೆ
ಕರ ತುಷಾರದಲಿವರು ಮೋರೆಯ
ತಿರುಹೆ ನನೆದವು ಬಾಹುರಿಕೆ ಹ
ಕ್ಕರಿಕೆ ಹಲ್ಲಣ ಜೋಡು ಸೀಸಕ ಛತ್ರ ಚಮರಿಗಳು ೪೦

ಸಾಕು ಬಳಲಿದಿರಕಟಕಟ ನಿಮ
ಗೇಕೆ ಸಂಗರವಾನೆಯೊಡನೆ ಪಿ
ನಾಕಿ ಸಮರದೊಳಳುಕುವನು ಕರಿ ನಿಮ್ಮ ಪಾಡೇನು
ಆ ಕಿರೀಟಿಯ ಕರಸಿಕೊಳ್ಳಿ ವಿ
ವೇಕವುಳ್ಳರೆ ತೊಲಗಿಯೆನುತವೆ
ನೂಕಿದನು ಭಗದತ್ತನನಿಬರ ಮೇಲೆ ದಿಗ್ಗಜವ ೪೧

ಮಿಗೆ ತಿಮಿಂಗಿಲನೊಡನೆ ಹುಲು ಮೀ
ನುಗಳು ಮಾಡುವುದೇನು ಹೊರ ಕಾ
ಲುಗಳ ಹೋರಟೆ ಕಾಣಲಾದುದು ಪರರ ಥಟ್ಟಿನಲಿ
ತೆಗೆಯೆ ರಿಪುಬಲ ಕೊಲುತ ಬಂದುದು
ದಿಗಿಭವಿದರೊಡನೈದಿ ದ್ರೋಣಾ
ದಿಗಳು ಹೊಕ್ಕುದು ಧರ್ಮಪುತ್ರನ ಹಿಡಿವ ತವಕದಲಿ ೪೨

ತಿದ್ದಿತೋ ಕಲಿ ಪಾರ್ಥನಿದ್ದರೆ
ಹೊದ್ದ ಹೇಳೋ ರಾಯದಳವಡಿ
ಗದ್ದುದೋ ಬಿದ್ದುದು ಭಯಾಂಬುಧಿಯೊಳಗೆ ಭಟನಿಕರ
ಹದ್ದು ಕಾಗೆಯ ಮನೆಗೆ ಬಾಣಸ
ವಿದ್ದುದೋ ಗಜವೆನುತ ಬೊಬ್ಬಿಡು
ತಿದ್ದುದರಿ ಬಲವಿತ್ತ ಹರಿ ಕೇಳಿದನು ಕಳಕಳವ ೪೩

ಮರಳು ಫಲುಗುಣ ಸುಪ್ರತೀಕದ
ಖುರಪುಟವ ನೋಡಿತ್ತಲಗ್ಗದ
ಪರಶುರಾಮನ ಖಾತಿಗಂಬುಧಿ ನೆಲನ ಬಿಡುವಂತೆ
ತೆರಳುತಿದೆ ನಮ್ಮವರು ದಿಕ್ಕರಿ
ಹರಹಿ ಕೊಲುತಿದೆ ಮಾತಿಗಿಲ್ಲವ
ಸರವೆನುತ ಕರಿಯತ್ತ ತಿರುಹಿದನಸುರರಿಪು ರಥವ ೪೪

ಹೆದರದಿರು ನರ ಹೋಗದಿರು ಹೋ
ಗದಿರು ಕೊಡು ಕೊಡು ಕಾಳೆಗವನೆಂ
ದದಟರಟ್ಟಿತು ವೀರ ಸಮಸಪ್ತಕರು ಸೂಠಿಯಲಿ
ಇದಿರಲಿನಸುತ ಶಲ್ಯರಡಗ
ಟ್ಟಿದರು ಖತಿಯಲಿ ಪಾರ್ಥನನಿಬರ
ಸದೆದು ವಹಿಲದಲೈದಿದನು ದಿಕ್ಕರಿಯ ಸಮ್ಮುಖಕೆ ೪೫

ಬಲು ಬಿಸಿಲೊಳುರೆ ನೊಂದ ನೈದಿಲೆ
ಗಳಿಗೆ ಚಂದ್ರಿಕೆ ದೈತ್ಯರುರುಬೆಗೆ
ಸಿಲುಕಿದಮರರಿಗಸುರಹರನ ಕಟಾಕ್ಷವಿಕ್ಷೇಪ
ಬಲಿದ ತಾಪತ್ರಯದ ಭವಗೋ
ಟಲೆಯ ಜೀವಿಗೆ ಸುಪ್ರಬೋಧದ
ಸುಳುವಿನಂತಿರೆ ಪಾರ್ಥ ಮೈದೋರಿದನು ನಿಜಬಲಕೆ ೪೬

ಕೆದರಿತೀ ಬಲ ಬೆರಳ ತುಟಿಗಳೊ
ದರಿತಾ ಬಲ ತಾಪಶಿಖಿಯಲಿ
ಕುದಿದುದೀ ಬಲ ಭೀತಿಕಂಚುಕ ಕಳೆದುದಾ ಬಲಕೆ
ಕದಡಿತೀ ಬಲ ರೋಮಪುಳಕವ
ಹೊದೆದುದಾ ಬಲ ಹಿಂಡೊಡೆದು ನೆರೆ
ಕದುಬಿತೀ ಬಲ ನೆರೆದುದಾ ಬಲ ನರನ ರಥ ಸುಳಿಯೆ ೪೭

ಗಿರಿಯ ವಿಸಟಂಬರಿಯನಮರೇ
ಶ್ವರನು ತಡೆವವೊಲಳ್ಳಿರಿವ ದಿ
ಕ್ಕರಿಯನಡಗಟ್ಟಿದನು ಕಾಯದೊಳೊಟ್ಟಿದನು ಶರವ
ಕೆರಳಿದನು ಭಗದತ್ತನಿವನೇ
ನರನು ಫಡ ನಿಲ್ಲು ನಿಲ್ಲೆನು
ತುರು ಶರೌಘವ ಕರೆದು ಮುಸುಕಿದನರ್ಜುನನ ರಥವ ೪೮

ಪೂತುರೇ ಭಗದತ್ತ ಬಿಲು ವಿ
ದ್ಯಾತಿಶಯ ಕಿರಿದುಂಟಲಾ ಶರ
ಪಾತವಿನಿತಿಲ್ಲದಡೆ ಹೊಳ್ಳಿಸಬಹುದೆ ನೃಪ ಧನವ
ನೂತನ ದ್ವಿಪದಿಂದ ವೈರಿ
ವ್ರಾತವನು ಸೋಲಿಸಿದ ಗರ್ವದ
ರೀತಿಗಿದು ಠಾವಲ್ಲೆನುತ ತೆಗೆದೆಚ್ಚನಾ ಪಾರ್ಥ ೪೯

ನರನ ಶರಜಾಲವನು ಖಂಡಿಸಿ
ಸುರಿದನಂಬನು ಕೃಷ್ಣರಾಯನ
ಸಿರಿಯೊಡಲ ಸೋಂಕಿದವು ನೂಕಿದವಂಬು ಗರಿ ಸಹಿತ
ನರನ ಕುದುರೆಯ ಮೇಲೆ ಸಿಂಧದ
ಹರಿಯ ತನುವಿನ ಮೇಲೆ ತಳಿತವು
ಶರನಿಕರ ಬಿಡದೆಚ್ಚನಾ ಭಗದತ್ತನರ್ಜುನನ ೫೦

ಸೆಳೆದು ಬಾಣತ್ರಯದಲೆಚ್ಚನು
ಫಲುಗುಣನ ಮಕುಟವನು ಮುರಿದುದು
ಕೆಲಕೆ ಸಡಿಲುವ ಮಣಿಗಳಲಿ ವರಮೌಳಿಯೋಸರಿಸೆ
ಬಲಿದು ಸಸಿನವ ಮಾಡಿ ಖಾತಿಯ
ತಳೆದು ಕೂರಂಬಿನಲಿ ಹೂಳಿದ
ನಳವಿನಲಿ ರಿಪುಗಜವನಾ ಭಗದತ್ತನವಯವವ ೫೧

ಇಳುಹಿದನು ಬಲುಗುಳವ ಖಂಡಿಸಿ
ಕಳಚಿದನು ಮೊಗರಂಬವನು ಹೊ
ಮ್ಮಿಳಿಯ ಕುಣಿಕೆಯ ಮುರಿದು ತರಿದನು ಸುತ್ತ ರೆಂಚೆಗಳ
ಹಳವಿಗೆಯನಾ ಛತ್ರಚಮರಾ
ವಳಿಯ ಸೀಳಿದು ಬಿಸುಟನಾ ಗಜ
ತಿಲಕ ಮುಂಡಾಸನದಲಿರ್ದುದು ಭೂಪ ಕೇಳೆಂದ ೫೨

ಮತ್ತೆ ಖಾತಿಯೊಳಂಕುಶದಿನೊಡೆ
ಯೊತ್ತಿ ಬಿಟ್ಟನು ಗಜವನರ್ಜುನ
ನತ್ತಲಿಭ ತೂಳಿದಡೆ ತಿರುಹಿದನಸುರರಿಪು ರಥವ
ಇತ್ತ ಬಲದಲಿ ಬಲಕೆ ಮೊಗವಿಡ
ಲತ್ತಲೆಡದಲಿ ಮರಳಲಲ್ಲಿಂ
ದತ್ತ ತಿರುಗಿಸಿ ಬಳಲಿಸಿದನಸುರಾರಿ ದಿಗ್ಗಜವ ೫೩

ಸಾರಥಿಯ ಕೊಂದಲ್ಲದರ್ಜುನ
ತೀರುವವನಲ್ಲೆನುತ ದಳ್ಳುರಿ
ಧಾರೆಯಂಬೈದರಲಿ ದೇವನನೆಸಲು ಮಧ್ಯದಲಿ
ಹಾರಿಸಿದನಾ ಪಾರ್ಥನಿವನೆಡೆ
ಗೋರಿದನಲಾಯೆನುತ ಕೆಡೆಯೆನು
ತಾರಿ ಸುರಿದನು ನೂರು ಬಾಣವನರ್ಜುನನ ಮೇಲೆ ೫೪

ಅನಿತು ಶರವನು ಕಡಿದು ಭಗದ
ತ್ತನ ಧನುವನಿಕ್ಕಡಿಗಡಿಯೆ ಕಂ
ಗನೆ ಕನಲಿ ಗವಸಣಿಗೆಯಿಂದುಗಿದನು ನಿಜಾಯುಧವ
ದಿನಪ ಕೋಟಿಯ ರಶ್ಮಿಯನು ತುದಿ
ಮೊನೆಯೊಳುಗುಳುವ ಬಾಯಿ ಧಾರೆಯ
ತನಿಯುರಿಯ ತೆಕ್ಕೆಯಲಿ ಥಳಥಳಿಸುವ ಮಹಾಂಕುಶವ ೫೫

ತೈಲ ಲೇಪದ ನಯದ ಹೊಗರಿನ
ಜಾಳಿಗೆಯ ಗಹಗಹಿಕೆಗಳ ಹೂ
ಮಾಲೆಗಳ ಸಿಂಪಿಸಿದ ಗಂಧದ ಬಂಧದಕ್ಷತೆಯ
ಕೀಲಣೆಯ ಮಣಿವೆಳಗುಗುಳ ಹರಿ
ದಾಳಿಯಲಿ ಕಾಳೋರಗನ ಕುಡಿ
ನಾಲಿಗೆಯವೋಲೆಸೆದುದಂಕುಶ ಭಟನ ಮುಷ್ಟಿಯಲಿ ೫೬

ಕುಡಿ ಕಿರೀಟಿಯ ರಕುತವನು ಹಗೆ
ಕೆಡಲಿ ಕೌರವ ರಾಯನಾಳಲಿ
ಪೊಡವಿಯನು(ದು?) ಪರಿತೋಷವಾಗಲಿ ನೃಪನ ಮಿತ್ರರಿಗೆ
ತಡೆದು ಹಲಕಾಲದಲುಪಾಸಂ
ಬಡಿಸಿದೆನ್ನದು ದೋಷ ಖಾತಿಯ
ಹಿಡಿಯದಿರು ನೀನೆನುತ ತಿರುಹಿಟ್ಟನು ಮಹಾಂಕುಶವ ೫೭

ತೀರಿತಿನ್ನೇನಕಟ ಪಾಂಡವ
ವೀರರುಬ್ಬಟೆ ಹಾರಿತೇ ತ್ರಿಪು
ರಾರಿಯುರಿಗಣ್ಣಿಂದ ಸೋಲದ ಕೈದುಗೊಂಡನಲ
ಧಾರುಣಿಯನಿನ್ನುಣಲಿ ಧರ್ಮ ಕು
ಮಾರನಕಟಿನ್ನಾರು ಕಾವವ
ರಾರೆನುತ ತಲ್ಲಣಿಸುತಿರ್ದುದು ಪಾಂಡುಸುತ ಸೇನೆ ೫೮

ಹಾ ಯುಧಿಷ್ಠಿರ ರಾಯ ಶಿವ ಶಿವ
ವಾಯುಸುತ ಹಾ ಪಾರ್ಥ ಹಾ ಮಾ
ದ್ರೇಯರಿರ ಹಾಯೆನುತ ಹರೆದುದು ಸೇನೆ ದೆಸೆದೆಸೆಗೆ
ಬಾಯ ಬಿಟ್ಟುದು ದಿವಿಜಬಲ ನಿ
ರ್ದಾಯದಲಿ ನೆಲನಾಯಿತಲ ಕುರು
ರಾಯಗೆನುತಿರ್ದುದು ಜಗತ್ರಯವೊಂದು ನಿಮಿಷದಲಿ ೫೯

ಇದರ ಪಾಡೇನೇಸಪಾಯವ
ನೊದೆದು ಕಳೆಯರು ಕೃಷ್ಣಭಕ್ತರು
ಸದರವೇ ಉರಿಗೆಂಡವೊರಲೆಯ ಬಾಯ್ಗೆ ಭಾವಿಸಲು
ಹೊದರುಗಿಡಿಗಳ ಹೊಗೆಯ ಹೇರಾ
ಳದಲಿ ಬಹ ದಿವ್ಯಾಯುಧಕೆ ಚಾ
ಚಿದನು ವಕ್ಷಸ್ಥಳವನಸುರಾರಾತಿಯಡಹಾಯ್ದು ೬೦

ಮೆರೆದುದುರದಲಿ ಕೌಸ್ತುಭದ ಮಣಿ
ಮರಿಯನಿಳುಹಿದ ವೋಲು ಬೆಳಗಿನ
ತುರುಗಲಲಿ ತೂಗಾಡುತಿದ್ದುದು ಕೈದು ತೊಡವಾಗಿ
ಮುರಿದುದಗ್ಗದ ಭೀತಿ ಹರುಷದ
ಸೆರೆಗೆ ಬಿಡುಗಡೆಯಾಯ್ತು ಬಲು ಬೊ
ಬ್ಬಿರಿವುತಿರ್ದುದು ವೈರಿಕಟಕದೊಳರಸ ಕೇಳೆಂದ ೬೧

ಕೌತುಕವನಿದ ಕಂಡು ಫಲುಗುಣ
ಕಾತರಿಸಿ ನುಡಿದನು ಮುರಾಂತಕ
ಸೂತತನಕಲಸಿದನೆ ಕಾದಲಿ ಕೌರವನ ಕೂಡೆ
ಸೂತತನವೇ ಸಾಕು ತನಗೆನು
ತಾ ತತುಕ್ಷಣ ಧನುವ ಬಿಸುಟು ವಿ
ಧೂತ ರಿಪುಬಲ ಪಾರ್ಥನಿದ್ದನು ಹೊತ್ತ ದುಗುಡದಲಿ ೬೨

ತಿರುಗಿ ಕಂಡನು ಕೃಷ್ಣನೀತನ
ಪರಿಯನರಿದನು ಮನದಲಿವನು
ತ್ತರವ ಕೇಳುವೆವೆಂದು ಪಾರ್ಥನ ನುಡಿಸಿದನು ನಗುತ
ಉರವಣಿಸುತಿದೆ ಮತ್ತೆ ಕರಿ ನಿಜ
ಕರದೊಳಾಯುಧವಿಲ್ಲ ಘನ ಸಂ
ಗರಕೆ ಬೇಸರು ತೋರಿತೇ ತನ್ನಾಣೆ ಹೇಳೆಂದ ೬೩

ಕಾದುವಾತನು ನೀನು ವೈರಿಯ
ಕೈದುವನು ನೀ ಗೆಲಿದೆಯಿನ್ನುರೆ
ಕಾದುವವರಾವಲ್ಲ ಸಾರಥಿತನವೆ ಸಾಕೆಮಗೆ
ಕೈದುವಿದೆಕೊ ಕೃಷ್ಣ ನೀನೇ
ಕಾದು ವಾಘೆಯ ತಾಯೆನಲು ಮರು
ಳಾದನೈ ನರನೆನುತ ಮುರಾರಿಯಿಂತೆಂದ
(ಈ ಸಾಲು ಷಟ್ಪದಿಯ ಅಳತೆಗೆ ಕೂಡದು.
"ಳಾದನೈ ತಾ ನರನೆನುತ ಮುರ ವೈರಿಯಿಂತೆಂದ" ಇರಬೇಕು - ಸಂ) ೬೪

ಆಡಬಾರದು ತೋರಿ ನುಡಿದರೆ
ಖೋಡಿ ನಿನಗಹುದೆಲೆ ಮರುಳೆ ನೀ
ನೋಡಲೆವೆ ಸೀವವು ಕಣಾ ನಿನ್ನಳವಿನಾಯುಧವೆ
ಹೂಡಲಾಪುದು ಜಗವನಂತಕ
ಗೂಡಲಾಪುದು ಮುನಿದರಿದ ಕೈ
ಮಾಡುವರೆ ನಿಲಬಾರದಜ ರುದ್ರಾಮರೇಂದ್ರರಿಗೆ ೬೫

ವಿಲಸದುಪನಿಷದುರು ರಹಸ್ಯವ
ತಿಳುಹಿದೆನು ನಿನಗೊಮ್ಮೆ ಮತ್ತೆಯು
ತಿಳಿದುದಿಲ್ಲಾ ಕ್ಷತ್ರತಾಮಸ ಬಿಡದು ಬುದ್ಧಿಯಲಿ
ಸುಲಭವಂತರ್ನಿಷ್ಠರಿಗೆ ನಿ
ಷ್ಕಳ ನಿರೂಪನನಂತ ನಿಜ ನಿ
ರ್ಮಳವೆನಿಪ ಪರಮಾತ್ಮ ಚಿನುಮಯ ರೂಪ ತಾನೆಂದ ೬೬

ಸಂಗಿಯಲ್ಲದ ವಿಮಳ ಪರಮಾ
ತ್ಮಂಗೆ ಲೀಲೆಯೊಳಾಯ್ತು ಮಾಯಾ
ಸಂಗವದರಿಂದಾಯ್ತು ನಾಲಕು ಮೂರ್ತಿಗಳು ತನಗೆ
ಅಂಗಿಯಂಗ ವಿಭಾಗವಿಲ್ಲದ
ಭಂಗ ಸನ್ಮಾತ್ರಂಗೆ ಭಾವಿಸ
ಲಂಗ ಕಲ್ಪನೆ ಮಿಥ್ಯವಲ್ಲಾ ಪಾರ್ಥ ಹೇಳೆಂದ ೬೭

ಇಂದು ಕಮಳಭವ ಪ್ರಜೇಶ್ವರ
ರೊಂದು ಮೂರುತಿ ವಿಷ್ಣು ಮನುಗಳು
ಸಂದ ಪಾರ್ಥಿವ ಲೋಕಪಾಲಕರೊಂದು ಮೂರ್ತಿಯದು
ಇಂದು ಶೇಖರನಗ್ನಿ ಯಮನರ
ವಿಂದಸಖ ಕಾಲಾಗ್ನಿ ಮೂರ್ತಿಯ
ರೊಂದು ಮೂರುತಿ ವಿಶ್ವದೊಳು ನಿಷ್ಯೂತ ಚೈತನ್ಯ ೬೮

ಇದುವೆ ಮತ ಕೆಲಬರಿಗೆ ಕೆಲಬರಿ
ಗಿದು ಮತವು ವಿವಿಧಾವತಾರದ
ಲುದಿಸುತೊಂದಿಹುದೊಂದು ಮೂರ್ತಿ ತಪೋ ವಿನೋದದಲಿ
ಉದಧಿಯೊಳು ವರ ಯೋಗ ನಿದ್ರಾ
ಸ್ಪದದಲೊಂದಿಹುದೊಂದಖಿಳ ವಿ
ಶ್ವದ ಸುಕೃತ ದುಷ್ಕೃತವನೀಕ್ಷಿಸುತಿಹುದು ಕೇಳೆಂದ ೬೯

ಕೆಲರು ಧರ್ಮಾರ್ಥಾದಿ ನಾಲುಕು
ಲಲಿತ ಮೂರ್ತಿಗಳೆಂಬರಿದರೊಳು
ಕೆಲರು ಜಾಗರಣಾದ್ಯವಸ್ಥೆಗಳೆಂಬ ಮೂರ್ತಿಗಳು
ತಿಳಿಯಲೋತಪ್ರೋತದಲಿ ನಿ
ಷ್ಕಳವೆ ಸಕಳವೆಯಾಗಿ ವಿಶ್ವದೊ
ಳೊಳಗು ಹೊರಗಾನಲ್ಲದಿಲ್ಲೆಲೆ ಪಾರ್ಥ ಕೇಳೆಂದ ೭೦

ಉದಧಿಶಯನನ ಮೂರ್ತಿ ಕಲ್ಪಾಂ
ತದಲಿ ಕರಗಿದ ಧರೆಯನುದ್ದರಿ
ಸಿದೆನು ಯಜ್ಞವರಾಹ ರೂಪಿನಲಂದು ಕರುಣದಲಿ
ಪದವ ಭಜಿಸಿಯೆ ಭೂಮಿ ತಾ ಬೇ
ಡಿದಳು ಪುತ್ರನನಾಕೆಯಲಿ ಜನಿ
ಸಿದನು ನರಕಾಸುರನವಧ್ಯನು ಸಕಲ ದಿವಿಜರಿಗೆ ೭೧

ಇದು ವರಾಹನ ದಾಡೆಯಿದನಾ
ತ್ರಿದಿಶವೈರಿಗೆ ಕೊಟ್ಟೆನವನಿಂ
ದಿದುವೆ ಭಗದತ್ತಂಗೆ ಬಂದು(ದು?) ವೈಷ್ಣವಾಸ್ತ್ರವಿದು
ಇದು ಹರಬ್ರಹ್ಮಾದಿಗಳ ಗೆಲು
ವುದು ಕಣಾ ನಿಮಿಷದಲಿ ತನಗ
ಲ್ಲದೆ ಮಹಾಂಕುಶವುಳಿದ ಭಟರಿಗೆ ಮಣಿವುದಲ್ಲೆಂದ ೭೨

ತೀರಿತಾತನ ಶಕ್ತಿ ಚಾಪದ
ನಾರಿ ಬೆಸಲಾಗಲಿ ಮಹಾಸ್ತ್ರವ
ನಾರುಭಟೆಯಲಿ ಗಜವ ಮುರಿ ಕೆಡೆಯೆಸು ಮಹೀಸುತನ
ಹೋರದಿರು ಹೊಗು ಬವರಕೆನಲಸು
ರಾರಿಯಂಘ್ರಿಯೊಳೆರಗಿ ಕರುಣಾ
ವಾರಿಧಿಯೊಳಭಯವನು ಪಡೆದನು ತುಡುಕಿದನು ಧನುವ ೭೩

ಎಲವೆಲವೊ ಭಗದತ್ತ ಕಲಿತನ
ದಳವ ತೋರಿನ್ನೆನಗೆನುತ ಹೊಳೆ
ಹೊಳೆವ ಕೂರಂಬಿನಲಿ ಕೋದನು ಗಜದ ಮಸ್ತಕವ
ನಿಲುಕಿ ನೆತ್ತಿಯನೊಡೆದು ನಿಡು ಪ
ಚ್ಚಳಕೆ ಹಾಯ್ದವು ಬಾಣ ದಿಕ್ಕರಿ
ನೆಲಕೆ ದಾಡೆಯನೂರಿ ಕೆಡೆದುದು ಸುಪ್ರತೀಕಗಜ ೭೪

ಸುತ್ತಿದುರಗನ ಮಂದರಾಚಲ
ಕಿತ್ತು ಬೀಳ್ವಂದದಲಿ ಬರಿಕೈ
ಸುತ್ತಿ ಮಗ್ಗುಲನೂರಿ ಕೆಡೆದುದು ಸುಪ್ರತೀಕಗಜ
ಇತ್ತಲರ್ಜುನ ದೇವನುಗಿದನು
ಬತ್ತಳಿಕೆಯಲಿ ದಿವ್ಯ ಶರವನು
ತೆತ್ತಿಸಿದನವನುರವನಿಬ್ಬಗಿಯಾದುದರಿ ದೇಹ ೭೫

ಗಿರಿಯ ಶಿರದಲಿ ಹೂತ ಕಕ್ಕೆಯ
ಮರ ಮುರಿದು ಬೀಳ್ವಂತೆ ವಿಮಳಾ
ಭರಣ ಕಾಂತಿಯ ಕಡಲ ಕೋಮಲಕಾಯ ಭಗದತ್ತ
ಉರುಳಿದನು ಗಜದಿಂದ ಕುರುಬಲ
ಸರಿಯೆ ಸುರಕುಲ ಕುಸುಮ ವೃಷ್ಟಿಯ
ಸುರಿಯೆ ರಿಪುಸೇನೆಯಲಿ ಹರುಷದ ಹೊನಲು ಬಿರಿವರಿಯೆ ೭೬

ಹರಿದುದಗ್ಗದ ಸುಪ್ರತೀಕ
ದ್ವಿರದ ಭಗದತ್ತಾಂಕನವನಿಯೊ
ಳುರುಳಿದನು ದಳ ಮುರಿದುದಿನ್ನೇನೆನುತ ಬಲ ಬೆದರೆ
ನರನ ತಡೆದರು ಸುಬಲ ಸುತರಿ
ಬ್ಬರು ನೃಪಾಲ ಕುಮಾರರೈನೂ
ರುರುಬಿದರು ಗಾಂಧಾರ ರಾಜರು ಶಕುನಿಯೊಡಗೂಡಿ ೭೭

ಕೊಂದನಿಬ್ಬರ ಸೌಬಲರ ನೃಪ
ನಂದನರ ಗಾಂಧಾರರೊಂದೆರ
ಡೆಂದು ಸಲುಗೆಗೆ ಸಲಿಸಿ ಬಂದೈನೂರ ಬರಿಕೈದು
ಬಂದ ದ್ರೋಣನ ಹಳಚಿ ಭಂಗಕೆ
ತಂದನಹಿತ ವೃಜವನಿತ್ತಲು
ಸಂದಣಿಸಿದರು ಕೌರವರು ಪವಮಾನಸುತನೊಡನೆ ೭೮

ಗುರುತನುಜ ರವಿಸೂನು ಮಾದ್ರೇ
ಶ್ವರ ಜಯದ್ರಥ ಕೌರವಾದಿಗ
ಳರಿ ಗದಾಘಾತದಲಿ ಕೈ ಮೈ ದಣಿದು ಮನದಣಿದು
ತೆರಳಿದರು ಬಳಿಕಪರ ಜಲಧಿಯೊ
ಳುರಿವ ವಡಬನ ದೀಪ್ತಶಿಖರದೊ
ಳೆರಗುವಂತೆ ಪತಂಗ ಮಂಡಲವಿಳಿದುದಂಬರವ ೭೯

ತಿರುಗಿದರು ಕೌರವರು ದ್ರೋಣನ
ಬೆರಳ ಸನ್ನೆಗೆ ಸನ್ನೆಗಾಳೆಗ
ಳುರವಣಿಸಿತೆನೆ ತಂಬಟದ ನಿಸ್ಸಾಳ ರಭಸದಲಿ
ಮುರಿದರಿವರಳ್ಳಿರಿವ ಬೊಬ್ಬೆಯ
ಧರಧುರದ ಕಹಳೆಗಳ ಭೇರಿಯ
ಭರಿತ ರವದಲಿ ವೀರನಾರಾಯಣನ ಕರುಣದಲಿ ೮೦

(ಸಂಗ್ರಹ : ಸತ್ಯ,ಶೈಲ,ಮೋಹನ ಮತ್ತು ಪ್ರಿಯ - ಹಾಸನ)

ವಿರಾಟಪರ್ವ: ೦೫ ಐದನೆಯ ಸಂಧಿ

ಸೂ: ವೈರಿಭಟ ಸಂವರ್ತನೂತನ
ಭೈರವನು ಕಲಿಪಾರ್ಥ ಸಮರೋ
ದ್ಧಾರ ಸಾರಥಿಯಾದನಂದು ವಿರಾಟನಂದನಗೆ

ಕೇಳು ಜನಮೇಜಯ ಸುಯೋಧನ
ನಾಳು ಮುತ್ತಿತು ತುರುಗಳನು ಮೇ
ಲಾಳು ಕವಿದುದು ಭೀಷ್ಮ ಕರ್ಣ ದ್ರೋಣ ಮೊದಲಾಗಿ
ಕೋಲ ಸೂಟಿಯ ಸರಿವಳೆಗೆ ಗೋ
ಪಾಲ ಪಡೆ ಮುಗ್ಗಿದುದು ಗೋವರ
ಸಾಲ ಹೊಯ್ದರು ಕರ್ಣ ದುಶ್ಶಾಸನ ಜಯದ್ರಥರು ೧

ರಾಯ ಚೂಣಿಯ ಚಾತುರಂಗದ
ನಾಯಕರು ಮೇಳವಿಸಿ ಸಮರೋ
ಪಾಯದಲಿ ಹಿಂದಿಕ್ಕಿ ಕವಿದರು ಕೋಡಕೈಯವರು
ಸಾಯಲಲಸದ ಗೋವರನು ಕೈ
ಗಾಯದೆಸುತವ ಸೆರೆಯ ಕೊಂಡರು
ಮಾಯವಾಯಿತು ಹರಿಬಕಾರರ ಸೇನೆ ರಣದೊಳಗೆ ೨

ಮೇಲುದಳಕಿದಿರಾಗಿ ಬರೆ ಹರಿ
ಗಾಳಗದೊಳೊಡೆಮುರಿದು ಗೋವರು
ಧೂಳಿಗೋಟೆಯಗೊಂಡರಮರರ ರಾಜಧಾನಿಗಳ
ಸಾಲರಿದು ಕೆಟ್ಟೋಡಿದರು ಗೋ
ಪಾಲನೊಬ್ಬನ ಹಿಡಿದು ಮೂಗಿನ
ಮೇಲೆ ಸುಣ್ಣವ ಬರೆದು ಬಿಟ್ಟರು ಹಗೆಯ ಪಟ್ಟಣಕೆ ೩

ಗರುವ ಗೋವರು ಹುಯ್ಯಲಿಗೆ ಹರಿ
ಹರಿದು ಕೆಡೆದರು ರಾಯ ಮೋಹರ
ತೆರಳಿ ತುರುಗಳ ಹಿಡಿದು ಹಿಂದಿಕ್ಕಿದರು ಕಾಳಗಕೆ
ಬಿರುದರನು ಬರಹೇಳು ಹೋಗೆನೆ
ಕರದ ಬಿಲ್ಲನು ಬಿಸುಟು ಬದುಕಿದ
ಶಿರವ ತಡವುತ ಗೋವನೊಬ್ಬನು ಪುರಕೆ ಹರಿತಂದ ೪

ಗಣನೆಯಿಲ್ಲದು ಮತ್ತೆ ಮೇಲಂ
ಕಣದ ಭಾರಣಿ ನೂಕಿತೆಲವೋ
ರಣದ ವಾರ್ತೆಯದೇನೆನುತ ಜನವೆಲ್ಲ ಗಜಬಜಿಸೆ
ರಣವು ಕಿರಿದಲ್ಲೆನುತ ಢಗೆ ಸಂ
ದಣಿಸಲವನೈತಂದು ಮೇಳದ
ಗಣಿಕೆಯರ ಮಧ್ಯದಲಿ ಮೆರೆದಿರೆ ಕಂಡನುತ್ತರನ ೫

ಬೆಗಡು ಮುಸುಕಿದ ಮುಖದ ಭೀತಿಯ
ಢಗೆಯ ಹೊಯ್ಲಿನ ಹೃದಯ ತುದಿ ನಾ
ಲಗೆಯ ತೊದಳಿನ ನುಡಿಯ ಬೆರಗಿನ ಬರತ ತಾಳಿಗೆಯ
ಅಗಿವ ಹುಯ್ಯಲುಗಾರ ಬಹಳೋ
ಲಗಕೆ ಬಂದನು ನೃಪ ವಿರಾಟನ
ಮಗನ ಕಾಲಿಂಗೆರಗಿದನು ದೂರಿದನು ಕಳಕಳವ ೬

ಏಳು ಮನ್ನೆಯ ಗಂಡನಾಗು ನೃ
ಪಾಲ ಕೌರವ ರಾಯ ತುರುಗಳ
ಕೋಳ ಹಿಡಿದನು ಸೇನೆ ಬಂದುದು ಧರಣಿಯಗಲದಲಿ
ದಾಳಿ ಬರುತಿದೆ ಕರೆಸಿಕೋ ನಿ
ನ್ನಾಳು ಕುದುರೆಯ ರಾಣಿವಾಸದ
ಗೂಳೆಯವ ತೆಗೆಸೆಂದು ನುಡಿದನು ಬಿನ್ನಹದ ಬಿರುಬ ೭

ಏನೆಲವೊ ತುದಿ ಮೂಗಿನಲಿ ಬಿಳು
ಪೇನು ಢಗೆ ಹೊಯ್ದೇಕೆ ಬಂದೆಯಿ
ದೇನು ನಿನ್ನಿನ ರಣವನಯ್ಯನು ಗೆಲಿದುದೇನಾಯ್ತು
ಏನು ಭಯ ಬೇಡಿನ್ನು ಕಲಹನಿ
ಧಾನ ವಾರ್ತೆಯದೇನೆನಲು ಕುರು
ಸೇನೆ ಬಂದುದು ತುರುವ ಹಿಡಿದರು ಬಡಗ ದಿಕ್ಕಿನಲಿ ೮

ರಾಯ ತಾನೈತಂದನಾತನ
ನಾಯಕರು ಗುರುಸುತನು ಗುರು ಗಾಂ
ಗೇಯ ಶಕುನಿ ವಿಕರ್ಣ ಕರ್ಣ ಜಯದ್ರಥಾದಿಗಳು
ಜೀಯ ಬಿನ್ನಹ ದಳದ ತೆರಳಿಕೆ
ತಾಯಿಮಳಲಂಬುಧಿಗೆ ಮೋಹರ
ದಾಯತವ ನಾನೆತ್ತು ಬಲ್ಲೆನು ಹೊಕ್ಕು ಹೊಗಳುವರೆ ೯

ಎತ್ತ ದುವ್ವಾಳಿಸುವಡಾಲಿಗ
ಳತ್ತಲಾನೆಯ ಥಟ್ಟು ಕಾಲಾ
ಳೊತ್ತರದ ರಥವಾಜಿ (ಪಾ: ರಣವಾಜಿ) ರೂಢಿಯ ರಾಯ ರಾವುತರು
ಸುತ್ತ ಬಳಸಿಹುದೆತ್ತ ಮನ ಹರಿ
ವತ್ತ ಮೋಹರವಲ್ಲದನ್ಯವ
ಮತ್ತೆ ಕಾಣೆನು ಜೀಯ ಹದನಿದು ವೈರಿ ವಾಹಿನಿಯ ೧೦

ಒಡ್ಡಿದರೊ ಪಡಿನೆಲನನವನಿಯ
ದಡ್ಡಿಯೋ ಮೇಣೆನಲು ಝಲ್ಲರಿ
ಯೊಡ್ಡು ತಳಿತುದು ಚಮರ ಸೀಗುರಿಗಳ ಪತಾಕೆಯಲಿ
ಅಡ್ಡ ಹಾಯ್ದಿನ ಕಿರಣ ಪವನನ
ಖಡ್ಡತನ ನಗೆಯಾಯ್ತು ಕೌರವ
ನೊಡ್ಡನಭಿವರ್ಣಿಸುವಡರಿಯೆನು ಜೀಯ ಕೇಳೆಂದ ೧೧

ಒಳಗೆ ನೀ ಕಾದುವೊಡೆ ದುರ್ಗವ
ಬಲಿಸು ಬವರಕೆ ಹಿಂದುಗಳೆಯದೆ
ನಿಲುವ ಮನ ನಿನಗೀಗಲುಂಟೇ ನಡೆಯಬೇಕೆನಲು
ಕೆಲಬಲನ ನೋಡಿದನು ಮೀಸೆಯ
ನಲುಗಿದನು ತನ್ನಿದಿರ ಮೇಳದ
ಲಲನೆಯರ ಮೊಗ ನೋಡತುತ್ತರ ಬಿರುದ ಕೆದರಿದನು ೧೨

ನೂಕು ಕುನ್ನಿಯನಾಹವದ ಭೀ
ತಾಕುಳನು ತಾನೀಗ ಹೆಂಡಿರ
ಸಾಕಿ ಬದುಕುವ ಲೌಲ್ಯತೆಯಲೊಟ್ಟೈಸಿ ಬಂದೆನೆಗೆ
ಕಾಕ ಬಳಸುವನಿವನು ತಾನು
ದ್ರೇಕಿಸಿಯೆ ಸಮರದಲಿ ನಿಲಲು ಪಿ
ನಾಕಧರನಿಗೆ ನೂಕದೆಂದನು ಸತಿಯರಿದಿರಿನಲಿ ೧೩

ಎನಿತು ಬಲ ಘನವಾದೊಡೇನದು
ನಿನಗೆ ಗಹನವೆ ಜೀಯ ಜಗದಲಿ
ದಿನಪನಿದಿರಲಿ ದಿಟ್ಟತನವೇ ತಮದ ಗಾವಳಿಗೆ
ಬಿನುಗು ರಾಯರ ಬಿಂಕ ಗೋವರ
ಮೊನೆಗೆ ಮೆರೆದೊಡೆ ಸಾಕು ನಿಂದಿರು
ಜನಪ ತೋರಿಸು ಕೈಗುಣವ ಕೌರವನ ಥಟ್ಟಿನಲಿ ೧೪

ಎಂದಡುಬ್ಬರಿಸಿದನು ತಾ ಕಲಿ
ಯೆಂದು ಬಗೆದನು ಮೀಸೆಯನು ಬೆರ
ಳಿಂದ ತಿರುಹುತ ಮುಗುಳುನಗೆ ಹರುಷದಲಿ ಮೈಮರೆದ
ಸಂದಣಿಸಿ ರೋಮಾಂಚ ಕೆಲಬಲ
ದಿಂದುಮುಖಿಯರ ನೋಡಿದನು ನಲ
ವಿಂದ ನುಡಿದನು ತನ್ನ ಪೌರುಷತನದ ಪರಿಣತೆಯ ೧೫

ಅಹುದಹುದು ತಪ್ಪೇನು ಜೂಜಿನ
ಕುಹಕದಲಿ ಪಾಂಡವರ ಸೋಲಿಸಿ
ಮಹಿಯ ಕೊಂಡಂತೆನ್ನ ಕೆಣಕಿದನೇ ಸುಯೋಧನನು
ಸಹಸದಿಂದವೆ ತುರುವ ಮರಳಿಚಿ
ತಹೆನು ಬಳಿಕಾ ಕೌರವನ ನಿ
ರ್ವಹಿಸಲೀವೆನೆ ಸೂರೆಗೊಂಬೆನು ಹಸ್ತಿನಾಪುರವ ೧೬

ಹಿಡಿದು ರಾಜ್ಯವ ಕೊಂಡು ಹೆಂಗುಸ
ಬಡಿದು ಪಾಂಡವ ರಾಯರನು ಹೊರ
ವಡಿಸಿ ಕೊಬ್ಬಿದ ಭುಜಬಲವನೆನ್ನೊಡನೆ ತೋರಿದನೆ
ಬಡ ಯುಧಿಷ್ಠಿರನೆಂದು ಬಗೆದನೆ
ಕಡುಗಿದೊಡೆ ಕೌರವನ ಕೀರ್ತಿಯ
ತೊಡೆವೆನರಿಯನಲಾಯೆನುತ ಸುಕುಮಾರ ಖತಿಗೊಂಡ ೧೭

ತನಗೆ ಬಡ ಪಾಂಡವರ ತೆವರಿದ
ಮನದ ಗರ್ವದ ಕೊಬ್ಬು ಕಾಲನ
ಮನೆಯನಾಳ್ವಿಪುದಲ್ಲದಿದ್ದೊಡೆ ತನ್ನ ವೈರವನು
ನೆನೆದು ದುರ್ಯೋಧನನು ತಾ ಮೇ
ದಿನಿಯನಾಳ್ವನೆ ಹಾ ಮಹಾ ದೇ
ವೆನತಲುತ್ತರ ಬಿರುದ ನುಡಿದನು ಹೆಂಗಳಿದಿರಿನಲಿ ೧೮

ಜವನ ಮೀಸೆಯ ಮುರಿದನೋ ಭೈ
ರವನ ದಾಡೆಯನಲುಗಿದನೊ ಮೃ
ತ್ಯುವಿನ ಮೇಲುದ ಸೆಳೆದನೋ ಕೇಸರಿಯ ಕೆಣಕಿದನೊ
ಬವರವನು ತೊಡಗಿದನಲಾ ಕೌ
ರವನಕಟ ಮರುಳಾದನೆಂದಾ
ಯುವತಿಯರ ಮೊಗ ನೋಡುತುತ್ತರ ಬಿರುದ ಕೆದರಿದನು ೧೯

ಆರೊಡನೆ ಕಾದುವೆನು ಕೆಲಬರು
ಹಾರುವರು ಕೆಲರಂತಕನ ನೆರೆ
ಯೂರವರು ಕೆಲರಧಮ ಕುಲದಲಿ ಸಂದು ಬಂದವರು
ವೀರರೆಂಬವರಿವರು ಮೇಲಿ
ನ್ನಾರ ಹೆಸರುಂಟವರೊಳೆಂದು ಕು
ಮಾರ ನೆಣಗೊಬ್ಬಿನಲಿ ನುಡಿದನು ಹೆಂಗಳಿದುರಿನಲಿ ೨೦

ಪೊಡವಿಪತಿಗಳು ಬಂದು ತುರುಗಳ
ಹಿಡಿವರೇ ಲೋಕದಲಿ ಅಧಮರ
ಬಡಮನದ ಮನ್ನೆಯರ ಮೈಸಿರಿ ಕೌರವನೊಳಾಯ್ತು
ಕಡೆಗೆ ದುರಿಯತವುಳಿವುದಲ್ಲದೆ
ಬಿಡುವೆನೇ ಗೋಧನವನೆನ್ನೊಳು
ತೊಡಕಿ ಬದಕುವನಾವನೆಂದನು ಖಂಡೆಯವ ಜಡಿದು ೨೧

ಖಳನ ಮುರಿವೆನು ಹಸ್ತಿನಾಪುರ
ದೊಳಗೆ ಠಾಣಾಂತರವನಿಕ್ಕುವೆ
ತೊಲಗಿಸುವೆ ಕೌರವನ ಸೇನೆಯ ಧೂಳಿಪಟ ಮಾಡಿ
ಗೆಲವ ತಹೆನೆಂದುತ್ತರನು ಕೋ
ಮಲೆಯರಿದಿರಲಿ ಬಾಯ್ಗೆ ಬಂದುದ
ಗಳಹುತಿದ್ದನು ಬೇಕು ಬೇಡೆಂಬವರ ನಾ ಕಾಣೆ ೨೨

ಅರಿಯನೇ ಗಾಂಗೇಯನನು ತಾ
ನರಿಯದವನೇ ದ್ರೋಣ ಕುಲದಲಿ
ಕೊರತೆಯೆನಿಸುವ ಕರ್ಣನೆಂಬವನೆನಗೆ ಸಮಬಲನೆ
ಬರಿಯ ಬಯಲಾಡಂಬರದಿ ಬರಿ
ತುರುವ ಹಿಡಿದೊಡೆ ತನ್ನ ಹೆಂಡಿರ
ಸೆರೆಯ ತಾರದೆ ಮಾಣೆನೆಂದನು ನಾರಿಯರ ಮುಂದೆ ೨೩

ನುಡಿದು ಫಲವೇನಿನ್ನು ಸಾರಥಿ
ಮಡಿದ ನಿನ್ನಿನ ಬವರದಲಿ ತಾ
ನುಡುಹನಾದೆನು ಶಿವ ಶಿವಾಯಿಂದೆನ್ನ ಕೈ ಮನಕೆ
ಗಡಣಿಸುವ ಸಾರಥಿಯನೊಬ್ಬನ
ಪಡೆದನಾದೊಡೆ ಕೌರವೇಂದ್ರನ
ಪಡೆಗೆ ಹಬ್ಬವ ಮಾಡುವೆನು ತೋರುವೆನು ಕೈಗುಣವ ೨೪

ಸಾರಥಿಯ ಶಿವ ಕೊಟ್ಟನಾದೊಡೆ
ಮಾರಿಗುಬ್ಬಸವಾಗದಂತಕ
ನೂರು ತುಂಬದೆ ದೊಳ್ಳು ನೂಕದೆ ರಣಪಿಶಾಚರಿಗೆ
ದೋರೆಗರುಳಲಿ ದಾನವಿಯರೊಡ
ಲೇರು ಹತ್ತದೆ ಹಬ್ಬವಾಗದೆ
ಭೂರಿ ಬೇತಾಳರಿಗೆ ಹೋಹುದೆ ಬರಿದೆ ರಣವೆಂದ ೨೫

ಕೇಳಿದನು ಕಲಿಪಾರ್ಥನೀತನ
ಬಾಲ ಭಾಷೆಗಳೆಲ್ಲವನು ಪಾಂ
ಚಾಲೆಗೆಕ್ಕಟಿ ನುಡಿದ ನಾವಿನ್ನಿಹುದು ಮತವಲ್ಲ
ಕಾಲ ಸವೆದುದು ನಮ್ಮ ರಾಜ್ಯದ
ಮೇಲೆ ನಿಲುಕಲು ಬೇಕು ಕೌರವ
ರಾಳು ನಮಗೋಸುಗವೆ ಬಂದುದು ಕಾಂತೆ ಕೇಳೆಂದ ೨೬

ನರನ ಸಾರಥಿಯೆಂದು ನೀನು
ತ್ತರೆಗೆ ಸೂಚಿಸಿ ತನ್ನನೀಗಳೆ
ಕರೆಸೆನಲು ಕೈಕೊಂಡು ದುರುಪದಿ ಬಂದಳೊಲವಿನಲಿ
ತರುಣಿ ಕೇಳರ್ಜುನನ ಸಾರಥಿ
ವರ ಬೃಹನ್ನಳೆ ಖಾಂಡವಾಗ್ನಿಯ
ಹೊರೆದನಿವ ತಾನೆಂದು ಸತಿಯುತ್ತರೆಗೆ ಹೇಳಿದಳು ೨೭

ಕೇಳಿ ಹರುಷಿತೆಯಾದಳುತ್ತರೆ
ಯೋಲಗಕೆ ಬಂದಣ್ಣನಂಘ್ರಿಗೆ
ಲೋಲಲೋಚನೆಯೆರಗಿ ಕೈಮುಗಿದೆಂದಳೀ ಹದನ
ಕೇಳಿದೆನು ಸಾರಥಿಯ ನೆಲೆಯನು
ಕಾಳಗಕೆ ನಡೆಯಣ್ಣ ದೇವ ನೃ
ಪಾಲಕರ ಜಯಿಸೆಂದಡುತ್ತರ ನಗುತ ಬೆಸಗೊಂಡ ೨೮

ತಂಗಿ ಹೇಳೌ ತಾಯೆ ನಿನಗೀ
ಸಂಗತಿಯನಾರೆಂದರಾವವ
ನಂಗವಣೆಯುಳ್ಳವನೆ ಸಾರಥಿತನದ ಕೈಮೆಯಲಿ
ಮಂಗಳವಲೇ ಬಳಿಕ ರಣದೊಳ
ಭಂಗನಹೆ ನಿನ್ನಾಣೆ ತನ್ನಯ
ತುಂಗ ವಿಕ್ರಮತನವನುಳುಹಿದೆ ಹೇಳು ಹೇಳೆಂದ ೨೯

ಎಂದಳೀ ಸೈರೇಂಧ್ರಿ ಸುರಪನ
ನಂದನವ ಸುಡುವಂದು ಪಾರ್ಥನ
ಮುಂದೆ ಸಾರಥಿಯಾದ ಗಡ ನಾವರಿಯೆವೀ ಹದನ
ಹಿಂದುಗಳೆಯದೆ ಕರೆಸು ನಮ್ಮ ಬೃ
ಹನ್ನಳೆಯನೆನೆ ನಗುತ ಲೇಸಾ
ಯ್ತೆಂದು ಪರಮೋತ್ಸಾಹದಲಿ ಸೈರೇಂಧ್ರಿಗಿಂತೆಂದ ೩೦

ಸಾರಥಿಯ ಕೊಟ್ಟೆನ್ನನುಳುಹಿದೆ
ವಾರಿಜಾನನೆ ಲೇಸು ಮಾಡಿದೆ
ಕೌರವನ ತನಿಗರುಳ ಬಗೆವೆನು ತಡವ ಮಾಡಿಸದೆ
ನಾರಿ ನೀನೇ ಹೋಗಿ ಪಾರ್ಥನ
ಸಾರಥಿಯ ತಾಯೆನಲು ನಮ್ಮನು
ವೀರ ಬಗೆಯನು ನಿಮ್ಮ ತಂಗಿಯ ಕಳುಹಿ ಕರೆಸುವದು ೩೧

ತಾಯೆ ನೀನೇ ಹೋಗಿ ಸೂತನ
ತಾಯೆನಲು ಕೈಕೊಂಡು ಕಮಲದ
ಳಾಯತಾಕ್ಷಿ ಮನೋಭವನ ಮರಿಯಾನೆಯಂದದಲಿ
ರಾಯಕುವರಿ ನವಾಯಿ ಗತಿ ಗರು
ವಾಯಿಯಲಿ ಬರೆ ವಿಟರ ಕರಣದ
ಲಾಯ ತೊಡಕಿತು ತೆಗೆದಳಂಗನೆ ಜನರ ಕಣ್ಮನವ ೩೨

ಐದು ಶರವೇಕೊಂದು ಬಾಣವಿ
ದೈದದೇಯಿನ್ನಮಮ ಕಾಮನ
ಕೈದುಗಾರತನಕ್ಕೆ ಕೋಡದೆ ಕೊಂಕದಿಹರಾರು
ಒಯ್ದುಕೊಳ್ಳನೆ ಮುನಿಮನವನಡ
ಹಾಯ್ದು ಹಿಡಿಯನೆ ಹಿರಿಯರನು ವಿಧಿ
ಕೊಯ್ದನಕಟಾ ಕೊರಳನೆಂದುದು ನಗುತ ವಿಟನಿಕರ ೩೩

ಅರಳುಗಂಗಳ ಬೆಳಗು ಹೊಯ್ದ
ಬ್ಬರಿಸೆ ಚಿತ್ತದ ತಿಮಿರ ಹೆಚ್ಚಿತು
ಕುರುಳ ಕಾಳಿಕೆಯಿಂದ ಮುಖ ಬಿಳುಪೇರಿ ವಿಟಜನದ
ಸರಸತರ ಲಾವಣ್ಯ ರಸದಿಂ
ದುರಿ ಮಸಗೆ ಜನ ಹೃದಯದಲಿ ಮೈ
ಪರಿಮಳದ ಪಸರದಲಿ ಪದ್ಮಿನಿ ಬಂದಳೊಲವಿನಲಿ ೩೪

ನಡೆ ನಡೆಯ ಬಂಧಿಸಿತು ನೋಟವ
ನುಡುಗಿಸಿತು ಕುಡಿನೋಟ ಸಖಿಯರ
ನುಡಿ ಸಮೇಳದ ಮಾತು ಮನುಜರ ಮಾತ ಮಾಣಿಸಿತು
ಕೆಡಿಸಿತಧರದ ರಾಗ ರಾಗವ
ಬಡತನವ ಹೆಚ್ಚಿಸಿತು ನಡುವಿನ
ಬಡತನವು ವಿಟಜನಕೆನಲು ನಡೆತಂದಳಿಂದುಮುಖಿ ೩೫

ಕುರುಳ ತಿದ್ದುತ ಮೊಲೆಗೆ ಮೇಲುದ
ಸರಿವುತೇಕಾವಳಿಯ ಮೆಲ್ಲನೆ
ತಿರುಪಿ ಹಾಯ್ಕುತ ಬಿಡುಮುಡಿಯನೆಡಗೈಯೊಳೊಂದಿಸುತ
ವರ ನಿಖಾರಿಯ ನಿರಿಯ ರಭಸದ
ಚರಣದಂದುಗೆ ದನಿಯ ಗಮನದ
ಭರದಿ ಕಿರುಬೆಮರಿಡುತ ನಡೆತರುತಿರ್ದಳಿಂದುಮುಖಿ ೩೬

ಬರವ ಕಂಡನು ಪಾರ್ಥನೇನು
ತ್ತರೆ ಕುಮಾರಿ ಕಠೋರ ಗತಿಯಲಿ
ಬರವು ಭಾರಿಯ ಕಾರಿಯವ ಸೂಚಿಸುವುದೆನೆ ನಗುತ
ಬರವು ಬೇರಿಲ್ಲೆನ್ನ ಮಾತನು
ಹುರುಳುಗೆಡಿಸದೆ ಸಲಿಸುವೊಡೆ ನಿಮ
ಗರುಹಿದಪೆನೆನೆ ಮೀರಬಲ್ಲೆನೆ ಮಗಳೆ ಹೇಳೆಂದ ೩೭

ಪುರಕೆ ಹಾಯ್ದರು ಹಸ್ತಿನಾಪುರ
ದರಸುಗಳು ಹೊಲನೊಳಗೆ ಶತ ಸಾ
ವಿರದ ತುರುಗಳ ಹಿಡಿದರಳಿದುದು ಗೋಪ ಪಡೆ ಕಾದಿ
ಮರಳಿಚುವೊಡೆಮ್ಮಣ್ಣ ದೇವನ
ಧುರಕೆ ಸಾರಥಿಯಿಲ್ಲ ನೀವಾ
ನರನ ಸಾರಥಿಯೆಂದು ಕೇಳಿದೆವೆಂದಳಿಂದುಮುಖಿ ೩೮

ಇನ್ನು ನೀವೇ ಬಲ್ಲಿರೆನೆ ನಡೆ
ನಿನ್ನ ಮಾತನು ಮೀರಬಲ್ಲೆನೆ
ಮುನ್ನ ಸಾರಥಿಯಹೆನು ನೋಡುವೆನೆನುತ ವಹಿಲದಲಿ
ಬೆನ್ನಲಬಲೆಯನೈದಲಾ ಸಂ
ಪನ್ನ ಬಲನೋಲಗಕೆ ಬರೆ ಹರು
ಷೋನ್ನತಿಯಲುತ್ತರ ಕುಮಾರನು ಕರೆದು ಮನ್ನಿಸಿದ ೩೯

ಎಲೆ ಬೃಹನ್ನಳೆ ತೆತ್ತುದೆನಗ
ಗ್ಗಳೆಯರೊಳು ವಿಗ್ರಹವು ಸಾರಥಿ
ಯಳಿದನೆನ್ನವ ನೀನು ಸಾರಥಿಯಾಗಿ ಸಮರದಲಿ
ಉಳುಹ ಬೇಹುದು ನೀ ಸಮರ್ಥನು
ಫಲುಗುಣನ ಸಾರಥಿಯಲೈ ನೀ
ನೊಲಿದು ಮೆಚ್ಚಲು ಕಾದಿ ತೋರುವೆನಹಿತ ಸೇನೆಯಲಿ ೪೦

ಭರತ ವಿದ್ಯಾ ವಿಷಯದಲಿ ಪರಿ
ಚರಿಯತನ ನಮಗಲ್ಲದೀ ಸಂ
ಗರದ ಸಾರಥಿತನವ ಮರೆದೆವು ಹಲವು ಕಾಲದಲಿ
ಅರಿಭಟರು ಭೀಷ್ಮಾದಿಗಳು ನಿಲ
ಲರಿದು ಸಾರಥಿತನದ ಕೈ ಮನ
ಬರಡರಿಗೆ ದೊರಕೊಂಬುದೇ ರಣ ಸೂರೆಯಲ್ಲೆಂದ ೪೧

ಆನಿರಲು ಭೀಷ್ಮಾದಿಗಳು ನಿನ
ಗೇನು ಮಾಡಲು ಬಲ್ಲರಳುಕದೆ
ನೀನು ನಿಲು ಸಾಕೊಂದು ನಿಮಿಷಕೆ ಗೆಲುವೆನವರುಗಳ
ತಾನದಾರೆಂದರಿಯಲಾ ಗುರು
ಸೂನು ಕರ್ಣ ದ್ರೋಣರೆಂಬವ
ರಾನರಿಯದವರಲ್ಲ ಸಾರಥಿಯಾಗು ಸಾಕೆಂದ ೪೨

ವೀರನಹೆ ಬಳಿಕೇನು ರಾಜ ಕು
ಮಾರನಿರಿವೊಡೆ ಹರೆಯವಲ್ಲಾ
ಸಾರಥಿತ್ವವ ಮಾಡಿ ನೋಡುವೆ ರಥವ ತರಿಸೆನಲು
ವಾರುವದ ಮಂದಿರದಲಾಯಿದು
ಚಾರು ತುರಗಾವಳಿಯ ಬಿಗಿದನು
ತೇರ ಸಂವರಿಸಿದನು ರಥವೇರಿದನು ಕಲಿಪಾರ್ಥ ೪೩

ಮಂಗಳಾರತಿಯೆತ್ತಿದರು ನಿಖಿ
ಳಾಂಗನೆಯರುತ್ತರಗೆ ನಿಜ ಸ
ರ್ವಾಂಗ ಶೃಂಗಾರದಲಿ ಹೊಳೆವುತ ಬಂದು ರಥವೇರಿ
ಹೊಂಗೆಲಸಮಯ ಕವಚವನು ಪಾ
ರ್ಥಂಗೆ ಕೊಟ್ಟನು ಜೋಡು ಸೀಸಕ
ದಂಗಿಗಳನಳವಡಿಸಿ ರಾಜಕುಮಾರನನುವಾದ ೪೪

ನರನು ತಲೆ ಕೆಳಗಾಗಿ ಕವಚವ
ಸರಿವುತಿರೆ ಘೊಳ್ಳೆಂದು ಕೈ ಹೊ
ಯ್ದರಸಿಯರು ನಗೆ ನಾಚಿದಂತಿರೆ ಪಾರ್ಥ ತಲೆವಾಗಿ
ತಿರುಗಿ ಮೇಲ್ಮುಖವಾಗಿ ತೊಡಲು
ತ್ತರೆ ಬಳಿಕ ನಸುನಗಲು ಸಾರಥಿ
ಯರಿಯ ತಪ್ಪೇನೆನುತಲುತ್ತರ ತಾನೆ ತೊಡಿಸಿದನು ೪೫

ಕವಚವನು ತೊಡಲರಿಯದವನಾ
ಹವಕೆ ಸಾರಥಿತನವ ಮಾಡುವ
ಹವಣು ತಾನೆಂತೆನುತಲಿದ್ದರು ನಿಖಿಳ ನಾರಿಯರು
ಬವರವನು ನಮ್ಮಣ್ಣ ಗೆಲಿದಪ
ನವರ ಮಣಿ ಪರಿಧಾನವಾಭರ
ಣವನು ಸಾರಥಿ ಕೊಂಡು ಬಾಯೆಂದಳು ಸರೋಜಮುಖಿ ೪೬

ನಸುನಗುತ ಕೈಕೊಂಡನರ್ಜುನ
ನೆಸಗಿದನು ರಥವನು ಸಮೀರನ
ಮಿಸುಕಲೀಯದೆ ಮುಂದೆ ಮಿಕ್ಕವು ವಿಗಡ ವಾಜಿಗಳು
ಹೊಸ ಪರಿಯ ಸಾರಥಿಯಲಾ ನಮ
ಗಸದಳವು ಸಂಗಾತ ಬರಲೆಂ
ದುಸುರದುಳಿದುದು ಹಿಂದೆ ಪುರದಲಿ ಚಾತುರಂಗ ಬಲ ೪೭

ಗತಿಗೆ ಕುಣಿದವು ನಾಸಿಕದ ಹುಂ
ಕೃತಿಯ ಪವನನ ಹಳಿವ ಲುಳಿಯಲಿ
ಗತಿಯ ಸಂಚಿತ ಪಂಚಧಾರಾ ಪ್ರೌಢ ವಾಜಿಗಳು
ವಿತತ ರಥ ಪದದಳಿತ ವಸುಧೋ
ತ್ಪತಿತ ಧೂಳೀಪಟಲ ಪರಿ ಚುಂ
ಬಿತ ದಿಶಾಮುಖನೈದಿದನು ಕುರುರಾಯ ಮೋಹರವ ೪೮

(ಸಂಗ್ರಹ: ಸುನಾಥ ಮತ್ತು ಜ್ಯೋತಿ ಮಹದೇವ್)

ಅರಣ್ಯಪರ್ವ: ೦೪. ನಾಲ್ಕನೆಯ ಸಂಧಿ

ಸೂ. ಭಜಿಸಿದನು ನರನಿಂದ್ರಕೀಲದೊ
ಳಜ ಸುರಾರ್ಚಿತ ಚರಣ ಕಮಲನ
ತ್ರಿಜಗದಧಿಪತಿಯನು ಮಹಾನಟರಾಯ ಧೂರ್ಜಟಿಯ

ಕೇಳು ಜನಮೇಜಯ ಧರಿತ್ರೀ
ಪಾಲ ಪಾಂಡು ಕುಮಾರರಟವಿಯ
ಪಾಳಿಯಲಿ ಪರುಠವಿಸಿದರು ಪದಯುಗ ಪರಿಭ್ರಮವ
ಲೋಲಲೋಚನೆ ಸಹಿತ ತತ್ಕುಲ
ಶೈಲದಲಿ ತದ್ವಿಪಿನದಲಿ ತ
ತ್ಕೂಲಪತಿಗಳ ತೀರದಲಿ ತೊಳಲಿದರು ಬೇಸರದೆ ೧

ಫಳ ಮೃಗಾವಳಿ ಸವೆದುದಿನ್ನೀ
ಹಳುವು ಸಾಕಿನ್ನೊಂದರಣ್ಯ
ಸ್ಥಳವ ನೋಡಲಿ ಕಟಕ ನಡೆಯಲಿ ವಿಪ್ರಸಂಕುಲದ
ಸುಲಭವೀ ವನವೆಂದು ತಮ್ಮೊಳು
ತಿಳಿದು ಪಾರ್ಥ ಯುಧಿಷ್ಠಿರರು ಮುನಿ
ಕುಲ ಸಹಿತ ನಲವಿಂದ ಹೊಕ್ಕರು ದ್ವೈತಕಾನನವ ೨

ಅರಸ ಕಳುಹಿದ ದೂತನಾ ಗಜ
ಪುರವ ಹೊಕ್ಕು ತದೀಯ ವಾರ್ತಾ
ಭರದ ವಿವರವನರಿದು ಬಂದನು ಕಂಡನವನಿಪನ
ಕುರುನೃಪಾಲನ ಮದವನಾತನ
ಸಿರಿಯನಾತನ ಬಲುಹನಾತನ
ಪರಿಯನರುಹಿದನಬುಜಮುಖಿ ಪವನಜರು ಕಳವಳಿಸೆ ೩

ಮೂದಲಿಸಿದಳು ದ್ರುಪದ ತನುಜೆ ವೃ
ಕೋದರನನರ್ಜುನನವನಿಪ
ನಾದಿಯಾದೈವರನು ಕೌರವನೃಪನ ಪತಿಕರಿಸಿ
ಆದೊಡಿದೆ ಕುರುರಾಜ ವಂಶ
ಚ್ಛೇದ ಧೀರ ಕುಠಾರವೆನುತ ವೃ
ಕೋದರನು ತೂಗಿದನು ಗದೆಯನು ಗಾಢಕೋಪದಲಿ ೪

ಏಕಿದೇಕೆ ವೃಥಾ ನಿಶಾಟ
ವ್ಯಾಕರಣ ಪಾಂಡಿತ್ಯವಕಟ ವಿ
ವೇಕ ರಹಿತನೆ ನೀ ವೃಕೋದರ ದ್ರುಪದ ಸುತೆಯಂತೆ
ಸಾಕು ಸಾಕೈ ತಮ್ಮ ಸತ್ಯವೆ
ಸಾಕು ನಮಗೆ ಮದೀಯ ಪುಣ್ಯ
ಶ್ಲೋಕತೆಯನುಳುಹೆಂದು ಗಲ್ಲವ ಹಿಡಿದನನಿಲಜನ ೫

ಅರಸಿ ನಿನ್ನಯ ಶೋಕವಹ್ನಿಯೊ
ಳುರಿವುದರಿನೃಪಜಲಧಿ ಕೇಳಂ
ಬುರುಹಲೋಚನೆ ನಿನ್ನ ಲೋಚನವಾರಿ ಪೂರದಲಿ
ಕುರುನೃಪಾಲನ ಸತಿಯ ಶೋಕ
ಸ್ಫುರದನಲನುಜ್ವಲಿಸುವುದು ರಿಪು
ವಿರಚಿತದ ವಿಪರೀತಕಿದು ವಿಪರೀತವಹುದೆಂದ ೬

ಆ ಸಮಯದಲಿ ಬಂದನಗ್ಗದ
ಭೂಸುರ ಶ್ರೀಕಂಠನೋ ಪ
ದ್ಮಾಸನನ ಪಲ್ಲಟವೊ ಕಮಲಾಂಬಕನ ಚುಂಬಕವೊ
ಭಾಸುರ ಕ್ರತುಶತದ ರೂಪ ವಿ
ಳಾಸವೊ ಶ್ರುತಿಕೋಟಿ ಕನ್ಯಾ
ವಾಸಭವನವೊ ದೇವ ವೇದವ್ಯಾಸ ಮುನಿರಾಯ ೭

ಹಾ ಮಹಾ ದೇವಾಯಿದಾರು ಮ
ಹಾ ಮುನೀಶ್ವರರೆನುತ ಮುನಿಪ
ಸ್ತೋಮವೆದ್ದುದು ಧರ್ಮನಂದನನವರಿಗಿದಿರಾಗಿ
ಪ್ರೇಮ ಪುಳಕದ ನಯನ ಸಲಿಲದ
ರೋಮಹರ್ಷದ ಸತ್ಯಭಾವದ
ಭೂಮಿಪತಿ ಮೈಯಿಕ್ಕಿದನು ಮುನಿವರನ ಚರಣದಲಿ ೮

ವಿವಿಧ ಮುನಿಗಳ ಗೋತ್ರನಾಮ
ಪ್ರವರ ಸಹಿತಭಿವಾದ ಕರ್ಮೋ
ತ್ಸವವ ಕೈಕೊಳುತನಿಬರನು ಮನ್ನಿಸಿದನುಚಿತದಲಿ
ಯುವತಿ ಪದಕೆರಗಿದೊಡೆ "ಭೂಯಾತ್
ತವ ಮನೋರಥ" ವೆನುತ ನಸುನಗು
ತವನಿಪಾಲನ ಪರ್ಣಶಾಲೆಗೆ ಮುನಿಪನೈತಂದ ೯

ಇದೆ ಪವಿತ್ರ ಪಲಾಶ ಪತ್ರದ
ಲುದಕವರ್ಘ್ಯಾಚಮನ ಪಾದ್ಯ
ಕ್ಕಿದೆ ವಿಮಳ ದರ್ಭೋಪರಚಿತಾಸನ ವಿಳಾಸದಲಿ
ಇದನು ಕಾಂಚನ ಪಾತ್ರಜಲವೆಂ
ದಿದು ವರಾಸನವೆಂದು ಕೈಕೊಂ
ಬುದು ಯಥಾ ಸಂಭವದಲೆಂದನು ಧರ್ಮನಂದನನು ೧೦

ಈ ಪವಿತ್ರೋದಕವಲೇ ದೋ
ಷಾಪಹರ ದರ್ಭಾಸನದಲಿಂ
ದೀ ಪೃಥಿವಿ ಸರ್ವಾಧಿಪತ್ಯವು ಸೇರುವುದು ನಿನಗೆ
ಭೂಪಕೇಳೈ ಜೇನುನೊಣದ ಮ
ಧೂಪಚಯವವಕಿಲ್ಲಲೇ ಸ
ರ್ವಾಪಹಾರವು ಪರರಿಗಾ ಕೌರವನ ಸಿರಿಯೆಂದ ೧೧

ಒಡಲು ಬೀಳಲಿ ಮೇಣು ತಮ್ಮದಿ
ರಡವಿಯಲಿ ಹಾಯಿಕ್ಕಿ ಹೋಗಲಿ
ಮಡದಿ ಮುನಿಯಲಿ ಬಸಿದು ಬೀಳಲಿ ಧರಣಿ ಕುರುಪತಿಗೆ
ಎಡೆಯಲುಳಿವಿವರಾಗು ಹೋಗಿನ
ಗೊಡವೆಯೆನಗಿಲ್ಲೆನ್ನ ಸತ್ಯದ
ನುಡಿಗೆ ಹಾದರವಿಲ್ಲದಂತಿರೆ ಕರುಣಿಸುವುದೆಂದ ೧೨

ಬಾಧೆಯುಂಟೇ ನಿನ್ನ ಸತ್ಯಕೆ
ಸಾಧಿಸುವುದವಧಿಯನು ನಿನ್ನ ವಿ
ರೋಧಿಗಳಿಗೆ ನಿವಾಸವಹುದು ಕೃತಾಂತಲೋಕದಲಿ
ಆಧಿಪತ್ಯ ಭ್ರಮಿತರಲಿ ರಾ
ಜ್ಯಾದಿಯಲಿ ಕಡೆಗೊಂಡಿರಖಿಲ ನಿ
ರೋಧವನು ಕಡನನು ಸವೃದ್ಧಿಕವಾಗಿ ಕೊಡಿಯೆಂದ ೧೩

ಆವುದರಿದಿವರಿಗೆ ಭವತ್ಕರು
ಣಾವಲೋಕನವುಂಟು ಪುನರಪಿ
ದೇವಕೀ ನಂದನನಲೊದಗುವ ಮೇಲು ನೋಟದಲಿ
ಈ ವಿಪತ್ತೇಸರದು ಪಾಂಡವ
ಜೀವಿಗಳು ನೀವಿಬ್ಬರಿರಲೆಂ
ದಾ ವಿಭಾಂಡಕ ಶೌನಕಾದಿಗಳೆಂದರಾ ಮುನಿಗೆ ೧೪

ಕರೆಸಿ ದ್ರುಪದಾತ್ಮಜೆಯ ಕಂಬನಿ
ಯೊರತೆಯಾರಲು ನುಡಿದನಾಕೆಯ
ಕರಣದಲಿ ಕಿವಿಗೊಂಡ ಕಳಕಳವನು ವಿಭಾಡಿಸಿದ
ಧರಣಿಪತಿಗೇಕಾಂತ ಭವನದೊ
ಳೊರೆದನೀಶ್ವರ ವಿಷಯ ಮಂತ್ರಾ
ಕ್ಷರವನಂಗೋಪಾಂಗ ಮುದ್ರಾಶಕ್ತಿಗಳು ಸಹಿತ ೧೫

ಇದು ಮಹೀಶರ ಶೋಕಹರವಿಂ
ತಿದು ವಿರೋಧಿಬಲ ಪ್ರಭಂಜನ
ವಿದು ಸಕಲ ಪುರುಷಾರ್ಥ ಸಾಧನವಖಿಳ ದುರಿತಹರ
ಇದು ಮಹಾಧಿವ್ಯಾಧಿಹರವಿಂ
ತಿದನು ನೀ ಕೊಳ್ಳರ್ಜುನಂಗೊರೆ
ವುದು ರಹಸ್ಯದೊಳೆಂದು ಮುನಿ ಕರುಣಿಸಿದನರಸಂಗೆ ೧೬

ಪಾರ್ಥ(ಪಾ: ಪ್ರಾರ್ಥ)ನೈದುವುದಿಂದ್ರ ಕೀಲದೊ
ಳರ್ಥಿಸಲಿ ಶಂಕರನನಖಿಳ
ಸ್ವಾರ್ಥ ಸಿದ್ಧಿಗೆ ಬೀಜವಿದು ಬೇರೊಂದು ಬಯಸದಿರು
ವ್ಯರ್ಥರವದಿರು ನಿನ್ನ ಹಗೆಯ ಕ
ದರ್ಥನದೊಳಿನ್ನೇನು ಜಗಕೆ ಸ
ಮರ್ಥನೊಬ್ಬನೆ ಶಂಭು ಕೃಪೆ ಮಾಡುವನು ನಿನಗೆಂದ ೧೭

ಇಂದುಮುಖಿಯನು ಭೀಮನನು ಯಮ
ನಂದನನರ್ಜುನನ ಯಮಳರ
ನಂದು ಕೊಂಡಾಡಿದನು ಮೈದಡವಿದನು ಮೋಹದಲಿ
ಬಂದು ಸಂದಣಿಸಿದ ಮುನಿ ದ್ವಿಜ
ವೃಂದವನು ಮನ್ನಿಸಿ ನಿಜಾಶ್ರಮ
ಮಂದಿರಕೆ ಮುದದಿಂದ ಬಿಜಯಂಗೈದನಾ ಮುನಿಪ ೧೮

ಅರಸ ಕೇಳೈ ಮುನಿಪನತ್ತಲು
ಸರಿದನಿತ್ತಲು ಪಾರ್ಥನನು ನೃಪ
ಕರೆದು ವೇದವ್ಯಾಸನಿತ್ತುಪದೇಶ ವಿಸ್ತರವ
ಅರುಹಿದನು ಕೈಲಾಸ ಸೀಮಾ
ವರುಷದಲ್ಲಿಹುದಿಂದ್ರ ಕೀಲದ
ಗಿರಿ ಮಹೇಶ ಕ್ಷೇತ್ರವಲ್ಲಿಗೆ ಹೋಗು ನೀನೆಂದ ೧೯

ಅಲ್ಲಿ ಭಜಿಸುವದಮಳ ಗಿರಿಜಾ
ವಲ್ಲಭನನಾಮ್ನಾಯ ಜಿಹ್ವೆಗೆ
ದುರ್ಲಭನನಧಿ ದೈವವನು ಬ್ರಹ್ಮೇಂದ್ರ ಭಾಸ್ಕರರ
ಬಲ್ಲೆನೆಂಬರ ಬಹಳ ಗರ್ವವ
ಘಲ್ಲಿಸುವ ಗಡ ತನ್ನ ಭಕ್ತರು
ಬಲ್ಲಿದರು ತನಗೆಂಬ ಬೋಳೆಯರರಸನಿಹನೆಂದ ೨೦

ಏಳು ನೀ ಪ್ರತ್ಯೂಷದಲಿ ಶಶಿ
ಮೌಳಿ ಮೈದೋರಲಿ ತದೀಯ ಶ
ರಾಳಿಗಳು ಸಿದ್ಧಿಸಲಿ ಸೇರಲಿ ಶಿವನ ಕೃಪೆ ನಿನಗೆ
ಸೋಲದಿರು ಸುರಸತಿಯರಿಗೆ ಸ
ಮ್ಮೇಳವಾಗದಿರವರೊಡನೆ ಕೈ
ಮೇಳವಿಸುವುದು ಕಾಮವೈರಿಯ ಚರಣಕಮಲದಲಿ ೨೧

ಮುಗ್ಗದಿರು ಮಾಯೆಯಲಿ ಮದದಲಿ
ನೆಗ್ಗದಿರು ರೋಷದ ವಿಡಂಬದ
ಲಗ್ಗಳೆಯತನದಿಂದಹಂಕೃತಿ ಭರದಿ ಮೆರೆಯದಿರು
ಅಗ್ಗಿಸದಿರಾತ್ಮನನು ಲೋಭದೊ
ಳೊಗ್ಗದಿರು ಲಘುವಾಗದಿರು ಮಿಗೆ
ಹಿಗ್ಗದಿರು ಹೊಗಳಿಕೆಗೆ ಮನದಲಿ ಪಾರ್ಥ ಕೇಳೆಂದ ೨೨

ಆಡದಿರಸತ್ಯವನು ಕಪಟವ
ಮಾಡದಿರು ನಾಸ್ತಿಕರೊಡನೆ ಮಾ
ತಾಡದಿರು ಕೆಳೆಗೊಳ್ಳದಿರು ವಿಶ್ವಾಸಘಾತಕರ
ಖೋಡಿಗಳೆಯದಿರಾರುವನು ಮೈ
ಗೂಡದಿರು ಪರವಧುವಿನಲಿ ರಣ
ಖೇಡನಾಗದಿರೆಂದು ನುಡಿದನು ನೃಪತಿಯರ್ಜುನಗೆ ೨೩

ಕ್ರೂರರಿಗೆ ಶಠರಿಗೆ ವೃಥಾಹಂ
ಕಾರಿಗಳಿಗತಿ ಕುಟಿಲರಿಗೆಯುಪ
ಕಾರಿಯಪಘಾತರಿಗೆ ಭೂತದ್ರೋಹಿ ಜೀವರಿಗೆ
ಜಾರರಿಗೆ ಜಡರಿಗೆ ನಿಕೃಷ್ಟಾ
ಚಾರರಿಗೆ ಪಿಸುಣರಿಗೆ ಧರ್ಮವಿ
ದೂರರಿಗೆ ಕಲಿಪಾರ್ಥ ಕೇಳ್ ಪರಲೋಕವಿಲ್ಲೆಂದ ೨೪

ಭ್ರಾತೃ ಮಿತ್ರ ವಿರೋಧಿಕಗೆ ಪಿತೃ
ಮಾತೃಘಾತಿಗೆ (ಪಾ: ಮಾತೃವಿಘಾತಿಗೆ) ಖಳನಿಗುತ್ತಮ
ಜಾತಿನಾಶಕನಿಂಗೆ (ಪಾ: ಜಾತಿನಾಶಕಂಗೆ) ವರ್ಣಾಶ್ರಮ ವಿದೂಷಕಗೆ
ಜಾತಿಸಂಕರಕಾರಗಾ ಕ್ರೋ
ಧಾತಿರೇಕಗೆ ಗಾಢ ಗರ್ವಿಗೆ
ಭೂತವೈರಿಗೆ ಪಾರ್ಥ ಕೇಳ್ ಪರಲೋಕವಿಲ್ಲೆಂದ ೨೫

ಸ್ವಾಮಿಕಾರ್ಯ ವಿಘಾತಕಂಗತಿ
ಕಾಮುಕಗೆ ಮಿಥ್ಯಾಪವಾದಿಗೆ
ಭೂಮಿದೇವ ದ್ವೇಷಿಗತ್ಯಾಶಿಗೆ ಬಕವ್ರತಿಗೆ
ಗ್ರಾಮಣಿಗೆ ಪಾಷಂಡಗಾತ್ಮ ವಿ
ರಾಮಕಾರಿಗೆ ಕೂಟಸಾಕ್ಷಿಗೆ
ನಾಮಧಾರಿಗೆ ಪಾರ್ಥ ಕೇಳ್ ಪರಲೋಕವಿಲ್ಲೆಂದ ೨೬

ಅದರಿನಾವಂಗುಪಹತಿಯ ಮಾ
ಡದಿರು ಸಚರಾಚರದ ಚೈತ
ನ್ಯದಲಿ ನಿನ್ನನೆ ಬೆರಸಿ ಕಾಬುದು ನಿನ್ನ ತನುವೆಂದು
ಬೆದರದಿರು ಬಲುತಪಕೆ ಶೂಲಿಯ
ಪದಯುಗವ ಮರೆಯದಿರು ಹರಿಯನು
ಹೃದಯದಲಿ ಪಲ್ಲಟಿಸದಿರು ಸುಖಿಯಾಗು ಹೋಗೆಂದ ೨೭

ಕರುಣಿಸಲಿ ಕಾಮಾರಿ ಕೃಪೆಯಿಂ
ವರ ಮಹಾಸ್ತ್ರವನಿಂದ್ರ ಯಮ ಭಾ
ಸ್ಕರ ಹುತಾಶನ ನಿರುತಿ ವರುಣ ಕುಬೇರ ಮಾರುತರು
ಸುರರು ವಸುಗಳು ಸಿದ್ಧ ವಿದ್ಯಾ
ಧರ ಮಹೋರಗ ಯಕ್ಷ ಮನು ಕಿಂ
ಪುರುಷರೀಯಲಿ ನಿನಗೆ ವಿಮಳ ಸ್ವಸ್ತಿವಾಚನವ ೨೮

ಎನೆ ಹಸಾದವೆನುತ್ತೆ ಯಮ ನಂ
ದನಗೆ ಭೀಮಂಗೆರಗಿದನು ಮುನಿ
ಜನಕೆ ಮೈಯಿಕ್ಕಿದನು ಮುಳುಗಿದನಕ್ಷತೌಘದಲಿ
ವನಜಮುಖಿ ಮುನಿ ವಧುಗಳಾಶೀ
ರ್ವಿನುತ ದಧಿ ದೂರ್ವಾಕ್ಷತೆಯನು
ಬ್ಬಿನಲಿ ಕೈಕೊಳುತನಿಬರನು ಮನ್ನಿಸಿದನುಚಿತದಲಿ ೨೯

ನೆನೆಯದಿರು ತನುಸುಖವ ಮನದಲಿ
ನೆನೆ ವಿರೋಧಿಯ ಸಿರಿಯನೆನ್ನಯ
ಘನತರದ ಪರಿಭವವ ನೆನೆ ನಿಮ್ಮಗ್ರಜರ ನುಡಿಯ
ಮುನಿವರನ ಮಂತ್ರೋಪದೇಶವ
ನೆನೆವುದಭವನ ಚರಣ ಕಮಲವ
ನೆನುತ ದುರುಪದಿಯೆರಗಿದಳು ಪಾರ್ಥನ ಪದಾಬ್ಜದಲಿ ೩೦

ಹರನ ಚರಣವ ಭಜಿಸುವೆನು ದು
ರ್ಧರ ತಪೋನಿಷ್ಠೆಯಲಿ ಕೇಳೆಲೆ
ತರುಣಿ ಪಾಶುಪತಾಸ್ತ್ರವಾದಿಯ ದಿವ್ಯಮಾರ್ಗಣವ
ಪುರಹರನ ಕೃಪೆಯಿಂದ ಪಡೆದಾ
ನರಿಗಳನು ಸಂಹರಿಸಿ ನಿನ್ನಯ
ಪರಿಭವಾಗ್ನಿಯ ನಂದಿಸುವೆ ನಿಲ್ಲೆಂದನಾ ಪಾರ್ಥ ೩೧

ಬಿಗಿದ ಬತ್ತಳಿಕೆಯನು ಹೊನ್ನಾ
ಯುಗದ ಖಡುಗ ಕಠಾರಿ ಚಾಪವ
ತಗೆದನಳವಡೆಗಟ್ಟಿ ಬದ್ದುಗೆದಾರ ಗೊಂಡೆಯವ
ದುಗುಡ ಹರುಷದ ಮುಗಿಲ ತಲೆಯೊ
ತ್ತುಗಳಿಗಿಟ್ಟೆಡೆಯಾಗಿ ಗುಣ ಮೌ
ಳಿಗಳ ಮಣಿ ಕಲಿಪಾರ್ಥ ಬೀಳ್ಕೊಂಡನು ನಿಜಾಗ್ರಜನ ೩೨

ಹರಡೆ ವಾಮದೊಳುಲಿಯೆ ಮಧುರ
ಸ್ವರದಲಪಸವ್ಯದಲಿ ಹಸುಬನ
ಸರ ಸಮಾಹಿತಮಾಗೆ ಸೂರ್ಯೋದಯದ ಸಮಯದಲಿ
ಹರಿಣ ಭಾರದ್ವಾಜನುಡಿಕೆಯ
ಸರಟ ನಕುಲನ ತಿದ್ದುಗಳ ಕು
ಕ್ಕುರನ ತಾಳಿನ ಶಕುನವನು ಕೈಕೊಳುತ ನಡೆತಂದ ೩೩

ನೀಲಕಂಠನ ಮನದ ಬಯಕೆಗೆ
ನೀಲಕಂಠನೆ ಬಲಕೆ ಬಂದುದು
ಮೇಲುಪೋಗಿನ ಸಿದ್ಧಿ ದೈತ್ಯಾಂತಕನ ಬುದ್ಧಿಯಲಿ
ಕಾಲಗತಿಯಲಿ ಮೇಲೆ ಪರರಿಗೆ
ಕಾಲಗತಿಯನು ಕಾಬೆನೈಸಲೆ
ಶೂಲಧರನೇ ಬಲ್ಲನೆನುತೈತಂದನಾ ಪಾರ್ಥ ೩೪

ಅರಸ ಕೇಳೈ ಬರುತ ಭಾರತ
ವರುಷವನು ದಾಂಟಿದನು ತಂಪಿನ
ಗಿರಿಯ ತಪ್ಪಲನಿಳಿದಿನಾ ಹರಿವರುಷ ಸೀಮೆಯಲಿ
ಬೆರಸಿದನು ಬಳಿಕುತ್ತರೋತ್ತರ
ಸರಣಿಯಲಿ ಸೈನಡೆದು ಹೊಕ್ಕನು
ಸುರರ ಸೇವ್ಯವನಿಂದ್ರಕೀಲ ಮಹಾ ವನಾಂತರವ ೩೫

ಗಿಳಿಯ ಮೃದು ಮಾತುಗಳ ಮರಿಗೋ
ಗಿಲೆಯ ಮಧುರ ಧ್ವನಿಯ ಹಂಸೆಯ
ಕಳರವದ ಮರಿ ನವಿಲ ಕೇಕಾ ರವದ ನಯಸರದ
ಮೆಲುದನಿಯ ಪಾರಿವದ ತುಂಬಿಯ
ಲಲಿತ ಗೀತದ ವನ ವನದ ಸಿರಿ ಬಗೆ
ಗೊಳಿಸಿತೈ ಪೂರ್ವಾಭಿಭಾಷಣದಲಿ ಧನಂಜಯನ ೩೬

ಸೊಂಪೆಸೆವ ಕೋಗಿಲೆಯ ಸರ ದೆಸೆ
ತಂಪೆಸೆವ ತಂಬೆಲರ ಹುವ್ವಿನ
ಜೊಂಪವನು ಜೊಂಪಿಸುವ ಮರಿದುಂಬಿಗಳ ಮೇಳವದ
ಪೆಂಪೊಗುವ ತಾವರೆಗೊಳಂಗಳ
ತಂಪಿನೊದವಿನ ವನದ ಸೊಗಸಿನ
ಸೊಂಪು ಸೆಳೆದುದು ಮನವನೀತನನರಸ ಕೇಳೆಂದ ೩೭

ಚಾರುತರ ಪರಿಪಕ್ವ ನವ ಖ
ರ್ಜೂರ ರಸಧಾರಾ ಪ್ರವಾಹ ಮ
ನೋರಮೇಕ್ಷು ವಿಭೇದ ವಿದ್ರುಮರಸದ ದಾಳಿಂಬ
ಭೂರಿ ಜಂಬ ಮಧೂಕ ಪನಸ
ಸ್ಫಾರ ರಸಪೂರಾನುಕಲಿತ ವಿ
ಹಾರ ಸುರಮಹಿಳಾಭಿರಂಜಿಸುವಖಿಳ ವನಭೂಮಿ ೩೮

ವಿಲಸದಭ್ರದಲಿಹ ಮಹಾ ತರು
ಕುಲದಿನಮರನದೀಸ್ತನಂಧಯ
ಫಲರಸದ ಸವಿಗಳಲಿ ದಿಕ್ಕೂಲಂಕಷೋನ್ನತಿಯ
ಸುಳಿವ ಪರಿಮಳ ಪವನನಿಂ ಕಂ
ಗೊಳಿಸಿತರ್ಜುನ ಕಾಮ್ಯ ಸಿದ್ಧಿ
ಸ್ಥಳದೊಳಂತರ್ಮಿಥುನ ಕಾನನವರಸ ಕೇಳೆಂದ ೩೯

ಇಲ್ಲಿ ನಿಲ್ಲರ್ಜುನ ತಪೋವನ
ಕಿಲ್ಲಿ ನೆಲೆ ಶ್ರುತಿಯುವತಿ ಸೂಸುವ
ಚೆಲ್ಲೆಗಂಗಳ ಮೊನೆಗೆ ಮೀಸಲುಗುಡದ ಮೈಸಿರಿಯ
ದುರ್ಲಲಿತದಷ್ಟಾಂಗ ಯೋಗದ
ಕೊಲ್ಲಣಿಗೆಯಲಿ ಕೂಡದಪ್ರತಿ
ಮಲ್ಲ ಶಿವನ ಕ್ಷೇತ್ರವಿದೆಯೆಂದುದು ನಭೋನಿನದ ೪೦

ಧರಣಿಪನ ಬೀಳ್ಕೊಂಡು ಮಾರ್ಗಾಂ
ತರದೊಳಾರಡಿಗೈದು ಹೊಕ್ಕನು
ಹರನ ಕರುಣಾ ಸಿದ್ಧಿ ಸಾಧನವೆನಿಪ ಗಿರಿವನವ
ಮರುದಿವಸದುದಯದಲಿ ಮಿಂದನು
ಸರಸಿಯಲಿ ಸಂದ್ಯಾಭಿಮುಖದಲಿ
ತರಣಿಗರ್ಘ್ಯವನಿತ್ತು ದೇವವ್ರಜಕೆ ಕೈಮುಗಿದ ೪೧

ವಿನುತ ಶಾಂಭವ ಮಂತ್ರಜಪ ಸಂ
ಜನಿತ ನಿರ್ಮಲ ಭಾವಶುದ್ಧಿಯ
ಮನದೊಳರ್ಜುನನೆತ್ತಿ ನಿಂದನು ದೀರ್ಘ ಬಾಹುಗಳ
ನೆನಹು ನೆಮ್ಮಿತು ಶಿವನನಿತರದ
ನನೆಕೊನೆಯ ತೆರಳಿಕೆಯ ತೊಡಚೆಯ
ಮನದ ಸಂಚಲವೀಚುವೋದುದು ಕಲಿ ಧನಂಜಯನ ೪೨

ಮುಗುಳುಗಂಗಳ ಮೇಲು ಗುಡಿದೋ
ಳುಗಳ ಮಿಡುಕುವ ತುಟಿಯ ತುದಿಗಾ
ಲುಗಳ ಹೊರಿಗೆಯ ತಪದ ನಿರಿಗೆಯ ನಿಷ್ಪ್ರಕಂಪನದ
ಬಿಗಿದ ಬಿಲ್ಲಿನ ಬೆನ್ನ ಬತ್ತಳಿ
ಕೆಗಳ ಕಿಗ್ಗಟ್ಟಿನ ಕಠಾರಿಯ
ಹೆಗಲಡಾಯುಧ ಹೊಸತಪಸಿ ತೊಡಗಿದನು ಬಲುತಪವ ೪೩

ಅರಸ ಕೇಳೈ ವಿಪ್ರವೇಷವ
ಧರಿಸಿ ಧರೆಗಿಳಿದನು ಸುರೇಶ್ವರ
ತರಹರಿಸದೀ ಮಾತನೆಂದನು ನಿಜಕುಮಾರಂಗೆ
ಮರಿಚ ಮೌಕ್ತಿಕ ಲೋಹ ಹೇಮಾ
ಭರಣ ಚರ್ಮ ದುಕೂಲ ಮಿಳಿ ಹಾ
ದರಿಯ ಹೂವಿನ ದಂಡೆಗೇಕನಿವಾಸವೇಕೆಂದ ೪೪

ಆವ ಸೇರಿಕೆ ಜಪಕೆ ಚಾಪ ಶ
ರಾವಳಿಗೆ ಶಮೆ ದಮೆಗೆ ಖಡ್ಗಕಿ
ದಾವ ಸಮ್ಮೇಳನ ವಿಭೂತಿಗೆ ಕವಚ ಸೀಸಕಕೆ
ಆವುದಿದರಭಿಧಾನ ತಪವೋ
ಡಾವರಿಗ ವಿದ್ಯಾ ಸಮಾಧಿಯೊ
ನೀವಿದೆಂತಹ ಋಷಿಗೆಳೆಂಬುದನರಿಯೆ ನಾನೆಂದ ೪೫

ಕಂದೆರೆದು ನೋಡಿದನು ನೀವೇ
ನೆಂದರೆಯು ಹೃದಯಾಬ್ಜ ಪೀಠದ
ಲಿಂದುಮೌಳಿಯನಿರಿಸಿ ಮೆಚ್ಚಿಸುವೆನು ಸಮಾಧಿಯಲಿ
ಇಂದಿನೀ ಬಹಿರಂಗ ಚಿಹ್ನೆಯ
ಕುಂದು ಹೆಚ್ಚಿಸಲೇನು ಫಲವೆನ
ಲಂದು ತಲೆದೂಗಿದನು ಸುರಪತಿ ತೋರಿದನು ನಿಜವ ೪೬

ಮಗನೆ ನಿನ್ನಯ ಮನದ ನಿಷ್ಠೆಗೆ
ಸೊಗಸಿದೆನು ಪಿರಿದಾಗಿ ಹರನಿ
ಲ್ಲಿಗೆ ಬರಲಿ ಕರುಣಿಸಲಿ ನಿನ್ನ ಮನೋಭಿವಾಂಛಿತವ
ಹಗೆಗೆ ಹರಿವಹುದೆಂದು ಸುರ ಮೌ
ಳಿಗಳ ಮಣಿ ಸರಿದನು ವಿಮಾನದ
ಲಗಧರನ ಮೈದುನನ ಮಹಿಮೆಯನಿನ್ನು ಕೇಳೆಂದ ೪೭

(ಸಂಗ್ರಹ: ಹೊಳೆನರಸಿಪುರ ಮಂಜುನಾಥ)